ಮುಖ್ಯಮಂತ್ರಿ ಕಚೇರಿಗೆ ಶೇ. 4ರಷ್ಟು ಲಂಚ; ಚಿಣಿ ವಿರುದ್ಧ ಗುರುತರ ಆರೋಪ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಾಗಿಯೇ ಮೀಸಲಿರಿಸಿದ್ದ ಅನುದಾನವನ್ನು ಮಾರ್ಗಪಲ್ಲಟಗೊಳಿಸಿ ಪರಿಶಿಷ್ಟರು ಫಲಾನುಭವಿಗಳಲ್ಲದೇ ಇರುವ ಕಾಮಗಾರಿ ನಡೆಸುತ್ತಿರುವ ಕೃಷ್ಣಭಾಗ್ಯ ಜಲನಿಗಮವು ಕೋಟ್ಯಂತರ ರುಪಾಯಿಗಳನ್ನು ಪಾವತಿಸಿದೆ ಎಂಬ ಗುರುತರವಾದ ಆರೋಪಗಳು ಕೇಳಿ ಬಂದಿರುವ ಬೆನ್ನಲ್ಲೇ ಇದೀಗ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ ಅವರು ಗುತ್ತಿಗೆದಾರರಿಂದ ಬಿಲ್‌ ಮೊತ್ತದಲ್ಲಿ ಶೇ.4ರಷ್ಟು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಮತ್ತೊಂದು ಬಲವಾದ ಆರೋಪ ಕೇಳಿ ಬಂದಿದೆ.

ಕೊಪ್ಪಳ ಜಿಲ್ಲಾ ಪಂಚಾಯ್ತಿಯ ಮಾಜಿ ಅಧ್ಯಕ್ಷ ಮುಕುಂದರಾವ್‌ ಭವಾನಿಮಠ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಶೇ. 4ರಷ್ಟು ಲಂಚಕ್ಕೆ ಬೇಡಿಕೆ ಇಡುತ್ತಿರುವ ಬಗ್ಗೆ ಪ್ರಸ್ತಾಪಿಸಲಾಗಿದೆ.

‘ಗುತ್ತಿಗೆದಾರರೊಬ್ಬರು ನಿರ್ವಹಿಸಿದ ಎಸ್‌ಸಿಪಿ ಮತ್ತು ಟಿ ಎಸ್‌ ಪಿ ಕಾಮಗಾರಿಯ ಬಿಲ್‌ಗೆ ಸಂಬಂಧಪಟ್ಟಂತೆ ಅನುದಾನ ಬಿಡುಗಡೆ ಮಾಡಲು ವ್ಯವಸ್ಥಾಪಕ ನಿರ್ದೇಶಕರಿಗೆ ಮೊಬೈಲ್‌ ಮೂಲಕ ವಿನಂತಿ ಮಾಡಿದ್ದೆ. ಆಗ ವ್ಯವಸ್ಥಾಪಕ ನಿರ್ದೇಶಕರು ನನ್ನನ್ನು ಉದ್ದೇಶಿಸಿ ಬಿಲ್‌ ಪಾವತಿಸಲು ಬಿಲ್‌ ಮೊತ್ತಕ್ಕೆ ಶೇ.4 ರಷ್ಟು ಲಂಚವನ್ನು ಗುತ್ತಿಗೆದಾರರಿಗೆ ನೀಡಲು ತಿಳಿಸಲು ಹೇಳಿದರು,’ ಎಂದು ಮುಕುಂದರಾವ್‌ ಭವಾನಿಮಠ ಅವರು ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.

ಅಲ್ಲದೆ ‘ ಇದಕ್ಕೆ ಪ್ರತ್ಯುತ್ತರವಾಗಿ ನಾನು ಎಸ್‌ಸಿಪಿ ಟಿಎಸ್‌ಪಿ ಕಾಮಗಾರಿ ಆಗಿರುವುದರಿಂದ ಲಂಚ ತೆಗೆದುಕೊಳ್ಳಬಾರದು ಎಂದು ತಿಳಿಸಿದೆ. ಆಗ ಅವರು ಸಲುಗೆಯಿಂದ ನನ್ನನ್ನುಉದ್ದೇಶಿಸಿ ನಾನು ಈ ಹಣವನ್ನು ಸಂಗ್ರಹಿಸಿ ಮುಖ್ಯಮಂತ್ರಿ ಕಚೇರಿಗೆ ಮುಟ್ಟಿಸಬೇಕು ಎಂದ ಹೇಳಿ ಕಡೆಗೆ ಶೇ. 2ರಷ್ಟಾದರೂ ಕೊಡಲಿಕ್ಕೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ತಿಳಿಸಿ,’ ಎಂದು ಪ್ರಭಾಕರ್ ಚಿಣಿ ಅವರು ಹೇಳಿದ್ದರು ಎಂದು ಭವಾನಿಮಠ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಿಗಮದ ವ್ಯಾಪ್ತಿಯಲ್ಲಿ ಬರುವ ಕೆಲ ಅತ್ಯಂತ ಪ್ರಭಾವಿ ಶಾಸಕರುಗಳಿಗೆ ಸಹ ಪರ್ಸೆಂಟೇಜ್‌ ನೀಡಿ ಕಾಮಗಾರಿ ಮಂಜೂರು ಮಾಡಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದಾರೆ ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ. ಇಂತಹ ಅಧಿಕಾರಿಗೆ ಇತ್ತೀಚೆಗೆ ನಡೆದ ನಿಗಮದ ನಿರ್ದೇಶಕ ಮಂಡಳಿ ಸಭೆಯಲ್ಲಿ ಇನ್ನೂ 3 ತಿಂಗಳಲ್ಲಿ ನಿವೃತ್ತಿಯಾಗುವ ಇವರಿಗೆ ಆರ್ಥಿಕ ವಿತ್ತೀಯ ದತ್ತಾಧಿಕಾರದ ಪ್ರಾಧಿಕಾರವನ್ನು ಉಪಯೋಗಿಸಿಕೊಳ್ಳಲು ಅನುಮತಿ ಹಾಗೂ ಕರ್ನಾಟಕ ಪಾರದರ್ಶಕತೆ ಅಧ್ಯಾದೇಶ ಅಧ್ಯಾಯ 02ರ ಕ್ರಮ ಸಂಖ್ಯೆ 13ರಿಂದ ವಿನಾಯಿತಿ ನೀಡುವುದನ್ನು ಅನುಮೋದಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿರುವುದು ದೂರಿನಿಂದ ಗೊತ್ತಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಕ್ಕೆ ಅನುಕೂಲವಾಗದ ಮತ್ತು ಅವರ ಅಭಿವೃದ್ಧಿಗೆ ಪೂರಕವಾಗದ ಹಾಗೂ ಫಲಾನುಭವಿಗಳೇ ಇಲ್ಲದ ಕಾಮಗಾರಿಗಳನ್ನು ನಿರ್ವಹಿಸಿರುವ ಅರುಣ್‌ ಡಿ ಉಪ್ಪಾರ್‌ ಒಡೆತನದ ಎಡಿಯು ಇನ್ಫ್ರಾ ಕಂಪನಿಗೆ ನಿಯಮಬಾಹಿರ ಮತ್ತು ಕಾನೂನಿನ ನಿರ್ದೇಶನಗಳನ್ನು ಉಲ್ಲಂಘಿಸಿ 1,141 ಕೋಟಿ ರು. ಪಾವತಿಸುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಕ್ಕೆ ಅನ್ಯಾಯವೆಸಗಿದ್ದಾರೆ ಎಂಬ ಆರೋಪವನ್ನೂ ಮುಕುಂದರಾವ್‌ ಭವಾನಿಮಠ ಅವರು ಮಾಡಿದ್ದನ್ನು ಸ್ಮರಿಸಬಹುದು.

850 ಕೋಟಿ ದುರ್ಬಳಕೆ

2017-18ನೇ ಸಾಲಿನಿಂದ ಕೃಷ್ಣ ಭಾಗ್ಯ ಜಲನಿಗಮದಲ್ಲಿ ಭೂ ಸ್ವಾಧೀನ ಮತ್ತು ಪುನರ್‌ವಸತಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅನುಷ್ಠಾನಗೊಳಿಸಲು ಪ್ರತ್ಯೇಕ ಲೆಕ್ಕಶೀರ್ಷಿಕೆಯಡಿ ಎಸ್‌ಸಿಸಪಿ ಟಿಎಸ್‌ಪಿ ಯೋಜನೆ ಒಳಗೊಂಡಂತೆ ಅನುದಾನ ಕಲ್ಪಿಸಲಾಗಿದೆ. ಆದರೆ ಇದುವರೆಗೂ ಎಸ್‌ಸಿ ಎಸ್‌ಟಿ ಸಮುದಾಯಗಳಿಗೆ ಮನೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅನುದಾನವನ್ನು ಖರ್ಚು ಮಾಡಿಲ್ಲ ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.

2017-18ನೇ ಸಾಲಿನಿಂದ 2019-20ನೇ ಸಾಲಿನವರೆಗೆ ಬಿಡುಗಡೆ ಮಾಡಲಾದ ಅನುದಾನ 631.59 ಕೋಟಿ ಪೈಕಿ 214.16 ಕೋಟಿ ರು. 7(ಡಿ) ಅಡಿ ವೆಚ್ಚ ಮಾಡಲಾಗಿದೆ. ಇದಲ್ಲದೆ 91 ಕೋಟಿ ರು.,ನಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ ಕಾಮಗಾರಿಗಳಿಗೆ ಅನಮೋದನೆ ನೀಡಲಾಗಿದೆ. ಒಟ್ಟು 305.10 ಕೋಟಿ ಅನುದಾನ ಉಪಯೋಗಿಸಲಾಗಿದೆ. ಆದರೆ ಕಳೆದ 2 ವರ್ಷಗಳಿಂದ ಮನೆಗಳ ನಿರ್ಮಾಣದ ಕುರಿತು ಫಲಾನುಭವಿಗಳ ಪಟ್ಟಿಯನ್ನು ಸಂಬಂಧದಪಟ್ಟ ವಿಭಾಗದಿಂದ ಮತ್ತು ಸಕ್ಷಮ ಪ್ರಾಧಿಕಾರದಿಂದ ಅಂತಿಮಗೊಳಿಸದೇ ಇರುವುದರಿಂದ ಈ ಮನೆಗಳ ನಿರ್ಮಾಣಕ್ಕಾಗಿ ಇನ್ನೂ ಸಹ ಟೆಂಡರ್‌ ಕರೆದಿಲ್ಲ ಹೀಗಾಗಿ ಅನುದಾನ ಖರ್ಚು ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಭವಾನಿಮಠ ಅವರು ದೂರಿನಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

ಈ ಪ್ರಕರಣದಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯ ಎಲ್ಲಾ ನಿಯಮಾವಳಿಗಳನ್ನು ಮತ್ತು ಕಾನೂನುಗಳನ್ನು ಅತ್ಯಂತ ಚಾಣಾಕ್ಷತನದಿಂದ ಉಲ್ಲಂಘಿಸಲಾಗಿದೆ. 401.77ಕೋಟಿ ಮತ್ತು 384.86 ಕೋಟಿ ರು.ಗಳ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಯಾವುದೇ ಅನುಕೂಲವಾಗದ ಅವರ ಅಭಿವೃದ್ಧಿಗೆ ಪೂರಕವಾಗದ ಮತ್ತು ಫಲಾನುಭವಿಗಳೇ ಇಲ್ಲದ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ ಎಂದು ದೂರಲಾಗಿದೆ.

ಭೂ ಸ್ವಾಧೀನ ಮತ್ತು ಪುನರ್‌ ವಸತಿ ಹಾಗೂ ಪುನರ್‌ ನಿರ್ಮಾಣ ಕೆಲಸಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲು 2018ರ ಡಿಸೆಂಬರ್‌ 31ರಂದು ನಿಗಮದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಆದರೆ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದು ಸುಮಾರು 2 ವರ್ಷ 8 ತಿಂಗಳು ಗತಿಸಿದರೂ ಮತ್ತು ವಿಷಯವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಂಬಂಧಿಸಿದ್ದರೂ ಸಹ ಕ್ರಮ ಕೈಗೊಂಡಿಲ್ಲ.

ಈ ಕುರಿತು ಸರ್ಕಾರದಿಂದ ತುರ್ತು ನಿರ್ದೇಶನಗಳ ಕುರಿತು ನೆನಪೋಲೆ ಪತ್ರಗಳನ್ನು ಬರೆದು ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸಲು ಪ್ರಯತ್ನಿಸದೆಯೇ ಉದ್ದೇಶಪೂರ್ವಕವಾಗಿ ಅನುದಾನವನ್ನು ಬೇರೆ ಕಾಮಗಾರಿಗಳಿಗೆ ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶದಿಂದ ಪಾವತಿಸಲು ತಂತ್ರಗಾರಿಕೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

the fil favicon

SUPPORT THE FILE

Latest News

Related Posts