ಮುಖ್ಯಕಾರ್ಯದರ್ಶಿ ಆಕ್ಷೇಪವನ್ನೂ ಬದಿಗೊತ್ತಿ ವಿಶ್ವನಾಥ್‌ ಹಿರೇಮಠ್‌ಗೆ ಕೆಎಎಸ್‌ ಹುದ್ದೆ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವಿಶ್ವನಾಥ್‌ ಪಿ ಹಿರೇಮಠ್‌ ಅವರಿಗಷ್ಟೇ ಸೀಮಿತಗೊಳಿಸಿ ಗ್ರೂಪ್‌-ಎ (ಕೆಎಎಸ್‌ ಕಿರಿಯ ಶ್ರೇಣಿ) ಹುದ್ದೆಗೆ ಬಡ್ತಿ ನೀಡಲು ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರು ಲಿಖಿತ ರೂಪದಲ್ಲಿ ವ್ಯಕ್ತಪಡಿಸಿದ್ದ ಆಕ್ಷೇಪವನ್ನೂ ಬದಿಗೊತ್ತಿ ಕೆಎಎಸ್‌ ಹುದ್ದೆಗೆ ರಾಜ್ಯ ಬಿಜೆಪಿ ಸರ್ಕಾರ ಬಡ್ತಿ ನೀಡಿತ್ತು ಎಂಬ ಹೊಸ ಅಂಶವನ್ನು ‘ದಿ ಫೈಲ್‌’ ಇದೀಗ ಹೊರಗೆಡವಿದೆ.

ಇದೇ ಪ್ರಕರಣದಲ್ಲಿ ಅಡ್ವೋಕೇಟ್‌ ಜನರಲ್‌ ಅವರು ನೀಡಿದ್ದ ಅಭಿಪ್ರಾಯಕ್ಕೂ ಮುಖ್ಯ ಕಾರ್ಯದರ್ಶಿ ಸಮ್ಮತಿ ವ್ಯಕ್ತಪಡಿಸಿರಲಿಲ್ಲ. ಒಂದು ವೇಳೆ ಅಡ್ವೋಕೇಟ್‌ ಜನರಲ್‌ ಅವರ ಅಭಿಪ್ರಾಯದ ಪ್ರಕಾರ ಕೆಎಟಿ ಆದೇಶವನ್ನು ಅನುಷ್ಠಾನಗೊಳಿಸಿದರೆ ಉಳಿದ ಅಭ್ಯರ್ಥಿಗಳು ಮತ್ತು 1998,99 ಮತ್ತು 2004ನೇ ಬ್ಯಾಚ್‌ನ ಕೆಎಎಸ್‌ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಗಳಿರುತ್ತವೆ ಎಂದು ಎಚ್ಚರಿಸಿದ್ದರು.

ಆದರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದಾವುದನ್ನೂ ಪರಿಗಣಿಸದೆಯೇ ಕೆಎಎಸ್‌ ಹುದ್ದೆಗೆ ಬಡ್ತಿ ನೀಡಲು ಆದೇಶಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಯೂ ಸೇರಿದಂತೆ ಸಮಗ್ರ ದಾಖಲೆಗಳು ಲಭ್ಯವಾಗಿವೆ.

ಮುಖ್ಯ ಕಾರ್ಯದರ್ಶಿ ನೀಡಿದ್ದ ಅಭಿಪ್ರಾಯವನ್ನು ಪರಿಗಣಿಸದ ಕಾರಣ 49 ಕೆಎಎಸ್‌ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಲು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯೇ ದಾರಿಮಾಡಿಕೊಟ್ಟಿದೆ. ಹೈಕೋರ್ಟ್‌ನ ಕಟಕಟೆಯಲ್ಲಿ ಡಿಪಿಎಆರ್‌ ನಿಂತಿರುವುದಕ್ಕೆ ಹಿರೇಮಠ್‌ ಪರವಾಗಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನೇರ ಕಾರಣ ಎಂಬ ಅಭಿಪ್ರಾಯಗಳಿಗೆ ಮುಖ್ಯ ಕಾರ್ಯದರ್ಶಿ ನೀಡಿದ್ದ ಅಭಿಪ್ರಾಯ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ.

ಮುಖ್ಯ ಕಾರ್ಯದರ್ಶಿ ಅಭಿಪ್ರಾಯದಲ್ಲೇನಿದೆ?

‘ಅಡ್ವೋಕೇಟ್‌ ಜನರಲ್‌ ಅಭಿಪ್ರಾಯದಂತೆ ಕೆಎಟಿ ಆದೇಶವನ್ನು ಯಥಾವತ್ತಾಗಿ ಅನುಷ್ಠಾನ ಮಾಡಿದರೆ ನಿಂದನಾ ಅರ್ಜಿ ಸಲ್ಲಿಸಿರುವ ಅರ್ಜಿದಾರರು, ಅದಲ್ಲದಲೆ ಜೊತೆಗೆ ಮತ್ತೊಬ್ಬ ಅರ್ಜಿದಾರರು ಹಾಗೂ ಮೂಲ ಕೆಎಟಿ ಆದೇಶ ಸಂಖ್ಯೆ (3428/2005, ದಿನಾಂಕ 14/07/2006) ಆದೇಶದಂತೆ ನೇಮಕಾತಿಯಾದ ಉಳಿದ 4 ಅಭ್ಯರ್ಥಿಗಳು ಸಹ ನ್ಯಾಯಾಲಯದ ಮೊರೆ ಹೋಗಿ ಇದೇ ರೀತಿ ಕೆಎಎಸ್‌ಗೆ ನೇಮಕಾತಿ ಕೋರಬಹುದು. ಅಲ್ಲದೆ ಒಬ್ಬರಿಗೆ/ಇವರಿಬ್ಬರಿಗೆ/ಆರು ಜನರಿಗೆ ಕೆಎಎಸ್‌ಗೆ ನೇಮಿಸುವುದರಿಂದ 1998,1999, 2004ರ ಮೂರು ಬ್ಯಾಚ್‌ನ ಕೆಎಎಸ್‌ ಅಧಿಕಾರಿಗಳ ಜೇಷ್ಠತೆಗೂ ಧಕ್ಕೆ ಆಗುವುದರಿಂದ ಅವರೂ ನ್ಯಾಯಾಲಯದ ಮೊರೆ ಹೋಗಿ ದೀರ್ಘ ನ್ಯಾಯಾಲಯದ ಹೋರಾಟವಾಗಬಹುದು. ಮೇಲಾಗಿ ನಿಂದನಾ ಅರ್ಜಿದಾರರು ಉಳಿದ ಕೆಎಟಿ ಪ್ರಕರಣದ ಅರ್ಜಿದಾರರುಗಳು 2015 ಹಾಗೂ 2016ರ ಕೆಎಎಸ್‌ಯಿಂದ ಐಎಎಸ್‌ ಆಯ್ಕೆಪಟ್ಟಿಯಲ್ಲೂ ಸೇರಿಸಲು ಪ್ರತಿಪಾದಿಸಬಹುದು. ಇದರಿಂದ 2015,2016 ಹಾಗೂ ತದನಂತರದ ಕೆಎಎಸ್‌ಯಿಂದ ಐಎಎಸ್‌ ಬಡ್ತಿಗಳೂ ಸಹ ತಡವಾಗಬಹುದು,’ ಎಂದು ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರು ಮುಖ್ಯಮಂತ್ರಿಗೆ 2020ರ ಜೂನ್‌ 9ರಂದು ಟಿಪ್ಪಣಿ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ

1998, 99 ಮತ್ತು 2004ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕಾತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಮತ್ತು ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿದ್ದ ಯಾವ ತೀರ್ಪನ್ನು ಪಾಲಿಸದೇ ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದ ರಾಜ್ಯ ಸರ್ಕಾರವು, ಲಾಕ್‌ಡೌನ್‌ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತ ಕಾರ್ಯದರ್ಶಿ (1)ಯಾಗಿರುವ ವಿಶ್ವನಾಥ ಪಿ ಹಿರೇಮಠ ಅವರಿಗಷ್ಟೇ ಸೀಮಿತಗೊಳಿಸಿ 2020ರ ಜುಲೈ 13ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಗ್ರೂಪ್‌-ಎ (ಕೆಎಎಸ್‌ ಕಿರಿಯ ಶ್ರೇಣಿ) ಹುದ್ದೆಯನ್ನು ಕರುಣಿಸಿತ್ತು. ಮುಖ್ಯ ಕಾರ್ಯದರ್ಶಿ ಅಸಮ್ಮತಿ ನಡುವೆಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ  ಸೂಚನೆ ಮೇರೆಗೆ ಸಿಬ್ಬಂದಿ  ಆಡಳಿತ ಸುಧಾರಣೆ ಇಲಾಖೆ  ಇವರನ್ನೇ ನೇಮಿಸಿತ್ತು.

ಮುಖ್ಯ ಕಾರ್ಯದರ್ಶಿಗಳ ಅಭಿಪ್ರಾಯವನ್ನು ಬದಿಗೊತ್ತಿ ನೇಮಕ ಮಾಡಿರುವುದು ಸರಿಯಲ್ಲ. ಈ ಪ್ರಕರಣದಲ್ಲಿ ಸ್ವಜಾತಿ ಮೋಹ ಮತ್ತು ಪಕ್ಷಪಾತ ಎದ್ದು ಕಾಣುತ್ತಿದೆ. ಈ ರೀತಿ ಮಾಡಿರುವುದು ತಾರತಮ್ಯ ಎಸಗಿರುವುದು ಕಂಡು ಬರುತ್ತದೆ. ಅಲ್ಲದೆ ಪ್ರಕರಣ ಕುರಿತು ಆರ್‌ಟಿಐನಲ್ಲಿ ಅರ್ಜಿ ಸಲ್ಲಿಸಿದಾಗ ವಿನಾ ಕಾರಣ  ಡಿಪಿಎಆರ್‌ ವಿಳಂಬ ಎಸಗಿತ್ತು. ಮಾಹಿತಿಯನ್ನು ನೀಡದಿರುವುದಕ್ಕೆ ಪ್ರಭಾವಿಗಳ ಒತ್ತಡವಿತ್ತು. ಈಗ ನೀಡಿರುವ ಮಾಹಿತಿಯೂ ಅಪೂರ್ಣವಾಗಿದೆ. ಇದನ್ನು ಪ್ರಶ್ನಿಸಿ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

ಎನ್‌ ಶಿವಕುಮಾರ್‌, ಆರ್‌ಟಿಐ ಕಾರ್ಯಕರ್ತ

ವಿಶ್ವನಾಥ ಪಿ ಹಿರೇಮಠ ಅವರು ಸೇರಿದಂತೆ ಒಟ್ಟು 5 ಅಭ್ಯರ್ಥಿಗಳನ್ನು 2009ರ ಮಾರ್ಚ್‌ 19ರಂದು ಶಾಖಾಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿ ಅಧಿಸೂಚನೆ ಹೊರಡಿಸಿತ್ತು. ನಂತರದಲ್ಲಿ ಇವರು ಕೆಎಟಿಯಲ್ಲಿ ಸಲ್ಲಿಸಿದ್ದ ಅರ್ಜಿ( ಸಂಖ್ಯೆ 2121/2010)ಗೆ ಸಂಬಂಧಿಸಿದಂತೆ 2017ರ ಡಿಸೆಂಬರ್‌ 15ರಂದು ತೀರ್ಪು ನೀಡಿತ್ತು. ವಿಶೇಷವೆಂದರೆ ಕೆಎಟಿಯಲ್ಲಿ ಈ ಅರ್ಜಿ 10 ವರ್ಷಗಳಿಂದ ವಿಚಾರಣೆ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಆಕ್ಷೇಪಣೆಯನ್ನೇ ಸಲ್ಲಿಸಿರಲಿಲ್ಲ.

ಅಲ್ಲದೆ ಪ್ರಕರಣವು ಕೆಎಟಿಯ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಎಟಿಯ ಆಡಳಿತಾತ್ಮಕ ಸದಸ್ಯರೊಬ್ಬರು ಆಕ್ಷೇಪಣೆ ಎತ್ತಿದ್ದರು. ಹಾಗೆಯೇ ಅವರು ರಜೆ ಮೇಲೆ ತೆರಳಿದ್ದ ಸಂದರ್ಭವನ್ನು ಬಳಸಿಕೊಂಡು ಅಂದಿನ ನ್ಯಾಯಾಂಗ ಸದಸ್ಯರೋರ್ವರು ಸರ್ಕಾರ ಆಕ್ಷೇಪಣೆ ಸಲ್ಲಿಸದೇ ಇದ್ದರೂ ಈ ಪ್ರಕರಣದಲ್ಲಿ ವಿಶ್ವನಾಥ ಪಿ ಹಿರೇಮಠ ಅವರಿಗೆ ಗ್ರೂಪ್‌ ಎ ಹುದ್ದೆಯನ್ನು ನೀಡಲು ತೀರ್ಪು ನೀಡಿದ್ದರು. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೂಡ ಒಬ್ಬ ಪ್ರತಿವಾದಿಯಾಗಿದ್ದರೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮೇಲ್ಮನವಿ ಸಲ್ಲಿಸಿರಲಿಲ್ಲ.

2017ರಲ್ಲಿ ಕೆಎಟಿ ನೀಡಿದ್ದ ತೀರ್ಪು 3 ವರ್ಷಗಳಾದರೂ ಅನುಷ್ಠಾನಕ್ಕೆ ಬಂದಿರಲಿಲ್ಲ. ಅಲ್ಲದೆ ಸರ್ಕಾರವೂ ಮೇಲ್ಮನವಿಯನ್ನೂ ಸಲ್ಲಿಸಿರಲಿಲ್ಲ. ಈ ಮಧ್ಯೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿದ್ದಂತೆ ವಿಶ್ವನಾಥ ಹಿರೇಮಠ ಅವರು 2019ರಲ್ಲಿ ಸರ್ಕಾರದ ವಿರುದ್ಧ ಕರ್ನಾಟಕ ನ್ಯಾಯ ಮಂಡಳಿಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ(104/2019) ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಬಾಕಿ ಇದೆ. ಇದರ ಮಧ್ಯೆಯೇ ರಾಜ್ಯ ಸರ್ಕಾರ ಇವರಿಗೆ ಗ್ರೂಪ್‌ ಎ ಹುದ್ದೆಯನ್ನು ಕರುಣಿಸಿದ್ದು ಸಂಶಯಗಳಿಗೆ ಕಾರಣವಾಗಿತ್ತು.

ಅಲ್ಲದೆ ಇದೇ ಪ್ರಕರಣದಲ್ಲಿ ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರು ರಾಜ್ಯ ಸರ್ಕಾರವೇ ಹೊರಡಿಸಿರುವ ರೋಸ್ಟರ್‌ ಬಿಂದುವಿನ ಆದೇಶ ಮತ್ತು ಸುಪ್ರೀಂ ಕೋರ್ಟ್ ಕಾಲಕಾಲಕ್ಕೆ ನೀಡಿರುವ ಆದೇಶಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದರು.
ಗ್ರೂಪ್‌ ಎ ಹುದ್ದೆಯನ್ನು ಕರುಣಿಸಿರುವ ರಾಜ್ಯ ಸರ್ಕಾರ, ಕೆಪಿಎಸ್‌ಸಿಯ ನೇಮಕಾತಿ ಅಧಿಸೂಚನೆ 2004ರ ನವೆಂಬರ್‌ 4ರ ಪ್ರಕಾರ ಕೆಎಎಸ್‌(ಕಿರಿಯ ಶ್ರೇಣಿ) ಹುದ್ದೆಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಅನ್ವಯವಾಗಿರುವ ಎಲ್ಲಾ ಸೌಲಭ್ಯಗಳನ್ನು ಅನ್ವಯಿಸಿ ಗ್ರೂಪ್‌ ಎ ಹುದ್ದೆಯನ್ನು ಕರುಣಿಸಿತ್ತು.

1998, 99 ಹಾಗೂ 2004ನೇ ಸಾಲಿನಲ್ಲಿ ಒಟ್ಟು 60 ಕೆಎಎಸ್‌ ಸಹಾಯಕ ಆಯುಕ್ತರ ಹುದ್ದೆಗಳು ಲಭ್ಯವಿದ್ದವು. ಇದರಲ್ಲಿ ಸಂಖ್ಯಾತಿರಿಕ್ತ ಹುದ್ದೆಯನ್ನು ಸೃಜಿಸಲಾಗಿತ್ತು. ಆದರೆ ವಿಶ್ವನಾಥ ಪಿ ಹಿರೇಮಠ ಅವರು ಈ ಹುದ್ದೆಯನ್ನು ಪಡೆಯಲು ರೋಸ್ಟರ್‌ ಬಿಂದುವಾಗಲಿ, ಅರ್ಹತೆಯನ್ನಾಗಲಿ ಹೊಂದಿರಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.

the fil favicon

SUPPORT THE FILE

Latest News

Related Posts