ವಿಧಾನಸೌಧದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌; ದರದ ಮಾಹಿತಿ ಗೌಪ್ಯವಾಗಿಟ್ಟ ಸಚಿವಾಲಯ

ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಕೆಸಿಐಸಿ ಕಂಪನಿಗೆ ಕಾರ್ಯಾದೇಶ ನೀಡಿದೆ ಎಂದು ಮಾಹಿತಿ ನೀಡಿರುವ ಕರ್ನಾಟಕ ವಿಧಾನಸಭೆ ಸಚಿವಾಲಯ, ಸ್ಯಾನಿಟೈಸೇಷನ್‌ ಮಾಡಲು ನಿಗದಿಪಡಿಸಿರುವ ದರದ ಮಾಹಿತಿಯನ್ನು ಗೌಪ್ಯವಾಗಿರಿಸಿದೆ.

ಸ್ಯಾನಿಟೈಸೇಷನ್‌ ಮಾಡಿಸಲು ತಗುಲಿರುವ ವೆಚ್ಚದ ಬಗ್ಗೆ ಮಾಹಿತಿ ಕೇಳಿದ್ದ ‘ದಿ ಫೈಲ್‌’ಗೆ ಕೇವಲ ಕಂಪನಿ ಹೆಸರಿನ ಮಾಹಿತಿ ನೀಡಿ ಉಳಿದ ಯಾವ ವಿವರಗಳನ್ನೂ ಒದಗಿಸದೇ ಅರೆಬರೆ ಮಾಹಿತಿ ನೀಡಿ ನುಣುಚಿಕೊಂಡಿರುವುದು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

ಕೆಸಿಐಸಿ ಪ್ರೈವೈಟ್‌ ಲಿಮಿಟೆಡ್‌ಗೆ ಕಾರ್ಯಾದೇಶ ನೀಡಿರುವುದನ್ನು ಬಹಿರಂಗಪಡಿಸಿರುವ ವಿಧಾನಸಭೆ ಸಚಿವಾಲಯ, ಯಾವ ಮೊತ್ತಕ್ಕೆ ಕಾರ್ಯಾದೇಶ ನೀಡಲಾಗಿದೆ ಎಂಬುದನ್ನು ಬಹಿರಂಗಪಡಿಸದೇ ಗೌಪ್ಯವಾಗಿರಿಸಿದೆ. ಕಾರ್ಯಾದೇಶದ ಪ್ರತಿಯನ್ನೂ ಒದಗಿಸದ ವಿಧಾನಸಭೆ ಸಚಿವಾಲಯದ ನಡೆ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಕೆಸಿಐಸಿ ಕಂಪನಿಗೆ ಕಾರ್ಯಾದೇಶ

‘ಕೋವಿಡ್‌-19ರ ಹಿನ್ನೆಲೆಯಲ್ಲಿ ವಿಧಾನಸಭೆ ಸಚಿವಾಲಯದ ಅಧೀನದಲ್ಲಿರುವ ವಿಧಾನಸೌಧ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಲು ಕೆಸಿಐಸಿ ಪ್ರೈವೈಟ್‌ ಲಿಮಿಟೆಡ್‌ಗೆ ಕಾರ್ಯಾದೇಶ ನೀಡಿದ್ದು, ಈ ಸಂಬಂಧದಲ್ಲಿ ಕಡತವು ಚಾಲ್ತಿಯಲ್ಲಿರುತ್ತದೆ,’ ಎಂದು ವಿಧಾನಸಭೆ ಸಚಿವಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿ ಜಯಲಕ್ಷ್ಮಮ್ಮ ಅವರು 2020ರ ಆಗಸ್ಟ್‌ 8ರಂದು ಮಾಹಿತಿ ನೀಡಿ ಕೈತೊಳೆದುಕೊಂಡಿದ್ದಾರೆ.

ಸಂದೇಹಕ್ಕೆ ಕಾರಣವಾದ ಅರೆಬರೆ ಮಾಹಿತಿ

ವಿಧಾನಸೌಧದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌ ಮಾಡಿಸುವುದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ ಮಾಹಿತಿ ಹಕ್ಕಿನ ಅಡಿಯಲ್ಲಿ 2020ರ ಜುಲೈ 9ರಂದು ಮಾಹಿತಿ ಕೇಳಿತ್ತು. ಕೊಠಡಿವಾರು, ಚದುರ ಮೀಟರ್‌ ವಿಸ್ತೀರ್ಣವಾರು, ಕಂಪನಿ ನೀಡಿರುವ ದರ, ಸಚಿವಾಲಯ ನಿಗದಿಪಡಿಸಿರುವ ದರ ಮತ್ತು ಎಷ್ಟು ಮೊತ್ತ ಪಾವತಿಸಿದೆ ಅಥವಾ ಇಲ್ಲವೇ ಎಂಬ ಮಾಹಿತಿ ಕೇಳಿತ್ತು.

ಕಂಪನಿಯು ನಿರ್ವಹಿಸಬೇಕಾದ ಕಾಮಗಾರಿ ವಿವರ, ಪಾವತಿ ಸಂಬಂಧ ಸಲ್ಲಿಸಬೇಕಾದ ಬಿಲ್‌ಗಳ ವಿವರ ಕಾಮಗಾರಿ ನಿರ್ವಹಿಸಬೇಕಾದ ಕಾಲಮಿತಿ, ಕೆಲಸ ಪೂರ್ಣಗೊಂಡ ನಂತರ ಹಣ ಪಾವತಿ ಸಂಬಂಧ ಬಿಲ್‌ಗಳ ಒದಗಿಸುವ ಮಾಹಿತಿ ಕಾರ್ಯಾದೇಶದಲ್ಲಿರುತ್ತೆ. ಆದರೆ ಈ ಯಾವ ವಿವರಗಳನ್ನೂ ಒದಗಿಸದೆಯೇ ಕೇವಲ ಕಾರ್ಯಾದೇಶ ನೀಡಿದೆ ಎಂಬುದನ್ನು ಮಾತ್ರ ಬಹಿರಂಗಪಡಿಸಿ ಉಳಿದ ಈ ಯಾವ ಮಾಹಿತಿಗಳನ್ನೂ ನೀಡದಿರುವುದು ಸಂದೇಹಾಸ್ಪದವಾಗಿದೆ.

ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸ್ಪೀಕರ್‌ ಕೊಠಡಿಯೂ ಸೇರಿದಂತೆ ವಿಧಾನಸಭೆ ಸಚಿವಾಲಯ ವ್ಯಾಪ್ತಿಯಲ್ಲಿರುವ ಕೊಠಡಿಗಳನ್ನು ಈ ಕಂಪನಿ ಈಗಾಗಲೇ ಸ್ಯಾನಿಟೈಸೇಷನ್‌ ಮಾಡಿದೆ. ಆದರೆ ಈ ಕಂಪನಿಗೆ ಕಾರ್ಯಾದೇಶ ನೀಡುವ ಮುನ್ನ ಯಾವುದೇ ಟೆಂಡರ್‌ ಪ್ರಕ್ರಿಯೆ ನಡೆಸಿಲ್ಲ ಮತ್ತು ಇತರೆ ಕಂಪನಿಗಳಿಂದ ದರಪಟ್ಟಿಯನ್ನೂ ಪಡೆದಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಅಲ್ಲದೆ ಇದೇ ಕಂಪನಿಗೆ ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌ ಮಾಡಲು ತಿಂಗಳಿಗೆ 98.00 ಲಕ್ಷ ರು ಲೆಕ್ಕದಲ್ಲಿ ಒಂದು ವರ್ಷಕ್ಕೆ 11.76 ಕೋಟಿ ರು. ಮೊತ್ತಕ್ಕೆ ಗುತ್ತಿಗೆ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರಿನ ಗಂಗಾ ನಗರದಲ್ಲಿರುವ ಕೆಸಿಐಸಿ ಕಂಪನಿಯೊಂದಕ್ಕೆ ಒಂದು ವರ್ಷದ ಗುತ್ತಿಗೆ ನೀಡಲು ಮುಂದಾಗಿರುವ ವಿಧಾನಸಭೆ ಸಚಿವಾಲಯ, ಈ ಸಂಬಂಧ ಆರ್ಥಿಕ ಇಲಾಖೆಯಿಂದ 4(ಜಿ) ವಿನಾಯಿತಿಯನ್ನೂ ಪಡೆಯುವುದರಲ್ಲಿ ಸಫಲವಾಗಿದೆ ಎಂದು ವಿಶ್ವಸನೀಯ ಮೂಲಗಳಿಂದ ಗೊತ್ತಾಗಿದೆ.

ಕಾಗೇರಿ ಮೌಖಿಕ ಸೂಚನೆ

ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮೌಖಿಕ ಸೂಚನೆ ಮೇರೆಗೆ ಸ್ಯಾನಿಟೈಸೇಷನ್‌ ಮಾಡಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಪಾವಧಿ ಟೆಂಡರ್‌ ಕರೆಯಲು ಸಾಕಷ್ಟು ಅವಕಾಶಗಳು ಇದ್ದರೂ ಸಹ ಅದರ ಗೊಡವೆಗೆ ಹೋಗದ ವಿಧಾನಸಭೆ ಸಚಿವಾಲಯ ಆರ್ಥಿಕ ಇಲಾಖೆಯಿಂದ 4(ಜಿ) ಪಡೆದಿರುವುದು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

ಟೆಂಡರ್‌ ಕರೆಯಲಿಲ್ಲವೇಕೆ?

1.00 ಲಕ್ಷ ರು. ಮೊತ್ತದ ಒಳಗಿನ ಕಾಮಗಾರಿ ಸೇರಿದಂತೆ ಇನ್ನಿತರೆ ಚಟುವಟಿಕೆಗಳಿಗೆ ಹಣ ಬಿಡುಗಡೆ ಮಾಡುವ ಅಧಿಕಾರ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಗಿದೆ. ಅದೇ ರೀತಿ 5.00 ಲಕ್ಷ ರು. ಮಿತಿಯೊಳಗೆ ಅನುಮೋದನೆ ನೀಡಲು ಸ್ಪೀಕರ್‌ ಕಾರ್ಯಾದೇಶ ಹೊರಡಿಸಬಹುದು. ಆದರೆ ಸ್ಯಾನಿಟೈಸೇಷನ್‌ ಮಾಡಿಸಲು ತಿಂಗಳಿಗೆ 98.00 ಲಕ್ಷ ರು.ವೆಚ್ಚ ಎಂದು ಅಂದಾಜಿಸಿರುವಾಗ ಟೆಂಡರ್‌ ಇಲ್ಲದೆಯೇ ನಿರ್ದಿಷ್ಟ ಕಂಪನಿಯೊಂದಕ್ಕೆ ಒಂದು ವರ್ಷದ ಅವಧಿಗೆ ಗುತ್ತಿಗೆ ನೀಡಲು ಹೊರಟಿದೆ ಎಂಬ ಆರೋಪ ಕೇಳಿ ಬಂದಿದೆ.

ಟೆಂಡರ್‌ ಕರೆಯಲು ಕಾಲಾವಕಾಶ ಇಲ್ಲದೇ ಇದ್ದ ಪಕ್ಷದಲ್ಲಿ ಕಂಪನಿಗಳಿಂದ ದರಪಟ್ಟಿ ಕರೆಯಬಹುದಿತ್ತು. ಆದರೆ ಈ ಪ್ರಕ್ರಿಯೆಯೂ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಅಲ್ಪಾವಧಿ ಟೆಂಡರ್‌, ದರ ಪಟ್ಟಿ ಪಡೆಯದೇ ಏಕಪಕ್ಷೀಯವಾಗಿ ನಿರ್ದಿಷ್ಟ ಕಂಪನಿಗೆ ನೀಡಿರುವುದರ ಹಿಂದೆ ಕಮಿಷನ್‌ ವ್ಯವಹಾರ ನಡೆದಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಒಟ್ಟು 5 ಸಮುಚ್ಛಯಗಳನ್ನೊಂದಿರುವ ಶಾಸಕರ ಭವನದಲ್ಲಿ ಅಂದಾಜು 400 ಕೊಠಡಿಗಳಿವೆ ಎನ್ನಲಾಗಿದೆ. ಈ ಪೈಕಿ ವಿಧಾನಸಭೆ ಸದಸ್ಯರಿಗೆ 300 ಕೊಠಡಿಗಳು ಮೀಸಲಾಗಿವೆ. ಇಷ್ಟೂ ಕೊಠಡಿಗಳಿಗೆ ಅಡಿ ಲೆಕ್ಕದಲ್ಲಿ ಪ್ರತಿ ದಿನವೂ ಸ್ಯಾನಿಟೈಸೇಷನ್‌ ಮಾಡಿಸಲಿದೆ ಎಂದು ತಿಳಿದು ಬಂದಿದೆ.

ಅದೇ ರೀತಿ ಶಾಸಕರ ಭವನ ಗಣ್ಯಾತಿಗಣ್ಯರಿರುವ ಪ್ರದೇಶ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಉಚಿತವಾಗಿಯಾದರೂ ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌ ಮಾಡಿಸಲು ಅವಕಾಶಗಳಿದ್ದವು. ಶಿವಾಜಿನಗರ ವಾರ್ಡ್‌ ವ್ಯಾಪ್ತಿಯಲ್ಲಿರುವ ಕಾರಣ ಅಲ್ಲಿನ ಕಾರ್ಪೋರೇಟರ್‌ ಮತ್ತು ಬಿಬಿಎಂಪಿ ಆಯುಕ್ತರ ನೆರವು ಪಡೆಯಲು ಅವಕಾಶವಿತ್ತು. ಆದರೆ ಇದಾವುದರ ಗೊಡವೆಗೆ ವಿಧಾನಸಭೆ ಸಚಿವಾಲಯ ಹೋಗಿಲ್ಲದಿರುವುದು ಸಹಜವಾಗಿ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

the fil favicon

SUPPORT THE FILE

Latest News

Related Posts