Friday | June 12, 2026 |

‘ದಿ ಫೈಲ್‌’ ವರದಿ ಪರಿಣಾಮ; 13.50 ಕೋಟಿ ಮೊತ್ತದ ಅವ್ಯವಹಾರ ತನಿಖೆಗೆ ಸಮಿತಿ ರಚನೆ

ಬೆಂಗಳೂರು; ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಮಗಾರಿ ನಿರ್ವಹಣಾ ಪತ್ರದ ನೈಜತೆಯನ್ನು ಪರಿಶೀಲಿಸದೆಯೇ ನಿರ್ದಿಷ್ಟ ಗುತ್ತಿಗೆದಾರನಿಗೆ 13.50 ಕೋಟಿ ರು. ಮೊತ್ತದ ಕಾಮಗಾರಿ ವಹಿಸಿರುವ ಪ್ರಕರಣವನ್ನು ‘ದಿ ಫೈಲ್‌’ ಹೊರಗೆಡವುತ್ತಿದ್ದಂತೆ ಸಣ್ಣ ನೀರಾವರಿ , ಅಂತರ್ಜಲ ಅಭಿವೃದ್ಧಿ ಇಲಾಖೆಯ ವಿಜಯಪುರ ಉತ್ತರ ವಲಯದ ಮುಖ್ಯ ಇಂಜಿನಿಯರ್‌ ಅವರ ಕಚೇರಿಯು ಸಮಗ್ರ ವರದಿ ನೀಡಲು ಅಧೀಕ್ಷಕ ಇಂಜನಿಯರ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ.

 

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ 14 ಗ್ರಾಮಗಳಲ್ಲಿರುವ ಕೆರೆಗಳ ಅಭಿವೃದ್ಧಿ ಕಾಮಗಾರಿ ಟೆಂಡರ್‌ ಪಡೆದುಕೊಳ್ಳಲು ಕಾಮಗಾರಿ ನಿರ್ವಹಿಸಲಾಗಿದೆ ಎಂದು ನಕಲಿ ಪ್ರಮಾಣ ಪತ್ರವನ್ನು ಪುರಸ್ಕರಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್‌ನ ಮಾಜಿ ಅಧ್ಯಕ್ಷ ಮುಕುಂದರಾವ್‌ ಭವಾನಿಮಠ ಅವರು ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಅವರಿಗೆ ಸಲ್ಲಿಸಿದ್ದ ದೂರನ್ನಾಧರಿಸಿ ‘ದಿ ಫೈಲ್‌’ 2022ರ ಮೇ 4ರಂದು ವರದಿ ಪ್ರಕಟಿಸಿತ್ತು.

ಸಣ್ಣ ನೀರಾವರಿ ಇಲಾಖೆಯಲ್ಲೂ ಗೋಲ್ಮಾಲ್‌; ಬೋಗಸ್‌ ಬಿಲ್‌ ಸಲ್ಲಿಸಿ 13.50 ಕೋಟಿ ಲೂಟಿ

 

‘ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಳ್ಳಲಾದ ಕೆರೆ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಸುಮಾರು 13 ಕೋಟಿ ರು. ಮೊತ್ತದ ಅವ್ಯವಹಾರ ಎಸಗಿರುವುದಾಗಿ ಕೊಪ್ಪಳ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಭವಾನಿಮಠ ಅವರು ಸಣ್ಣ ನೀರಾವರಿ ಸಚಿವರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೂರಿನ ಬಗ್ಗೆ ಪರಿಶೀಲಿಸಿ ಸಮಗ್ರ ವರದಿ ನೀಡಲು ಬೆಳಗಾವಿ ವೃತ್ತದ ಅಧೀಕ್ಷಕ ಇಂಜಿನಿಯರ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ. ಈ ಸಮಿತಿಯು ಕಾಮಗಾರಿಗಳ ಸ್ಥಳ ಪರಿವೀಕ್ಷಿಸಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಸಮಗ್ರ ವರದಿಯನ್ನು ಕೂಡಲೇ ಸಲ್ಲಿಸಬೇಕು,’ ಎಂದು ವಿಜಯಪುರ ಉತ್ತರ ವಲಯದ ಮುಖ್ಯ ಇಂಜಿನಿಯರ್‌ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸಮಿತಿ ರಚಿಸಿ ಹೊರಡಿಸಿ ಆದೇಶದ ಪ್ರತಿ

 

ಪ್ರಕರಣದ ಹಿನ್ನೆಲೆ

 

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಕೆರೆಗಳ ಅಭಿವೃದ್ಧಿಪಡಿಸಲು ಲೆಕ್ಕ ಶೀರ್ಷಿಕೆ 4702 ಪ್ರಧಾನ ಕಾಮಗಾರಿ (ಕೆರೆಗಳ ಆಧುನೀಕರಣ)ಳಡಿಯಲ್ಲಿ  ಇರಕಲ್‌ಗಡ, ಅಬ್ಬಿಗೇರಿ, ಕಲ್ಲುತಾವರೆಗೇರೆ, ಕಾಮನೂರು, ಚಳ್ಳಾರಿ, ಭಟ್ಟರನಸಾಪೂರ, ಹನುಮನಟ್ಟಿ, ಗಡ್ಡಿ, ಇಂದಿರಿಗಿ, ಮಲಕನಮರಡಿ, ಒಣಬಳ್ಳಾರಿ, ಹಾಲಹೊಸಳ್ಳಿ, ಹೊಸೂರು, ವಿಠಲಾಪೂರ ಗ್ರಾಮದ ಕೆರೆಗಳ ಅಭಿವೃದ್ಧಿಪಡಿಸಲು 2020ರ ಮಾರ್ಚ್‌ 6 ರಂದು ಟೆಂಡರ್ ಕರೆಯಲಾಗಿತ್ತು.

 

ಈ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಬಿಡ್‌ದಾರರ ಪೈಕಿ ಕೊಪ್ಪಳದ ಮಹಾದೇವಪ್ಪ ಇದರಮನಿ ಎಂಬ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಟ್ಟು ಕಾಮಗಾರಿ ವಹಿಸಿ ಆದೇಶ ಹೊರಡಿಸಲಾಗಿತ್ತು ಎಂಬ ಆರೋಪವಿದೆ. 9 ತಿಂಗಳ ಕಾಲಮಿತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಆದರೂ ಕಾಲಮಿತಿಯೊಳಗೆ ಯಾವುದೇ ಕಾಮಗಾರಿ ಮಾಡದೇ ಇದ್ದರೂ ಬೋಗಸ್‌ ಬಿಲ್‌ಗಳನ್ನು ಸೃಷ್ಟಿಸಿ ಹಣ ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

 

ಇದಷ್ಟೇ ಅಲ್ಲ, ಕಾಮಗಾರಿ ಆದೇಶ ಪಡೆದ ಗುತ್ತಿಗೆದಾರರು 3-4 ತಿಂಗಳಾದರೂ ಉದ್ಧೇಶಪೂರ್ವಕವಾಗಿ ಕಾಮಗಾರಿಗಳನ್ನು ಆರಂಭಿಸದೇ ವಿಳಂಬ ಮಾಡಿದ್ದಾರೆ. ‘ ಕೊಪ್ಪಳ ಜಿಲ್ಲೆಯಲ್ಲಿ ವಾಡಿಕೆಯಂತೆ ಮೇ ಅಂತ್ಯ ಮತ್ತು ಜೂನ್‌ ತಿಂಗಳ ಆರಂಭದಲ್ಲಿ ಮಳೆ ಪ್ರಾರಂಭವಾಗುತ್ತದೆ. ಆಗ ಈ ಗ್ರಾಮಗಳ ಕೆರೆಗಳು ನೈಸರ್ಗಿಕವಾಗಿ ನೀರಿನಿಂದ ತುಂಬಿಕೊಳ್ಳುತ್ತವೆ. ಮತ್ತು ಈಗಾಗಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯ್ತಿ ಪ್ರತಿ ಕೆರೆಗೆ ಹತ್ತಿರ ಒಂದು ನೂರು ಲಕ್ಷ ರು.ಗಳ ಅಂದಾಜು ವೆಚ್ಚದಲ್ಲಿ ಎಲ್ಲಾ ಕೆರೆಗಳ ಹೂಳನ್ನು ಕಾರ್ಮಿಕರನ್ನು ಬಳಸಿ ತೆಗೆದಿದ್ದಾರೆ. ಇದೇ ಕಾಮಗಾರಿಯನ್ನು ಸಣ್ಣ ನೀರಾವರಿ ಇಲಾಖೆಯ ವತಿಯಿಂದ ತೆಗೆಯಲಾಗಿದೆ ಎಂದು ಬೋಗಸ್‌ ದಾಖಲೆಗಳನ್ನು ಸೃಷ್ಟಿಸಿ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಸೇರಿ ಹಣ ಲೂಟಿ ಹೊಡೆಯುವ ಎಲ್ಲಾ ವ್ಯವಸ್ಥಿತವಾದ ಯೋಜನೆಯನ್ನು ತಯಾರಿಸಿ ಮುಗಿಸಿದ್ದಾರೆ,’ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷ ಮುಕುಂದರಾವ್‌ ಭವಾನಿಮಠ ಅವರು ಆರೋಪಿಸಿದ್ದರು.

 

ಹಾಗೆಯೇ ಈ ಗುತ್ತಿಗೆದಾರರು ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗವಹಿಸುವಾಗ ನಿಯಮಾವಳಿ ಪ್ರಕಾರ ಈ ಹಿಂದೆ ನಿರ್ವಹಿಸಿರುವ ಕಾಮಗಾರಿಯ ನಿರ್ವಹಣಾ ಪತ್ರ ಲಗತ್ತಿಸಬೇಕು. ಆದರೆ ಈ ಗುತ್ತಿಗೆದಾರರು ಟೆಂಡರ್‌ ಅರ್ಜಿಯ ಜತೆ ಲಗತ್ತಿಸಲಾದ ಕಾಮಗಾರಿ ನಿರ್ವಹಣಾ ಪತ್ರ ನಕಲಿಯಾಗಿದೆ. ಅಧಿಕಾರಿಗಳು ಅಕ್ರಮವಾಗಿ ಗುತ್ತಿಗೆದಾರನ ಜತೆಯಲ್ಲಿ ಶಾಮೀಲಾಗಿ ನಕಲಿ ನಿರ್ವಹಣಾ ಪತ್ರಮೇಲೆ ಟೆಂಡರ್‌ ಪ್ರಕ್ರಿಯೆಯಲ್ಲಿ ಮಹಾದೇವಪ್ಪ ಇದರಮನಿ ಎಂಬುವರಿಗೆ ದೊರಕುವ ಹಾಗೆ ಮಾಡಿದ್ದಾರೆ. ಇದರಲ್ಲಿ ಕೊಪ್ಪಳದ ಅಂದಿನ ಮುಖ್ಯ ಇಂಜಿನಿಯರ್‌ ಶಾಮೀಲಾಗಿದ್ದಾರೆ ಎಂದು ಭವಾನಿಮಠ ಅವರು ದೂರಿನಲ್ಲಿ ವಿವರಿಸಿದ್ದರು.

 

ವೀರಯ್ಯ ಹಿರೇಮಠ, ಮಹಾದೇವಪ್ಪ ಇದರಮನಿ, ಬಾಲಚಂದ್ರಸಾಲಬಾವಿ, ಮಲ್ಲನಗೌಡ ಮಾಲಿಪಾಟೀಲ್‌ ಹೊರತುಪಡಿಸಿದರೆ ಬೇರೆ ಯಾವುದೇ ಗುತ್ತಿಗೆದಾರರಿಗೆ ಕಾಮಗಾರಿ ನಿರ್ವಹಿಸುವ ಅವಕಾಶಗಳೇ ದೊರಕಿಲ್ಲ. ಇದಕ್ಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳ ಕಾರಣ ಎಂದೂ ಭವಾನಿ ಮಠ ಅವರು ದೂರಿದ್ದರು.

Hot this week

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...
Please Scan to make Your Contribution

Topics

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

Related Articles

Popular Categories

error: Content is protected !!