Friday | July 17, 2026 |

ಸಿಎಂ, ರಾಜ್ಯಪಾಲರ ಹೆಲಿಕಾಪ್ಟರ್‌ ಪ್ರಯಾಣ; ತಾಂತ್ರಿಕ ಪರಿಣಿತವಲ್ಲದ ಪಿಡಬ್ಲ್ಯೂಡಿಗೆ ಟೆಂಡರ್‌ ಹೊಣೆ

ಬೆಂಗಳೂರು: ‘ವೈಮಾನಿಕ ಪರಿಣಿತರನ್ನೊಳಗೊಂಡ ಪ್ರತ್ಯೇಕ ವಿಭಾಗ ತೆರೆದು ಮುಖ್ಯಮಂತ್ರಿ, ರಾಜ್ಯಪಾಲರ ಹೆಲಿಕಾಪ್ಟರ್ ಪ್ರಯಾಣ ಕುರಿತು ನಿರ್ವಹಣೆ ಮಾಡುವುದು ಅತ್ಯಗತ್ಯ. ಮತ್ತು ವಿವಿಐಪಿಗಳ ಭದ್ರತೆ ದೃಷ್ಟಿಯಿಂದ ತಕ್ಷಣವೇ ಪ್ರತ್ಯೇಕ ವಿಭಾಗ ತೆರೆಯಬೇಕು‘ ಎಂದು ನಾಗರಿಕ ವಿಮಾನಯಾನ ವಿಭಾಗದ ಕೇಂದ್ರ ನಿರ್ದೇಶಕರು (ಡಿಜಿಸಿಎ) ಕಳೆದ 5 ವರ್ಷಗಳ ಹಿಂದೆಯೇ ನೀಡಿದ್ದ ಸಲಹೆಯನ್ನು ರಾಜ್ಯ ಸರ್ಕಾರವು ಇದುವರೆಗೂ ಜಾರಿಗೊಳಿಸದೇ ನಿರ್ಲಕ್ಷ್ಯ ವಹಿಸಿದೆ.

ಹೆಲಿಕಾಪ್ಟರ್‌ಗಳ ಕುರಿತು ತಾಂತ್ರಿಕವಾಗಿ ಪರಿಣಿತರಲ್ಲದ ಕಾರಣ ಟೆಂಡರ್ ಸೇರಿದಂತೆ ಇನ್ನಿತರೆ ಕಾರ್ಯ ನಿರ್ವಹಿಸಲು ಆಗುವುದಿಲ್ಲ ಎಂದು ಈ ಹಿಂದೆ ಹಲವು ಬಾರಿ ಸ್ಪಷ್ಟವಾಗಿ ಸರ್ಕಾರಕ್ಕೆ ತಿಳಿಸಿದ್ದ ಲೋಕೋಪಯೋಗಿ ಇಲಾಖೆಯೇ ಹೆಲಿಕಾಪ್ಟರ್‌ ಸೇವೆ ಪಡೆಯುವ ಸಂಬಂಧ ಟೆಂಡರ್‌ ಕರೆಯಲು ಇದೀಗ ಮುಂದಾಗಿದೆ. ಈ ಸಂಬಂಧ ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ.

ಸೇನಾ ಪಡೆಯ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ (ಕೂನೂರು ಬಳಿ) ಪತನಗೊಂಡ ಬೆನ್ನಲ್ಲೇ ಕರ್ನಾಟಕದಲ್ಲಿ ಇದುವರೆಗೂ ವೈಮಾನಿಕ ಪರಿಣಿತರನ್ನೊಳಗೊಂಡ ಪ್ರತ್ಯೇಕ ವಿಭಾಗ ತೆರೆಯಬೇಕು ಎಂದು ಡಿಜಿಸಿಎ ನೀಡಿದ್ದ ಯಾವ ಸಲಹೆಯನ್ನು ಪಾಲಿಸದಿರುವುದು ಇದೀಗ ಮುನ್ನೆಲೆಗೆ ಬಂದಿದೆ. ಸೇನಾ ಹೆಲಿಕಾಪ್ಟರ್‌ ಪತನದ ಕುರಿತು ದಿಗ್ಭ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯವೂ ಡಿಜಿಸಿಎ ನೀಡಿದ್ದ ಸಲಹೆ ಕುರಿತು ಪರಿಶೀಲಿಸುವ ಗೋಜಿಗೆ ಹೋಗಿಲ್ಲ . ಬದಲಿಗೆ ಅವರ ವಿಶೇಷ ಕರ್ತವ್ಯಾಧಿಕಾರಿಗಳು ಖಾಸಗಿ ಏಜೆನ್ಸಿಯಿಂದ ನೇರವಾಗಿ ಹೆಲಿಕಾಪ್ಟರ್‌ ಸೇವೆಯನ್ನು ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ.

‘ಹೆಲಿಕಾಪ್ಟರ್‌ ಸೇವೆ ಒದಗಿಸುವ ಸಂಬಂಧ ಟೆಂಡರ್‌ ಕರೆಯುವ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ. ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಪ್ರಕ್ರಿಯೆಯು ವಿಳಂಬವಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಟೆಂಡರ್‌ ಕರೆಯಲು ಅನುಮತಿ ನೀಡಿದೆ. ಟೆಂಡರ್‌ ಯಾವಾಗ ಕರೆಯಬೇಕು ಎಂಬ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ. ನೀತಿ ಸಂಹಿತೆ ಕೊನೆಗೊಂಡ ಬಳಿಕ ಪ್ರಕ್ರಿಯೆಗೆ ಚಾಲನೆ ಸಿಗಲಿದೆ,’ ಎಂದು ಹೆಸರು ಹೇಳಲಿಚ್ಛಿಸದ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್‌’ ಪ್ರತಿನಿಧಿಗೆ ಮಾಹಿತಿ ಒದಗಿಸಿದರು.

ಮುಖ್ಯಮಂತ್ರಿ, ರಾಜ್ಯಪಾಲರು, ಗಣ್ಯಾತಿಗಣ್ಯರ ಪ್ರಯಾಣ ಮತ್ತು ಪ್ರವಾಸಕ್ಕೆ ಖಾಸಗಿ ಏಜೆನ್ಸಿ ಜಿಎಂಪಿ ಸೇವಾ ಕಂಪನಿಯಿಂದ ಹೆಲಿಕಾಪ್ಟರ್‌ ಸೇವೆಯನ್ನು ಪಡೆಯಲು ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮಂಜೂರಾತಿ ದೊರೆತಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರಾಜ್ಯದಲ್ಲಿ ಅಧಿಕೃತವಾದ ಏಜೆನ್ಸಿಯು ಹೆಲಿಕಾಪ್ಟರ್‌ ಸೇವೆಯನ್ನು ಒದಗಿಸಲಿದೆ ಎಂದು ತಿಳಿದು ಬಂದಿದೆ.

ಜಾರ್ಖಂಡ್‌ನಂತಹ ಚಿಕ್ಕ ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಗಣ್ಯರ ಅಧಿಕೃತ ಉಪಯೋಗಕ್ಕೆ ಹೆಲಿಕಾಪ್ಟರ್ ಪಡೆಯಲು ಪ್ರತ್ಯೇಕವಾದ ವಿಭಾಗ ಹೊಂದಿದೆ. ಆದರೆ ರಾಜ್ಯದಲ್ಲಿ ಇದುವರೆಗೂ ಪ್ರತ್ಯೇಕ ವಿಭಾಗ ತೆರೆಯಲು ಮುಂದಾಗಿಲ್ಲ. ಅದೇ ರೀತಿ ಹೆಲಿಕಾಪ್ಟರ್ ನಿರ್ವಹಣೆ, ತಾಂತ್ರಿಕ ಅರ್ಹತೆ ಮತ್ತು ಈ ಕುರಿತು ಏಜೆನ್ಸಿಗಳೊಂದಿಗೆ ಸಮಾಲೋಚಿಸಿ ದರ ಸಂಧಾನ, ಸೂಕ್ತ ಭದ್ರತೆ ಒದಗಿಸುವ ಕುರಿತು ಬೆಂಗಳೂರಿನ ಜಕ್ಕೂರಿನಲ್ಲಿರುವ ವೈಮಾನಿಕ ತರಬೇತಿ ಶಾಲೆಯ ನಿರ್ದೇಶಕರು ಸಲ್ಲಿಸಿದ್ದ ಪ್ರಸ್ತಾವನೆ ಕಡೆ ಸರ್ಕಾರ ಕಣ್ಣೆತ್ತಿಯೂ ನೋಡಿಲ್ಲ ಎಂದು ಗೊತ್ತಾಗಿದೆ.

ಅನನುಭವಿ ಪೈಲಟ್‌ಗಳು ಹೆಲಿಕಾಪ್ಟರ್‌ನ್ನು ಚಲಾಯಿಸಿರುವ ಬಗ್ಗೆ ರಾಜ್ಯ ಗುಪ್ತಚರ ದಳದ ಹೆಚ್ಚುವರಿ ನಿರ್ದೇಶಕರಾಗಿದ್ದ ಎ.ಎಂ.ಪ್ರಸಾದ್ ಅವರು ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಕಳೆದ 5 ವರ್ಷದ ಹಿಂದೆಯೇ ಅಂದರೆ 2016ರ ಜುಲೈ 20ರಂದು ಗೌಪ್ಯ ಪತ್ರ ಬರೆದು ಎಚ್ಚರಿಸಿದ್ದರು. ನಾಗರಿಕ ವಿಮಾನಯಾನ ವಿಭಾಗ ರೂಪಿಸಿರುವ (ಡಿಜಿಸಿಎ) ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಸೂಚಿಸಿದ್ದರು. ಆದರೆ ಅಧಿಕಾರಶಾಹಿಯು ಈ ಸೂಚನೆಯನ್ನು ಸತತವಾಗಿ ನಿರ್ಲಕ್ಷ್ಯಿಸಿದೆ.

ಮುಖ್ಯಮಂತ್ರಿ, ರಾಜ್ಯಪಾಲರು ಸೇರಿದಂತೆ ವಿಐಪಿ, ವಿವಿಐಪಿಗಳಿಗೆ ಒದಗಿಸುವ ಹೆಲಿಕಾಪ್ಟರ್‌ನ್ನು ಚಲಾಯಿಸುವ ಪೈಲಟ್‌ಗಳಿಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಅರ್ಹತೆ ಮತ್ತು ಅನುಭವವನ್ನು ನಿಗದಿಪಡಿಸಿದೆ. ಹೆಲಿಕಾಪ್ಟರ್‌ನ್ನು ಇಂತಿಷ್ಟು ಗಂಟೆಗಳವರೆಗೆ ಚಲಾಯಿಸಿ ಅನುಭವ ಹೊಂದಿರುವ ಪೈಲಟ್‌ಗಳನ್ನೇ ವಿಐಪಿ ಮತ್ತು ವಿವಿಐಪಿಗಳಿಗೆ ನೇಮಿಸಬೇಕು ಎಂದು ಸೂಚಿಸಿತ್ತು ಎಂದು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

2016ರ ಮೇ 6 ಮತ್ತು ಜೂನ್ 27ರಂದು ಚಿತ್ರದುರ್ಗ ಮತ್ತು ಮೈಸೂರು ಪ್ರವಾಸಕ್ಕೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್‌ನ್ನು (ಇಸಿ ೧೩೫ ಮತ್ತು ಫಿನಾಮ್ ೧೦೦ ವಿಟಿ ಎವಿಎಸ್) ಬಳಸಿದ್ದರು. ಈ ಎರಡೂ ದಿನದಂದು ಅವರಿದ್ದ ಹೆಲಿಕಾಪ್ಟರ್‌ನ್ನು ಅನನುಭವಿ ಪೈಲಟ್‌ಗಳು ಎಂದು ಹೇಳಲಾಗಿರುವ ಅರ್ಜುನ್, ಶಿಲ್ಪಿ ಬಿಸ್ನಾಯ್, ದಿಲೀಪ್ ಗ್ರೇವಾಲ್, ಸಂಜಯಕುಮಾರ್ ಎಂಬುವರು ಚಲಾಯಿಸಿದ್ದರು. ಡಿಜಿಸಿಎ ನಿಗದಿಪಡಿಸಿದ್ದ ಅನುಭವ ಮತ್ತು ಅರ್ಹತೆ ಈ ಪೈಲಟ್‌ಗಳಿಗೆ ಇರಲಿಲ್ಲ. ಆದರೂ ಅವರು ಹೆಲಿಕಾಪ್ಟರ್‌ನ್ನು ಚಲಾಯಿಸಿದ್ದರು’ ಎಂದು ಗೌಪ್ಯ ಪತ್ರದಲ್ಲಿ ಗಮನ ಸೆಳೆಯಲಾಗಿತ್ತು. ಅಷ್ಟೇ ಅಲ್ಲದೆ, ಅವರು ಬಳಸಿದ್ದ ಹೆಲಿಕಾಪ್ಟರ್ ಕೂಡ ಕನಿಷ್ಟ ಅಗತ್ಯತೆಗಳಿಂದ ಕೂಡಿತ್ತು ಎಂದು ಪಿಡಬ್ಲ್ಯೂಡಿ ಹಿರಿಯ ಅಧಿಕಾರಿ ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಸಚಿವಾಲಯದ ಕೋರಿಕೆ ಮೇರೆಗೆ ಖಾಸಗಿ ಏಜೆನ್ಸಿ ತನ್ನ ಬಳಿ ತಕ್ಷಣಕ್ಕೆ ಲಭ್ಯ ಇರುವ ಹೆಲಿಕಾಪ್ಟರ್‌ನ್ನು ಕಳಿಸುತ್ತದೆ. ಆದರೆ ಹೆಲಿಕಾಪ್ಟರ್ ಒಂದೇ ಕಂಪನಿಯದ್ದಾಗಿರುವುದಿಲ್ಲ. ಪ್ರತಿ ಬಾರಿಯೂ ಬೇರೆ ಬೇರೆ ಕಂಪನಿಗಳ ಪೈಲಟ್‌ಗಳು ಬರುವ ಕಾರಣ, ಅವರ ಹಿನ್ನಲೆಯೂ ಗೊತ್ತಿರುವುದಿಲ್ಲ. ಹಾಗೆಯೇ ಹೆಲಿಕಾಪ್ಟರ್‌ನ ತಾಂತ್ರಿಕ ಗುಣಮಟ್ಟ , ಸುರಕ್ಷತೆ ಮತ್ತು ಭದ್ರತೆ ಬಗ್ಗೆ ಯಾವುದೇ ಖಾತ್ರಿಯೂ ಇಲ್ಲವಾಗಿದೆ. ಒಂದು ವೇಳೆ ದುರಂತ ಸಂಭವಿಸಿದಲ್ಲಿ ಯಾರು ಹೊಣೆ ಹೊತ್ತುಕೊಳ್ಳುತ್ತಾರೆ ಎಂದು ಅಧಿಕಾರಿಯೊಬ್ಬರು ಪ್ರಶ್ನಿಸುತ್ತಾರೆ.

ಮಾರ್ಗಸೂಚಿಗಳಿಲ್ಲ

ಮುಖ್ಯಮಂತ್ರಿ, ರಾಜ್ಯಪಾಲರು ಮತ್ತು ಗಣ್ಯರ ಅಧಿಕೃತ ಉಪಯೋಗಕ್ಕೆ ವಿವಿಧ ಖಾಸಗಿ ಏಜೆನ್ಸಿಗಳಿಂದ ವೆಟ್ ಲೀಸ್ ಮತ್ತು ಬಾಡಿಗೆ ಆಧಾರದ ಮೇಲೆ ಹೆಲಿಕಾಫ್ಟರ್‌ನ್ನು ಪಡೆಯುತ್ತಿರುವ ರಾಜ್ಯ ಸರ್ಕಾರವು ಈ ಸಂಬಂಧ ಯಾವುದೇ ‘ಮಾರ್ಗಸೂಚಿ‘ಗಳನ್ನು ರೂಪಿಸಿಲ್ಲ. ಬಾಡಿಗೆ ಆಧಾರದ ಮೇಲೆ ಹೆಲಿಕಾಪ್ಟರ್ ಪಡೆಯುತ್ತಿದೆಯಾದರೂ, ಖಾಸಗಿ ಏಜೆನ್ಸಿ ತನ್ನ ಬಳಿ ಆ ಕ್ಷಣಕ್ಕೆ ಯಾವ ಹೆಲಿಕಾಪ್ಟರ್ ಇರುವುದೋ ಅದನ್ನೇ ಕಳಿಸುತ್ತಿದೆ. ಮುಖ್ಯಮಂತ್ರಿ, ರಾಜ್ಯಪಾಲರು ಮತ್ತು ಇತರೆ ಗಣ್ಯಾತಿಗಣ್ಯರ ಅಧಿಕೃತ ಉಪಯೋಗಕ್ಕೆ ಹೆಲಿಕಾಪ್ಟರ್‌ನ್ನು ಮೀಸಲಿರಿಸಿಲ್ಲ ಎಂಬುದು ಗೊತ್ತಾಗಿದೆ.

ಟೆಂಡರ್ ನಡೆದಿಲ್ಲ

2009ರಿಂದ 2021ರವರೆಗೆ ಟೆಂಡರ್ ನಡೆಸದೆಯೇ ಒಎಸ್‌ಎಸ್, ವಿಆರ್‌ಎಲ್, ಚಿಪ್ಸನ್, ಸ್ವಜಾಸ್, ಡೆಕ್ಕನ್, ಎಸ್‌ಎಸ್‌ಎ, ಪವನ್‌ಹನ್ಸ್ ಮತ್ತು ಜಿಎಂಆರ್ ಏಜೆನ್ಸಿಗಳಿಂದ ಹೆಲಿಕಾಪ್ಟರ್‌ನ್ನು ನೇರವಾಗಿ ಪಡೆದುಕೊಂಡಿದೆ ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಮಾಹಿತಿ ನೀಡಿದ್ದಾರೆ.

4 (ಜಿ) ವಿನಾಯಿತಿಯಲ್ಲೇ ಆಸಕ್ತಿ

‘2010ರ ಅಕ್ಟೋಬರ್ 1ರಿಂದ ಒಂದು ವರ್ಷದ ಅವಧಿಯವರೆಗೆ ಮಾತ್ರ ೪(ಜಿ) ವಿನಾಯಿತಿ ನೀಡಿ ಆ ಅವಧಿಯೊಳಗೆ ಟೆಂಡರ್ ಕರೆದು ಏಜೆನ್ಸಿ ನಿಗದಿಪಡಿಸುವುದು ಸೂಕ್ತ ‘ ಎಂದು ಆರ್ಥಿಕ ಇಲಾಖೆ ಆಡಳಿತ ಇಲಾಖೆಗೆ ತಿಳಿಸಿತ್ತು. ಆದರೆ ಟೆಂಡರ್ ಪ್ರಕ್ರಿಯೆ ನಡೆಸುವಲ್ಲಿ ‘ವಿಳಂಬ‘ವಾಗುತ್ತಿದೆ ಎಂಬ ಕಾರಣ ನೀಡಿದ್ದ ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆ(ಡಿಪಿಎಆರ್) ಅಧಿಕಾರಿಗಳು, ಟೆಂಡರ್ ಕರೆಯದೇ 2011ರಿಂದ 2021ರ ಇದುವರೆಗೂ ಪ್ರತಿ ವರ್ಷವೂ 4 (ಜಿ) ವಿನಾಯಿತಿ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Hot this week

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...
Please Scan to make Your Contribution

Topics

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

Related Articles

Popular Categories

error: Content is protected !!