ಕೋವಿಡ್‌; 3.50 ಲಕ್ಷ ಕೇಂದ್ರದಿಂದ ಕಡಿತ, ಸರಿದೂಗಿಸಲು ಸಂಧ್ಯಾ ಸುರಕ್ಷಾಕ್ಕೆ ಕೈ ಹಾಕಿದ್ದೇಕೆ?

ಬೆಂಗಳೂರು; ಕೋವಿಡ್‌ನಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಪರಿಹಾರ ನೀಡಿಕೆ ಸಂಬಂಧ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ನಿಯಮದ ಪ್ರಕಾರ ಪ್ರತಿ ಕುಟುಂಬಕ್ಕೆ 4 ಲಕ್ಷ ರು. ನೀಡಬೇಕು ಎಂದು ಮಾರ್ಗಸೂಚಿ ಆದೇಶ ಹೊರಡಿಸಿ ಆ ನಂತರ ಕೆಲವೇ ಗಂಟೆಗಳಲ್ಲೇ ಆದೇಶವನ್ನೂ ಹಿಂಪಡೆದು ಒಟ್ಟು ಮೊತ್ತವನ್ನು 50,000 ರು.ಕ್ಕಿಳಿಸಿ ಕೇಂದ್ರ ಸರ್ಕಾರವು ಹೊರಡಿಸಿದ್ದ ಆದೇಶವು ಇದೀಗ ಮುನ್ನೆಲೆಗೆ ಬಂದಿದೆ.

ಕೋವಿಡ್‌ನಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೂ 50,000 ರು ಮತ್ತು ಬಿಪಿಎಲ್‌ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ಮೃತಪಟ್ಟಿದ್ದರೆ ಒಂದು ಪ್ರಕರಣದಲ್ಲಿ 1.50 ಲಕ್ಷ ರು. ಪರಿಹಾರ ನೀಡಲು ಅಳೆದು ತೂಗಿ ರಾಜ್ಯ ಬಿಜೆಪಿ ಸರ್ಕಾರವು ಆದೇಶ ಹೊರಡಿಸಿರುವ ಬೆನ್ನಲ್ಲೇ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ನಿಯಮದ ಪ್ರಕಾರ 4 ಲಕ್ಷ ರು. ಪರಿಹಾರ ನೀಡುವುದರಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರದ ನಿಲುವು ಕೂಡ ಚರ್ಚೆಗೆ ಗ್ರಾಸವಾಗಿದೆ.

ಅಲ್ಲದೆ ರಾಜ್ಯ ಬಿಜೆಪಿ ಸರ್ಕಾರವು 1.50 ಲಕ್ಷ ರು. ಪರಿಹಾರ ನೀಡಲು ಸಾಮಾಜಿಕ ಭದ್ರತೆ ಯೋಜನೆಗಳಲ್ಲೊಂದಾದ ಸಂಧ್ಯಾ ಸುರಕ್ಷಾ ನಿಧಿಗೆ ಕೈ ಹಾಕಿರುವುದಕ್ಕೆ ಆಕ್ಷೇಪಗಳು ವ್ಯಕ್ತವಾಗಿವೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ನಿಯಮದ ಪ್ರಕಾರ 4 ಲಕ್ಷ ರು.ಗಳನ್ನು ಕೇಂದ್ರ ಸರ್ಕಾರವು ನೀಡಿದ್ದರೆ ಸಂಧ್ಯಾ ಸುರಕ್ಷಾ ನಿಧಿಯನ್ನು ಬಳಸುವ ಅವಶ್ಯಕತೆ ಇರಲಿಲ್ಲ.

ಆದರೀಗ ಕೇಂದ್ರ ಸರ್ಕಾರವು ತಾನು ನೀಡಬೇಕಿದ್ದ 4.00 ಲಕ್ಷ ರು.ಗಳಲ್ಲಿ 3.50 ಲಕ್ಷ ರು.ಗಳನ್ನು ಕಡಿತಗೊಳಿಸಿ ಕೇವಲ 50 ಸಾವಿರ ರು. ನೀಡಲು ಮಾರ್ಗಸೂಚಿ ಹೊರಡಿಸಿರುವ ಕ್ರಮ ಸರಿಯಲ್ಲ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ನಿಯಮಗಳನ್ವಯ 4.00 ಲಕ್ಷ ರು. ಮತ್ತು ಇದಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 1 ಲಕ್ಷ ರು. ನೀಡಿದ್ದಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರು.ಗಳ ಪರಿಹಾರ ದೊರಕುತ್ತಿತ್ತು. ಆದರೆ ಕೇಂದ್ರ ಸರ್ಕಾರವು 4 ಲಕ್ಷ ರು.ಗಳನ್ನು 50 ಸಾವಿರಕ್ಕಿಳಿಸಿರುವುದರಿಂದ ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ 3.50 ಲಕ್ಷ ರು. ಪರಿಹಾರದಿಂದ ವಂಚಿಸಿದಂತಾಗಿದೆ.

ಕೋವಿಡ್‌ನಿಂದ ಸಾವಿಗೀಡಾದವರಿಗೆ ಪರಿಹಾರ ನೀಡಲು ರಾಷ್ಟ್ರೀಯ ವಿಪತ್ತು ಮತ್ತು ರಾಜ್ಯ ವಿಪತ್ತು ನಿಧಿ ನಿಯಮಗಳನ್ನು ಅನ್ವಯಿಸಲಾಗಿದೆ. ಕೋವಿಡ್‌ನಿಂದ ಸಾವಿಗೀಡಾದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರು.ಗಳ ಆರ್ಥಿಕ ನೆರವುನ್ನು ಸಕ್ಷಮ ಪ್ರಾಧಿಕಾರದ ಮೂಲಕ ವಿಪತ್ತು ನಿಧಿ ನಿಯಮಗಳನ್ವಯ ನೀಡಬೇಕು ಎಂದು ಕೇಂದ್ರ ಸರ್ಕಾರವು 2020ರ ಮಾರ್ಚ್‌ 14ರಂದು ಮಾರ್ಗಸೂಚಿ ಸುತ್ತೋಲೆಯನ್ನು ಹೊರಡಿಸಿ, ಕೆಲವೇ ಗಂಟೆಗಳಲ್ಲೇ ಆ ಆದೇಶವನ್ನೇ ಹಿಂಪಡೆದುಕೊಂಡಿತ್ತು ಎಂದು ತಿಳಿದು ಬಂದಿದೆ.

ಆದರೆ ಈ ಮಾರ್ಗಸೂಚಿ ಸುತ್ತೋಲೆಯನ್ನು ಬದಲಿಸಿದ್ದ ಕೇಂದ್ರ ಸರ್ಕಾರವು 2021ರ ಸೆ. 25ರಂದು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಇದರ ಪ್ರಕಾರ ಕೋವಿಡ್‌ 19 ವೈರಾಣು ಸೋಂಕಿನಿಂದಾಗಿ ಮೃತಪಟ್ಟ ವ್ಯಕ್ತಿಯ ಕಾನೂನುಬದ್ಧ ವಾರಸುದಾರರಿಗೆ 50,000 ರು. ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಕೇಂದ್ರದ ನಿರ್ದೇಶನದಂತೆ 2021 ಸೆ.28ರಂದು ಆದೇಶ ಹೊರಡಿಸಿದ್ದ ರಾಜ್ಯ ಬಿಜೆಪಿ ಸರ್ಕಾರವು ಈ ಹಿಂದೆ ಹೊರಡಿಸಿದ್ದ 1 ಲಕ್ಷ ರು. ಪರಿಹಾರ ಧನ ವಿತರಣೆ ಆದೇಶವನ್ನು ಹಿಂಪಡೆದುಕೊಂಡು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 50,000 ರು.ಗಳನ್ನು ಜಿಲ್ಲಾ ವಿಪತ್ತು ಪರಿಹಾರ ನಿಧಿ ಮೂಲಕ ವಿತರಿಸಲು ಆದೇಶಿಸಿತ್ತು.

ಈ ಆದೇಶವು ಹೊರಬೀಳುತ್ತಿದ್ದಂತೆ ವಿರೋಧ ವ್ಯಕ್ತವಾಗುವ ಸಾಧ್ಯತೆಗಳೇ ಹೆಚ್ಚಿದ್ದರಿಂದಾಗಿ ಸಂಧ್ಯಾ ಸುರಕ್ಷಾ ಯೋಜನೆಯಲ್ಲಿನ ನಿಧಿಯನ್ನು ಬಳಸಿಕೊಂಡು 1 ಲಕ್ಷ ರು. ಮತ್ತು ಕೇಂದ್ರದ ಮಾರ್ಗಸೂಚಿಗಳಲ್ಲಿ ಹೇಳಿರುವಂತೆ 50,000 ಸೇರಿ ಒಟ್ಟು 1.50 ಲಕ್ಷ ರು.ಗಳ ಪರಿಹಾರ ನೀಡಲು ಸೆ.28ರಂದೇ ಪರಿಷ್ಕೃತ ಆದೇಶವನ್ನು ಹೊರಡಿಸಿದ್ದನ್ನು ಸ್ಮರಿಸಬಹುದು.

ಇನ್ನು, ಕೋವಿಡ್‌ನಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಪರಿಹಾರ ನೀಡಿಕೆ ಸಂಬಂಧ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸ್ಪಷ್ಟತೆಯೇ ಇರಲಿಲ್ಲ. ಕೋವಿಡ್‌ ಸೋಂಕಿನಿಂದ ಮೃತರಾದ ಬಡತನ ರೇಖೆಗಿಂತ ಕೆಳಗಿರುವವರಿಗೆ ಒಂದು ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವ ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಆ ಆದೇಶವನ್ನೂ ಹಿಂಪಡೆದು ಪರಿಷ್ಕೃತವಾದ ಮತ್ತೊಂದು ಆದೇಶವನ್ನು ಹೊರಡಿಸಿತ್ತು.

ಕೋವಿಡ್‌ನಿಂದ ಮೃತ ವ್ಯಕ್ತಿಗಳ ಕುಟುಂಬದ ವಾರಸುದಾರರಿಗೆ ಪರಿಹಾರ ನೀಡುವ ಸಂಬಂಧ ಕಂದಾಯ ಇಲಾಖೆಯು (ವಿಪತ್ತು ನಿರ್ವಹಣೆ) ಸೆ.28ರ ಒಂದೇ ದಿನದಲ್ಲಿ ಎರಡೆರಡು ಆದೇಶಗಳನ್ನು ಹೊರಡಿಸಿದೆ. 1 ಲಕ್ಷ ರು.ಪರಿಹಾರ ಆದೇಶವನ್ನು ಹಿಂಪಡೆದುಕೊಳ್ಳುವ ಸಂಬಂಧ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ರಶ್ಮಿ ಎಂ ಎಸ್‌ ಅವರು ಹೊರಡಿಸಿದ್ದರು.

ಈ ಅದೇಶ ಹೊರಬೀಳುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುವ ಸಾಧ್ಯತೆಗಳಿದ್ದರಿಂದಾಗಿ ದಿಢೀರ್‌ ಎಂದು ರಶ್ಮಿ ಎಂ ಎಸ್‌ ಅವರು ಹೊರಡಿಸಿದ್ದ ಆದೇಶವನ್ನು ಹಿಂಪಡೆದು ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ) ಸರ್ಕಾರದ ಉಪ ಕಾರ್ಯದರ್ಶಿ ಕೆ ಸಿ ಕುಮಾರ್‌ ಅವರು ಮತ್ತೊಂದು ಆದೇಶವನ್ನು ಹೊರಡಿಸಿದ್ದರು.

ಪರಿಷ್ಕೃತ ಆದೇಶದಲ್ಲೇನಿದೆ?

ರಾಜ್ಯ ಸರ್ಕಾರದಿಂದ ಸಂಧ್ಯಾ ಸುರಕ್ಷಾ ಯೋಜನೆಯ ಲೆಕ್ಕ ಶೀರ್ಷಿಕೆಯಡಿ 1 ಲಕ್ಷ ರು.ಗಳನ್ನು ನೇರ ನಗದು ವರ್ಗಾವಣೆ ಮತ್ತು ಕೇಂಧ್ರ ಸರ್ಕಾರದ ಮಾರ್ಗಸೂಚಿಗಳಂತೆ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಪ್ರತಿಯೊಬ್ಬ ಮೃತರ ವಾರಸುದಾರರಿಗೆ ತಲಾ 50 ಸಾವಿರ ರು.ಗಳನ್ನು ನೇರ ನಗದು ವರ್ಗಾವಣೆ ವ್ಯವಸ್ಥೆ ಮೂಲಕ ಪಾವತಿಸಬೇಕು ಎಂದು ಆದೇಶಿಸಿದ್ದರು.

ಅಲ್ಲದೆ ಬಿಪಿಎಲ್‌ ಹೊರತುಪಡಿಸಡಿದ (ಎಪಿಎಲ್‌ ಮತ್ತು ಇತರೆ) ಕುಟುಂಬದಲ್ಲಿ ಒಂದು ಅಥವಾ ಒಂದಕ್ಕಿಂತ ಹೆಚ್ಚು ಮರಣ ಸಂಭವಿಸಿದಲ್ಲಿ ಅಂತಹ ಕುಟುಂಬಕ್ಕೆ ಎಸ್‌ಡಿಆರ್‌ಎಫ್‌ ಅಡಿ ಮೃತ ಸಂಖ್ಯೆಗೆ ಅನುಗುಣವಾಗಿ 5ಲಾ 50 ಸಾವಿರ ರು.ಗಳನ್ನು ಪಾವತಿಸಬೇಕು ಎಂದೂ ಪರಿಷ್ಕೃತ ಆದೇಶದಲ್ಲಿ ಹೇಳಲಾಗಿತ್ತು.

ಕೋವಿಡ್‌ ವೈರಾಣು ಸೋಂಕಿನಿಂದಾಗಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ 50,000 ರು.ಗಳ ಪರಿಹಾರ ನೀಡಲು ಕೇಂದ್ರ ಸರ್ಕಾರದ ಸೂಚನೆ ಬಂದ ಹಿನ್ನೆಲೆಯಲ್ಲಿ 1 ಲಕ್ಷ ಪರಿಹಾರ ನೀಡುವ ಸಂಬಂಧ ರಾಜ್ಯ ಸರ್ಕಾರ 2021ರ ಸೆ.23ರಂದು ಹೊರಡಿಸಿದ್ದ ಆದೇಶವನ್ನೇ ಹಿಂಪಡೆದುಕೊಂಡಿದೆ. ಈ ಸಂಬಂಧ 2021ರ ಸೆ.28ರಂದು ಪರಿಷ್ಕೃತ ಆದೇಶ ಹೊರಡಿಸಿತ್ತು.

ಕೋವಿಡ್‌ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ 1 ಲಕ್ಷ ಪರಿಹಾರ ಘೋಷಿಸಲಾಗಿತ್ತು. ಅರ್ಹ ಸಂತ್ರಸ್ತ ಕುಟುಂಬದ ಕಾನೂನುಬದ್ಧ ವಾರಸುದಾರರಿಗೆ 1 ಲಕ್ಷ ರು.ಗಳನ್ನುಪಾವತಿಸಲು ಆದೇಶಿಸಿತ್ತು.

‘ಕೇಂದ್ರ ಗೃಹ ಸಚಿವಾಲಯದ 2021 ಸೆ.25ರ ನಿರ್ದೇಶನದಂತೆ ಕೋವಿಡ್‌-19 ವೈರಾಣು ಸೋಂಕಿನಿಂದಾಗಿ ಮೃತಪಟ್ಟ ವ್ಯಕ್ತಿಯ ಕಾನೂನು ಬದ್ಧ ವಾರಸುದಾರರಿಗೆ 50,000 ರು. ಪರಿಹಾರ ನೀಡಲು ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿರುವುದರಿಂದ ಕೋವಿಡ್‌ನಿಂದ ಮೃತಪಟ್ಟ ಬಿಪಿಎಲ್‌ ಕುಟುಂಬದ ವ್ಯಕ್ತಿಯ ವಾರಸುದಾರರಿಗೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯಿಂದ ಚೆಕ್ ಮೂಲಕ ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿ ಸೆ.23ರಂದು ಹೊರಡಿಸಲಾಗಿದ್ದ ಆದೇಶವನ್ನು ಯಥಾವತ್ತಾಗಿ ಹಿಂಪಡೆಯಲಾಗಿದೆ,’ ಎಂದು ಸೆ.28ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿತ್ತು.

ಕೋವಿಡ್‌ನಿಂದ ಮೃತ ಹೊಂದಿದ ಬಿಪಿಎಲ್‌ ಕುಟುಂಬದ ದುಡಿಯುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ ಕುರಿತಂತೆ ರಾಜ್ಯದಲ್ಲಿ ಒಟ್ಟು 7,711 ಅರ್ಜಿಗಳು ಸಲ್ಲಿಕೆಯಾಗಿವೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 950 ಅರ್ಜಿಗಳು ಸಲ್ಲಿಕೆಯಾಗಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 445, ಧಾರವಾಡ ಜಿಲ್ಲೆಯಲ್ಲಿ 434, ಹಾಸನ ಜಿಲ್ಲೆಯಲ್ಲಿ 443, ಕೊಪ್ಪಳದಲ್ಲಿ 633, ಮೈಸೂರು ಜಿಲ್ಲೆಯಲ್ಲಿ 783 ಅರ್ಜಿಗಳು ಸಲ್ಲಿಕೆಯಾಗಿವೆ.

ಕೋವಿಡ್‌ ಸೋಂಕು ದೃಢವಾದ ಒಂದು ತಿಂಗಳ ಒಳಗೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳು ಕೂಡ 50,000 ಪರಿಹಾರ ಧನ ಪಡೆಯಲು ಅರ್ಹತೆ ಹೊಂದಿರುತ್ತವೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಮೃತರು ಕೋವಿಡ್‌ ಬಾಧಿತರು ಎಂದು ಸಾಬೀತಾಗಿರಬೇಕು. ಆಗ ಅವರ ಕುಟುಂಬ ಕೂಡಾ ಪರಿಹಾರ ಧನ ಪಡೆಯಲು ಅರ್ಹವಾಗಿರುತ್ತದೆ ಎಂದು ಕೋರ್ಟ್ ಹೇಳಿತ್ತು.

ಈ ಕುರಿತು ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿರುವ ಗೃಹ ಸಚಿವಾಲಯ, ಈ ನಿಟ್ಟಿನಲ್ಲಿ ಅಗತ್ಯ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೇಳಿಕೊಂಡಿತ್ತು.ಕೋವಿಡ್–19ನಿಂದ ಮೃತಪಟ್ಟವರ ಮರಣ ಪತ್ರದಲ್ಲಿ ‘ಕೋವಿಡ್‌ ಕಾರಣದಿಂದ ಆತ್ಮಹತ್ಯೆ’ ಎಂಬ ಅಂಶವನ್ನು ನಮೂದು ಮಾಡದೇ ಇರುವ ಕುರಿತು ಪುನರ್‌ವಿಮರ್ಶೆ ಮಾಡಬೇಕು. ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಧನ ನೀಡಲು ‘ಆತ್ಮಹತ್ಯೆ’ ಎಂಬುದರ ಉಲ್ಲೇಖ ಅತಿಮುಖ್ಯ ಎಂದು ಸೆ.13ರಂದು ಕೇಂದ್ರ ಸರ್ಕಾರಕ್ಕೆ ಕೋರ್ಟ್ ಹೇಳಿತ್ತು. ಕೋರ್ಟ್‌ ಎತ್ತಿರುವ ಕಳಕಳಿ ಕುರಿತು ಪುನರ್‌ವಿಮರ್ಶೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದ್ದನ್ನು ಸ್ಮರಿಸಬಹುದು.

ಕೋವಿಡ್‌ನಿಂದ ಬಳಲುತ್ತಿರುವ ವೇಳೆಯೇ, ವಿಷ ಪದಾರ್ಥ ಸೇವನೆ, ಆತ್ಮಹತ್ಯೆ, ಕೊಲೆ ಅಥವಾ ಆತ್ಮಹತ್ಯೆಯಿಂದ ಸಂಭವಿಸಿದ ಸಾವುಗಳನ್ನು ಕೋವಿಡ್‌ನಿಂದ ಸಂಭವಿಸಿದ ಸಾವುಗಳು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಐಸಿಎಂಆರ್‌ ಇದಕ್ಕೂ ಮೊದಲು ಜಂಟಿಯಾಗಿ ಮಾರ್ಗಸೂಚಿ ಹೊರಡಿಸಿತ್ತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೆ.11ರಂದು ಹೊರಡಿಸಿರುವ ಮಾರ್ಗಸೂಚಿ ಅನ್ವಯ ಕೋವಿಡ್‌–19 ಸಾಂಕ್ರಾಮಿಕದಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಮೊತ್ತವನ್ನು ಭರಿಸಬೇಕು. ಜೂನ್‌ 30ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಅನುಗುಣವಾಗಿ ಮಾರ್ಗಸೂಚಿ ರೂಪಿಸಿದ್ದನ್ನು ಸ್ಮರಿಸಬಹುದು.

ಹಾಗೆಯೇ ಕೋವಿಡ್‌ ಸೋಂಕಿನಿಂದ ಮೃತರಾದ ಬಡತನ ರೇಖೆಗಿಂತ ಕೆಳಗಿನವರಿಗೆ ಪರಿಹಾರ ನೀಡಲು ಕಡೆಗೂ ದ್ವಂದ್ವದಿಂದ ಹೊರ ಬಂದಿರುವ ರಾಜ್ಯ ಬಿಜೆಪಿ ಸರ್ಕಾರವು ಆದಾಯ ಕಡಿಮೆ ಇರುವ ವರ್ಗ (ಇಡಬ್ಲ್ಯೂಎಸ್‌) ವನ್ನು ಪರಿಗಣಿಸಲು ಇನ್ನೂ ಯಾವುದೇ ನಿರ್ಧಾರ ತಳೆದಿಲ್ಲ.

ಕೋವಿಡ್‌ನಿಂದಾಗಿ ಮರಣ ಹೊಂದಿದ ವ್ಯಕ್ತಿ ಬಿಪಿಎಲ್‌ ಕಾರ್ಡ್‌ದಾರನಾಗಿರಬೇಕೆಂಬ ಮಾರ್ಗಸೂಚಿಯಿಂದ ಶೇ. 50ಕ್ಕಿಂತ ಹೆಚ್ಚು ಜನ ಸಮಸ್ಯೆಯಲ್ಲಿ ಸಿಲುಕಿದ್ದು ಇಡಬ್ಲ್ಯೂಎಸ್‌ ನಿಯಮಗಳ ರೀತಿಇಯಲ್ಲಿ ಆದಾಯ ಕಡಿಮೆ ಇದ್ದವರಿಗೆ ಆದಾಯ ಪತ್ರವನ್ನು ಪಡೆದು ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮದ ಕುರಿತು ಕೃಷ್ಣರಾಜ ನಗರದ ಶಾಸಕ ಎಸ್‌ ಎ ರಾಮದಾಸ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಅಶೋಕ್‌ ಅವರು ಇಡಬ್ಲ್ಯೂಎಸ್‌ ವರ್ಗವನ್ನು ಪರಿಗಣಿಸುವ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.

‘ಪ್ರಸ್ತುತ ಬಿ ಪಿ ಎಲ್‌ ಕುಟುಂಬಕ್ಕೆ ಸೇರಿದ ವ್ಯಕ್ತಿ ಕೋವಿಡ್‌ನಿಂದಾಗಿ ಮೃತ ಹೊಂದಿದಲ್ಲಿ ಕುಟುಂಬದ ವಾರಸುದಾರರಿಗೆ ಪರಿಹಾರವನ್ನು ನೀಡಲಾಗುತ್ತಿದ್ದು, ಸದ್ಯಕ್ಕೆ ಇಡಬ್ಲ್ಯೂಎಸ್‌ ವರ್ಗವನ್ನು ಪರಿಗಣಿಸುವ ಪ್ರಸ್ತಾವನೆಯೇ ಇರುವುದಿಲ್ಲ,’ ಎಂದು ನೀಡಿದ್ದ ಉತ್ತರವನ್ನು ಸ್ಮರಿಸಬಹುದು.

the fil favicon

SUPPORT THE FILE

Latest News

Related Posts