ಲಂಚ; ಬಿ ಸಿ ಪಾಟೀಲ್‌ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ

ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ ಕೇವಲ ಆರೋಪ ಕೇಳಿ ಬಂದರೂ ತಲೆದಂಡ ಮಾಡುವ ಬಿಜೆಪಿ ಸರ್ಕಾರ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಗಳಿದ್ದರೂ ಮೌನ ವಹಿಸುವ ಮೂಲಕ ಮನುವಾದಿ ಧೋರಣೆಯನ್ನು ಪ್ರದರ್ಶಿಸಿದೆ ಎಂಬ ಅಭಿಪ್ರಾಯಗಳು ಇದೀಗ ಮುನ್ನೆಲೆಗೆ ಬಂದಿವೆ.

ಈ ಕುರಿತು ದನಿ ಎತ್ತಿರುವ ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಸಚಿವ ಡಾ ಎಚ್‌ ಸಿ ಮಹದೇವಪ್ಪ ಅವರು ಮಾಜಿ ಸಚಿವ ಎಚ್‌ ನಾಗೇಶ್‌ ಮತ್ತು ಬಿ ಸಿ ಪಾಟೀಲ್‌ ಅವರ ಹೆಸರನ್ನು ಪ್ರಸ್ತಾಪಿಸದೆಯೇ ಲಂಚಕ್ಕಾಗಿ ಬೇಡಿಕೆ ಇರಿಸಿದ್ದ ಪ್ರಕರಣವನ್ನು ಚರ್ಚೆಯ ಅಂಗಳಕ್ಕೆ ತಂದು ನಿಲ್ಲಿಸಿದ್ದಾರೆ.

ಸಚಿವ ಬಿ ಸಿ ಪಾಟೀಲ್‌ ಅವರು ಹಣಕ್ಕಾಗಿ ಬೇಡಿಕೆ ಇರಿಸಿರುವ ಬಗ್ಗೆ ಸಾಕ್ಷ್ಯಗಳಿದ್ದರೂ ರಾಜೀನಾಮೆ ಪಡೆಯದ ಕುರಿತು ‘ದಿ ಫೈಲ್‌’ ಮಾಡಿದ್ದ ವರದಿಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಚ್‌ ಸಿ ಮಹದೇವಪ್ಪ ಅವರು ಈ ಕುರಿತು ಟ್ವೀಟ್‌ ಕೂಡ ಮಾಡಿದ್ದಾರೆ.

‘ದಲಿತರ ಮೇಲೆ ಕೇವಲ ಆರೋಪ ಬಂದರೂ ಅವರ ತಲೆದಂಡ ಮಾಡುವ ಮನುವಾದಿ ಬಿಜೆಪಿ ಸರ್ಕಾರ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಾಕ್ಷಿಗಳಿದ್ದರೂ ಅಂತವರ ಬಗ್ಗೆ ಮೌನ ವಹಿಸುತ್ತದೆ. ಮುಖ್ಯಮಂತ್ರಿಗಳೇ ಭ್ರಷ್ಟಾಚಾರವನ್ನು ಜಾತಿ ನೋಡಿ ಅಳೆಯುವ ನಿಮ್ಮ ದಲಿತ ವಿರೋಧಿ ನೀತಿಯನ್ನು ಬದಿಗಿಟ್ಟು ನ್ಯಾಯಯುತವಾಗಿ ಕ್ರಮ ವಹಿಸಿ ತನಿಖೆಗೆ ಸೂಚನೆ ನೀಡಿ,’ ಎಂದು ಟ್ವೀಟ್‌ನಲ್ಲಿ ಆಗ್ರಹಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಸಚಿವ ಬಿ ಸಿ ಪಾಟೀಲ್ ಅವರ ಹೆಸರು ಬಳಸಿ ಅವರ ಆಪ್ತಕೂಟ ಕೃಷಿ ಇಲಾಖೆ ಅಧಿಕಾರಿ, ನೌಕರರುಗಳಿಂದ ಲಕ್ಷಗಟ್ಟಲೇ ಸುಲಿಗೆ ಮಾಡಿದೆ ಎಂದು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೇ ಇಲಾಖೆಯ ಗ್ರೂಪ್‌ ಎ , ಗ್ರೂಪ್‌ ಬಿ ಮತ್ತು ಗ್ರೂಪ್‌ ಸಿ ವರ್ಗದ ಅಧಿಕಾರಿ ನೌಕರರ ವರ್ಗಾವಣೆಯಲ್ಲಿಯೂ ಲಂಚಕ್ಕಾಗಿ ಬೇಡಿಕೆ ಇರಿಸಲಾಗಿತ್ತು ಎಂಬ ಮಾಹಿತಿಯನ್ನು ಸ್ವತಃ ಕೆಲ ಅಧಿಕಾರಿ, ನೌಕರರುಗಳೇ ಈ ಕುರಿತು ಒಂದಷ್ಟು ಅಧಿಕಾರಿಗಳು ಲಿಖಿತವಾಗಿ ಮುಖ್ಯಮಂತ್ರಿಗೆ 2020ರ ಜುಲೈ 1ರಂದು ಪತ್ರ ಮುಖೇನ ಗಮನಕ್ಕೆ ತಂದಿದ್ದರು.

‘2020-21ನೇ ಸಾಲಿನ ಗ್ರೂಪ್‌ ಎ, ಗ್ರೂಪ್‌ ಮತ್ತು ಗ್ರೂಪ್‌ ಸಿ ವರ್ಗದ ಅಧಿಕಾರಿ/ನೌಕರರಿಗೆ ಮಾತ್ರ ಅನ್ವಯವಾಗುವಂತೆ 2020ರ ಜುಲೈ 10ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರುಗಳಿಗೆ ಅಧಿಕಾರಿ ಪ್ರತ್ಯಾಯೋಜಿಸಲಾಗಿದೆ. ಈ ಆದೇಶದ ಹಿನ್ನೆಲೆಯಲ್ಲಿ ಕೃಷಿ ಸಚಿವರಿಗೆ ಹಣ ಸಂದಾಯ ಮಾಡಬೇಕು ಎಂಬ ಸಬೂಬು ಹೇಳಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿ/ನೌಕರರು ವರ್ಗಾವಣೆ ಪಡೆಯಬೇಕಾದರೆ ಅಥವಾ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳಲ್ಲಿಯೇ ಮುಂದುವರೆಯಬೇಕಾದರೆ ಲಕ್ಷ ರು.ಗಳನ್ನು ಕಡ್ಡಾಯವಾಗಿ ನೀಡಬೇಕು,’ ಎಂದು ಆದೇಶ ನೀಡಿರುತ್ತಾರೆ ಎಂದು ಪತ್ರದಲ್ಲಿ ವಿವರಿಸಿದ್ದರು.

 

ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್‌ 50 ಲಕ್ಷ, ಅಪರ ನಿರ್ದೇಶಕರುಗಳು 50 ಲಕ್ಷ, ಬೆಳಗಾವಿ ಜಂಟಿ ನಿರ್ದೇಶಕರು (ಜಿಲಾನಿ ಮತ್ತು ಪಾಟೀಲ್‌) 2 ಕೋಟಿ, ಕಲ್ಬುರ್ಗಿ ಜಂಟಿ ನಿರ್ದೇಶಕ (ಸೂಗೂರು) 1 ಕೋಟಿ, ರೂಪಾದೇವಿ 75 ಲಕ್ಷ, ಅಪರ ನಿರ್ದೇಶಕರು( ದಿವಾಕರ) 1 ಕೋಟಿ, ಚಿಕ್ಕಬಳ್ಳಾಪುರ ಜಂಟಿ ನಿರ್ದೇಶಕರು (ರೂಪ) 50 ಲಕ್ಷ, ದಾವಣಗೆರೆ ಜಂಟಿ ನಿರ್ದೇಶಕರು 50 ಲಕ್ಷ, ಜಂಟಿ ನಿರ್ದೇಶಕರು ಹಾವೇರಿ (ಮಂಜುನಾಥ್‌) 1 ಕೋಟಿ ನೀಡಿದ್ದಾರೆ ಎಂಬ ಸಂಗತಿ ಕೃಷಿ ಇಲಾಖೆ ಸಿಬ್ಬಂದಿ ಮುಖ್ಯ ಕಾರ್ಯದರ್ಶಿಗೆ ಪಟ್ಟಿ ಸಮೇತ ಸಲ್ಲಿಸಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಆಪ್ತ ಕಾರ್ಯದರ್ಶಿ ಶಿವಕುಮಾರ್‌, ದಯಾನಂದ್‌ ಮತ್ತು ಮಂಜುನಾಥ್‌ ಎಂಬುವರು ಇಲಾಖೆಯ ಅಧಿಕಾರಿ, ನೌಕರರುಗಳಿಗೆ ವಾಟ್ಸಾಪ್‌ ಕರೆ ಮಾಡುವ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿದ್ದ ನೌಕರರು, ಕೃಷಿ ಯಾಂತ್ರೀಕರಣ, ಕೃಷಿ ಪರಿಕರ, ಕೀಟನಾಶಕಗಳು, ಸ್ಪ್ರಿಂಕಲ್‌/ಡ್ರಿಪ್‌ಗಳ ಅನುದಾನ ನೀಡುವುದರಲ್ಲಿಯೂ ಲೂಟಿ ಮಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

‘ನಾವು ಕೆಳಮಟ್ಟದ ಇಲಾಖೆಯ ಸೇವಕರಾಗಿ ಕೆಲಸ ನಿರ್ವಹಿಸುತ್ತಿದ್ದು ನಮ್ಮ ಸಂಬಳದಲ್ಲಿ ನಮ್ಮ ಸಂಸಾರ ನಡೆಸುವುದೇ ಕಷ್ಟಕರವಾಗಿದೆ. ನಮಗೆ ಏನಾದರೂ ಮಾಡಿದರೆ ಹೇಗೆ ಎಂದು ಹಣ ಹೊಂದಿಸುತ್ತಿದ್ದೇವೆ. ಇದು ಹೀಗೆ ಮುಂದುವರೆದರೆ ರೈತರ ಆತ್ಮಹತ್ಯೆ ಬದಲು ರೈತ ಇಲಾಖೆ ಅಧಿಕಾರಿಗಳು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಸಮಯ ದೂರವಿಲ್ಲ. ಇದರಿಂದ ಮಾನಸಿಕ ಹಿಂಸೆ ಅನುಭವಿಸುವುದಕ್ಕಿಂತ ಅದೇ ಮೇಲು,’ ಎಂದು ಅಧಿಕಾರಿ, ನೌಕರರು ಅಳಲು ವ್ಯಕ್ತಪಡಿಸಿರುವುದು ಪತ್ರದಿಂದ ಗೊತ್ತಾಗಿದೆ.

‘ಅನುದಾನ ಯಾರಿಗೆ ಕೊಡಬೇಕು ಎಂದು ಏಜೆಂಟರುಗಳು ಮಂತ್ರಿಗಳ ಕಚೇರಿ, ವಸೂಲಿಗಾಗಿ ಪ್ರತ್ಯೇಕ ಕಚೇರಿ ತೆರೆದು ಯಾರು ಹೆಚ್ಚಿನ ಕಮಿಷನ್‌ ನೀಡುತ್ತಾರೋ ಉಪಕರಣಗಳು ಗುಣಮಟ್ಟದಿಂದ ಕೂಡಿಲ್ಲದಿದ್ದರೂ ಆಪ್ತ ಕಾರ್ಯದರ್ಶಿ, ಖಾಸಗಿ ಏಜೆಂಟರುಗಳು ಸೂಚಿಸುವ ವ್ಯಕ್ತಿಗಳಿಗೆ ಜಂಟಿ ನಿರ್ದೇಶಕರುಗಳು ಇಂಡೆಂಟ್‌ಗಳನ್ನು ನೀಡಬೇಕು. ಎಲ್ಲದಕ್ಕೂ ಮಂತ್ರಿಗಳ ಹೆಸರನ್ನು ಹೇಳಲಾಗುತ್ತಿದೆ,’ ಎಂದು ದೂರಿನಲ್ಲಿ ಆರೋಪಿಸಿದ್ದರು.

ಅಬಕಾರಿ ಸಚಿವರಾಗಿದ್ದ ಎಚ್‌ ನಾಗೇಶ್‌ ಅವರು ಪರಿಶಿಷ್ಟ ಜಾತಿಯವರಾಗಿದ್ದ ಕಾರಣಕ್ಕೆ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಆದರೆ ಲಿಂಗಾಯತ ಸಮುದಾಯಕ್ಕೆ ಸೇರಿರುವ ಬಿ ಸಿ ಪಾಟೀಲ್‌ ಅವರ ವಿರುದ್ಧವೂ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪಗಳಿದ್ದರೂ ರಾಜೀನಾಮೆ ಪಡೆದಿಲ್ಲವೇಕೆ, ಅವರಿಂದ ರಾಜೀನಾಮೆ ಪಡೆಯಲು ಯಡಿಯೂರಪ್ಪ ಅವರಿಗೆ ಧೈರ್ಯವಿಲ್ಲವೇ ಎಂಬ ಪ್ರಶ್ನೆಗಳು ಕೃಷಿ ಇಲಾಖೆಯಲ್ಲಿ ಕೇಳಿ ಬಂದಿದ್ದವು.

the fil favicon

SUPPORT THE FILE

Latest News

Related Posts