Friday | July 24, 2026 |

ಅಕ್ರಮ ಗಣಿಗಾರಿಕೆ; 354 ಕೋಟಿ ದಂಡದಲ್ಲಿ ವಸೂಲು ಮಾಡಿದ್ದು ಕೇವಲ 34 ಕೋಟಿ

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಸೇರಿದಂತೆ 13 ಜಿಲ್ಲೆಗಳಲ್ಲಿ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಪ್ರದೇಶಗಳಲ್ಲಿ ಮತ್ತು ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಂದ ವಸೂಲು ಮಾಡಬೇಕಿದ್ದ 354.26 ಕೋಟಿ ರು. ಪೈಕಿ ಕೇವಲ 34.06 ಕೋಟಿ ಮಾತ್ರ ವಸೂಲು ಮಾಡಿರುವುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.

ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು 2018ರ ಮಾರ್ಚ್‌ ಅಂತ್ಯಕ್ಕೆ ಸಲ್ಲಿಸಿದ್ದ ಕಾರ್ಯನಿರ್ವಹಣಾ ಲೆಕ್ಕ ಪರಿಶೋಧನೆ ವರದಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯಿಂದಾಗಿರುವ 354.26 ಕೋಟಿ ರು. ನಷ್ಟದ ಕುರಿತು ವಿಸ್ತೃತವಾಗಿ ಚರ್ಚಿಸಿತ್ತು. ವರದಿ ಸಲ್ಲಿಕೆಯಾಗಿ 3 ವರ್ಷಗಳಾಗಿದ್ದರೂ ದಂಡ ವಸೂಲಾತಿಗೆ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ. ರಾಜಕೀಯ ಹಿನ್ನೆಲೆ ಮತ್ತು ಪ್ರಭಾವಿಗಳ ಒಡೆತನದಲ್ಲಿರುವ ಕಲ್ಲು ಗಣಿ ಗುತ್ತಿಗೆದಾರರಿಂದ ಬಾಕಿ ಇರುವ 324 ಕೋಟಿ ರು.ಗಳನ್ನು ವಸೂಲು ಮಾಡಲು ಕಠಿಣ ಕ್ರಮ ಕೈಗೊಳ್ಳದಿರುವುದು ತಿಳಿದು ಬಂದಿದೆ.

ಸಿಎಜಿ ವರದಿಯಲ್ಲಿನ ಕಂಡಿಕೆಗಳಿಗೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಸಿದ್ಧಪಡಿಸಿರುವ 103ಕ್ಕೂ ಹೆಚ್ಚು ಪುಟಗಳ ಟಿಪ್ಪಣಿಯ ಅನುಪಾಲನಾ ವರದಿ ‘ದಿ ಫೈಲ್‌’ ಗೆ ಲಭ್ಯವಾಗಿದೆ. ಸಿಎಜಿ ವರದಿ ಆಧರಿಸಿ ಕೈಗೊಂಡಿರುವ ಕ್ರಮದ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನೂತನ ಸಚಿವ ಹಾಲಪ್ಪ ಆಚಾರ್‌ ಅವರು ಈವರೆಗೂ ಸಭೆ ನಡೆಸಿಲ್ಲ ಎಂದು ಗೊತ್ತಾಗಿದೆ.

ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ವಿಜಯಪುರ, ಬೆಳಗಾವಿ, ಚಾಮರಾಜನಗರ, ಹಾಸನ, ಗದಗ್‌ನ ಒಟ್ಟು 8 ಕಚೇರಿಗಳ ವ್ಯಾಪ್ತಿಗೆ ಸಂಬಂಧಿಸಿದಂತೆ 223.25 ಕೋಟಿ ಮತ್ತು ಚಾಮರಾಜನಗರ, ತುಮಕೂರು, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಉಡುಪಿ ಸೇರಿದಂತೆ ಒಟ್ಟು 6 ಕಚೇರಿಗಳಿಗೆ ಸಂಬಂಧಿಸಿದಂತೆ 131.01 ಕೋಟಿ ಸೇರಿ ಒಟ್ಟು 354.26 ಕೋಟಿ ರು.ಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ವಸೂಲಾತಿ ಮಾಡಬೇಕಿತ್ತು. ಆದರೆ ಈ ಪೈಕಿ ಕೇವಲ 34.06 ಕೋಟಿ ಮಾತ್ರ ವಸೂಲು ಮಾಡಿರುವುದು ಅನುಪಾಲನಾ ವರದಿಯಿಂದ ಗೊತ್ತಾಗಿದೆ.

ಜಿಲ್ಲಾವಾರು ವಿವರ ಇಲ್ಲಿದೆ

ದಕ್ಷಿಣ ಕನ್ನಡದಲ್ಲಿ ವಸೂಲು ಮಾಡಬೇಕಿದ್ದ 15.79 ಕೋಟಿ ರು ಪೈಕಿ ಕೇವಲ 13.06 ಲಕ್ಷ ರು. ವಸೂಲಾಗಿದ್ದು ಇನ್ನೂ 15. 65 ಕೋಟಿ ರು. ಬಾಕಿ ಇದೆ. ವಿಜಯಪುರದಲ್ಲಿ 2.41 ಕೋಟಿ ರು ಪೈಕಿ 21. 49 ಲಕ್ಷ ರು. ವಸೂಲು ಮಾಡಲಾಗಿದೆ. ಈ ಜಿಲ್ಲೆಯಲ್ಲಿ 2.19 ಕೋಟಿ ರು. ಬಾಕಿ ಇದೆ. ಬೆಳಗಾವಿ ಜಿಲ್ಲೆಯಲ್ಲಿ 9.03 ಕೋಟಿ ಪೈಕಿ 2. 64 ಕೋಟಿ ವಸೂಲಿ ಮಾಡಲಾಗಿದ್ದು ಇನ್ನೂ 6.38 ಕೋಟಿ ರು. ವಸೂಲಿಗೆ ಬಾಕಿ ಉಳಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 22. 09 ಕೋಟಿ ರು.ನಲ್ಲಿ 1.83 ಕೋಟಿ ರು ಮಾತ್ರ ವಸೂಲಾಗಿದೆ. ಇದೊಂದೆ ಜಿಲ್ಲೆಯಲ್ಲಿ 20.25 ಕೋಟಿ ರು. ವಸೂಲಿಗೆ ಬಾಕಿ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ 1.50 ಕೋಟಿ ರು ಪೈಕಿ 3.80 ಲಕ್ಷ ರು. ಮಾತ್ರ ವಸೂಲಾಗಿದೆ. ಇನ್ನೂ 1.46 ಕೋಟಿ ರು. ವಸೂಲು ಮಾಡಬೇಕಿದೆ.

ಹಾಸನ ಜಿಲ್ಲೆಯಲ್ಲಿ 15.46 ಕೋಟಿ ರು ಪೈಕಿ 15. 07 ಲಕ್ಷ ರು. ವಸೂಲಿ ಮಾಡಿ ಇನ್ನೂ 15.31 ಕೋಟಿ ರು. ಬಾಕಿ ವಸೂಲು ಮಾಡಿಲ್ಲ. ಗದಗ್‌ ಜಿಲ್ಲೆಯಲ್ಲಿ 14. 77 ಕೋಟಿ ರು. ರು. ಪೈಕಿ 33. 92 ಲಕ್ಷ ರು. ವಸೂಲಿ ಮಾಡಿರುವ ಜಿಲ್ಲಾಡಳಿತ 14. 43 ಕೋಟಿ ರು. ವಸೂಲು ಮಾಡಬೇಕಿದೆ. ತುಮಕೂರು ಜಿಲ್ಲೆಯಲ್ಲಿ 14. 62 ಕೋಟಿ ರು.ನಲ್ಲಿ 4. 28 ಕೋಟಿ ವಸೂಲು ಮಾಡಿದ್ದು ಇನ್ನೂ 10. 34 ಕೋಟಿ ರು. ಬಾಕಿ ವಸೂಲು ಮಾಡಿಲ್ಲ.

ರಾಮನಗರ ಜಿಲ್ಲೆಯಲ್ಲಿ 56. 64 ಕೋಟಿ ರು.ನಲ್ಲಿ 6. 41 ಕೋಟಿ ರು ವಸೂಲು ಮಾಡಿದ್ದು ಇನ್ನೂ 50. 23 ಕೋಟಿ ರು. ಬಾಕಿ ಇದೆ. ಇದು ಉಳಿದ ಜಿಲ್ಲೆಗಳಿಗಿಂತಲೂ ಹೆಚ್ಚಿನ ಮೊತ್ತವಾಗಿದೆ. ಚಿಕ್ಕಬಳ್ಳಾಪುರದಲ್ಲಿ 36. 25 ಕೋಟಿ ರು.ನಲ್ಲಿ 9.50 ಕೋಟಿ ರು ಮಾತ್ರ ವಸೂಲು ಮಾಡಿ 26. 66 ಕೋಟಿ ರು. ಬಾಕಿಗೆ ಕ್ರಮ ಕೈಗೊಂಡಿಲ್ಲ. ಉಡುಪಿ ಜಿಲ್ಲೆಯಲ್ಲಿ 16. 42 ಕೋಟಿ ರು.ನಲ್ಲಿ 4. 03 ಕೋಟಿ ರು ಮಾತ್ರ ವಸೂಲು ಮಾಡಿರುವ ಜಿಲ್ಲಾಡಳಿತವು ಇನ್ನೂ 12. 39 ಕೋಟಿ ರು. ವಸೂಲು ಮಾಡುವ ಗೋಜಿಗೆ ಹೋಗಿಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡಿ 12. 46 ಕೋಟಿ ರು. ಬೊಕ್ಕಸಕ್ಕೆ ನಷ್ಟವುಂಟಾಗಿತ್ತು. ಗುತ್ತಿಗೆ ಪ್ರದೇಶ ಹೊರಗೆ ಗಣಿಗಾರಿಕೆ ಮಾಡಿರುವ ಪ್ರಕರಣದಲ್ಲಿ 2.52 ಕೋಟಿ ರು.ನಲ್ಲಿ ನಯಾ ಪೈಸೆಯನ್ನೂ ವಸೂಲು ಮಾಡಿಲ್ಲ. ಅದೇ ರೀತಿ ಗಣಿ ಯೋಜನೆಯಲ್ಲಿ ನಿಗದಿಪಡಿಸಿರುವ ವಾರ್ಷಿಕ ಗುರಿ ಮೀರಿ ಉತ್ಪಾದನೆ ಮಾಡಿರುವ ಪ್ರಮಾಣಕ್ಕೆ ರಾಜಧನ ಮತ್ತು ಖನಿಜದ ಮೌಲ್ಯಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಇದ್ದ 19.53 ಲಕ್ಷ ರು. ಪೈಕಿ ನಯಾ ಪೈಸೆಯನ್ನೂ ವಸೂಲು ಮಾಡಿಲ್ಲದಿರುವುದು ಅನುಪಾಲನಾ ವರದಿಯಿಂದ ಗೊತ್ತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಗಣಿಗಾರಿಕೆ ಮಾಡಿರುವ ಪ್ರಕರಣಗಳಲ್ಲಿ 12.02 ಕೋಟಿ ರು.ನಲ್ಲಿ ನಯಾ ಪೈಸೆಯೂ ವಸೂಲಾಗಿಲ್ಲ. ಹಾಗೆಯೇ ಗಣಿ ಯೋಜನೆಯಲ್ಲಿ ನಿಗದಿಪಡಿಸಿರುವ ವಾರ್ಷಿಕ ಗುರಿ ಮೀರಿ ಉತ್ಪಾದನೆ ಮಾಡಿರುವ ಪ್ರಮಾಣಕ್ಕೆ ರಾಜಧನ ಮತ್ತು ಖನಿಜದ ಮೌಲ್ಯ, ಉತ್ಪಾದನೆ ಪ್ರಮಾಣವನ್ನು ಜಿಪಿಎಸ್‌ ಮೂಲಕ ಅಳತೆ ಮಾಡಿರುವ ಪ್ರಕರಣದಲ್ಲಿಯೂ ನಯಾ ಪೈಸೆ ವಸೂಲು ಮಾಡಿಲ್ಲ.

ಚಾಮರಾಜನಗರ ಜಿಲ್ಲೆಯಲ್ಲಿ ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರ ಗಣಿಗಾರಿಕೆ ನಡೆಸಿರುವ ಪ್ರಕರಣದಲ್ಲಿ 19. 51 ಕೋಟಿ ರು. ನಷ್ಟವಾಗಿರುವ ಪ್ರಕರಣದಲ್ಲಿಯೂ ಬಿಡಿಗಾಸನ್ನೂ ವಸೂಲು ಮಾಡಿಲ್ಲ. ಹಾಸನ ಜಿಲ್ಲೆಯಲ್ಲಿ ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನು ಬಾಹಿರ ಗಣಿಗಾರಿಕೆ ನಡೆಸಿರುವ ಪ್ರಕರಣಗಳಲ್ಲಿ 8.62 ಕೋಟಿ ರು. ನಲ್ಲಿಯೂ ಬಿಡಿಗಾಸು ಬಂದಿಲ್ಲ. ಅದೇ ರೀತಿ ಗಣಿ ಯೋಜನೆಯಲ್ಲಿ ನಿಗದಿಪಡಿಸಿರುವ ವಾರ್ಷಿಕ ಗುರಿ ಮೀರಿ ಉತ್ಪಾದನೆ ಮಾಡಿರುವ ಪ್ರಮಾಣಕ್ಕೆ ರಾಜಧನ ಮತ್ತು ಖನಿಜದ ಮೌಲ್ಯ ಮತ್ತು ದಂಡಕ್ಕೆ ಸಂಬಂಧಿಸಿದಂತೆ 6.19 ಕೋಟಿ ರು.ನಲ್ಲಿ ಕವಡೆ ಕಾಸೂ ವಸೂಲಾಗಿಲ್ಲ ಎಂಬುದು ಅನುಪಾಲನಾ ವರದಿಯಿಂದ ತಿಳಿದು ಬಂದಿದೆ.

ಗದಗ್‌ನಲ್ಲಿ ಗಣಿ ಯೋಜನೆಯಲ್ಲಿ ನಿಗದಿಪಡಿಸಿರುವ ವಾರ್ಷಿಕ ಗುರಿ ಮೀರಿ ಉತ್ಪಾದನೆ ಮಾಡಿರುವ ಪ್ರಮಾಣಕ್ಕೆ ರಾಜಧನ ಮತ್ತು ಖನಿಜ ಮೌಲ್ಯ ಹಾಗೂ ದಂಡಕ್ಕೆ ಸಂಬಂಧಿಸಿದಂತೆ 1.13 ಕೋಟಿ ರು. ಮತ್ತು ಉತ್ಪಾದನೆ ಪ್ರಮಾಣದಲ್ಲಿ ವ್ಯರ್ಥಗಳ ಪ್ರಮಾಣಕ್ಕೆ ರಾಜಧನ 64. 96 ಲಕ್ಷ ರು.ನಲ್ಲಿಯೂ ನಯಾ ಪೈಸೆ ವಸೂಲಾಗಿಲ್ಲ.

2018ರ ಮಾರ್ಚ್ 31ರ ಅಂತ್ಯಕ್ಕೆ ಸಿಎಜಿ ವರದಿ ನೀಡಿತ್ತು. ರಾಜ್ಯದಲ್ಲಿ ಅಪ್ರಧಾನ ಖನಿಜಗಳ ಗುತ್ತಿಗೆಗಳಿಗೆ ಸಂಬಂಧಿಸಿದಂತೆ ವ್ಯವಸ್ಥಿತ ಮತ್ತು ವೈಜ್ಞಾನಿಕ ಗಣಿಗಾರಿಕೆಮತ್ತುಪರಿಸರ ಸಂರಕ್ಷಣೆ ಕುರಿತಂತೆ ಕಾರ್ಯನಿರ್ವಹಣಾ ಲೆಕ್ಕ ಪರಿಶೋಧನೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತಗೆ 223.25 ಕೋಟಿ ಮೊತ್ತವೂ ಒಳಗೊಂಡಂತೆ ಲೆಕ್ಕಪರಿಶೋಧನೆಯಲ್ಲಿ ಗಮನಿಸಲಾಗಿತ್ತು. ರಾಜಧನಕ್ಕೆ ಸಂಂಧಿಸಿದಂತೆ 131.01 ಕೋಟಿ ಒಳಗೊಂಡದಂತೆ ದಂಡವನ್ನು ವಿಧಿಸದಿರುವುದಕ್ಕೆ ಸಂಬಂಧಿಸಿದಂತೆ ಸಿಎಜಿ ವರದಿಯಲ್ಲಿ ಚರ್ಚಿಸಲಾಗಿತ್ತು.

ದಕ್ಷಿಣ ಕನ್ನಡ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ವಿಜಯಪುರ ಜಿಲ್ಲೆಯಲ್ಲಿನ ಕಲ್ಲು ಗಣಿ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡಿದೆ. 52 ಕಲ್ಲು ಗಣಿ ಗುತ್ತಿಗೆಗಳಲ್ಲಿ 3 ಗುತ್ತಿಗೆದಾರರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. 49 ಗುತ್ತಿಗೆದಾರರಿಗೆ ದಂಡ ವಸೂಲು ಮಾಡಿ ಕ್ರಮ ಕೈಗೊಳ್ಳಲಾಗುತ್ತಿದೆ. 49 ಗುತ್ತಿಗೆದಾರರಲ್ಲಿ 22 ಗುತ್ತಿಗೆದಾರರಿಂದ 3. 04 ಕೋಟಿ ವಸೂಲು ಮಾಡಿ ಸರ್ಕಾರಕ್ಕೆ ಜಮೆ ಮಾಡಲಾಗಿದೆ. ಇಷ್ಟೂ ಜಿಲ್ಲೆಗಳಲ್ಲಿ 29,800 ಚದರ ಮೀಟರ್‌ಗಳಲ್ಲಿ 52 ಗುತ್ತಿಗೆಗಳು ಮುಕ್ತಾಯಗೊಂಡಿದ್ದರೂ ಗಣಿಗಾರಿಕೆ ಮುಂದುವರೆದಿತ್ತು.

ದಕ್ಷಿಣ ಕನ್ನಡ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ವಿಜಯನಗರದಲ್ಲಿ 46,000 ಚದರ ಮೀಟರ್‌ಗಳಲ್ಲಿ 33 ಅಪ್ರಧಾನ ಖನಿಜ ಗಣಿಗಳಲ್ಲಿ ಅವುಗಳ ಸೀಮೆಯನ್ನೂ ಮೀರಿದಂತೆ ಹೊರ ಪ್ರದೇಶಗಳಲ್ಲಿ ಗಣಿಗಾರಿಕೆ ನಡೆಸಲಾಗಿತ್ತು. ಈ ಪ್ರಕರಣಗಳಲ್ಲಿನ ಒಟ್ಟು 33 ಗುತ್ತಿಗೆದಾರರಿಗೆ ದಂಡ ವಿಧಿಸಲಾಗಿದೆ. 12 ಗುತ್ತಿಗೆದಾರರಿಂದ 75.77 ಲಕ್ಷ ರು. ವಸೂಲು ಮಾಡಲಾಗಿದೆ.

ಇದೇ ಜಿಲ್ಲೆಗಳಲ್ಲಿ 1.07 ಲಕ್ಷ ಚದರ ಮೀಟರ್‌ಗಳಲ್ಲಿ 109 ಕಲ್ಲು ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಕಾನೂನುಬಾಹಿರ ಗಣಿಗಾರಿಕೆ ನಡೆಸಿದ್ದ ಪ್ರಕರಣಗಳಲ್ಲಿ 11 ಗುತ್ತಿಗೆದಾರರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. 98 ಗುತ್ತಿಗೆದಾರರಿಗೆ ದಂಡ ವಸೂಲು ಮಾಡಲು ನೋಟೀಸ್‌ ನೀಡಲಾಗಿದೆ. 98 ಗುತ್ತಿಗೆದಾರರಲ್ಲಿ 22 ಗುತ್ತಿಗೆದಾರರದಿಂದ 1.79 ಕೋಟಿ ರು. ವಸೂಲು ಮಾಡಿ ಸರ್ಕಾರಕ್ಕೆ ಜಮೆ ಮಾಡಿರುವುದು ತಿಳಿದು ಬಂದಿದೆ.

Hot this week

ಮುದ್ರಾ ಯೋಜನೆ ಸಾಲದ ಖಾತೆ ತೆರೆಯುವಲ್ಲಿ ಹಿಂದುಳಿದ 8 ಜಿಲ್ಲೆ; ಸಾಲ ನೀಡುವಲ್ಲಿ ಖಾಸಗಿ ಬ್ಯಾಂಕ್‌ಗಳದ್ದೇ ಮೇಲುಗೈ

ಬೆಂಗಳೂರು; ಮುದ್ರಾ ಸಾಲ ಸಹಿತ ವಿವಿಧ ಸ್ವಯಂ ಉದ್ಯಮ ಯೋಜನೆಗಳಡಿ ಕರ್ನಾಟಕ...

ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಗೆ ಸಚಿವರ ಪಟ್ಟು; ಐಎಎಸ್‌, ಕೆಎಎಸ್‌ಯೇತರ ಅಧಿಕಾರಿ ನೇಮಕಕ್ಕೆ ಮುಂದಾಗಿರುವುದೇಕೆ?

ಬೆಂಗಳೂರು; ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ವೈದ್ಯಕೀಯ ಸರಬರಾಜು ನಿಗಮವನ್ನು ಸ್ಥಾಪಿಸಿರುವ ರಾಜ್ಯ...

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...
Please Scan to make Your Contribution

Topics

ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಗೆ ಸಚಿವರ ಪಟ್ಟು; ಐಎಎಸ್‌, ಕೆಎಎಸ್‌ಯೇತರ ಅಧಿಕಾರಿ ನೇಮಕಕ್ಕೆ ಮುಂದಾಗಿರುವುದೇಕೆ?

ಬೆಂಗಳೂರು; ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ವೈದ್ಯಕೀಯ ಸರಬರಾಜು ನಿಗಮವನ್ನು ಸ್ಥಾಪಿಸಿರುವ ರಾಜ್ಯ...

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

Related Articles

Popular Categories

error: Content is protected !!