ಅಧಿಸೂಚನೆ ಹಿಂತೆಗೆತಕ್ಕೆ ಲಾಬಿ; ಪಶು ವೈದ್ಯಾಧಿಕಾರಿಗಳ ಒತ್ತಡಕ್ಕೆ ಮಣಿಯುವರೇ ಪ್ರಭು ಚವ್ಹಾಣ್‌?

ಬೆಂಗಳೂರು; ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಿಯೋಜನೆಯಡಿಯಲ್ಲಿ ಹಲವು ವರ್ಷಗಳಿಂದಲೂ ತಳವೂರಿರುವ ಮುಖ್ಯ ಪಶು ವೈದ್ಯಾಧಿಕಾರಿಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಹಿಂಪಡೆಯಲು ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಲು ನಡೆಸಿರುವ ಕಸರತ್ತು ಇದೀಗ ಬಹಿರಂಗವಾಗಿದೆ.


ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪಶು ವೈದ್ಯಾಧಿಕಾರಿಗಳು, ಪಶು ವಿಜ್ಞಾನಗಳ ವಿಶ್ವವಿದ್ಯಾಲಯ, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಹಿಂಬಾಗಿಲ ಮೂಲಕ ಶಾಶ್ವತವಾಗಿ ವಿಲೀನಗೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿರುವುದೇ ಇದಕ್ಕೆ ಮೂಲ ಕಾರಣ.


ಸರ್ಕಾರಿ ಆದೇಶದ ಪ್ರಕಾರ ಮಾತೃ ಇಲಾಖೆಗೆ ತೆರಳಿದರೆ ವಿಶ್ವವಿದ್ಯಾಲಯದ ಆಯಕಟ್ಟಿನ ಜಾಗ ತಪ್ಪಿ ಹೋದೀತು ಎಂಬ ಕಾರಣಕ್ಕೆ ಆದೇಶವನ್ನೇ ರದ್ದುಗೊಳಿಸಲು ಸಚಿವ ಪ್ರಭು ಚವ್ಹಾಣ್‌ ಮೇಲೆ ತೀವ್ರ ಒತ್ತಡ ಹೇರಿರುವ ಪಶು ವೈದ್ಯಾಧಿಕಾರಿಗಳು, ಪಶು ವೈದ್ಯಕೀಯ ವಿಜ್ಞಾನ ಪದವೀಧರರ ಉದ್ಯೋಗಗಳನ್ನು ಕಬಳಿಸಲಿದ್ದಾರೆ ಎಂದು ಹೇಳಲಾಗಿದೆ. ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಬಹುತೇಕ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಬಲ ಸಮುದಾಯಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.


ಸರ್ಕಾರದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆ ಅಥವಾ ನಿಗಮ, ಮಂಡಳಿ, ವಿಶ್ವವಿದ್ಯಾಲಯದಲ್ಲಿ 5 ವರ್ಷ ಅವಧಿಯವರೆಗೆ ಮಾತ್ರ ನಿಯೋಜನೆಯಲ್ಲಿ ಕಾರ್ಯನಿರ್ವಹಿಸಲು ಅವಕಾಶವಿದೆ. ಆದರೆ ಪಶು ವೈದ್ಯಕೀಯ ಕಾಲೇಜು ಮತ್ತು ಪಶು ವಿಜ್ಞಾನಗಳ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕಳೆದ 5 ವರ್ಷಗಳಿಗೂ ಮೀರಿ ನಿಯೋಜನೆಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗೊತ್ತಾಗಿದೆ.


ಪಶು ವೈದ್ಯಾಧಿಕಾರಿಗಳಾಗಿ ನೇಮಕ ಹೊಂದಿರುವವರ ಪೈಕಿ 36 ಮಂದಿ ಮುಖ್ಯ ಪಶುವೈದ್ಯಾಧಿಕಾರಿಗಳು, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ, ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಶಿವಮೊಗ್ಗದಲ್ಲಿರುವ ವನ್ಯಜೀವಿ ಘಟಕ ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ, ಶಿವಮೊಗ್ಗ, ಹಾಸನ, ಹೆಬ್ಬಾಳ, ಬೀದರ್‌ ಪಶು ವೈದ್ಯಕೀಯ ಕಾಲೇಜುಗಳಲ್ಲಿ 5 ವರ್ಷಗಳಿಗೂ ಮೀರಿ ನಿಯೋಜನೆಯಲ್ಲಿಯೇ ಮುಂದುವರೆದಿದ್ದಾರೆ. ಇವರಲ್ಲಿ 30 ಮಂದಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಮತ್ತು ಕರ್ನಾಟಕ ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವುದು ತಿಳಿದು ಬಂದಿದೆ.


ಈ ವೈದ್ಯಾಧಿಕಾರಿಗಳ ಸೇವೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮಾತೃ ಇಲಾಖೆಯಾಗಿರುವ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಹಿಂಪಡೆಯಲು 2020ರ ಜೂನ್‌ 9ರಂದು ಇಲಾಖೆ ಆದೇಶ ಹೊರಡಿಸಿತ್ತು. ಪಶು ವೈದ್ಯಾಧಿಕಾರಿಗಳ ತೀವ್ರ ಕೊರತೆಯಿಂದಾಗಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಹಲವು ಯೋಜನೆಗಳು ಮುಗ್ಗರಿಸಿ ಬಿದ್ದಿವೆ. ಹೀಗಾಗಿ ನಿಯೋಜನೆ ಮೇರೆಗೆ ತೆರಳಿರುವ ಎಲ್ಲಾ ಪಶು ವೈದ್ಯಾಧಿಕಾರಿಗಳನ್ನು ಇಲಾಖೆಗೆ ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ತಳವೂರಿರುವರ ಪಟ್ಟಿ


ಮುಖ್ಯ ಪಶುವೈದ್ಯಾಧಿಕಾರಿ ಡಾ ರವಿ ಸಾಲಿಗೌಡ(ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ) ಡಾ ಡಿ ಎನ್‌ ನಾಗರಾಜು(ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ), ಡಾ ವಿನಯ್‌ ಎಸ್‌ (ವನ್ಯಜೀವಿ ಘಟಕ, ಶಿವಮೊಗ್ಗ), ಡಾ ಎಂ ಎಲ್‌ ಕ್ಷಮಾ(ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ), ಡಾ ವಸಂತಕುಮಾರ್‌ ಶೆಟ್ಟಿ, ಡಾ ಗಣೇಶ್‌ ಹೆಗಡೆ, ಡಾ ರಾಜಶೇಖರ ಬಿ , ಡಾ ಲೋಹಿತ್‌ ಟಿ ಎಸ್‌, ಡಾ ಪ್ರವೀಣ್‌ಕುಮಾರ್ ಜಿ ಆರ್‌, ಡಾ ರಂಗನಾಥ್‌ ಎಸ್‌, ಡಾ ಸುಮಂತ್‌ಕುಮಾರ್‌ ಆರ್‌, ಡಾ ಶ್ರೀವತ್ಸ ವಿ, ಡಾ ರಶ್ಮಿ ಎಸ್‌, ಡಾ ಮಂಜುನಾಥ್‌ ವಿ., ಡಾ ಶಿವಮೂರ್ತಿ ವಕಾರೆ, ಡಾ ಕೆ ಪಿ ಮಂಜುನಾಥ, ಇವರು ಬೆಂಗಳೂರಿನ ಪಶು ಆರೋಗ್ಯ ಜೈವಿಕ ಸಂಸ್ಥೆಯಲ್ಲಿ ನಿಯೋಜನೆ ಮೇರೆಗೆ ಕಳೆದ 5 ವರ್ಷಗಳಿಗೂ ಮೀರಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗೊತ್ತಾಗಿದೆ.


ಅದೇ ರೀತಿ ಡಾ ಎಸ್‌ ಸುಂದರೇಶನ್‌,ಡಾ ಬಿ ಎ ದೇಸಾಯಿ( ಪಶು ವೈದ್ಯಕೀಯ ಕಾಲೇಜು ಶಿವಮೊಗ್ಗ),ಡಾ ಕೆ ಎಲ್‌ ಫಣಿರಾಜ್‌, ಡಾ ಸಿ ಆರ್‌ ಗೋಪಿನಾಥ, ಡಾ ಪಿ ಎಂ ಗುರುರಾಜ ( ಪಶು ವೈದ್ಯಕೀಯ ಕಾಲೇಜು ಬೆಂಗಳೂರು), ಡಾ ಕೆ ಎನ್‌ ಪವನಕುಮಾರ್‌, ಡಾ ಚಂದ್ರಶೇಖರ್‌, ಡಾ ಚಂದ್ರೇಗೌಡ, ಡಾ ಅಶ್ವಥನಾರಾಯಣಪ್ಪ, ಡಾ ಎಂ ಎ ಸುನೀಲಕುಮಾರ, ಡಾ ಶಂಭುಲಿಂಗಪ್ಪ ಬಡ್ಡಿ ಅವರು ಹಾಸನದಲ್ಲಿರುವ ಪಶು ವೈದ್ಯಕೀಯ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, ಡಾ ಮುತ್ತುರಾಜ್ ಪಚ್ಚನ್ನವರ, ಡಾ ಸುದರ್ಶನ ಗಡದ, ಡಾ ನಾಗಪ್ಪ ಭಾನುವಳ್ಳಿ, ಡಾ ಕೆ ಪಿ ಹರೀಶಕುಮಾರ, ಡಾ ಜಿ ಚಂದ್ರಶೇಖರ್, ಡಾ ಎಂ ಭರತಭೂಷಣ, ಡಾ ಎಂ ನವೀನ್‌, ಡಾ ವೈ ಮಧುರಾ ಶಿವಮೊಗ್ಗದಲ್ಲಿರುವ ಪಶು ವೈದ್ಯಕೀಯ ಕಾಲೇಜಿನಲ್ಲಿ ಮತ್ತು ಡಾ ಅನಂತರಾವ್ ದೇಸಾಯಿ(ಬೀದರ್‌ನ ಪಶುವೈದ್ಯಕೀಯ ಕಾಲೇಜು) ಕಾರ್ಯನಿರ್ವಹಿಸುತ್ತಿರುವುದು ಸರ್ಕಾರದ ಆದೇಶದಿಂದ ತಿಳಿದು ಬಂದಿದೆ.


5 ವರ್ಷಗಳಿಗೂ ಮೀರಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಅಧಿಕಾರಿಗಳಿಗೆ ಒಂದೊಮ್ಮೆ ಹಿಂಬಾಗಿಲಿನ ಮೂಲಕ ಶಾಶ್ವತವಾಗಿ ವಿಲೀನಗೊಂಡಿದ್ದೇ ಆದಲ್ಲಿ ನಿವೃತ್ತಿ ಆಗುವವರೆಗೂ ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುವುದಿಲ್ಲ. ಹೀಗಾಗಿ ಮೀಸಲಾತಿ ನೀತಿಗೂ ಭಾರೀ ಪೆಟ್ಟು ಬೀಳಲಿದೆ ಎಂದು ಹೇಳಲಾಗಿದೆ.


ಅಲ್ಲದೆ, ಪಶು ವೈದ್ಯಕೀಯ ವಿಜ್ಞಾನಗಳ ಪದವೀಧರರಿಗೆ ವಿಶ್ವವಿದ್ಯಾಲಯ ಮತ್ತು ಪಶು ವೈದ್ಯಕೀಯ ಕಾಲೇಜುಗಳಲ್ಲಿ ಉದ್ಯೋಗ ಅವಕಾಶಗಳಿಂದ ವಂಚಿತರಾಗಲಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಪದವೀಧರರಿಗೆ ಅನ್ಯಾಯವಾಗಲಿದೆ ಎಂಬ ಅರೋಪವೂ ಕೇಳಿ ಬಂದಿದೆ.

Your generous support will help us remain independent and work without fear.

Latest News

Related Posts