ಸಹಭಾಗಿ ಪತ್ರಿಕೋದ್ಯಮ; ಈಶ್ವರಪ್ಪ ಪ್ರಕರಣದ ಕುರಿತು ‘ದಿ ಫೈಲ್‌’ ವರದಿ ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ 65 ಕೋಟಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳ ಸಚಿವಾಲಯವು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್‌ ಈಶ್ವರಪ್ಪ ಅವರ ಮೇಲೆ ಒತ್ತಡ ಹೇರಿತ್ತು ಎಂದು ‘ದಿ ಫೈಲ್‌’ ಒಂದು ತಿಂಗಳ ಮೊದಲೇ ಬಹಿರಂಗಪಡಿಸಿದ್ದ ಸಂಗತಿಯನ್ನು ಪ್ರಜಾವಾಣಿಯೂ ತನ್ನ ಮುಖಪುಟ ವರದಿಯಲ್ಲಿ ಪ್ರಕಟಿಸಿದೆ. ಈ ಮೂಲಕ ಸಹಭಾಗಿ ಪತ್ರಿಕೋದ್ಯಮವನ್ನು ಮುಂದುವರೆಸಿದೆ.

‘ಕ್ರಿಯಾ ಯೋಜನೆ ಇಲ್ಲದೆಯೇ ಬೆಂಗಳೂರು ನಗರ ಜಿಪಂಗೆ 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ’ ಎಂಬ ಶೀರ್ಷಿಕೆಯಡಿಯಲ್ಲಿ ‘ದಿ ಫೈಲ್‌’ ಫೆ.11ರಂದು ವರದಿ ಪ್ರಕಟಿಸಿತ್ತು. ಇದೀಗ ಪ್ರಜಾವಾಣಿಯೂ ಸಹ ‘ದಿ ಫೈಲ್‌’ ವರದಿಯಲ್ಲಿ ಉಲ್ಲೇಖಗೊಂಡ ಸಂಗತಿಯನ್ನೇ ಮುಂದುವರೆಸಿದೆಯಲ್ಲದೆ ‘ಸಚಿವ ಈಶ್ವರಪ್ಪ ಸಿಟ್ಟಿಗೆ 65 ಕೋಟಿ ಮೂಲ’ ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನೂ ಪ್ರಕಟಿಸಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಮರಿಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ನಿಕಟವರ್ತಿಗಳು ಎಂಬ ಒಂದೇ ಕಾರಣಕ್ಕೆ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿ ಮುತುವರ್ಜಿ ವಹಿಸುತ್ತಿದ್ದಾರೆ ಎಂದು ‘ದಿ ಫೈಲ್‌’ ವರದಿಯಲ್ಲಿ ಪ್ರಸ್ತಾಪಿಸಿತ್ತು.

ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ

ಕಾಮಗಾರಿಗೆ ಅನುಮೋದನೆ ದೊರೆತಿದೆಯಾದರೂ ಇದನ್ನು ತುಂಡು ಗುತ್ತಿಗೆ ಕೊಡಬೇಕೇ ಅಥವಾ ನೇರವಾಗಿ ಟೆಂಡರ್‌ ಕರೆಯಬೇಕೆ ಎಂಬ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯೂ ನಿರ್ಧರಿಸಿಲ್ಲ. ಕಾಮಗಾರಿ ನಡೆಸಲು ಟೆಂಡರ್‌ ಪ್ರಕ್ರಿಯೆ ನಡೆಯದೆಯೇ ಅಷ್ಟೊಂದು ಮೊತ್ತವನ್ನು ಏಕಾಏಕಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಹೇಳುತ್ತಿದೆ. ಆದರೂ ಮುಖ್ಯಮಂತ್ರಿಗಳ ಸಚಿವಾಲಯವು ಹಣ ಬಿಡುಗಡೆ ಸಂಬಂಧ ಒತ್ತಡವನ್ನು ಮುಂದುವರೆಸಿದೆ ಎಂದೂ ಬಹಿರಂಗಗೊಳಿಸಿತ್ತು.

ಇದೀಗ ಪ್ರಜಾವಾಣಿಯೂ ತನ್ನ ವರದಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಪ್ರಕರಣವನ್ನೇ ಉಲ್ಲೇಖಿಸಿದೆ. ತಮ್ಮ ಸಂಬಂಧಿಯೇ ಅಧ್ಯಕ್ಷರಾಗಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಗೆ ‘ತುಂಡು ಗುತ್ತಿಗೆ’ ಆಧಾರದಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನೇರವಾಗಿ ₹ 65 ಕೋಟಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆದೇಶಿಸಿದ್ದೇ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಸಿಟ್ಟಿನ ಮೂಲ,’ ಎಂದು ವಿಶ್ಲೇಷಿಸಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಮರಿಸ್ವಾಮಿ ಸಲ್ಲಿಸಿದ ಕೋರಿಕೆಯನ್ನು ಆಧರಿಸಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ₹ 65 ಕೋಟಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಆದೇಶಿಸಿದ್ದರು. ಈಶ್ವರಪ್ಪ ಬಾಕಿ ಇರಿಸಿದ್ದ ಕಡತವನ್ನು ತರಿಸಿಕೊಂಡು ಯಡಿಯೂರಪ್ಪ ಅನುದಾನ ಬಿಡುಗಡೆಗೆ ಆದೇಶ ಹೊರಡಿಸಿರುವುದು ಇಬ್ಬರ ನಡುವಿನ ಸಂಘರ್ಷಕ್ಕೆ ಮೂಲ ಕಾರಣ ಎಂದೂ ಪ್ರಜಾವಾಣಿ ಹೇಳಿದೆ.

ಕಳೆದ ಬಾರಿ ಬಿದ್ದ ಭಾರೀ ಮಳೆಯಿಂದ ಉತ್ತರ ಕರ್ನಾಟಕದ ಬಹುತೇಕ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳು ಹಾಳಾಗಿವೆ. ಬೊಕ್ಕಸದಲ್ಲಿ ಹಣವಿಲ್ಲ ಎಂಬ ನೆಪವನ್ನೊಡ್ಡುತ್ತಿರುವ ಸರ್ಕಾರ ರಸ್ತೆ ದುರಸ್ತಿಗೆ ಅನುದಾನ ನೀಡುತ್ತಿಲ್ಲ. ಅಲ್ಲದೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ 1,600 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ. ಹೀಗಿರುವಾಗ ಕ್ರಿಯಾ ಯೋಜನೆಯನ್ನೇ ತಯಾರಿಸದ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ 65 ಕೋಟಿ ರು. ಬಿಡುಗಡೆ ಮಾಡಿಸಲು ಮುಖ್ಯಮಂತ್ರಿಗಳ ಸಚಿವಾಲಯವು ತರಾತುರಿಯಿಂದ ಓಡಾಡುತ್ತಿರುವುದು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ ಎಂದು ‘ದಿ ಫೈಲ್‌’ ಮುನ್ನೆಲೆಗೆ ತಂದಿದ್ದನ್ನು ಸ್ಮರಿಸಬಹುದು.

‘ದಿ ಫೈಲ್‌’ ವರದಿಯಲ್ಲಿ ಉಲ್ಲೇಖವಾಗಿರುವ ಸಂಗತಿಗಳನ್ನೇ ಪ್ರಕಟಿಸುವ ಮೂಲಕ ಸಹಭಾಗಿ ಪತ್ರಿಕೋದ್ಯಮವನ್ನು ಇದೀಗ ಪ್ರಜಾವಾಣಿಯೂ ಮುಂದುವರೆಸಿರುವುದು ಶ್ಲಾಘನೀಯ. ಸರ್ಕಾರದ ಆಡಳಿತ ಲೋಪ, ಭ್ರಷ್ಟಾಚಾರ, ಅಧಿಕಾರಿಗಳ ಕರ್ತವ್ಯಲೋಪ ಹೀಗೆ ಆಡಳಿತ ಕುರಿತಾದ ವೈಫಲ್ಯಗಳ ಕುರಿತು ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳು ಬೇರೊಂದು ಮಾಧ್ಯಮಗಳಲ್ಲಿ ಪ್ರಕಟವಾಗುವ ವರದಿಗಳನ್ನು ಪ್ರಕಟಿಸಿ ಸಹಭಾಗಿ ಪತ್ರಿಕೋದ್ಯಮವನ್ನು ವಿಸ್ತರಿಸುವುದು ಒಟ್ಟಾರೆ ಪತ್ರಿಕೋದ್ಯಮದಲ್ಲಿ ಆರೋಗ್ಯಕರ ಬೆಳವಣಿಗೆಯೂ ಹೌದು.

the fil favicon

SUPPORT THE FILE

Latest News

Related Posts