Saturday | April 11, 2026 |

ಲೋಕಾಯುಕ್ತರ ಆಸ್ತಿ ವಿವರ; ಸ್ಪಷ್ಟ ಅಭಿಪ್ರಾಯ ನೀಡಲು ರಿಜಿಸ್ಟ್ರಾರ್‌ಗೆ ನಿರ್ದೇಶನ

ಬೆಂಗಳೂರು; ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಆಸ್ತಿ ಮತ್ತು ದಾಯಿತ್ವ ಪಟ್ಟಿ ಸಲ್ಲಿಸುವ ಸಂಬಂಧ ಸ್ಪಷ್ಟ ಅಭಿಪ್ರಾಯ ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಲೋಕಾಯುಕ್ತ ಸಂಸ್ಥೆಯ ರಿಜಿಸ್ಟ್ರಾರ್‌ಗೆ ಪತ್ರ ಬರೆದಿದ್ದಾರೆ.

ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಆಸ್ತಿ ಮತ್ತು ದಾಯಿತ್ವ ಪಟ್ಟಿ ಸಲ್ಲಿಸುವ ಸಂಬಂಧ ವಿಧಾನ ಪರಿಷತ್‌ನ ಮಾಜಿ ಸದಸ್ಯ ರಮೇಶ್‌ ಬಾಬು ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು. ಈ ಮನವಿ ಅಧರಿಸಿ ಲೋಕಾಯುಕ್ತ ರಿಜಿಸ್ಟ್ರಾರ್‌ ಅವರಿಗೆ ಸರ್ಕಾರವು 2021ರ ಅಕ್ಟೋಬರ್‌ 27ರಂದು ಪತ್ರ ಬರೆದಿದೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು ಸಲ್ಲಿಸುವ ಸಂಬಂಧ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರುವ ಹೊಣೆಗಾರಿಕೆಯಿಂದ ನುಣುಚಿಕೊಂಡಿದ್ದ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಗಲಿಗೆ ವರ್ಗಾಯಿಸಿತ್ತು. ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಭಿಪ್ರಾಯ ಕೋರಿ ರಿಜಿಸ್ಟ್ರಾರ್‌ಗೆ ಪತ್ರ ಬರೆದಿರುವುದು ಲೋಕಾಯುಕ್ತ, ಉಪ ಲೋಕಾಯುಕ್ತರ ಆಸ್ತಿ ದಾಯಿತ್ವ ಪಟ್ಟಿ ಸಲ್ಲಿಕೆ ವಿಚಾರವು ಮುನ್ನೆಲೆಗೆ ಬಂದಂತಾಗಿದೆ.

‘ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಪ್ರತಿ ವರ್ಷ ತಮ್ಮ ಆಸ್ತಿ ದಾಯಿತ್ವ ಪಟ್ಟಿಯನ್ನು ಸಲ್ಲಿಸಬೇಕಾಗಿರುತ್ತದೆ. ಪಾರದರ್ಶಕತೆ ಮತ್ತು ನೈತಿಕತೆ ದೃಷ್ಟಿಯಿಂದ ಲೋಕಾಯುಕ್ತರು ಪ್ರತಿ ವರ್ಷ ಪ್ರಕಟಿಸಬೇಕು. ಆದರೆ ಲೋಕಾಯುಕ್ತ ಕಾಯ್ದೆಯಲ್ಲಿ ಕಲಂ, ಸೆಕ್ಷನ್‌ ಇಲ್ಲದ ಕಾರಣ ಕಾಯ್ದೆಗೆ ತಿದ್ದುಪಡಿ ತರುವಂತೆ ಹಾಗೂ ಲೋಕಾಯುಕ್ತರು, ಉಪ ಲೋಕಾಯುಕ್ತರು ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿ ವರ್ಷ ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು ಪ್ರಕಟಿಸಬೇಕು ಎಂಬ ಮನವಿ ಸಲ್ಲಿಕೆಯಾಗಿದೆ. ಈ ಕುರಿತು ಸ್ಪಷ್ಟ ಅಭಿಪ್ರಾಯ ನೀಡಬೇಕು,’ ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ಜಾಗೃತ ವಿಭಾಗ) ಸರ್ಕಾರದ ಅಧೀನ ಕಾರ್ಯದರ್ಶಿ ರಿಜಿಸ್ಟ್ರಾರ್‌ಗೆ 2021ರ ಅಕ್ಟೋಬರ್‌ 27ರಂದು ಬರೆದಿರುವ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

‘ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಸಾರ್ವಜನಿಕ ಹಿತದೃಷ್ಟಿಯಿಂದ ತಮ್ಮ ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ಲೋಕಾಯುಕ್ತ ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವ ಸಂಬಂಧದ ವಿಷಯವು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಂಬಂಧಿಸಿದೆ. ಹೀಗಾಗಿ ಮುಂದಿನ ಕ್ರಮ ಕೈಗೊಳ್ಳಬೇಕು,’ ಎಂದು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ನಿರ್ದೇಶಿಸಿ 2021ರ ಆಗಸ್ಟ್‌ 5ರಂದು ಪತ್ರ ಬರೆದಿದ್ದರು.

ಕರ್ನಾಟಕ ಲೋಕಾಯುಕ್ತ ಕಾಯ್ದೆ ಕಲಂ 22ರಲ್ಲಿ ಲೋಕಾಯುಕ್ತರು ಆಸ್ತಿ ವಿವರ ಸಲ್ಲಿಸುವ ಸಂಬಂಧ ಏನನ್ನೂ ಹೇಳಿಲ್ಲ ಎಂಬುದನ್ನೇ ಮುಂದಿರಿಸಿಕೊಂಡು ಹಾಲಿ ಲೋಕಾಯುಕ್ತರು ಆಸ್ತಿ ವಿವರ ಸಲ್ಲಿಸಿರಲಿಲ್ಲ. ಲೋಕಾಯುಕ್ತರು ಸಹ ಪ್ರತಿ ವರ್ಷ ಆಸ್ತಿ ಮತ್ತು ದಾಯಿತ್ವ(ಸಾಲಸೋಲ ಕೊಡಬೇಕಾದ ಬಾಧ‍್ಯತೆ) ಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಇದೀಗ ವಿಧಾನಪರಿಷತ್‌ ಮಾಜಿ ಸದಸ್ಯ ರಮೇಶ್‌ಬಾಬು ಅವರು ಕಾನೂನು, ಸಂಸದೀಯ ಇಲಾಖೆಯ ಮೆಟ್ಟಿಲೇರಿದ್ದರು.

ಮುಖ್ಯಮಂತ್ರಿಯೂ ಸೇರಿದಂತೆ ವಿಧಾನಸಭೆ, ವಿಧಾನಪರಿಷತ್‌, ಮಹಾನಗರಪಾಲಿಕೆ, ಜಿಲ್ಲಾ ಪಂಚಾಯ್ತಿ ಸದಸ್ಯರು, ರಾಜ್ಯ ಸರ್ಕಾರದ ಸೇವೆಯಲ್ಲಿರುವ ಡಿ ಗ್ರೂಪ್‌ ನೌಕರರೂ ಆಯಾ ವರ್ಷದ ಆಸ್ತಿ ಮತ್ತು ದಾಯಿತ್ವ(ಸಾಲಸೋಲ ಕೊಡಬೇಕಾದ ಬಾಧ‍್ಯತೆ) ಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಆಜ್ಞೆ ಹೊರಡಿಸುವ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ ಅವರು  ತಮ್ಮ ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು ಹಲವು ವರ್ಷಗಳಿಂದಲೂ ಸಲ್ಲಿಸುತ್ತಿಲ್ಲ. ಈ ಬಗ್ಗೆ ‘ದಿ ಫೈಲ್‌’ ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.

ಆಸ್ತಿದಾಯಿತ್ವ ಪಟ್ಟಿಯನ್ನು ಸಲ್ಲಿಸದಿರಲು ಕಾರಣವೇನು?

ಲೋಕಾಯುಕ್ತ ವಿಶ್ವನಾಥ ಶೆಟ್ಟಿ ಅವರು ಸ್ಥಿರ ಮತ್ತು ಚರಾಸ್ತಿಗಳ ವಿವರಗಳನ್ನು ಸಲ್ಲಿಸಲು ಹಿಂದೇಟು ಹಾಕಿದ್ದರು. ‘ ಕರ್ನಾಟಕ ಲೋಕಾಯುಕ್ತ ಕಾಯ್ದೆ ಕಲಂ 22ರಲ್ಲಿ ಸಾರ್ವಜನಿಕರು/ಚುನಾಯಿತ ಪ್ರತಿನಿಧಿಗಳು ಮಾತ್ರ ಲೋಕಾಯುಕ್ತ ಸಂಸ್ಥೆಗೆ ಪ್ರತಿ ವರ್ಷ ಆಸ್ತಿಮತ್ತು ದಾಯಿತ್ವ ಪಟ್ಟಿಯನ್ನು ಸಲ್ಲಿಸಬೇಕಾಗಿರುತ್ತದೆ ಎಂದು ತಿಳಿಸುತ್ತದೆ. ಈ ಕಾಯ್ದೆ ಅಥವಾ ಯಾವುದೇ ಕಾಯ್ದೆಯ ಅಡಿಯಲ್ಲಿ ಗೌರವಾನ್ವಿತ ಲೋಕಾಯುಕ್ತರು/ಉಪ ಲೋಕಾಯುಕ್ತರು ಆಸ್ತಿ ವಿವರಗಳನ್ನು ಸಲ್ಲಿಸಬೇಕು ಎಂದು ಹೇಳಿರುವುದಿಲ್ಲ,’ ಎಂದು ಮಾಹಿತಿ ಹಕ್ಕಿನ ಅಡಿಯಲ್ಲಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದರು.

ಮುಖ್ಯಮಂತ್ರಿಯೂ ಸೇರಿದಂತೆ ವಿಧಾನಸಭೆ, ವಿಧಾನಪರಿಷತ್‌, ಮಹಾನಗರಪಾಲಿಕೆ, ಜಿಲ್ಲಾ ಪಂಚಾಯ್ತಿ ಸದಸ್ಯರು, ರಾಜ್ಯ ಸರ್ಕಾರದ ಸೇವೆಯಲ್ಲಿರುವ ಡಿ ಗ್ರೂಪ್‌ ನೌಕರರೂ ಆಯಾ ವರ್ಷದ ಆಸ್ತಿ ಮತ್ತು ದಾಯಿತ್ವ(ಸಾಲಸೋಲ ಕೊಡಬೇಕಾದ ಬಾಧ‍್ಯತೆ) ಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಆಜ್ಞೆ ಹೊರಡಿಸುವ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ ಅವರು  ತಮ್ಮ ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು ಹಲವು ವರ್ಷಗಳಿಂದಲೂ ಸಲ್ಲಿಸದಿದ್ದಕ್ಕೆ ಸಾರ್ವಜನಿಕರು ಮತ್ತು ಸಾಮಾಜಿಕ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು.

ಕಾನೂನಿನಲ್ಲಿ ಹೇಳಿಲ್ಲ ಎಂಬ ತಾಂತ್ರಿಕ ಆಂಶವನ್ನೇ ಮುಂದಿರಿಸಿಕೊಂಡಿರುವ ವಿಶ್ವನಾಥ ಶೆಟ್ಟಿ ಅವರು ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡು ವರ್ಷದಿಂದಲೂ ಈವರೆವಿಗೂ ಆಸ್ತಿ ವಿವರ ಸಲ್ಲಿಸುವುದರಿಂದ ತಪ್ಪಿಸಿಕೊಳ್ಳುತ್ತಲೇ ಇದ್ದಾರೆ. ಆಸ್ತಿ ವಿವರಗಳನ್ನು ಬಹಿರಂಗಪಡಿಸುವ ಧೈರ್ಯ ಮತ್ತು ಬದ್ಧತೆಯನ್ನೂ ಪ್ರದರ್ಶಿಸಿಲ್ಲ. ಸ್ವಾಯತ್ತ ಸಂಸ್ಥೆಯಾಗಿರುವ ಲೋಕಾಯುಕ್ತದ ಘನತೆ ಕಾಪಾಡಬೇಕಿದ್ದವರೇ ಆಸ್ತಿ ವಿವರ ಸಲ್ಲಿಸುವುದರಿಂದ ನುಣುಚಿಕೊಳ್ಳುತ್ತಿರುವುದೇಕೆ ಎಂಬ ಪ್ರಶ್ನೆಗಳು ಕೇಳಿ ಬಂದಿದ್ದವು.

ಕಾಯ್ದೆಯಲ್ಲೇನಿದೆ?

ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984 ರ ಕಲಂ 22ರಲ್ಲಿ ‘ಸಾರ್ವಜನಿಕ ನೌಕರರು ಸ್ವತ್ತಿನ ಹೇಳಿಕೆಯನ್ನು ಒಪ್ಪಿಸುವ ಸಂಬಂಧ ಸ್ಪಷ್ಟಪಡಿಸಿದೆ. ಸರ್ಕಾರಿ ನೌಕರರನ್ನುಳಿದು 7ನೇ ಪ್ರಕರಣದ(1)ನೇ ಉಪ ಪ್ರಕರಣದಲ್ಲಿ ಉಲ್ಲೇಖಿಸಿದ ಪ್ರತಿಯೊಬ್ಬ ಸಾರ್ವಜನಿಕ ನೌಕರನು ಈ ಅಧಿನಿಯಮ ಪ್ರಾರಂಭವಾದ ತರುವಾಯ 3 ತಿಂಗಳೊಳಗೆ ಮತ್ತು ಆ ತರುವಾಯ ಪ್ರತಿ ವರ್ಷ ಜೂನ್‌30ರೊಳಗೆ (ತನ್ನ ಆಸ್ತಿಗಳ ಮತ್ತು ಹೊಣೆಗಾರಿಕೆ) ತನ್ನ ಕುಟುಂಬದ ಸದಸ್ಯರುಗಳ ಆಸ್ತಿಗಳ ಮತ್ತು ಹೊಣೆಗಾರಿಕೆಗಳ ಹೇಳಿಕೆಯನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸತಕ್ಕದ್ದು,’ ಎಂದು ಹೇಳಿದೆ.

ಸ್ವಾಯತ್ತ ಸಂಸ್ಥೆಯ ಅಧಿಕಾರ ಸ್ವೀಕರಿಸಿರುವ ಲೋಕಾಯುಕ್ತರು, ಉಪ ಲೋಕಾಯುಕ್ತರು ಆಸ್ತಿ ವಿವರಗಳನ್ನು ಜಾಲತಾಣದಲ್ಲಿ ಪ್ರಕಟಿಸಿ ಪ್ರಾಮಾಣಿಕತೆಯನ್ನು ಸಾರ್ವಜನಿಕವಾಗಿ ಪ್ರಕಟಿಸುವ ಮೂಲಕ ಅವರು ತಮ್ಮ ಜವಾಬ್ದಾರಿಯನ್ನು ತೋರಬೇಕಿತ್ತು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

Hot this week

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

Topics

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

Related Articles

Popular Categories

error: Content is protected !!