ಶಾಲಾ ಮಕ್ಕಳಿಗೆ ಸಮವಸ್ತ್ರ; ಕಾಲಹರಣದಿಂದ ಹೊರಬಂದ ಸರ್ಕಾರ, ಬಿಡ್‌ದಾರರಿಗೆ ಕಾರ್ಯಾದೇಶ ನೀಡಲು ಸೂಚನೆ

Photo Credit; Financial Express

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳ ಒಂದರಿಂದ ಹತ್ತನೆ ತರಗತಿಯ ಎಲ್ಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸುವ ಸಂಬಂಧ ಸರ್ಕಾರವು ಟೆಂಡರ್‌ ಪ್ರಕ್ರಿಯೆಯಲ್ಲಿಯೇ ಕಾಲಹರಣ ಮಾಡುತ್ತಿದ್ದರ ಬಗ್ಗೆ ‘ದಿ ಫೈಲ್‌’ ಮತ್ತು ವಾರ್ತಾಭಾರತಿ ವರದಿ ಪ್ರಕಟಿಸುತ್ತಿದ್ದಂತೆಯೇ ಇದೀಗ ಟೆಂಡರ್‌ನಲ್ಲಿ ಯಶಸ್ವಿಯಾಗಿ ಹೊರಹೊಮ್ಮಿರುವ ಕನಿಷ್ಠ ಬಿಡ್‌ದಾರರಿಗೆ ತಕ್ಷಣವೇ ಕಾರ್ಯಾದೇಶ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

 

ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸಲು ಅತ್ಯಾಸಕ್ತಿ ವಹಿಸಿದ್ದ ರಾಜ್ಯ ಸರ್ಕಾರವು 2022-23ನೇ ಶೈಕ್ಷಣಿಕ ವರ್ಷವು ಆರಂಭವಾಗಲು ಇನ್ನು ಐದು ದಿನಗಳು ಬಾಕಿ ಇದ್ದರೂ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು ಮೂರು ಲಕ್ಷ ಮಕ್ಕಳಿಗೆ ಎರಡನೇ ಜತೆ ಸಮವಸ್ತ್ರ ಪೂರೈಕೆ ಮಾಡಿಲ್ಲ. ಸಮವಸ್ತ್ರ ಖರೀದಿ ಮತ್ತು ಪೂರೈಕೆ ಸಂಬಂಧ ಸರ್ಕಾರವು ಇನ್ನೂ ಟೆಂಡರ್‌ ಪ್ರಕ್ರಿಯೆಯಲ್ಲಿಯೇ ಕಾಲಹರಣ ಮಾಡುತ್ತಿದೆ ಎಂದು ಕೆಲ ದಿನಗಳ ಹಿಂದೆಯಷ್ಟೇ ‘ದಿ ಫೈಲ್‌ ಮತ್ತು ವಾರ್ತಾಭಾರತಿ ವರದಿ ಪ್ರಕಟಿಸಿತ್ತು.

ಶಾಲಾರಂಭಕ್ಕೆ ಐದೇ ಐದು ದಿನ ಬಾಕಿ; ವಿದ್ಯಾರ್ಥಿಗಳಿಗೆ ದೊರಕದ ಸಮವಸ್ತ್ರ, ಟೆಂಡರ್‌ನಲ್ಲೇ ಕಾಲಹರಣ

ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಎಂದು ಹೇಳಿಕೆ ನೀಡಿದ್ದ ಸಚಿವ ಬಿ ಸಿ ನಾಗೇಶ್‌ ಅವರು ನಿಗದಿತ ಅವಧಿಯೊಳಗೆ ಸಮವಸ್ತ್ರ ನೀಡುವಲ್ಲಿ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದರು. ಶಾಲೆ ಆರಂಭವಾದರೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸರಬರಾಜು ಮಾಡದೇ ಇದ್ದದ್ದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿತ್ತು. ಹೀಗಾಗಿ ಟೆಂಡರ್‌ನಲ್ಲಿ ಕನಿಷ್ಠ ಬಿಡ್‌ದಾರರಾಗಿ ಹೊರಹೊಮ್ಮಿರುವವರಿಗೆ ಕಾರ್ಯಾದೇಶ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಬಿ ಸಿ ನಾಗೇಶ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು.

 

ಟೆಂಡರ್‌ನಲ್ಲಿ ಯಶಸ್ವಿಯಾಗಿ ಹೊರಹೊಮ್ಮಿರುವ ಕನಿಷ್ಟ ಬಿಡ್‌ದಾರರಿಗೆ (ಎಲ್‌ 1) ಒಟ್ಟು ಟೆಂಡರ್‌ ಮೌಲ್ಯದ ಶೇ. 5 ರ ಮಿತಿ ಮೀರದಂತೆ ಕಾರ್ಯಾದೇಶ ನೀಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಮುಖೇನ ನಿರ್ದೇಶನ ನೀಡಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಇಂಧನ, ಕಚ್ಛಾ ಸಾಮಗ್ರಿ, ಪೂರಕ ವಸ್ತು ಮತ್ತು ಸೇವೆಗಳ ಬೆಲೆಯಲ್ಲಿ ಆಗಿರುವ ಹೆಚ್ಚಳವು ಶಾಲಾ ವಿದ್ಯಾರ್ಥಿಗಳ ಸಮವಸ್ತ್ರ ಪೂರೈಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಇದನ್ನು ಸರಿದೂಗಿಸುವ ಸಲುವಾಗಿ ಒಟ್ಟಾರೆ ಟೆಂಡರ್‌ ಮೊತ್ತದಲ್ಲಿ ಹೆಚ್ಚಳವಾಗಿತ್ತು.

 

2021-22ನೇ ಸಾಲಿನ ಮೊದಲನೇ ಜೊತೆ ಸಮವಸ್ತ್ರ ಖರೀದಿ ಮತ್ತು ಪೂರೈಕೆಗೆ ಕರೆದಿದ್ದ ಇ- ಟೆಂಡರ್‌ ಪ್ರಕ್ರಿಯೆಯಲ್ಲಿ ಹೊರಹೊಮ್ಮಿದ್ದ ದರವು ಎರಡನೇ ಜೊತೆಗೆ ನಮೂದಿಸಿದ್ದ ಅಂದಾಜು ದರದಲ್ಲಿ ಶೇ.30ರಷ್ಟು ಹೆಚ್ಚಾಗಿದೆ. 2021-22ನೇ ಸಾಲಿನ ವಿದ್ಯಾವಿಕಾಸ ಯೋಜನೆಯಡಿ ಸರ್ಕಾರಿ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ 2ನೇ ಜೊತೆ ಸಮವಸ್ತ್ರ ಸರಬರಾಜು ಸಂಬಂಧಿಸಿದಂತೆ ಮೂಲ ದರಗಳನ್ನು ಪುನರ್‌ ನಿಗದಿ ಮಾಡಿ ಅಲ್ಪಾವಧಿಗೆ ಮರು ಟೆಂಡರ್‌ ಆಹ್ವಾನಿಸಿತ್ತು.

 

ಬಿಡ್‌ದಾರರೊಂದಿಗೆ ನಡೆದ ದರ ಸಂಧಾನ ನಂತರ ಅಂತಿಮವಾಗಿ 99.15 ಕೋಟಿ ರು.ಗೆ ಅಂತಿಮಗೊಳಿಸಿದ್ದ ಸರ್ಕಾರವು ಈ ಅನುದಾನವನ್ನು ಮಂಜೂರು ಮಾಡಿತ್ತು. ಆದರೆ ಹಿಂದಿನ ಟೆಂಡರ್‌ಗೆ ಹೋಲಿಸಿದರೆ 7.3 ಕೋಟಿ ರು. ಅಧಿಕವಾಗಿತ್ತು.

 

ಈ ಹಿಂದಿನ ಟೆಂಡರ್‌ ಮೊತ್ತ ಮತ್ತು ಹೊಸದಾಗಿ ಕರೆದಿರುವ ಟೆಂಡರ್ ಮೊತ್ತ ಅಧಿಕವಾಗಲು ಇಂಧನ ಬೆಲೆ ಸೇರಿದಂತೆ ಇನ್ನಿತರೆ ಕಾರಣಗಳನ್ನು ಇಲಾಖೆಯು ಒದಗಿಸಿದೆ. ‘ಇತ್ತೀಚಿನ ದಿನಗಳಲ್ಲಿ ಎಲ್ಲಾ ಇಂಧನಗಳು, ಕಚ್ಚಾ ಸಾಮಗ್ರಿಗಳು, ವೇತನ ಮತ್ತು ಇನ್ನಿತರೆ ಪೂರಕ ವಸ್ತುಗಳ ಹಾಗೂ ಸೇವೆಗಳ ಬೆಲೆ ಹೆಚ್ಚಾಗಿರುತ್ತದೆಯಲ್ಲದೆ ಕೊರತೆಯೂ ಇದೆ. ಸರ್ಕಾರದ ಶಾಲೆಗಳಲ್ಲಿ ಸುಮಾರು ಮೂರು ಲಕ್ಷ ಮಕ್ಕಳ ದಾಖಲಾತಿ ಹೆಚ್ಚಾಗಿರುತ್ತದೆ. ಆದ್ದರಿಂದ ಸಮವಸ್ತ್ರದ ಬಟ್ಟೆಯ ಪರಿಮಾಣವು ಸುಮಾರು 124 ಲಕ್ಷ ಮೀಟರ್‌ನಿಂದ 136 ಲಕ್ಷ ಮೀಟರ್‌ ಅಧಿಕವಾಗಿದೆ. 2021-22ನೇ ಸಾಲಿನ ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ಹೊರಹೊಮ್ಮಿದ ದರವು ಅಂದಾಜು ದರಗಳಿಗಿಂತ ಶೇ. 17.41 ಕಡಿಮೆ ಇರುತ್ತದೆ. ಅಂದಾಜು ದರವು 47.00 ಕೋಟಿ ರು. ಆಗಿರುತ್ತದೆ,’ ಎಂದು ಅಧಿಕಾರಿಗಳು ವಿವರಿಸಿದ್ದರು.

 

2021-22ನೇ ಸಾಲಿನ ಮೊದಲನೆ ಜೊತೆ ಸಮವಸ್ತ್ರದ ಟೆಂಡರ್‌ ದರಗಳು ಅಂದಿನ ಸನ್ನಿವೇಶಗಳಿಗೆ (ಕೊರೋನ ಸಮಯ) ಸೀಮಿತವಾಗಿ ಕಡಿಮೆ ಆಗಿದೆ. ಆದರೀಗ ಎರಡನೇ ಬಾರಿಗೆ ಕರೆಯಲಾಗಿದ್ದ ಅಲ್ಪಾವಧಿ ಟೆಂಡರ್‌ನಲ್ಲಿ ಹೊರಹೊಮ್ಮಿದ ಅಂತಿಮ ಟೆಂಡರ್‌ ದರಗಳು ಮತ್ತುಇನ್ನಿತರೆ ವೆಚ್ಚಗಳು ಸೇರಿ 99.15 ಕೋಟಿ ರು. ಆಗಿದೆ. ಈ ಮೊತ್ತವು ಮಂಜೂರಾಗಿರುವ ಅನುದಾನಕ್ಕಿಂತ 7.30 ಕೋಟಿ ರು. ಹೆಚ್ಚುವರಿಯಾಗಿದೆ.
‘2022-23ನೇ ಶೈಕ್ಷಣಿಕ ವರ್ಷವು 2022ರ ಮೇ 16ರಿಂದ ಪ್ರಾರಂಭವಾಗಲಿದ್ದು ಮಕ್ಕಳಿಗೆ ಸಮವಸ್ತ್ರ ಒದಗಿಸಲು ಕೂಡಲೇ ಕ್ರಮವಹಿಸಬೇಕಾಗಿದೆ. 2021-22ನೇ ಸಾಲಿನ ಎರಡನೆ ಜೊತೆ ಉಚಿತ ಸಮವಸ್ತ್ರ ಸರಬರಾಜಿಗೆ 99.15 ಕೋಟಿ ರು. ಭರಿಸಲು ಅರ್ಥಿಕ ಇಲಾಖೆ ಅನುಮೋದನೆ ಪಡೆಯಬಹುದಾಗಿದೆ,’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಕೋರಿತ್ತು.

 

2021ರ ಡಿಸೆಂಬರ್‌ 31ರಂದು ಕರೆದಿದ್ದ ಟೆಂಡರ್‌ನಲ್ಲಿ ಅರವಿಂದ್‌ ಕೋಟ್ಸ್‌ ಇಂಡಿಯಾ ಲಿಮಿಟೆಡ್‌, ಪದಂಚಂದ್‌ ಮಿಲಾಪ್‌ಚಂದ್‌ಜೈನ್‌ ಭಾಗವಹಿಸಿದ್ದರು. ಇದರಲ್ಲಿ ಅರವಿಂದ್‌ ಕೋಟ್ಸ್‌ 2ನೇ ಮತ್ತು ಪದಂಚಂದ್‌ 3ನೇ ಬಿಡ್‌ದಾರರಾಗಿ ಹೊರಹೊಮ್ಮಿದ್ದರು. ಪ್ಯಾಕೇಜ್‌ 1 ಮತ್ತು 2ರ ಐಟಂ ಸಂಖ್ಯೆ 1,2 ಮತ್ತು 3ರ ಕನಿಷ್ಠ ದರಗಳಿಗೆ ಇಳಿಸಲು ಈ ಬಿಡ್‌ದಾರರು ಸಹಮತಿ ಸೂಚಿಸಿರಲಿಲ್ಲ.

 

ಹೀಗಾಗಿ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿದ್ದ 91.85 ಕೋಟಿ ರು.ಗೆ 7 ಲಕ್ಷ ಅಧಿಕ ಸೇರ್ಪಡೆಗೊಂಡು ಒಟ್ಟು 91.92 ಕೋಟಿ ರು. ಆಗಿತ್ತು. ಕೆಟಿಪಿಪಿ ಕಾಯ್ದೆ 2000 ನಿಯಮ 12(5)ರ ಪ್ರಕಾರ ಶೇ. 25ರಷ್ಟು ಹೆಚ್ಚುಕಡಿಮೆ ಮಾಡಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಮೂರು ಪ್ಯಾಕೇಜ್‌ಗಳನ್ನು ಪದಂಚಂದ್‌ ಮಿಲಾಪ್‌ಚಂದ್‌ ಜೈನ್‌ ಅವರಿಗೆ ಒಟ್ಟು 71.55 ಕೋಟಿ ರು. ವೆಚ್ಚದಲ್ಲಿ ಸಮವಸ್ತ್ರ ಬಟ್ಟೆ ಒದಗಿಲು ಆದೇಶ ನೀಡಲು ಆಯುಕ್ತರು ಕೋರಿದ್ದನ್ನು ಸ್ಮರಿಸಬಹುದು.

the fil favicon

SUPPORT THE FILE

Latest News

Related Posts