ಕದ್ದುಮುಚ್ಚಿ ಪಿಯು ಪಠ್ಯ ಪರಿಷ್ಕರಿಸಲು ಹೊರಟಿದ್ದನ್ನು ಹೊರಗೆಳೆದಿದ್ದೇ ‘ದಿ ಫೈಲ್‌’-ವಾರ್ತಾಭಾರತಿ

Photo Credit; Financial Express

ಬೆಂಗಳೂರು; ದ್ವಿತೀಯ ಪಿಯುಸಿ ಇತಿಹಾಸದ 4.2 ಅಧ್ಯಾಯದಲ್ಲಿದ್ದ ಹೊಸ ಧರ್ಮದ ಉದಯಗಳು ಎಂಬ ಪಾಠವನ್ನು ಗುಟ್ಟಾಗಿ ಪರಿಷ್ಕರಿಸಲು ರೋಹಿತ್‌ ಚಕ್ರತೀರ್ಥ ಸಮಿತಿಗೆ ವಹಿಸಲಾಗಿದೆ ಎಂದು ದಾಖಲೆ ಸಮೇತ ‘ದಿ ಫೈಲ್‌’ ಹೊರಗೆಳೆದ ನಂತರ ಇದೀಗ ಸರ್ಕಾರವು ಪಿಯು ಪಠ್ಯ ಪರಿಷ್ಕರಣೆ ನಿರ್ಧಾರವನ್ನೂ ಹಿಂಪಡೆದಿದೆ.

 

ಆರರಿಂದ ಹತ್ತನೇ ತರಗತಿಯ ಸಮಾಜ ವಿಜ್ಞಾನ ಮತ್ತು ಭಾಷಾ ವಿಷಯಗಳ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಗೇ ಪಿಯುಸಿ ಇತಿಹಾಸ ಪಠ್ಯವನ್ನೂ ಪರಿಷ್ಕರಿಸಲು ಸದ್ದಿಲ್ಲದೇ ವಹಿಸಿತ್ತು. ಇದನ್ನು ‘ದಿ ಫೈಲ್‌’ ಮತ್ತು ವಾರ್ತಾಭಾರತಿ 2022ರ ಮೇ 23ರಂದೇ ಬಹಿರಂಗಗೊಳಿಸಿತ್ತು.

ಪಿಯು ಇತಿಹಾಸ ಪಠ್ಯಪುಸ್ತಕ ಪರಿಷ್ಕರಣೆ; ರೋಹಿತ್‌ ಚಕ್ರತೀರ್ಥ ಸಮಿತಿಗೆ ವಹಿಸಲು ಸೂಚನೆ

ಕುವೆಂಪು ಅವರ ಅವಹೇಳನ ಮತ್ತು ಬಸವೇಶ್ವರ ಕುರಿತು ತಪ್ಪು ಮಾಹಿತಿಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸಿ ಪರಿಷ್ಕರಿಸಿದ್ದ ರೋಹಿತ್‌ ಚಕ್ರತೀರ್ಥ ವಿರುದ್ಧ ಇಡೀ ರಾಜ್ಯವೇ ತಿರುಗಿ ಬಿದ್ದಿದ್ದ ಕಾರಣ ಇದೀಗ ಸಚಿವ ಬಿ ಸಿ ನಾಗೇಶ್‌ ಅವರು ಪಿಯು ಪಠ್ಯ ಪರಿಷ್ಕರಣೆಯೂ ಇಲ್ಲ ಮತ್ತು ಚಕ್ರತೀರ್ಥ ಸಮಿತಿಗೆ ನೀಡಿದ್ದ ಜವಾಬ್ದಾರಿಯನ್ನೂ ಹಿಂಪಡೆದಿದೆ ಎಂದು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

 

ಟಿಪ್ಪಣಿಯಲ್ಲೇನಿತ್ತು?

 

ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಇತಿಹಾಸ ವಿಭಾಗಕ್ಕೆ ನಿಗದಿಪಡಿಸಿದ ಭಾರತದ ಇತಿಹಾಸ (ಕರ್ನಾಟಕ ವಿಶೇಷ ಉಲ್ಲೇಖದೊಂದಿಗೆ) ಪಠ್ಯಪುಸ್ತಕದ 4.2ನೇ ಅಧ್ಯಾಯ ಹೊಸ ಧರ್ಮಗಳ ಉದಯ ಪಠ್ಯಭಾಗದಲ್ಲಿ ನಿರ್ದಿಷ್ಟ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗುವಂತಹ ವಿಷಯವಿರುವ ಬಗ್ಗೆ ದೂರು ಬಂದಿರುತ್ತದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಮಾಜ ಅಧ್ಯಯನ ಪಠ್ಯಪುಸ್ತಕದ ಪರಿಶೀಲನೆಗಾಗಿ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರಚನೆಯಾಗಿರುತ್ತದೆ. ದ್ವಿತೀಯ ಪಿಯುನ ಇತಿಹಾಸ ಪಠ್ಯಪುಸ್ತಕದ 4.2 ಅಧ್ಯಾಯವನ್ನು ಪರಿಶೀಲಿಸಿ ಸೂಕ್ತವಾಗಿ ಪರಿಷ್ಕರಿಸಲು ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಗೆ ವಹಿಸಲು ಹಾಗೂ ಈ ಪರಿಷ್ಕೃತ ಪಠ್ಯಪುಸ್ತಕವನ್ನು 2022-23ನೇ ಸಾಲಿನಲ್ಲಿ ಮುದ್ರಣ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು,’ ಎಂದು ಸಚಿವ ಬಿ ಸಿ ನಾಗೇಶ್‌ ಅವರು ಟಿಪ್ಪಣಿಯಲ್ಲಿ ಸೂಚಿಸಿದ್ದರು.

 

ವಿವಾದಿತ ಅಂಶಗಳೇ ಇಲ್ಲವೆಂದಿದ್ದ ಪಿಯು ಮಂಡಳಿ

 

ಸಚಿವರ ಸೂಚನೆಯಂತೆ ಪಿಯು ಮಂಡಳಿಯ ನಿರ್ದೇಶಕರು ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕದ ರಚನಾ ಸಮಿತಿಗೆ ಮಾಹಿತಿ ಸಲ್ಲಿಸಿ ಅಭಿಪ್ರಾಯವನ್ನು ಕೋರಿದ್ದರು. ಸೂಚಿತ ಅಂಶಗಳಲ್ಲಿ ಯಾವುದೇ ವಿವಾದಿತ ಅಂಶಗಳಿರುವುದಿಲ್ಲ ಹಾಗೂ ಇಲಾಖೆ ಈ ಅಂಶಗಳ ಬಗ್ಗೆ ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೆ ಸಮಿತಿಯ ಅಭ್ಯಂತರವಿರುವುದಿಲ್ಲ ಎಂದು ದ್ವಿತೀಯ ಪಿಯು ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಅಭಿಪ್ರಾಯಿಸಿದ್ದರು ಎಂಬುದು ಪಿಯು ಮಂಡಳಿ ನಿರ್ದೇಶಕರು ಸಚಿವರ ಆಪ್ತ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ವಿವರಿಸಿದ್ದರು.

 

4.2 ಅಧ್ಯಾಯದಲ್ಲೇನಿದೆ?

 

ಪಠ್ಯಪುಸ್ತಕದ 4.2 ಅಧ್ಯಾಯದಲ್ಲಿ ಹೊಸ ಧರ್ಮಗಳ ಉದಯ-ಜೈನ ಧರ್ಮ ಮತ್ತು ಬೌದ್ಧ ಧರ್ಮ ಎಂಬ ಪಾಠಾಂಶವಿತ್ತು. ವೈದಿಕ ಧರ್ಮದಲ್ಲಿನ ಗೊಂದಲಗಳು, ಪುರೋಹಿತ ವರ್ಗದ ಪರಮಾಧಿಕಾರ, ಪ್ರಾಣಿಬಲಿ, ಮಂತ್ರಗಳ ಪಠಣ, ಜಾತಿಪದ್ಧತಿ, ಮಹಾನ್‌ ವ್ಯಕ್ತಿಗಳ ಜನನವು ಹೊಸ ಧರ್ಮಗಳ ಉದಯಕ್ಕೆ ಕಾರಣವಾದವು ಎಂಬ ಅಂಶವಿದೆ.

 

‘ಆರಂಭದಲ್ಲಿ ವೈದಿಕ ಧರ್ಮ ಯಾವುದೇ ಜಟಿಲತೆಗಳಿಲ್ಲದೆ ಸರಳವಾಗಿತ್ತು. ನಂತರ ಪುರೋಹಿತರ ಪ್ರಭಾವದಿಂದಾಗಿ ಬಹಳಷ್ಟು ಕಠೋರತೆಗಳು ಧರ್ಮದೊಳಗೆ ನುಸುಳಿದವು. ಜನರು ಅಸಂತುಷ್ಟರಾದರು ಮತ್ತು ಬದಲಾವಣೆಯನ್ನು ಬಯಸಿದ್ದ ಅವರು ಅದನ್ನು ಹೊಸಧರ್ಮಗಳಲ್ಲಿ ಕಂಡುಕೊಂಡರು. ಬ್ರಾಹ್ಮಣರು ಇತರ ಜಾತಿಗಳ ಮೇಲೆ ಪರಮಾಧಿಕಾರ ಸ್ಥಾಪಿಸಿದರು. ಜನರಿಗೆ ಪುರೋಹಿತರಿಲ್ಲದೆ ಯಜ್ಞಗಳನ್ನು ಮಾಡುವುದು ಅಸಾಧ್ಯವಾಗಿತ್ತು. ಬ್ರಾಹ್ಮಣರು ಅನೇಕ ವಿಶೇಷ ಸೌಲಭ್ಯಗಳನ್ನುಅನುಭವಿಸುತ್ತಿದ್ದರು ಮತ್ತು ತಮ್ಮನ್ನು ಎಲ್ಲರಿಗಿಂತ ಶ್ರೇಷ್ಠರೆಂದು ತಿಳಿದಿದ್ದರು.

 

ಪ್ರಾಣಿ ಬಲಿ, ಶಾಸ್ತ್ರ ವಿಧಿಗಳೊಂದು ಭಾಗವಾಗಿತ್ತು ಮತ್ತು ಇವುಗಳ ಆಚರಣೆ ದುಬಾರಿಯಾಯಿತು.ಹೀಗಾಗಿ ಜನರು ಅಸ್ತಿತ್ವದಲ್ಲಿದ್ದ ಧರ್ಮದಲ್ಲಿನ ನಂಬಿಕೆ ಕಳೆದುಕೊಂಡರು. ಋಗ್ವೇದದ ಕಾಲದ ಧಾರ್ಮಿಕ ವಿಧಿ ಮತ್ತು ಧರ್ಮಾಚರಣೆ ಉತ್ತರ ವೇದ ಕಾಲದಲ್ಲಿ ಸಂಕೀರ್ಣವಾದವು. ಸಂಸ್ಕೃತದಲ್ಲಿದ್ದ ವೈದಿಕ ಸಾಹಿತ್ಯದ ಮೇಲೆ ಪುರೋಹಿತರ ಪ್ರಭುತ್ವವಿತ್ತು. ಜನಸಾಮಾನ್ಯರಿಗೆ ಅವುಗಳನ್ನು ಅರ್ಥಮಾಡಿಕೊಳ್ಳುವುದು ಸಾಧ್ಯವಿರಲಿಲ್ಲ.

 

ಸ್ಪಷ್ಟ ತಿಳಿವಳಿಕೆಯ ಕೊರತೆಯಿಂದ ಜನರು ಮಂತ್ರ ಪಠಣೆಯಲ್ಲಿ ನಂಬಿಕೆ ಕಳೆದುಕೊಂಡರು. ಜಾತಿ ಪದ್ಧತಿಯು ಸಾಮಾಜಿಕ ವ್ಯವಸ್ಥೆಯ ಜಟಿಲವಾಗಿತ್ತು. ಬೇರೆ ಬೇರೆ ಜಾತಿಗಳ ಮಧ್ಯೆ ಬೇಧಭಾವವಿತ್ತು. ಬ್ರಾಹ್ಮಣರು ಉನ್ನತ ಸ್ಥಾನವನ್ನು ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯಿಂದಾಗಿ ಜನರು ಅತೃಪ್ತರಾಗಿದ್ದರು. ಶೂದ್ರರು ಹೇಳಿಕೊಳ್ಳಲಾಗದ ಸಂಕಷ್ಟಗಳಿಗೆ ಗುರಿಯಾದರು.

 

ಜನರು ಅಸಂತುಷ್ಟರು ಮತ್ತು ಅತೃಪ್ತರಾಗಿದ್ದಾಗ ಮಹಾವೀರ ಮತ್ತು ಗೌತಮ ಬುದ್ಧನಂತಹ ಇಬ್ಬರು ಮಹಾನ್‌ ವ್ಯಕ್ತಿಗಳು ಜನಿಸಿದರು. ಅವರು ಸರಳವಾದ ತತ್ವಗಳನ್ನು ಜನರಾಡುವ ಭಾಷೆಯಲ್ಲಿ ಬೋಧಿಸಿದರು. ಹೊಸ ಧರ್ಮಗಳು ಬೋಧಿಸಿದ ಸರಳ ಮುಕ್ತಿ ಮಾರ್ಗದಿಂದಾಗಿ ಸಾಮಾನ್ಯರು ಹೊಸ ಧರ್ಮಗಳತ್ತ ಆಕರ್ಷಿಸಲ್ಪಟ್ಟರು ಎಂಬ ಸಾಲುಗಳಿವೆ.

the fil favicon

SUPPORT THE FILE

Latest News

Related Posts