Monday | August 24, 2026 |

ದಿ ಕಾಶ್ಮೀರ್‌ ಫೈಲ್ಸ್‌ ಸಿನಿಮಾಗೆ 6 ತಿಂಗಳವರೆಗೆ ತೆರಿಗೆ ವಿನಾಯ್ತಿಗೆ ಆದೇಶ; ಶಾಸಕರ ಕೋರಿಕೆಗೆ ಮನ್ನಣೆ

ಬೆಂಗಳೂರು; ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್‌ ಮತ್ತಿತರ ಶಾಸಕರ ಕೋರಿಕೆ ಮೇರೆಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ 3 ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್‌ 14ರಿಂದ ಅನ್ವಯವಾಗುವಂತೆ 6 ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

 

2022ರ ಮಾರ್ಚ್‌ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಎಸ್‌ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಾಟ ಮಾಡಬೇಕು ಎಂದು ಸೂಚಿಸಿದೆ. ಈ ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ತೆರಿಗೆ ವಿನಾಯ್ತಿಗೆ ಹೊರಡಿಸಿರುವ ಆದೇಶ

 

ಇದನ್ನು ಚಲನಚಿತ್ರ ನಿರ್ಮಾಣ ಸಹಾಯಧನ (ಲೆಕ್ಕ ಶೀರ್ಷಿಕೆ- 2220–1-105-0-01-ಚಲನಚಿತ್ರ ನಿರ್ಮಾಣ 106-ಸಹಾಯಧನ) ಅಡಿಯಲ್ಲಿ ತೆರಿಗೆ ವಿನಾಯಿತಿ ನೀಡಿರುವುದು ಆದೇಶದಿಂದ ತಿಳಿದು ಬಂದಿದೆ.
ದ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 100ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್‌ ಅವರು 2022ರ ಮಾರ್ಚ್‌ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ ಎಂದು ಗೊತ್ತಾಗಿದೆ.

 

ಸ್ಪೂರ್ತಿದಾಯಕ, ಸ್ವಾತಂತ್ರ್ಯ ಹೋರಾಟಗಾರರು, ಕೋಮು ಸೌಹಾರ್ದತೆ ಉತ್ತೇಜಿಸುವ, ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಚಲನಚಿತ್ರಗಳಿಗೆ ತೆರಿಗೆ ಮುಕ್ತ ಘೋಷಿಸುವ ಅಧಿಕಾರ ಹೊಂದಿರುವ ರಾಜ್ಯ ಸರ್ಕಾರವು ‘ದ ಕಾಶ್ಮೀರ್‌ ಫೈಲ್ಸ್‌’ ಹಿಂದಿನ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ಸಂಬಂಧ ಆದೇಶ ಹೊರಡಿಸಿದೆ.

 

‘ಪ್ರಧಾನಿ ನರೇಂದ್ರ ಮೋದಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಧ್ಯಪ್ರದೇಶ, ಗುಜರಾತ್ ಗಳು ತೆರಿಗೆ ವಿನಾಯಿತಿ ಘೋಷಣೆ ಮಾಡಿವೆ. ಈಗ ಕರ್ನಾಟಕವೂ ಇದೇ ರಾಜ್ಯಗಳ ಹಾದಿಯಲ್ಲಿ ನಡೆದಿದ್ದು ರಾಜ್ಯದಲ್ಲಿ ಕಾಶ್ಮೀರ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗುತ್ತದೆ,’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾರ್ಚ್‌ 13ರಂದು ಘೋಷಿಸಿದ್ದರು.

 

‘ಕಾಶ್ಮೀರಿ ಪಂಡಿತರು ತಮ್ಮ ನೆಲದಿಂದ ವಲಸೆ ಹೋಗುವಂತೆ ಮಾಡಿದ ಪರಿಸ್ಥಿತಿಯ ಕುರಿತು ನೇರವಾದ ಕಾಶ್ಮೀರ ಫೈಲ್ಸ್ ಸಿನಿಮಾ ಮಾಡಿರುವ ವಿವೇಕ್ ಅಗ್ನಿಹೋತ್ರಿಗೆ ವಂದನೆಗಳು. ಈ ಸಿನಿಮಾಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ದ ಕಾಶ್ಮೀರ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗುತ್ತಿದೆ,’ ಎಂದು ಟ್ವೀಟ್ ಮಾಡಿದ್ದರು.

 

ಕಾಶ್ಮೀರಿ ಪಂಡಿತರ ವಲಸೆಯ ನೋವನ್ನು ತೋರಿಸುವ ಚಿತ್ರ ಎಂದು ಹೇಳಲಾಗಿರುವ ‘ದಿ ಕಾಶ್ಮೀರ್ ಫೈಲ್ಸ್’ ಮಾರ್ಚ್ 11ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳಲ್ಲಿ ಈ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಇವುಗಳಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಕರ್ನಾಟಕ, ಉತ್ತರಾಖಂಡ ಮತ್ತು ಗೋವಾ ಸೇರಿವೆ.

 

2017ರಲ್ಲಿ ಜಿಎಸ್‌ಟಿ ಜಾರಿಗೆ ಬರುವವರೆಗೆ ರಾಜ್ಯ ಸರ್ಕಾರಗಳು ಚಿತ್ರಮಂದಿರಗಳಿಂದ ಮನರಂಜನಾ ತೆರಿಗೆ ಸಂಗ್ರಹ ಮಾಡುತ್ತಿದ್ದವು. ಆದರೆ ಹೊಸ ತೆರಿಗೆ ಜಾರಿಯ ಬಳಿಕ ದೇಶದ ಪ್ರತಿ ರಾಜ್ಯಗಳಲ್ಲಿ ಚಲನಚಿತ್ರ ಟಿಕೆಟ್‌ಗಳ ಮೇಲೆ ಶೇಕಡಾ 28ರಷ್ಟು ಜಿಎಸ್‌ಟಿ ವಿಧಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿತ್ತು. ಅಲ್ಲದೆ, ಈ ತೆರಿಗೆಯಿಂದ ಬರುವ ಆದಾಯದ ಅರ್ಧದಷ್ಟು ಹಣವನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಹಂಚಿಕೊಳ್ಳಲು ಒಪ್ಪಿಕೊಂಡಿದ್ದವು.

 

ಈ ಹೊಸ ನೀತಿಯಿಂದಾಗಿ ನಮಗೂ ಪರಿಹಾರ ಬೇಕು ಮತ್ತು ಸಡಿಲಿಕೆ ಬೇಕು ಎಂದು ಚಿತ್ರರಂಗ ಧ್ವನಿ ಎತ್ತಿತ್ತು. ಟಿಕೆಟ್‌ಗೆ ಶೇ.28ರಷ್ಟು ತೆರಿಗೆ ಪಾವತಿಸುವುದು ತುಂಬಾ ಕಷ್ಟ ಎಂದು ಸರಕಾರಗಳ ಮೇಲೆ ಒತ್ತಡ ಹೇರಿತ್ತು. ಕಡೆಗೆ ಕೇಂದ್ರ ಸರಕಾರ ಈ ಒತ್ತಡಕ್ಕೆ ಮಣಿದು, ಎರಡು ಭಾಗಗಳಾಗಿ ವಿಂಗಡಿಸಿ ತೆರಿಗೆ ವಿಧಿಸುವುದಾಗಿ ಹೇಳಿತ್ತು. ಚಲನಚಿತ್ರ ಮಂದಿರಗಳಲ್ಲಿ ಟಿಕೆಟ್ ದರ 100 ರೂ.ಗಿಂತ ಕಡಿಮೆಯಿದ್ದರೆ 12 ರಷ್ಟು ಜಿಎಸ್‌ಟಿ, ಟಿಕೆಟ್ ಬೆಲೆ 100 ರೂ.ಗಿಂತ ಹೆಚ್ಚಾಗಿದ್ದರೆ ಶೇ.18ರಷ್ಟು ಜಿಎಸ್‌ಟಿ ಎಂದು ಮಾನದಂಡ ರೂಪಿಸಿತ್ತು.

 

ರಾಜ್ಯದಲ್ಲಿ ಯಾವುದೇ ಚಿತ್ರದ ಟಿಕೆಟ್‌ಗೆ 18 ಪ್ರತಿಶತ ಜಿಎಸ್‌ಟಿ ವಿಧಿಸಲಾಗುತ್ತಿದೆ ಎಂದಿಟ್ಟುಕೊಂಡರೆ ರಾಜ್ಯ ಸರಕಾರ ಸಿನೆಮಾವೊಂದಕ್ಕೆ ತೆರಿಗೆ ಮುಕ್ತ ಘೋಷಿಸಿದ ಬಳಿಕ ತೆರಿಗೆ ವ್ಯಾಪ್ತಿಯಿಂದ ತನ್ನ ಪಾಲಿನ ಶೇಕಡಾ 9ರಷ್ಟು ವಿನಾಯಿತಿ ನೀಡಲಾಗಿದೆ ಎಂದು ಅರ್ಥ. ಶೇ. 18ರ ಜಿಎಸ್‌ಟಿ ಬದಲಿಗೆ 9ರಷ್ಟು ತೆರಿಗೆ ವಿಧಿಸಲಾಗುತ್ತದೆ. ಹಾಗಾಗಿ ವಿಧಿಸುತ್ತಿರುವ ಶೇ.9ರಷ್ಟು ತೆರಿಗೆಯೂ ಕೇಂದ್ರದ ಪಾಲಾಗಿರುತ್ತದೆ. ಅಂದರೆ ರಾಜ್ಯವು ತನ್ನ ಪಾಲಿನ ತೆರಿಗೆಯ ಶೇಕಡಾ 50 ರಷ್ಟು ಮಾತ್ರ ಮನ್ನಾ ಮಾಡುವ ಹಕ್ಕು ಹೊಂದಿದೆ. ಹೀಗಾಗಿ, ಈ ತೆರಿಗೆ ಲಾಭ ಪ್ರೇಕ್ಷಕರಿಗೆ ದೊರೆಯಲಿದೆ ಎಂದು ಹೇಳಲಾಗಿದೆ.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!