ಸಿಸಿಟಿವಿ ಟೆಂಡರ್‌ ಲೋಪ ಮುಚ್ಚಿಟ್ಟು ದಿಕ್ಕು ತಪ್ಪಿಸಿದ ಇಲಾಖೆ; ನಿಂಬಾಳ್ಕರ್‌ ಪತ್ರ ಸೋರಿಕೆ?

ಬೆಂಗಳೂರು; ಸಚಿವ ಸಂಪುಟವನ್ನು ಬದಿಗಿರಿಸಿ ನಿರ್ಭಯ ಅನುದಾನದಡಿಯಲ್ಲಿ 667 ಕೋಟಿ ರು.ಮೊತ್ತದಲ್ಲಿ ಸಿಸಿಟಿವಿ ಅಳವಡಿಸಲು ಮರು ಟೆಂಡರ್‌ ಕರೆಯಲು ಮುಂದಾಗಿದ್ದನ್ನು ‘ದಿ ಫೈಲ್‌’ ಹೊರಗೆಡವಿದ 1 ತಿಂಗಳ ನಂತರ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಟೆಂಡರ್‌ ಪ್ರಕ್ರಿಯೆಯಲ್ಲಿ ಕಂಡು ಬಂದಿದೆ ಎನ್ನಲಾಗಿರುವ ಹಲವು ಲೋಪಗಳನ್ನು ಮರೆಮಾಚಿಸಲೆತ್ನಿಸಿರುವ ಪೊಲೀಸ್‌ ಇಲಾಖೆಯ ಉನ್ನತ ಅಧಿಕಾರಿಗಳ ಗುಂಪೊಂದು ಸರ್ಕಾರವನ್ನು ದಿಕ್ಕು ತಪ್ಪಿಸಲೆತ್ನಿಸಿದೆ.

ಸಿಸಿಟಿವಿ ಅಳವಡಿಸುವ ಟೆಂಡರ್‌ ಪ್ರಕ್ರಿಯೆಯನ್ನು ಕ್ರಮಬದ್ಧವಾಗಿಸಿ ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಮುಂದಾಗಿದ್ದ ಗೃಹ ಇಲಾಖೆಯ ಉನ್ನತ ಅಧಿಕಾರಿಯೊಬ್ಬರನ್ನು ಗುರಿಯಾಗಿಸಿಕೊಂಡಂತಿರುವ ಗುಂಪೊಂದು ಮುಖ್ಯ ಕಾರ್ಯದರ್ಶಿಯನ್ನೇ ದಾರಿ ತಪ್ಪಿಸಲು ಹೊರಟಿದೆ.

ಇದರ ಭಾಗವಾಗಿಯೇ ಮುಖ್ಯ ಕಾರ್ಯದರ್ಶಿಗೆ ಹೇಮಂತ್‌ ನಿಂಬಾಳ್ಕರ್‌ ಅವರು ಬರೆದಿದ್ದಾರೆ ಎನ್ನಲಾಗಿರುವ ಪತ್ರವೊಂದು ಸೋರಿಕೆಯಾಗಿದೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ. ಗೃಹ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಕೋರಲಾಗಿದೆ. ಆದರೆ ಈ ಪತ್ರಕ್ಕೆ ಹೇಮಂತ್‌ ನಿಂಬಾಳ್ಕರ್‌ ಅವರ ಸಹಿ ಇಲ್ಲ. ಈ ಪತ್ರವನ್ನು ನಿಂಬಾಳ್ಕರ್‌ ಅವರೇ ಬರೆದಿದ್ದಾರೆಯೇ ಎಂಬ ಬಗ್ಗೆ ‘ದಿ ಫೈಲ್‌’ ಖಚಿತಪಡಿಸಿಕೊಂಡಿಲ್ಲ. ಸೋರಿಕೆಯಾಗಿರುವ ಈ ಪತ್ರ ಪೊಲೀಸ್‌ ಇಲಾಖೆಯಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

ಸೋರಿಕೆಯಾಗಿರುವ ಪತ್ರದಲ್ಲೇನಿದೆ?

ಟೆಂಡರ್‌ ದಾಖಲಾತಿಗಳನ್ನು ಸಿದ್ಧಪಡಿಸಲು ಹೊಣೆಗಾರಿಕೆ ಹೊತ್ತುಕೊಂಡಿರುವ ಅರ್ನಸ್ಟ್‌ ಯಂಗ್‌ ಸಮಾಲೋಚಕ ಕಂಪನಿಯ ಪಾಲುದಾರ ಅಕ್ಷಯ್‌ ಎಂಬುವರಿಗೆ ಕರ್ನಾಟಕದ ಗೃಹ ಕಾರ್ಯದರ್ಶಿ ಹೆಸರಿನಲ್ಲಿ ಕರೆ ಮಾಡಿದವರೊಬ್ಬರು ಟೆಂಡರ್ ಪ್ರಕ್ರಿಯೆಯ ದಾಖಲೆಗಳನ್ನು ತಮಗೆ ಕಳಿಸಬೇಕು ಎಂದು ಸೂಚಿಸಿದ್ದಾರೆ. ಈ ಕುರಿತು ಪಾಲುದಾರ ಅಕ್ಷಯ್‌ ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ಇ-ಮೈಲ್‌ ಮೂಲಕ ದೂರು ನೀಡಿದ್ದಾರೆ. ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಿರುವ ಬಗ್ಗೆ ತನಿಖೆ ಮಾಡಿ ಕ್ರಮ ಜರುಗಿಸಬೇಕು ಎಂದು ನಿಂಬಾಳ್ಕರ್‌ ಅವರು ಮುಖ್ಯ ಕಾರ್ಯದರ್ಶಿಗೆ ಕೋರಿದ್ದಾರೆ.

ಸಿಸಿಟಿವಿ ಅಳವಡಿಸುವ ಯೋಜನೆಗೆ ಟೆಂಡರ್‌ ಕರೆಯಲು ಹೊರಟಿದ್ದನ್ನು ‘ದಿ ಫೈಲ್‌’ ನವೆಂಬರ್‌ 3ರಂದು ವರದಿ ಪ್ರಕಟಿಸಿತ್ತು.

ನಿರ್ಭಯಾ ಅನುದಾನದ ಸಿಸಿಟಿವಿ; ಸಚಿವ ಸಂಪುಟ ಬದಿಗಿರಿಸಿ 667 ಕೋಟಿ ಮರು ಟೆಂಡರ್‌?

ಪ್ರಕರಣ ಹಿನ್ನೆಲೆ

ಬೆಂಗಳೂರು ನಗರದಲ್ಲಿ ನಿರ್ಭಯ ಯೋಜನೆಯಡಿ ಸೇಫ್‌ ಸಿಟಿ ಪ್ರಾಜೆಕ್ಟ್‌ನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವು 667.00 ಕೋಟಿ ರು.ಗೆ ಮಂಜೂರಾತಿ ನೀಡಿತ್ತು. ಇದರಲ್ಲಿ ಕೇಂದ್ರದ ಪಾಲಿನ 167.26 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ 111.56 ಕೋಟಿ ಒಟ್ಟು 278.76 ಕೋಟಿ ರು. ಅನುದಾಕ್ಕೆ ಮಂಜೂರಾತಿ ದೊರೆತಿದೆ.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಸಭೆ ನಡೆದಿತ್ತು. ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲು 2019ರ ಸೆಪ್ಟಂಬರ್‌ 7ರಂದು ಟೆಂಡರ್‌ ಆಹ್ವಾನ ಸಮಿತಿ, ಟೆಂಡರ್‌ ಪರಿಶೀಲನಾ ಸಮಿತಿ ಮತ್ತು ಅಂಗೀಕಾರ ಸಮಿತಿಯನ್ನು ಸರ್ಕಾರ ರಚಿಸಿತ್ತು. ಈ ಪೈಕಿ ಟೆಂಡರ್‌ ಆಹ್ವಾನ ಮತ್ತು ಪರಿಶೀಲನಾ ಸಮಿತಿಗೆ ಹೆಚ್ಚುವರಿ ಪೊಲೀಸ್‌ ಆಯುಕ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು ಎಂಬುದು ತಿಳಿದು ಬಂದಿದೆ.

ಪ್ರಧಾನಿ ಕಚೇರಿ ಮೆಟ್ಟಿಲೇರಿತ್ತು ಟೆಂಡರ್‌ ಪ್ರಕರಣ

ಈ ಯೋಜನೆಗೆ ಆರಂಭದಲ್ಲಿ ಪೊಲೀಸ್‌ ಇಲಾಖೆ ಕರೆದಿದ್ದ ಟೆಂಡರ್‌ ಪ್ರಕ್ರಿಯೆ ಮತ್ತು ಕಂಪನಿಯನ್ನು ಅಯ್ಕೆ ಮಾಡಿದ್ದ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂದು ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಧಾನಿ ಕಚೇರಿಗೆ 2020ರ ಜೂನ್‌ 29ರಂದು ದೂರು ಸಲ್ಲಿಸಿತ್ತು. ಟೆಂಡರ್‌ನಲ್ಲಿ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌, ಲಾರ್ಸನ್‌ ಅಂಡ್‌ ಟೋಬ್ರೋ (ಎಲ್‌ ಅಂಡ್‌ ಟಿ), ಮಾಟ್ರಿಕ್ಸ್‌ ಸೆಕ್ಯುರಿಟಿ ಅಂಡ್‌ ಸರ್ವೇಲೆಯನ್ಸ್‌ ಪ್ರೈವೈಟ್‌ ಲಿಮಿಟೆಡ್‌, ಎನ್‌ಸಿಸಿ ಲಿಮಿಟೆಡ್‌ ಭಾಗವಹಿಸಿದ್ದವು.

ಹಿತಾಸಕ್ತಿ ಸಂಘರ್ಷ ಆರೋಪ

ಟೆಂಡರ್‌ನಲ್ಲಿ ಭಾಗವಹಿಸಿದ್ದ ಮ್ಯಾಟ್ರಿಕ್ಸ್‌ ಮತ್ತು ಎನ್‌ಸಿಸಿ ನಿರ್ದೇಶಕರೊಬ್ಬರು ಎರಡೂ ಕಂಪನಿಯಲ್ಲಿ ಶೇ.5ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಷೇರು ಹೊಂದಿದ್ದರು. ಹೀಗಾಗಿ ಎರಡೂ ಕಂಪನಿಗಳಿಗೆ ಅವಕಾಶಕೊಟ್ಟಲ್ಲಿ ಇದು ಹಿತಾಸಕ್ತಿ ಸಂಘರ್ಷವಾಗಲಿದೆ. ಹಾಗೆಯೇ ಆರ್‌ಎಫ್‌ಪಿ ಷರತ್ತುಗಳನ್ನು ನೇರವಾಗಿ ಉಲ್ಲಂಘಿಸಿದೆ ಎಂದು ಬಿಇಎಲ್‌ ಕಂಪನಿ ಪ್ರಧಾನಿಗೆ ಸಲ್ಲಿಸಿದ್ದ ದೂರಿನಲ್ಲಿ ವಿವರಿಸಿತ್ತು ಎಂಬುದು ತಿಳಿದು ಬಂದಿದೆ.

ಅನರ್ಹಗೊಂಡಿದ್ದ ಎನ್‌ಸಿಸಿ

ಆರ್‌ಎಫ್‌ಪಿ ಪ್ರಕಾರ ದಾಖಲೆಗಳನ್ನು ನೀಡದ ಕಾರಣ ಟೆಂಡರ್‌ ಸಮಿತಿಯು ಎನ್‌ಸಿಸಿ ಲಿಮಿಟೆಡ್‌ನ್ನು ಅನರ್ಹಗೊಳಿಸಿತ್ತು. ಹೀಗಾಗಿ ಮ್ಯಾಟ್ರಿಕ್ಸ್‌ ಕಂಪನಿಯನ್ನು ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು ಎಂಬುದು ದೂರಿನಿಂದ ಗೊತ್ತಾಗಿದೆ.

ಚೀನಾ ಉತ್ಪನ್ನ ನಮೂದಿಸಿದ್ದ ಮ್ಯಾಟ್ರಿಕ್ಸ್‌

ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ಪಡೆದುಕೊಂಡಿದ್ದ ಮ್ಯಾಟ್ರಿಕ್ಸ್‌ ಕಂಪನಿಯು ಚೀನಾ ತಯಾರಿಸಿರುವ ಕ್ಯಾಮರಾ, ಸರ್ವರ್‌, ಸಂಗ್ರಹಣಾ ಕೋಶ ಉಪಕರಣಗಳ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ನಮೂದಿಸಿತ್ತು. ಟೆಂಡರ್‌ ಮೌಲ್ಯಮಾಪನ ಸಮಿತಿ ಮುಂದೆ ಇದೇ ಉಪಕರಣಗಳ ಮಾದರಿಯನ್ನು ಪ್ರದರ್ಶಿಸಿತ್ತು.

ಚೀನಾ ತಯಾರಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಬಳಸಿದಲ್ಲಿ ಸಾರ್ವಜನಿಕ ಭದ್ರತೆ, ಸುರಕ್ಷತೆಗೆ ಧಕ್ಕೆ ಆಗಲಿದೆ ಎಂದು ದೂರಿದ್ದ ಬಿಇಎಲ್‌, ನಿವಾಸಿಗಳ ದತ್ತಾಂಶವೂ ಸೋರಿಕೆಯಾಗಲಿದೆ. ಹಾಗೆಯೇ ಖಾಸಗಿತನದ ಮಹತ್ವ ಕಳೆದುಕೊಳ್ಳಲಿದೆ. ಹೀಗಾಗಿ ಟೆಂಡರ್‌ ಪ್ರಕ್ರಿಯೆಯಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸುವ ಮೂಲಕ ಟೆಂಡರ್‌ ಪ್ರಾಧಿಕಾರವು ಮ್ಯಾಟ್ರಿಕ್ಸ್‌ ಕಂಪನಿಯನ್ನು ಅನರ್ಹಗೊಳಿಸಲು ಟೆಂಡರ್‌ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು ಎಂದು ದೂರಿನಲ್ಲಿ ಕೋರಿತ್ತು.

ಆದರೆ ಇದನ್ನು ಮರೆಮಾಚಿದ್ದ ಅಧಿಕಾರಿಗಳ ಗುಂಪೊಂದು 667 ಕೋಟಿ ಮೊತ್ತದ ಟೆಂಡರ್‌ ಪ್ರಕ್ರಿಯೆಯನ್ನು ಸಚಿವ ಸಂಪುಟದ ಗಮನಕ್ಕೂ ತಂದಿರಲಿಲ್ಲ ಎನ್ನಲಾಗಿದೆ. ಇಡೀ ಟೆಂಡರ್‌ ಪ್ರಕ್ರಿಯೆಯನ್ನು ಹಿರಿಯ ಐಪಿಎಸ್‌ ಅಧಿಕಾರಿಗಳ ಹಂತದಲ್ಲೇ ನಡೆಸಲು ಪೂರ್ಣಗೊಳಿಸಲು ಮುಂದಾಗಿತ್ತು.

ಈ ಹಿಂದೆ ಇದೇ ಯೋಜನೆಗೆ ಕರೆದಿದ್ದ ಟೆಂಡರ್‌ ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು ಪ್ರಧಾನಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ನೀಡಿದ್ದರಿಂದ ಮರು ಟೆಂಡರ್‌ ಪ್ರಕ್ರಿಯೆ ನಡೆದಿದೆ. ಯೋಜನೆ ಮೊತ್ತ 10 ಕೋಟಿ ರು. ಮೀರಿರುವುದರಿಂದ ಸಚಿವ ಸಂಪುಟಕ್ಕೆ ಟೆಂಡರ್‌ ಪ್ರಕ್ರಿಯೆಗಳನ್ನು ಮಂಡಿಸಬೇಕು. ಈ ಕುರಿತು ರಾಜ್ಯ ಸರ್ಕಾರವು ಈ ಹಿಂದೆ ಆದೇಶ ಹೊರಡಿಸಿತ್ತು.

ಆದರೆ ಟೆಂಡರ್‌ ಆಹ್ವಾನ ಸಮಿತಿಯ ಅಧ್ಯಕ್ಷ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಅವರು ಸಚಿವ ಸಂಪುಟಕ್ಕೆ ಮಂಡಿಸದೆಯೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಕ್ಕೂ ಗುರಿಯಾಗಿದ್ದರು.

ಅಲ್ಲದೆ ಐಎಂಎ ವಂಚನೆ ಪ್ರಕರಣದಲ್ಲಿ ಗುರುತರ ಆರೋಪ ಮತ್ತು ಸಿಬಿಐ ವಿಚಾರಣೆಗೊಳಪಟ್ಟಿರುವ ಹೇಮಂತ್‌ ನಿಂಬಾಳ್ಕರ್‌ ಅವರನ್ನೇ ಟೆಂಡರ್‌ ಆಹ್ವಾನ ಮತ್ತು ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ಮುಂದುವರೆಸಿರುವುದಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳ ವಲಯದಲ್ಲಿಯೂ ಅಸಮಾಧಾನಕ್ಕೆ ಕಾರಣವಾಗಿತ್ತು.

the fil favicon

SUPPORT THE FILE

Latest News

Related Posts