Monday | July 20, 2026 |

ಬಿಎಸ್‌ವೈ, ನಿರಾಣಿ ವಿರುದ್ಧದ ಪ್ರಕರಣ ಮುಕ್ತಾಯ; ಕಡತ ನೀಡಲು ಎಸಿಬಿ ನಿರಾಕರಣೆ

ಬೆಂಗಳೂರು; ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ತನಿಖೆ ಪ್ರಕ್ರಿಯೆ ಆರಂಭಿಸದೆಯೇ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಮುರುಗೇಶ್‌ ನಿರಾಣಿ ಮತ್ತು ನಿವೃತ್ತ ಐಎಎಸ್‌ ಅಧಿಕಾರಿ ವಿ ಪಿ ಬಳಿಗಾರ್‌ ಅವರನ್ನು ದೋಷಮುಕ್ತಗೊಳಿಸಿರುವ ಭ್ರಷ್ಟಾಚಾರ ನಿಗ್ರಹ ದಳವು ಈ ಸಂಬಂಧದ ಕಡತವನ್ನು ಆರ್‌ಟಿಐ ಅಡಿಯಲ್ಲಿ ದೂರುದಾರನಿಗೆ ನೀಡಲು ನಿರಾಕರಿಸಿದೆ.

ಕಡತವನ್ನು ಮಾಹಿತಿ ಹಕ್ಕು ಕಾಯ್ದೆ ಕಲಂ 8(1)(ಜಿ) ಅಡಿಯಲ್ಲಿ ನೀಡಲು ಅವಕಾಶವಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಕಡತವನ್ನು ಮುಚ್ಚಿಡಲು ಮುಂದಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ದೂರರ್ಜಿಯನ್ನು ಮುಕ್ತಾಯಗೊಳಿಸಿರುವ ಬಗ್ಗೆ ದೂರುದಾರನಿಗೇ ಅಧಿಕೃತವಾಗಿ ಹಿಂಬರಹ ನೀಡಿದ ನಂತರ ಮಾಹಿತಿಯನ್ನು ಬಹಿರಂಗಪಡಿಸದಿರಲು ಎಸಿಬಿ ಮೇಲೆ ಒತ್ತಡವಿದೆಯೇ ಎಂಬ ಪ್ರಶ್ನೆಗಳೂ ಕೇಳಿ ಬಂದಿವೆ.

ದಿನೇಶ್‌ ಕಲ್ಲಹಳ್ಳಿ ಅವರು ದಾಖಲಿಸಿದ್ದ ದೂರನ್ನು ಪರಿಶೀಲಿಸಿದ್ದ ಎಸಿಬಿ ಪೊಲೀಸರು ‘ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ಈ ಜಮೀನನ್ನು ಡಿ ನೋಟಿಫೈ ಮಾಡಿರುವುದು ಕಂಡು ಬರುವುದಿಲ್ಲ. ದೂರರ್ಜಿಯಲ್ಲಿನ ಆರೋಪಗಳು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿಲ್ಲ,’ ಎಂಬ ಕಾರಣವನ್ನು ಮುಂದೊಡ್ಡಿ ಅರ್ಜಿಯನ್ನು ಮುಕ್ತಾಯಗೊಳಿಸಿದ್ದಾರೆ. ಈ ಕುರಿತು ದೂರುದಾರನಿಗೆ 2020ರ ನವೆಂಬರ್‌ 24ರಂದು ಹಿಂಬರಹವನ್ನು ನೀಡಿ ದೂರರ್ಜಿಯನ್ನು ಎಸಿಬಿಯು ಮುಕ್ತಾಯಗೊಳಿಸಿತ್ತು. ಈ ಕುರಿತು ‘ದಿ ಫೈಲ್‌’ 2021ರ ಜನವರಿ 22ರಂದು ವರದಿ ಪ್ರಕಟಿಸಿತ್ತು.

ದೂರರ್ಜಿಯನ್ನು ಮುಕ್ತಾಯಗೊಳಿಸಿದ ನಂತರ ಸಂಬಂಧಿತ ಕಡತವನ್ನೂ ಮುಕ್ತಾಯಗೊಳಿಸಲಾಗಿರುತ್ತದೆ. ದೂರರ್ಜಿಗೆ ಸಂಬಂಧಿಸಿದಂತೆ ಕಡತ ಒದಗಿಸುವುದಕ್ಕೂ ಮಾಹಿತಿ ಹಕ್ಕು ಕಾಯ್ದೆಯ 8(1)(ಜಿ)ಯಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ ಒಂದಕ್ಕೊಂದು ಸಂಬಂಧವೇ ಇರದಿದ್ದರೂ ಅದನ್ನು ಮುಂದಿಟ್ಟುಕೊಂಡು ಕಡತವನ್ನು ನೀಡದಿರುವುದು ಹಲವು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

8(1)(ಜಿ)ಯಲ್ಲೇನಿದೆ?

ಯಾವ ಮಾಹಿತಿಯನ್ನು ಬಹಿರಂಗಪಡಿಸುವುದರಿಂದ ಯಾರೇ ವ್ಯಕ್ತಿಯ ಜೀವ ಅಥವಾ ದೈಹಿಕ ಸುರಕ್ಷತೆಗೆ ಅಪಾಯವುಂಟಾಗುತ್ತದೆಯೋ ಅಂತಹ ಮಾಹಿತಿ ಅಥವಾ ಕಾನೂನು ಜಾರಿಯ ಅಥವಾ ಬದ್ಧತೆಯ ಉದ್ದೇಶಗಳಿಗಾಗಿ ರಹಸ್ಯವಾಗಿ ನೀಡಿದ ಮಾಹಿತಿಯ ಅಥವಾ ಸಹಾಯದ ಮೂಲವನ್ನು ಗುರುತಿಸಬಹುದಾದಂತಹ ಮಾಹಿತಿಯನ್ನು ನೀಡಲು ಅವಕಾಶವಿಲ್ಲ. ಕಾಯ್ದೆಯ ಈ ಅಂಶಗಳಿಗೂ ದೂರರ್ಜಿಯನ್ನು ಮುಕ್ತಾಯಗೊಳಿಸಿರುವುದಕ್ಕೂ ಸಂಬಂಧವೇ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ.

ಪ್ರಕರಣದ ಹಿನ್ನೆಲೆ

ಅತ್ತಿಬೆಲೆ ಹೋಬಳಿಯ ಕಿತ್ತಿಗಾನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಕೋಟ್ಯಂತರ ರು. ಬೆಲೆ ಬಾಳುವ ಒಟ್ಟು 9 ಎಕರೆ 20 ಗುಂಟೆ ಜಮೀನನ್ನು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ಭೂ ಸ್ವಾಧೀನದಿಂದ ಅಕ್ರಮವಾಗಿ ಕೈ ಬಿಡಲಾಗಿತ್ತು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಎಂಬುವರು 2019ರ ಸೆ. 30ರಂದು ದಾಖಲೆ ಸಮೇತ ದೂರು ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಮುರುಗೇಶ್‌ ನಿರಾಣಿ ಮತ್ತು ಐಎಎಸ್‌ ಅಧಿಕಾರಿ ವಿ ಪಿ ಬಳಿಗಾರ್‌ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿತ್ತು. ಕ್ರಿಮಿನಲ್‌ ದುರ್ನಡತೆ ಸೆಕ್ಷನ್‌ 13(1)(ಡಿ) ಅಪರಾಧಿಕ ಒಳ ಸಂಚು 120(ಬಿ), ಐಪಿಸಿ 201, 202, 379 ,411, 420, 427, 447, 468, 471 ಮತ್ತು 409 ಸೆಕ್ಷನ್‌ಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಭೂ ಸ್ವಾಧೀನದಿಂದ ಕೈಬಿಟ್ಟಿರುವ ಜಾಗದಲ್ಲಿ ಖಾಸಗಿ ಬಡಾವಣೆ ಮತ್ತು ಅಪಾರ್ಟ್‌ಮೆಂಟ್‌ ನಿರ್ಮಾಣದ ಉದ್ದೇಶವಿತ್ತು. ಭೂ ಸ್ವಾಧೀನ ಪರಿಹಾರ ಹಣ ಪಡೆಯುವ ಬದಲಿಗೆ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ಜಾಗ ನೀಡಿದರೆ ಲಾಭ ಗಳಿಸಬಹುದು ಎಂಬ ಆರ್ಥಿಕ ಲೆಕ್ಕಾಚಾರವಿದೆ. ಭೂ ಮಾಲೀಕರ ಮನವಿಯನ್ನು ಪರಿಗಣಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಮುರುಗೇಶ್‌ ನಿರಾಣಿ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮವೆಸಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಎಂಬುವರು ದೂರಿದ್ದರು.

ಆನೇಕಲ್‌ ತಾಲೂಕಿನ ಅತ್ತಿಬೆಲೆ ಹೋಬಳಿ ಕಿತ್ತಿಗಾನಹಳ್ಳಿ ಗ್ರಾಮದ ಸರ್ವೆ ನಂಬರ್‌ 132, 133/2, 130/4, 133/1, 135/5ರಲ್ಲಿನ 9 ಎಕರೆ 20 ಗುಂಟೆ ಜಮೀನನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಎಐಡಿಬಿ)ಯು ಬೊಮ್ಮಸಂದ್ರ 4ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿತ್ತು.

ಕಿತ್ತಿಗಾನಹಳ್ಳಿಯ 9 ಎಕರೆ 20 ಗುಂಟೆ ಜಮೀನನ್ನು ಕೆಎಐಡಿಬಿಯು 1993ರ ಸೆ.19ರಂದು ಪ್ರಾಥಮಿಕ ಅಧಿಸೂಚನೆ ಮತ್ತು 1994 ಜುಲೈ 15ರಂದು ಅಂತಿಮ ಅಧಿಸೂಚನೆ, 1996ರ ಜುಲೈ 22ರಂದು ಕಲಂ 24(4) ಅಧಿಸೂಚನೆ ಹೊರಡಿಸಿತ್ತು. ಆದರೆ 14 ವರ್ಷಗಳ ಕಾಲ ಈ ಜಮೀನನ್ನು ಕೆಐಎಡಿಬಿಯು ತನ್ನ ವಶಕ್ಕೆ ಪಡೆದಿರಲಿಲ್ಲ. ಅಲ್ಲದೆ ಜಮೀನು ಅಭಿವೃದ್ಧಿಪಡಿಸಿ ಯಾವುದೇ ಸಂಸ್ಥೆಗಳಿಗೆ ಹಂಚಿಕೆ ಮಾಡುವ ಯಾವುದೇ ಪ್ರಕ್ರಿಯೆಯನ್ನೂ ನಿರ್ವಹಿಸಿರಲಿಲ್ಲ. ಹಾಗೆಯೇ 1998ರ ಡಿಸೆಂಬರ್‌ 15ರಂದು ನಡೆದಿದ್ದ 217ನೇ ಸಭೆಯಲ್ಲಿ ಜಮೀನನ್ನು ಭೂ ಮಾಲೀಕರ ಪರವಾಗಿ ರೀ ಕನ್ವೆ ಮಾಡಲು ನಿರ್ಣಯಿಸಲಾಗಿತ್ತು ಎಂಬುದು ಎಸಿಬಿ ನೀಡಿರುವ ಹಿಂಬರಹದಿಂದ ತಿಳಿದು ಬಂದಿದೆ.

ಭೂ ಮಾಲೀಕ ಪಿಳ್ಳಾರೆಡ್ಡಿ, ತಿಮ್ಮಾರೆಡ್ಡಿ ಮತ್ತು ಶಿವಕುಮಾರ್‌ ಎಂಬುವರು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು 2009ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಕೈಗಾರಿಕೆ ಸಚಿವರಾಗಿದ್ದ ಮುರುಗೇಶ್‌ ನಿರಾಣಿ ಅವರಿಗೆ ಮನವಿ ಮಾಡಿದ್ದರು. ಈ ಮನವಿಯನ್ನಾಧರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಂದೂ ಕಾರ್ಯದರ್ಶಿಯಾಗಿದ್ದ (ಪ್ರಸ್ತುತ ರಾಜಕೀಯ ಕಾರ್ಯದರ್ಶಿ) ಐಎಎಸ್‌ ಅಧಿಕಾರಿ ಎಂ ಲಕ್ಷ್ಮಿನಾರಾಯಣ ಅವರು ಮನವಿಗಳನ್ನಾಧರಿಸಿ ಕ್ರಮ ಕೈಗೊಳ್ಳಬೇಕೆಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ 2009ರ ಜೂನ್‌ 6ರಂದು ನಿರ್ದೇಶಿಸಿದ್ದರು.

ಈ ಜಮೀನನ್ನು ವ್ಯವಸಾಯೇತರ ಉದ್ದೇಶದ ಉಪಯೋಗಕ್ಕೆ ಅಂದಿನ ಜಿಲ್ಲಾಧಿಕಾರಿಯು ಭೂಪರಿವರ್ತನೆ ಆದೇಶ ಹೊರಡಿಸಿದ್ದರು. ಭೂ ಸ್ವಾಧೀನದಿಂದ ಕೈ ಬಿಡುವ ಸಂದರ್ಭದಲ್ಲಿ ಈ ಜಾಗದಲ್ಲಿ 120 ಮನೆಗಳು ನಿರ್ಮಾಣವಾಗಿದ್ದವು. 14 ವರ್ಷಗಳ ಹಿಂದೆಯೇ ಜಮೀನು ಸ್ವಾಧೀನಪಡಿಸಿಕೊಂಡಿದ್ದರೂ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಅಭಿವೃದ್ಧಿಪಡಿಸಿರಲಿಲ್ಲ ಎಂಬ ಮಾಹಿತಿ ಎಸಿಬಿ ನೀಡಿರುವ ಹಿಂಬರಹದಿಂದ ಗೊತ್ತಾಗಿದೆ.

Hot this week

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...
Please Scan to make Your Contribution

Topics

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

Related Articles

Popular Categories

error: Content is protected !!