Friday | June 12, 2026 |

ಪರೇಶ್‌ ಮೇಸ್ತಾ ಹತ್ಯೆ ಪ್ರಕರಣ; ಸಿಬಿಐ ವರದಿ ತರಿಸಿಕೊಳ್ಳಲು ಬಿಜೆಪಿ ಸರ್ಕಾರಕ್ಕೆ ನಿರಾಸಕ್ತಿ

ಬೆಂಗಳೂರು; ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್‌ ಮೇಸ್ತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪ್ರಗತಿ ಕೇಳಿ ಬಿಜೆಪಿ ಸರ್ಕಾರ ಈವರೆವಿಗೂ ಒಂದೇ ಒಂದು ಪತ್ರವನ್ನು ಬರೆದಿಲ್ಲ. ಅಲ್ಲದೆ ಮರಣೋತ್ತರ ವರದಿಯನ್ನೂ ಬಿಡುಗಡೆಗೊಳಿಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಪ್ರತಿಭಟನೆ ವೇಳೆಯಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಪೊಲೀಸ್‌ ಇಲಾಖೆಯ ಅಸಮ್ಮತಿ ನಡುವೆಯೂ ವಿಚಾರಣೆಯಿಂದಲೇ ಹಿಂದಕ್ಕೆ ಪಡೆದಿರುವ ಬಿಜೆಪಿ ಸರ್ಕಾರ, ಸಿಬಿಐನಿಂದ ವರದಿ ತರಿಸಿಕೊಳ್ಳುವಲ್ಲಿ ಈವರೆವಿಗೂ ಮುಂದಾಗಿಲ್ಲ. ಅಲ್ಲದೆ ಸಿಬಿಐನಿಂದ ವರದಿ ಬರುವ ಮುನ್ನವೇ ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ಕೈಬಿಟ್ಟಿರುವುದು ಕೂಡ ಸಂಶಯಗಳಿಗೆ ಕಾರಣವಾಗಿದೆ.

ಪರೇಶ್‌ ಮೇಸ್ತಾ ಎಂಬ ಯುವಕನ ಹತ್ಯೆ ಪ್ರಕರಣದಲ್ಲಿ ನಡೆದಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ಕೈಬಿಡಲು ಶಾಸಕಿ ರೂಪಾಲಿನಾಯ್ಕ ಅವರು 2019ರ ಜುಲೈ 29ರಂದು ಪತ್ರ ಬರೆದಿದ್ದರು. ಆದರೆ ಪ್ರಕರಣಗಳ ವ್ಯತ್ಯಾಸವಿದೆ ಎಂದು ಡಿಜಿಐಜಿಪಿ ಅವರು ಒಳಾಡಳಿತ ಇಲಾಖೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೂ ಬಿಜೆಪಿ ಸರ್ಕಾರ ಪ್ರಕರಣವನ್ನು ವಿಚಾರಣೆಯಿಂದಲೇ ಹಿಂದಕ್ಕೆ ಪಡೆದಿತ್ತು.

ಪರೇಶ್‌ ಮೇಸ್ತ ಹತ್ಯೆ ಪ್ರಕರಣವು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿ ಕರಾವಳಿ ಭಾಗದಲ್ಲಿ ತೀವ್ರ ಪ್ರತಿಭಟನೆ, ಗಲಾಟೆಗಳಿಗೆ ಕಾರಣವಾಗಿತ್ತು. ಈ ಪ್ರಕರಣವನ್ನು ಅತ್ಯಂತ ಪ್ರತಿಷ್ಠೆಯನ್ನಾಗಿಸಿಕೊಂಡಿದ್ದ ಬಿಜೆಪಿಯೇ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಸಿಬಿಐನಿಂದ ವರದಿ ತರಿಸಿಕೊಳ್ಳಲು ಆಸಕ್ತಿ ವಹಿಸುತ್ತಿಲ್ಲ. ಮೇಸ್ತ ಹತ್ಯೆಯಾದ ನಂತರ ಬಿಜೆಪಿಯ ಅಂದಿನ ರಾಷ್ಟ್ರಾಧ್ಯಕ್ಷ ಹಾಗೂ ಹಾಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದರು.

ಇದೇ ಪ್ರಕರಣವನ್ನೇ 2018ರಲ್ಲಿ ವಿಧಾನಸಭೆಗೆ ನಡೆದ ಚುನಾವಣೆ ಪ್ರಣಾಳಿಕೆ ಮಾಡಿಕೊಂಡಿದ್ದ ಬಿಜೆಪಿ ಶಾಸಕರು, ಸಂಸದರು 3 ವರ್ಷಗಳಾದರೂ ಇದರ ಬಗ್ಗೆ ಸೊಲ್ಲೆತ್ತಿಲ್ಲ. ಮೇಸ್ತ ಹತ್ಯೆ ಪ್ರಕರಣವನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದ ಬಿಜೆಪಿಯು, ಅಧಿಕಾರಕ್ಕೆ ಬಂದ ನಂತರ ಮರೆತೇ ಬಿಟ್ಟಿದೆ.

ಹೊನ್ನಾವರ ನಿವಾಸಿ ಆಜಾದ್‌ ಅಣ್ಣಿಗೇರಿ, ಆಸಿಫ್‌ ರಫೀಕ್‌, ಮೊಹಮ್ಮದ್‌ ಫೈಸಲ್‌, ಇಮ್ತಿಯಾಜ್‌ ಘನಿ, ಸಲೀಂ ಸೇರಿದಂತೆ ಇನ್ನಿತರರ ವಿರುದ್ಧ ಗಲಭೆ, ಶಸ್ತ್ರಾಸ್ತ್ರ, ಅಕ್ರಮ ಗುಂಪು ಸೇರುವಿಕೆ ಸೇರಿದಂತೆ ಇನ್ನಿತರ ಐಪಿಸಿ ಕಾಯಿದೆಯ ಕಲಂಗಳ ಅಡಿ ಏ.23ರಂದು ಚೆನ್ನೈ ಸಿಬಿಐ ವಿಭಾಗದಲ್ಲಿ ಎಫ್‌ಐಆರ್‌ ದಾಖಲಾಗಿದೆ. 2017ರ ಡಿ. 6 ರಂದು ಪರೇಶ್‌ ಮೇಸ್ತನನ್ನು ಕೊಲೆ ಮಾಡಿ ಶವವನ್ನು ಕೆರೆಯಲ್ಲಿ ಬಿಸಾಡಲಾಗಿತ್ತು ಎಂಬ ಆರೋಪವಿದೆ. ಈ ಪ್ರಕರಣವನ್ನು ಹಿಂದಿನ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ 2017ರಲ್ಲಿ ವಹಿಸಿತ್ತು.

ಎಫ್‌ಐಆರ್‌ ದಾಖಲಾದ ನಂತರದ ಪ್ರಗತಿ ಆಗಿದೆಯೇ?

ಡಿ. 6ರಂದು ರಾತ್ರಿ ಆರೋಪಿಗಳು ಹೊನ್ನಾವರ ಬಸ್‌ ನಿಲ್ದಾಣದ ಬಳಿ ಕಬ್ಬಿಣದ ರಾಡ್‌, ಕತ್ತಿ ಮತ್ತಿತರ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದೇವಸ್ಥಾನ, ಅಂಗಡಿಗಳು, ಟೆಂಪೊ ವಾಹನಗಳು ಸೇರಿದಂತೆ ಸಾರ್ವಜನಿಕ ಆಸ್ತಿ-ಪಾಸ್ತಿ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಗೊಳಿಸಿದ್ದರು. ಅಲ್ಲದೇ, ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ 18 ವರ್ಷದ ಯುವಕ ಪರೇಶ್‌ ಮೇಸ್ತನನ್ನು ಕ್ರೂರವಾಗಿ ಕೊಂದಿದ್ದರು. ಬಳಿಕ ಶವವನ್ನು ಶೆಟ್ಟಿಕೆರೆಯಲ್ಲಿ ಬಿಸಾಡಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದರು. ಕೊಲೆಯಾದ ಎರಡು ದಿನಗಳ ಬಳಿಕ ಅಂದರೆ ಡಿ.8ರಂದು ಶವ ಪತ್ತೆಯಾಗಿತ್ತು ಎಂದು ಸಿಬಿಐ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ಆ ನಂತರ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಸಿಬಿಐ ಪೊಲೀಸರು, ಪ್ರಕರಣದ ಕುರಿತು ಹೊಸದಾಗಿ ತನಿಖೆಗೆ ಕೈಗೆತ್ತಿಕೊಂಡಿತ್ತು. ತನಿಖೆಯ ಹೊಣೆ ಹೊತ್ತಿದ್ದ ಸಿಬಿಐನ ಇನ್ಸ್‌ಪೆಕ್ಟರ್‌ ಎಸ್‌. ಸುಬ್ರಮಣಿಯನ್‌ ತನಿಖೆಗೆ ಚಾಲನೆ ನೀಡಿದ್ದರು. ಆದರೆ ಈ ಸಂಬಂಧ ತನಿಖಾ ಪ್ರಗತಿ ಏನಾಗಿದೆ ಎಂಬ ಮಾಹಿತಿ ಖುದ್ದು ಒಳಾಡಳಿತ ಇಲಾಖೆಗೇ ಇಲ್ಲ ಎಂದು ತಿಳಿದು ಬಂದಿದೆ.

ಹತ್ಯೆ ಪ್ರಕರಣವನ್ನು ವಿರೋಧಿಸಿದ್ದ ಬಿಜೆಪಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು ಕರಾವಳಿ ಭಾಗದ ವಿವಿಧ ಪಟ್ಟಣಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಇದು ಹೊನ್ನಾವರ, ಕುಮಟಾ, ಕಾರವಾರ ಸೇರಿದಂತೆ ವಿವಿಧ ಪಟ್ಟಣಗಳಲ್ಲಿ ತೀವ್ರ ಪ್ರತಿಭಟನೆಗಳು ನಡೆದು ಕೋಮು ಗಲಭೆಗೆ ತಿರುಗಿಕೊಂಡಿತ್ತು. ಹಾಗೆಯೇ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಉತ್ತರ ಕನ್ನಡ ಜಿಲ್ಲೆ ಬಂದ್‌ ವೇಳೆ ಕಾರವಾರದಲ್ಲಿನ ಪಶ್ಚಿಮ ವಲಯ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಅವರ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದನ್ನು ಸ್ಮರಿಸಬಹುದು.

Hot this week

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...
Please Scan to make Your Contribution

Topics

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

Related Articles

Popular Categories

error: Content is protected !!