48 ಕೋಟಿ ವಂಚನೆ ಪ್ರಕರಣ; ಸಹಕಾರ ಇಲಾಖೆ ಕದ ತಟ್ಟಿದ ಗೃಹ ಇಲಾಖೆ

ಬೆಂಗಳೂರು; ರಾಜ್ಯ ಕೃಷಿ ಮಾರಾಟ ಮಂಡಳಿಯ ₹ 48 ಕೋಟಿ ನಿಶ್ಚಿತ ಠೇವಣಿ (ಎಫ್‌ಡಿ) ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ಪ್ರಧಾನ ವ್ಯವಸ್ಥಾಪಕ(ಡಿಜಿಎಂ) ಸಿದ್ದಗಂಗಯ್ಯ ಅವರನ್ನು ವಿಚಾರಣೆಗೆ ಪೂರ್ವಾನುಮತಿ ಕೋರಿ ಸಹಕಾರ ಇಲಾಖೆಗೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.


ಮಂಡಳಿಯ ಮಾರುಕಟ್ಟೆ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ (ಡಿಜಿಎಂ) ಸಿದ್ದಗಂಗಯ್ಯ, ಸಿಂಡಿಕೇಟ್‌ ಬ್ಯಾಂಕಿನ ಉತ್ತರಹಳ್ಳಿ ಶಾಖೆಯ ವ್ಯವಸ್ಥಾಪಕ ಮಂಜುನಾಥ್ ಸೇರಿ 12 ಮಂದಿ ವಿರುದ್ಧ ಕೇಂದ್ರ ಅಪರಾಧ ಪತ್ತೆ ದಳ (ಸಿಸಿಬಿ) ಏಪ್ರಿಲ್‌ನಲ್ಲಿ ನ್ಯಾಯಾಲಯಕ್ಕೆ ಪ್ರಾಥಮಿಕ ದೋಷಾರೋಪಪಟ್ಟಿ ಸಲ್ಲಿಸಿತ್ತು.


ಇದರ ಬೆನ್ನಲ್ಲೇ ಆರೋಪಿ ಡಾ ಸಿದ್ದಗಂಗಯ್ಯ ಅವರನ್ನು ಸಕ್ಷಮ ನ್ಯಾಯಾಲಯದಲ್ಲಿ ಕಲಂ 197 ಸಿಆರ್‌ಪಿಸಿ ಅಡಿಯಲ್ಲಿ ಅಭಿಯೋಜನೆಗೊಳಪಡಿಸಲು ಪೂರ್ವಾನುಮತಿ ಕೋರಲು ಗೃಹ ಇಲಾಖೆ ಸಹಕಾರ ಇಲಾಖೆಯ ಕದ ತಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ. ಹೀಗಾಗಿ ಅರೋಪಿ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಸಹಕಾರ ಇಲಾಖೆಯ ಪೂರ್ವಾನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ.


ಪ್ರಕರಣದಲ್ಲಿ ಸಿದ್ದಗಂಗಯ್ಯ ಅವರೂ ಸೇರಿದಂತೆ ಉತ್ತರಹಳ್ಳಿ ಶಾಖೆಯ ಸಹಾಯಕ ವ್ಯವಸ್ಥಾಪಕ, ನಿವೃತ್ತ ಖಜಾನೆ ಅಧಿಕಾರಿ ಲಕ್ಷ್ಮಯ್ಯ ಅವರನ್ನೂ ಆರೋಪಿಗಳನ್ನಾಗಿಸಿದೆ. ಈ ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗಿದ್ದು, 1400 ಪುಟಗಳ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ.
ರಾಜ್ಯ ಕೃಷಿ ಮಾರಾಟ ಮಂಡಳಿಗೆ ಸಿಂಡಿಕೇಟ್‌ ಬ್ಯಾಂಕ್‌ ಹಣ ಹಿಂದಿರುಗಿಸಿದೆ. ಏಪ್ರಿಲ್‌ 3ರಂದು ₹50.52 ಕೋಟಿ ಮತ್ತು ಏಪ್ರಿಲ್‌ 22ರಂದು ₹50.85 ಕೋಟಿ ಹಣವನ್ನು ಆವರ್ತನಿಧಿ ಖಾತೆಗೆ ಹಿಂತಿರುಗಿಸಿದೆ. ₹1.37 ಕೋಟಿ ಬಡ್ಡಿ ಹಣವೂ ಇದರಲ್ಲಿ ಸೇರಿದೆ.


ಪ್ರಕರಣ ಹಿನ್ನೆಲೆ
ರಾಜ್ಯ ಕೃಷಿ ಮಾರಾಟ ಮಂಡಳಿಯ ಆವರ್ತನಿಧಿಯಿಂದ ನಿಶ್ಚಿತ ಠೇವಣಿ (ಎಫ್.ಡಿ) ಇಡುವ ಸಲುವಾಗಿ ಬ್ಯಾಂಕ್‌ಗಳಿಂದ ಕೊಟೇಷನ್ ಕರೆದಿತ್ತು. ಸಿಂಡಿಕೇಟ್ ಬ್ಯಾಂಕ್ ಉತ್ತರಹಳ್ಳಿ ಶಾಖೆಯು ಎಫ್‌.ಡಿ ಹೂಡಿಕೆಗೆ ಹೆಚ್ಚು ಬಡ್ಡಿ ನೀಡುವುದಾಗಿ ಮುಂದೆ ಬಂದಿತ್ತು. ರಾಜ್ಯ ಕೃಷಿ ಮಾರಾಟ ಮಂಡಳಿ ಆವರ್ತನಿಧಿ ಇರುವ ರಾಜಾಜಿನಗರ ಶಾಖೆಯ ಆಂಧ್ರ ಬ್ಯಾಂಕಿನಿಂದ ಆರ್‌ಟಿಜಿಎಸ್ ಮೂಲಕ ₹ 100 ಕೋಟಿ ಹಣವನ್ನು ಸಿಂಡಿಕೇಟ್ ಬ್ಯಾಂಕಿನ ಉತ್ತರಹಳ್ಳಿ ಶಾಖೆಗೆ ವರ್ಗಾಯಿಸಿ ತಲಾ ₹ 50 ಕೋಟಿಯಂತೆ ಎರಡು ನಿಶ್ಚಿತ ಠೇವಣಿ ಇಡಲಾಗಿತ್ತು.


ಈ ಒಟ್ಟು ಹಣದಲ್ಲಿ 48 ಕೋಟಿ ರು. ದುರುಪಯೋಗವಾಗಿದ್ದು ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್‌ ಪೊಲೀಸ್‌ ಠಾಣೆಯಲ್ಲಿ ಐಪಿಸಿ 118,406,408,409, 411, 418, 420, 462, 467, 468, 473, 474, 201, 120(ಬಿ) ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು. ಆ ನಂತರ ಗೃಹ ಸಚಿವರ ಸೂಚನೆಯಂತೆ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆಯಾಗಿತ್ತು.


ಮಂಡಳಿಗೆ ಸಂಬಂಧಿಸಿ ₹ 100 ಕೋಟಿಯನ್ನು ಸಿಂಡಿಕೇಟ್‌ ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿ ಇರಿಸುವ ಬದಲು ವ್ಯವಸ್ಥಾಪಕ ಮಂಜುನಾಥ್ ಮತ್ತು ಅದೇ ಬ್ಯಾಂಕಿನ ಉಪ ವ್ಯವಸ್ಥಾಪಕ ಜಯರಾಮ್‌ ಅವರು ಮಂಡಳಿಯ ಫೈನಾನ್ಸ್‌ ಅಧಿಕಾರಿ ಹುದ್ದೆಯನ್ನು ಮಹಮ್ಮದ್‌ ಮುಸ್ತಫಾ ಎಂಬ ವ್ಯಕ್ತಿಯ ಹೆಸರಿನಲ್ಲಿ ನಕಲಿಯಾಗಿ ಸೃಷ್ಟಿಸಿ, ಆ ಹೆಸರಿನಲ್ಲಿ ಚಾಲ್ತಿ ಖಾತೆ ತೆರೆದು ಅನಧಿಕೃತವಾಗಿ ಹಣ ವರ್ಗಾವಣೆ ಮಾಡಿದ್ದರು ಎಂಬ ಸಂಗತಿ ತನಿಖೆಯಿಂದ ಗೊತ್ತಾಗಿತ್ತು. 100 ಕೋಟಿಯಲ್ಲಿ 48 ಕೋಟಿಯನ್ನು ಚೆನ್ನೈ ನಗರದ 106 ಇತರ ಚಾಲ್ತಿ ಖಾತೆಗಳಿಗೆ ವಿವಿಧ ಹಂತಗಳಲ್ಲಿ ವರ್ಗಾವಣೆ ಮಾಡಿರುವುದು ಸಿಸಿಬಿ ತನಿಖೆಯಿಂದ ತಿಳಿದು ಬಂದಿತ್ತು.

the fil favicon

SUPPORT THE FILE

Latest News

Related Posts