ವೇತನ ಹಗರಣವನ್ನೇ ಮುಚ್ಚಿಹಾಕಿದ ಹೊರಟ್ಟಿ; ತನಿಖಾ ವರದಿಯೇ ಇಲ್ಲವೆಂದು ಮರೆಮಾಚಿದ ಸಚಿವಾಲಯ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಗಣಕ ಕೇಂದ್ರಕ್ಕೆ 2018-19ನೇ ಸಾಲಿನಲ್ಲಿ ಹೊರಗುತ್ತಿಗೆಯಡಿಯಲ್ಲಿ ನೇಮಕವಾದ ಸಿಬ್ಬಂದಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವೇತನ ನೀಡಿದ್ದರ ಕುರಿತು ಸಲ್ಲಿಕೆಯಾಗಿದ್ದ ತನಿಖಾ ವರದಿಯನ್ನೇ ಮುಚ್ಚಿಡಲಾಗಿದೆ. ಅಲ್ಲದೆ ತನಿಖಾ ವರದಿಯು ಇದುವರೆಗೂ ಸ್ವೀಕೃತವಾಗಿಲ್ಲ ಎಂದು ವಿಧಾನಪರಿಷತ್‌ ಸಚಿವಾಲಯವು ಆರ್‌ಟಿಐ ಅಡಿಯಲ್ಲಿ ತಪ್ಪು  ಮಾಹಿತಿ ನೀಡಿದೆ.

 

ಸಿಬ್ಬಂದಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವೇತನ ನೀಡಿದ್ದರ ಕುರಿತು ತನಿಖೆ ನಡೆಸಿದ್ದ ತನಿಖಾಧಿಕಾರಿ ಜಿ ಎನ್‌ ಮಂಜುನಾಥಸ್ವಾಮಿ ಅವರು ವಿಧಾನಪರಿಷತ್‌ ಕಾರ್ಯದರ್ಶಿಗೆ 2022ರ ಮಾರ್ಚ್‌ 7ರಂದು ತನಿಖಾ ವರದಿ ಸಲ್ಲಿಸಿದ್ದರೂ ವರದಿಯೇ ಸ್ವೀಕೃತವಾಗಿಲ್ಲ ಎಂದು ಮಾಹಿತಿ ನೀಡಿರುವುದು ವೇತನ ಹಗರಣವನ್ನು ಮುಚ್ಚಿಹಾಕಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

 

ವಿಧಾನಪರಿಷತ್‌ ಸಚಿವಾಲಯದಲ್ಲಿ ನಡೆದಿದ್ದ ವೇತನ ಹಗರಣದಿಂದ 48 ಲಕ್ಷ ರು. ನಷ್ಟವಾಗಿದೆ ಎಂದು ದಾಖಲೆ ಸಮೇತ ‘ದಿ ಫೈಲ್‌’ 2021ರ ಜೂನ್‌ 18ರಂದೇ ಹೊರಗೆಳೆದಿತ್ತು.

ಪರಿಷತ್‌ನಲ್ಲಿ ಅಕ್ರಮ ನೇಮಕ, ಹೆಚ್ಚುವರಿ ವೇತನ, 48 ಲಕ್ಷ ನಷ್ಟ; ಹೊರಟ್ಟಿ ಮೌನ!

 

ಈ ವರದಿ ಆಧರಿಸಿಯೇ ಸಭಾಪತಿ ಬಸವರಾಜ ಹೊರಟ್ಟಿ ಅವರು ತನಿಖೆಗೆ ಆದೇಶಿಸಿದ್ದರು.

ವೇತನ ಹಗರಣ; ‘ದಿಫೈಲ್‌’ ವರದಿ ಆಧರಿಸಿ ಸಮಗ್ರ ವರದಿ ಸಲ್ಲಿಸಲು ಹೊರಟ್ಟಿ ಸೂಚನೆ

 

ಆದರೀಗ ತನಿಖಾ ವರದಿಯೇ ಸ್ವೀಕೃತವಾಗಿಲ್ಲ ಎಂದು ಆರ್‌ಟಿಐ ಅಡಿಯಲ್ಲಿ ಪರಿಷತ್‌ ಸಚಿವಾಲಯವು ನೀಡಿರುವ ಉತ್ತರವು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಅದೇ ರೀತಿ ಈ ಹಗರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ತಕರಾರು ಎತ್ತಿದ್ದ ಆರ್ಥಿಕ ಇಲಾಖೆಯು ಆ ನಂತರ ದಿನಗಳಲ್ಲಿ ಅದನ್ನು ಸಕ್ರಮಗೊಳಿಸಿತ್ತು. ಈ ಕುರಿತೂ ‘ದಿ ಫೈಲ್‌ 2021ರ ಆಗಸ್ಟ್‌ 6ರಂದು ವರದಿ ಪ್ರಕಟಿಸಿತ್ತು.

ವೇತನ ಹಗರಣಕ್ಕೆ ಸಕ್ರಮದ ರಕ್ಷಾಕವಚ; ವರದಿ ಬರುವ ಮುನ್ನವೇ ನಿಲುವು ಬದಲಿಸಿದ್ದೇಕೆ?

 

ತನಿಖಾ ವರದಿ ಮುಚ್ಚಿಟ್ಟಿರುವುದೇಕೆ?

 

ತನಿಖೆ ನಡೆಸುವ ಸಂಬಂಧ 2021ರ ನವೆಂಬರ್‌ 24ರಂದು ಸಭಾಪತಿ ಬಸವರಾಜ ಹೊರಟ್ಟಿ ಅವರ ನಿರ್ದೇಶನದ ಮೇರೆಗೆ ಆದೇಶವನ್ನೂ ಹೊರಡಿಸಲಾಗಿತ್ತು. ಕಿಯೋನಿಕ್ಸ್‌ ಸಂಸ್ಥೆಯಿಂದ ನೇಮಕವಾದ ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ ಪಾವತಿಸಿರುವ ಕುರಿತು ತನಿಖಾಧಿಕಾರಿ ಜಿ ಎನ್‌ ಮಂಜುನಾಥಸ್ವಾಮಿ ಅವರು ವಿಧಾನಪರಿಷತ್‌ ಕಾರ್ಯದರ್ಶಿಗೆ ವಿಧಾನ ಪರಿಷತ್‌ ಕಾರ್ಯದರ್ಶಿಗೆ 2022ರ ಮಾರ್ಚ್‌ 7ರಂದು ತನಿಖಾ ವರದಿ ಸಲ್ಲಿಸಿದ್ದಾರೆ. ಈ ಕುರಿತು ಸಂಭಾವನೆ ಪಾವತಿಸುವಂತೆ ಮಂಜುನಾಥಸ್ವಾಮಿ ಅವರೂ ವಿಧಾನಪರಿಷತ್‌ನ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ಪತ್ರವನ್ನೂ ಬರೆದಿದ್ದಾರೆ. ಇದರ ಪ್ರತಿಯೂ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ತನಿಖಾಧಿಕಾರಿ ಬರೆದ ಪತ್ರದಲ್ಲೇನಿದೆ?

 

‘ಕಿಯೋನಿಕ್ಸ್‌ ಸಂಸ್ಥೆಯಿಂದ ನೇಮಕವಾದ ಹೊರಗುತ್ತಿಗೆ ಅಧಾರದಲ್ಲಿ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ ಪಾವತಿಸಿರುವ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿತ್ತು. ಅದರಂತೆ ಪ್ರಕರಣದ ಕುರಿತು 2022ರ ಮಾರ್ಚ್‌ 7ರಂದು ತನಿಖೆ ನಡೆಸಿ ವರದಿಯನ್ನು ಸಲ್ಲಿಸಲಾಗಿರುತ್ತದೆ. ಆದ್ದರಿಂದ ತನಿಖಾಧಿಕಾರಿಯವರಿಗೆ ನೀಡುವ ಸಂಭಾವನೆ 11,000 ರು.ಗಳನ್ನು ಪಾವತಿಸಬೇಕು,’ ಎಂದು ತನಿಖಾಧಿಕಾರಿ ಜಿ ಎನ್‌ ಮಂಜುನಾಥಸ್ವಾಮಿ ಅವರು 2022ರ ಏಪ್ರಿಲ್‌ 27ರಂದು ವಿಧಾನ ಪರಿಷತ್‌ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದ ಮೇಲೆ ಇದುವರೆಗೂ ಯಾವುದೇ ಕ್ರಮ ವಹಿಸಿಲ್ಲ ಎಂದು ಗೊತ್ತಾಗಿದೆ.

 

ತನಿಖಾಧಿಕಾರಿ ಮಂಜುನಾಥಸ್ವಾಮಿ ಅವರು ಬರೆದಿರುವ ಪತ್ರದ ಪ್ರತಿ

 

ತನಿಖಾ ವರದಿ ಸಲ್ಲಿಸಿರುವ ಬಗ್ಗೆ ತನಿಖಾಧಿಕಾರಿಯೇ ಕಾರ್ಯದರ್ಶಿಗೆ ಪತ್ರ ಬರೆದಿದ್ದರೂ ಸಹ ತನಿಖಾ ವರದಿ ಇನ್ನೂ ಸ್ವೀಕೃತವಾಗಿಲ್ಲ ಎಂದು ಸಚಿವಾಲಯದ ಅಧೀನ ಕಾರ್ಯದರ್ಶಿ ಕೆ ಜೆ ಜಲಜಾಕ್ಷಿ  ಅವರು ಆರ್‌ಟಿಐ ಅಡಿಯಲ್ಲಿ ಮಾಹಿತಿ ನೀಡಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಆರ್‌ಟಿಐ ಅಡಿಯಲ್ಲಿ ನೀಡಿರುವ ಮಾಹಿತಿ ಪ್ರತಿ

 

ಹಗರಣದ ಹಿನ್ನೆಲೆ

 

ಕನಿಷ್ಠ ವೇತನ ಕಾಯ್ದೆಯಲ್ಲಿ ನಿಗದಿಪಡಿಸಿರುವ ವೇತನಕ್ಕಿಂತಲೂ ಹೊರಗುತ್ತಿಗೆ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದಲೂ ಹೆಚ್ಚುವರಿಯಾಗಿ ವೇತನ ಪಾವತಿಸಿರುವ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 48 ಲಕ್ಷ ಲಕ್ಷ ನಷ್ಟವಾಗಿತ್ತು. ಕಿಯೋನಿಕ್ಸ್‌ ಮೂಲಕ ಹೊರಗುತ್ತಿಗೆ ಅಡಿಯಲ್ಲಿ ನೇಮಕ ಮಾಡಿಕೊಂಡಿರುವ ನೌಕರರಿಗೆ ಹೆಚ್ಚುವರಿ ವೇತನ ಪಾವತಿಸಿರುವ ಪರಿಷತ್‌ ಸಚಿವಾಲಯವು ಆರ್ಥಿಕ ಇಲಾಖೆಯ ಅನುಮತಿಯನ್ನೇ ಪಡೆಯದೇ ನಿಯಮಬಾಹಿರವಾಗಿ ನೇಮಕ ಮಾಡಲಾಗಿತ್ತು.

 

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್ಸ್‌, ಡಿಟಿಪಿ ಆಪರೇಟರ್ಸ್‌ಗಳನ್ನು ಹೊರಗುತ್ತಿಗೆ ಅಡಿಯಲ್ಲಿ ನೇಮಕ ಮಾಡಿರುವ ಪರಿಷತ್‌ ಸಚಿವಾಲಯವು ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿಯಾಗಿ ಕಳೆದ ಎರಡೂವರೆ ವರ್ಷಗಳಿಂದ 48,42,564 ರು.ಗಳನ್ನು ಪಾವತಿಸಿರುವುದು ಗೊತ್ತಾಗಿದೆ. ಈ ಸಂಬಂಧ ತಕರಾರು ತೆಗೆದಿರುವ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು 2021ರ ಏಪ್ರಿಲ್‌ 9ರಂದು ಪರಿಷತ್‌ ಸಚಿವಾಲಯದ ಕಾರ್ಯದರ್ಶಿಗೆ ಪತ್ರವನ್ನೂ ಬರೆದಿದ್ದರು.

 

ಅಲ್ಲದೆ ಹೊರಗುತ್ತಿಗೆ ಅಡಿಯಲ್ಲಿ ನೇಮಕ ಮಾಡಿಕೊಂಡಿರುವ ವಿಧಾನಪರಿಷತ್‌ ಸಚಿವಾಲಯದ ಅಧಿಕಾರಿಗಳು ಸ್ವಜನಪಕ್ಷಪಾತ ಎಸಗಿರುವ ಆರೋಪಕ್ಕೂ ಗುರಿಯಾಗಿದ್ದಾರೆ. ತಾಂತ್ರಿಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವಾಗ ಯಾವುದೇ ಪರೀಕ್ಷೆ ಮತ್ತು ಸಂದರ್ಶನಗಳನ್ನೂ ನಡೆಸಿರಲಿಲ್ಲ.

 

ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗಳಿಗೆ ಸತೀಶ್‌ ಸಿ, ಶೃತಿ ಎಸ್‌, ಪ್ರತೀಕ್‌ ಶೆಟ್ಟಿ, ಸುಶಾಂತ್‌ ನಾಯಕ್‌, ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ ಸುಹಾಸ್‌ ಎಂ, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳಿಗೆ ಯೋಗೇಶ್ವರಿ ಬಿ, ಪುಷ್ಪಾ ಎಚ್‌ ಎಂ, ಯೋಗಿತಾ ಪಿ ಆರ್‌, ಜ್ಯೂನಿಯರ್‌ ಆಪರೇಟರ್‌ ಕನ್ಸಲ್ಟೆಂಟ್‌ ಹುದ್ದೆಗೆ ಎಂ ನಿಖಿಲ್‌ ಅವರನ್ನು ಕಿಯೋನಿಕ್ಸ್‌ ಮೂಲಕ ನೇಮಿಸಲಾಗಿತ್ತು. ಈ ಅಭ್ಯರ್ಥಿಗಳು ವಿಧಾನಪರಿಷತ್‌ ಸಚಿವಾಲಯದ ಉನ್ನತ ಅಧಿಕಾರಿಗಳಿಗೆ ನಿಕಟವರ್ತಿಗಳು, ರಕ್ತ ಸಂಬಂಧಿಕರು ಮತ್ತು ಸೋದರ ಸಂಬಂಧಿಗಳಾಗಿದ್ದಾರೆ ಎಂದು ಗೊತ್ತಾಗಿದೆ.

 

‘ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವ್ಯತಿರಿಕ್ತವಾಗಿ ಕಿಯೋನಿಕ್ಸ್‌ನಿಂದ ಕರಾರು ಒಪ್ಪಂದ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿರುವುದು ನಿಯಮಬಾಹಿರವಾಗಿರುತ್ತದೆ. ಆದ್ದರಿಂದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿದ್ದಂತೆ ಹುದ್ದೆಗಳ ವೇತನ ಶ್ರೇಣಿಯ ಕನಿಷ್ಠ ವೇತನ ಕಾಯ್ದೆ ಪ್ರಕಾರ ನಿಗದಿಗೊಳಿಸಬೇಕು,’ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಪರಿಷತ್‌ನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.

 

ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಪತ್ರ ಬರೆದು 1 ತಿಂಗಳಾದರೂ ಪರಿಷತ್‌ ಸಚಿವಾಲಯವು ಯಾವುದೇ ಕ್ರಮ ವಹಿಸಿಲ್ಲ. ಅಲ್ಲದೆ ಈ ಕುರಿತು ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಈವರೆವಿಗೂ ಮೌನ ಮುರಿದಿಲ್ಲ ಮತ್ತು ವೇತನದಲ್ಲಿ ಪಾವತಿಯಾಗಿರುವ ಹೆಚ್ಚುವರಿ ಮೊತ್ತವನ್ನು ವಸೂಲು ಮಾಡಿರಲಿಲ್ಲ.

 

ಹೆಚ್ಚುವರಿ ಪಾವತಿಸಿದ್ದೆಷ್ಟು?

 

ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ ಕನಿಷ್ಠ ವೇತನ ಕಾಯ್ದೆಯಡಿ ಆರ್ಥಿಕ ಇಲಾಖೆಯು 22,800 ರು. ನಿಗದಿಪಡಿಸಿದೆ. ಆದರೆ ವಿಧಾನಪರಿಷತ್ತಿನ ಸಚಿವಾಲಯವು ನೀಡುತ್ತಿರುವುದು 42,065 ರು. . ಅಂದರೆ ಹೆಚ್ಚುವರಿಯಾಗಿ 19,265 ರು. ಪ್ರತಿ ತಿಂಗಳೂ ಪಾವತಿಯಾಗುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಹೆಚ್ಚುವರಿಯಾಗಿ ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ 5,58,685 ರು. ಪಾವತಿಯಾಗಿದೆ. ಅದರಂತೆ ಇಬ್ಬರು ಜ್ಯೂನಿಯರ್‌ ಪ್ರೋಗ್ರಾಮರ್‌ಗಳಿಗೆ ಒಟ್ಟು 11,17,370 ರು. ಹೆಚ್ಚುವರಿಯಾಗಿ ಪಾವತಿಯಾದಂತಾಗಿತ್ತು.

 

ಅದೇ ರೀತಿ ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗೆ 20,000 ರು. ಕನಿಷ್ಠ ವೇತನ ನಿಗದಿಪಡಿಸಿದ್ದರೆ ವಿಧಾನಪರಿಷತ್ತಿನ ಸಚಿವಾಲಯವು 38,266 ರು. ನೀಡುತ್ತಿದೆ. ಹೆಚ್ಚುವರಿ 18,266 ರು. ನಂತೆ ಹೆಚ್ಚುವರಿಯಾಗಿ 5,29,714 ರು. ಪಾವತಿಸಲಾಗಿದೆ. ಅದರಂತೆ ಮೂವರು ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳಿಗೆ ಒಟ್ಟು 15,89,142 ರು. ಪಾವತಿಸಲಾಗಿತ್ತು.

 

ಹಾಗೆಯೇ ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗೆ 13,284 ರು. ನೀಡಬೇಕಿದ್ದರೆ ವಿಧಾನಪರಿಷತ್ತಿನ ಸಚಿವಾಲಯವು 18,414.25 ರು.ಗಳನ್ನು ಹೆಚ್ಚುವರಿ ನೀಡಿ ಒಟ್ಟು 31,699 ರು. ನಂತೆ ಒಬ್ಬರಿಗೆ 5,34, 013 ರು ಪಾವತಿಯಾಗಿದೆ. ನೀಡುತ್ತಿದೆ. ಅದರಂತೆ ನಾಲ್ವರು ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಹೆಚ್ಚುವರಿಯಾಗಿ 21,36,052 ರು. ರು. ಪಾವತಿಸಿರುವುದು ಆರ್ಥಿಕ ಇಲಾಖೆ ಬರೆದಿತ್ತು.

 

‘ವಿಧಾನ ಪರಿಷತ್‌ನ ಲೆಕ್ಕ ಶೀರ್ಷಿಕೆ (2011-02-103-2-01-034)ಯಂತೆ ಕರ್ನಾಟಕ ವಿಧಾನ ಪರಿಷತ್‌ನ ಸಚಿವಾಲಯದಲ್ಲಿ ಶೀಘ್ರಲಿಪಿಗಾರರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಪಡೆದಿದ್ದು ವೇತನವನ್ನು 30,350 ರು.ಗಳಿಗೆ ನಿಗದಿಗೊಳಸಲಾಗಿದೆ. ಇದು ಕನಿಷ್ಠ ವೇತನ ಕಾಯ್ದೆ ಮೀರಿದ್ದರಿಂದ ಪರಿಷ್ಕರಿಸಿ 22,000 ರು.ಗಳಿಗೆ ನಿಗದಿಪಡಿಸಿ 2021-22ನೇ ಸಾಲಿನ ಅಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿದೆ. ಆದ್ದರಿಂದ ಶೀಘ್ರಲಿಪಿಗಾರರ ವೇತನವನ್ನೂ ಮರು ನಿಗದಿಪಡಿಸಬೇಕು,’ ಎಂದು ಆರ್ಥಿಕ ಇಲಾಖೆಯು ಆಡಳಿತ ಇಲಾಖೆಗೆ ನಿರ್ದೇಶಿಸಿತ್ತು.

 

ಜ್ಯೂನಿಯರ್‌ ಪ್ರೋಗ್ರಾಮರ್‌, ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗಳ ಭರ್ತಿಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಶೇ.50ರಷ್ಟನ್ನು ಪದನ್ನೋತಿಯಿಂದ ಶೇ.50ರಷ್ಟು ನೇರ ನೇಮಕಾತಿಯಿಂದ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಇಲ್ಲದ ಪಕ್ಷದಲ್ಲಿ ನಿಯೋಜನೆ ಮೇಲೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವ್ಯತಿರಿಕ್ತವಾಗಿ ಕಿಯೋನಿಕ್ಸ್‌ನಿಂದ ಕರಾರು ಒಪ್ಪಂದ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನಿಯಮಬಾಹಿರವಾಗಿ ಭರ್ತಿ ಮಾಡಲಾಗಿತ್ತು.

 

ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿದ್ದಂತೆ ಹುದ್ದೆಗಳ ವೇತನ ಶ್ರೇಣಿಯ ಕನಿಷ್ಠ ವೇತನ ಕಾಯ್ದೆ ಪ್ರಕಾರ ಜ್ಯೂನಿಯರ್‌ ಪ್ರೋಗ್ರಾಮರ್‌ ಹುದ್ದೆಗೆ 22,800 ರು., ಜ್ಯೂನಿಯರ್‌ ಕನ್ಸೋಲ್‌ ಆಪರೇಟರ್‌ ಹುದ್ದೆಗೆ 20,000 ರು., ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ಡಾಡಾ ಎಂಟ್ರಿ ಆಪರೇಟರ್‌, ಸ್ವಚ್ಛತಾ ಕಾರ್ಮಿಕರಾದ ಸಫಾಯಿ ಕರ್ಮಚಾರಿಗಳಿಗೆ ಆಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿದೆ. ಈ ಹುದ್ದೆಗಳ ಭರ್ತಿಗೆ ಆಡಳಿತ ಇಲಾಖೆಯು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಕ್ರಮ ವಹಿಸಬೇಕು ಎಂದು ಆರ್ಥಿಕ ಇಲಾಖೆಯು ಸೂಚಿಸಿತ್ತು.

the fil favicon

SUPPORT THE FILE

Latest News

Related Posts