5 ಲಕ್ಷ ರು. ಸುಲಿಗೆ ಆರೋಪ ಪ್ರಕರಣ; ಐಪಿಎಸ್‌, ಡಿವೈಎಸ್ಪಿ ವಿರುದ್ಧ ತನಿಖೆಗೆ ಡಿಜಿಐಜಿಪಿಗೆ ಮನವಿ ಸಲ್ಲಿಸಿದ ವಕೀಲ

ಬೆಂಗಳೂರು; ಅತ್ತಿಬೆಲೆಯ ಕ್ರಷರ್‌ ಉದ್ಯಮಿಯೊಬ್ಬರಿಂದ 5 ಲಕ್ಷ ರುಪಾಯಿ ಸುಲಿಗೆ ಮಾಡಿದ್ದಾರೆ ಎಂಬ ಗುರುತರವಾದ ಪ್ರಕರಣವನ್ನು ತನಿಖೆ ನಡೆಸಿರುವ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್‌ ಅವರು ಐಪಿಎಸ್‌ ಅಧಿಕಾರಿ ಮತ್ತು ಡಿವೈಎಸ್ಪಿ ಅವರ ವಿರುದ್ಧ ಯಾವುದೇ ರೀತಿಯಲ್ಲಿಯೂ ತನಿಖೆ ನಡೆಸದೆಯೇ ಕೈಬಿಟ್ಟಿರುವ ಕುರಿತು ಅಶ್ವ ಲಾ ಅಸೋಸಿಯೇಟ್ಸ್‌ ಇದೀಗ ರಾಜ್ಯದ ಪೊಲೀಸ್‌ ಮಹಾನಿರ್ದೇಶಕರ ಕಚೇರಿ ಮೆಟ್ಟಿಲೇರಿದೆ.

 

ದೂರುದಾರ ಪರ ವಕೀಲರಾದ ಅಶ್ವ ಲಾ ಅಸೋಸಿಯೇಟ್ಸ್‌ನ ವಕೀಲ ನಟರಾಜ ಶರ್ಮ ಎಂಬುವರು 2022ರ ಜೂನ್‌ 22ರಂದು ಈ ಕುರಿತು ಮನವಿ ಸಲ್ಲಿಸಿದೆ. ಈ ಮನವಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.
ಈ ಪ್ರಕರಣದಲ್ಲಿ ಈಗಾಗಲೇ ಕೆಳಹಂತದ ಸಿಪಿಐ, ಎಎಸ್‌ಐಗಳಿಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ವಕೀಲ ನಟರಾಜ್ ಶರ್ಮ ಅವರು ಪೊಲೀಸ್‌ ಮಹಾನಿರ್ದೇಶಕರ ಕಚೇರಿ ಮೆಟ್ಟಿಲೇರಿರುವುದು ಪ್ರಕರಣವನ್ನು ಮತ್ತಷ್ಟು ವಿಸ್ತರಿಸಿದಂತಾಗಿದೆ.

 

‘ದೂರುದಾರ ಮತ್ತು ತಮ್ಮ ಕಕ್ಷಿದಾರ ಮಂಜುನಾಥ್‌ ಅವರಿಂದ ಲಂಚವನ್ನು ಪಡೆದಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣವರ್‌ ಅವರು 5 ಲಕ್ಷ ರು.ಗಳನ್ನು ಪಿಐ ಶ್ರೀನಿವಾಸ್‌ ಎಂಬುವರ ಮೂಲಕ ಮತ್ತು ಡಿವೈಎಸ್ಪಿ ಮಹಾದೇವಯ್ಯ ಅವರೂ 2.50 ಲಕ್ಷ ಲಂಚವನ್ನು ತಮ್ಮ ಸ್ನೇಹಿತ ಕಾಶಿ ಎಂಬುವರ ಮೂಲಕ ಪಡೆದಿದ್ದಾರೆ. ತನಿಖೆ ನಡೆಸಿದ್ದ ಐಜಿಪಿ ಚಂದ್ರಶೇಖರ್‌ ಅವರು ಐಪಿಎಸ್‌ ಅಧಿಕಾರಿ ರವಿ ಚನ್ನಣ್ಣವರ್‌ ಮತ್ತು ಡಿವೈಎಸ್ಪಿ ಮಹದೇವಯ್ಯ ಅವರ ವಿರುದ್ಧದ ಆರೋಪಗಳ ಕುರಿತು ಯಾವುದೇ ರೀತಿಯ ತನಿಖೆಯನ್ನು ಮಾಡದೇ ಇರುವುದು ಅವರು ನೀಡಿರುವ ವರದಿಯಿಂದ ಎದ್ದು ಕಾಣುತ್ತದೆ. ಈ ಐದೂ ಜನರ ಮೇಲೆ ಇರುವ ಆರೋಪಗಳು ಭ್ರಷ್ಟಾಚಾರ ನಿಗ್ರಹ ದಳದ ತನಿಖೆಗೆ ಒಳಪಡಿಸಬೇಕಾಗಿರುವುದರಿಂದ ತನಿಖೆಗೆ ಕೂಡಲೇ ಒಳಪಡಿಸಲು ಆದೇಶಿಸಬೇಕು,’ ಎಂದು ನಟರಾಜ ಶರ್ಮ ಅವರು ಮನವಿಯಲ್ಲಿ ಕೋರಿದ್ದಾರೆ.

 

ವಕೀಲ ನಟರಾಜ ಶರ್ಮ ಅವರು ಸಲ್ಲಿಸಿರುವ ಮನವಿ ಪ್ರತಿ

 

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ (ಡಿಸಿಐಬಿ)ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟಿ ಶ್ರೀನಿವಾಸ್‌ (ಹಾಲಿ ವಿಜಯಪುರ ವೃತ್ತ), ಎಎಸ್‌ಐ ಶುಭ, ಕೆ ಜಿ ಅನಿತಾ ಅವರು ಅಮಾನತುಗೊಳಿಸಲಾಗಿತ್ತು. ಬೆಂಗಳೂರು ಜಿಲ್ಲೆ ಪೊಲೀಸ್‌ ಅಧೀಕ್ಷಕರು ವಿಚಾರಣೆ ನಡೆಸಿ ವರದಿಯನ್ನು ಈ ಕಚೇರಿಗೆ ಸಲ್ಲಿಸಿದ್ದ ವರದಿ ಅಧರಿಸಿ ಈ ಕ್ರಮವನ್ನುಕೈಗೊಳ್ಳಲಾಗಿತ್ತು. ಈ ವಿಚಾರಣಾ ವರದಿಯಲ್ಲಿ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿರುತ್ತೆದೆಂದು ತಿಳಿಸಿದ್ದಾರೆ,’ಎಂಬ ಅಂಶವನ್ನು ಅಮಾನತು ಆದೇಶದಲ್ಲಿ ಪ್ರಸ್ತಾಪಿಸಲಾಗಿತ್ತು.

 

ಅಲ್ಲದೆ ‘ ಪಿ ಐ ಶ್ರೀನಿವಾಸ್‌ ಅವರ ಸೂಚನೆಯಂತೆ ಎ ಎಸ್‌ ಐ ಶುಭ ಮತ್ತು ಕೆ ಜಿ ಅನಿತಾ ಅವರಿಗೆ ಹಣ ನೀಡಿದ್ದಾಗಿ ನಿರ್ದಿಷ್ಟವಾಗಿ ಹೆಸರನ್ನೇ ಪ್ರಸ್ತಾಪಿಸಿರುತ್ತಾರೆ. ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಆರೋಪಿಸಿರುವಂತೆ ಟಿ ಶ್ರೀನಿವಾಸ್‌, ಶುಭ, ಅನಿತಾ ಅವರ ಮುಖೇನ 5,00,000 ಲಕ್ಷ ರು.ಹಣವನ್ನು ಪಡೆದು ಅರ್ಜಿ ವಿಚಾರದಲ್ಲಿ ಅರ್ಜಿದಾರರಿಗೆ ಸಹಾಯ ಮಾಡುವುದಾಗಿ ಹೇಳಿ ನಂಬಿಸಿ ಹಣ ಪಡೆದಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ, ‘ ಎಂದೂ ಅಮಾನತು ಆದೇಶದಲ್ಲಿ ಹೇಳಲಾಗಿತ್ತು.

 

ಅದೇ ರೀತಿ ‘ ಪೊಲೀಸ್‌ ಇಲಾಖೆಯಲ್ಲಿ ಒಂದು ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಕರ್ತವ್ಯದಲ್ಲಿ ಲೋಪವೆಸಗುವ ಮೂಲಕ ನೀವು ನಿಮ್ಮ ಕರ್ತವ್ಯದಲ್ಲಿ ಅತೀವ ನಿರ್ಲಕ್ಷ್ಯತೆ, ಬೇಜವಾಬ್ದಾರಿತನ ಹಾಗೂ ದುರ್ನಡತೆಯನ್ನು ಪ್ರದರ್ಶಿಸಿರುತ್ತೀರಿ. ಆದ್ದರಿಂದ ಕರ್ನಾಟಕ ರಾಜ್ಯ ಪೊಲೀಸ್‌ (ಶಿಸ್ತು ನಡವಳಿ) ನಿಯಮಗಳು 1965/89ರ ನಿಯಮ 5 ರ ಅಡಿಯಲ್ಲಿ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತಿನಲ್ಲಿರಿಸಲಾಗಿದೆ,’ ಎಂದು ಆದೇಶದಲ್ಲಿ ವಿವರಿಸಲಾಗಿತ್ತು.

 

ಬೆಂಗಳೂರು ಜಿಲ್ಲೆಯ ಡಿಸಿಐಬಿಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಟಿ ಶ್ರೀನಿವಾಸ್‌ (ಹಾಲಿ ವಿಜಯಪುರ ಸಿಪಿಐ) ಅವರು ಎಎಸ್‌ಐ ಎನ್ ಶುಭ ಮತ್ತು ಕೆ ಜಿ ಅನಿತಾ ಅವರ ಮುಖೇನ 5,00,000 ರು.ಗಳನ್ನು ಪಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಐಜಿಪಿ ಚಂದ್ರಶೇಖರ್‌ ಅವರು ಪೊಲೀಸ್‌ ಮಹಾನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದರು.

 

ವಿಚಾರಣೆ ವೇಳೆಯಲ್ಲಿ ಐಜಿಪಿ ಚಂದ್ರಶೇಖರ್‌ ಅವರು ಐಪಿಎಸ್‌ ಅಧಿಕಾರಿ ********** ಅವರ ಹೇಳಿಕೆಯ ಪಡೆದಿದ್ದರು. ‘ತಾವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರತಿನಿತ್ಯ ಹಲವಾರು ಜನ ಅರ್ಜಿದಾರರು ತಮ್ಮ ದೂರುಗಳನ್ನು ಸಲ್ಲಿಸಲು ಕಚೇರಿಗೆ ಬರುತ್ತಿದ್ದು ಅದರಂತೆ ಅರ್ಜಿದಾರರು ದೂರನ್ನು ಕೊಟ್ಟಾಗ ಅದನ್ನು ಸೂಕ್ತ ಕ್ರಮಕ್ಕಾಗಿ ಅತ್ತಿಬೆಲೆ ಪೊಲೀಸ್‌ ಠಾಣೆಗೆ ತದನಂತರ ಸಿಇಎನ್‌ ಪೊಲೀಸ್‌ ಠಾಣೆಗೆ ರವಾನಿಸಲಾಗಿತ್ತು. ಉಳಿದಂತೆ ಯಾವುದೇ ವಿಚಾರಗಳು ತನಗೆ ಸಂಬಂಧಿಸಿರುವುದಿಲ್ಲ,’ ಎಂದು ಐಪಿಎಸ್‌ ಅಧಿಕಾರಿ ********** ಎಂದು ತಿಳಿಸಿರುವುದನ್ನು ಐಜಿಪಿ ಪ್ರಸ್ತಾಪಿಸಿದ್ದರು.

 

‘ಇವರ ಹೇಳಿಕೆಯನ್ನು ಪರಿಶೀಲಿಸಿದ್ದು ಮತ್ತು ವರದಿಯಲ್ಲಿನ ಅಂಶಗಳಿಂದ ಈ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ********** ಪಾತ್ರವು ಕಂಡುಬರುವುದಿಲ್ಲ,’ ಎಂದು ಐಜಿಪಿ ಚಂದ್ರಶೇಖರ್‌ ಅವರು ಉಲ್ಲೇಖಿಸಿದ್ದರು.

 

‘ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳಾದ ಟಿ ಶ್ರೀನಿವಾಸ್‌, ಎಎಸ್‌ಐ ಎನ್‌ ಶುಭ, ಮತ್ತು ಕೆ ಜಿ ಅನಿತಾ ಇವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಜರುಗಿಸಲು ಕೋರಲಾಗಿದೆ,’ ಬೆಂಗಳೂರು ಕೇಂದ್ರ ವಲಯದ ಪೊಲೀಸ್‌ ಮಹಾನಿರೀಕ್ಷಕ ಎಂ ಚಂದ್ರಶೇಖರ್‌ ಅವರು ಪತ್ರದಲ್ಲಿ ಡಿಜಿಐಜಿಪಿಯನ್ನು ಕೋರಿದ್ದನ್ನು ಸ್ಮರಿಸಬಹುದು.

 

ಹಲವರಿಂದ 3.96 ಕೋಟಿ ವಂಚನೆಯಾಗಿದೆ ಎಂದು ಕ್ರಷರ್‌ ಉದ್ಯಮಿಯೊಬ್ಬರು 2021ರ ಸೆಪ್ಟಂಬರ್‌ 28ರಂದು ಹಿಂದಿನ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಅವರಿಗೆ ದೂರು ಸಲ್ಲಿಸಿದ್ದರು. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಅದೇ ದೂರಿನ ಮೇಲೆ ಸೂಚಿಸಿದ್ದರು.

 

ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಿಸಲು ಇನ್ಸ್‌ಪೆಕ್ಟರ್‌ ಶ್ರೀನಿವಾಸ್‌ ಅವರು ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ದೂರಲಾಗಿತ್ತು. ಇವರಿಗೆ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಅವರೊಂದಿಗೆ ನಡೆಸಿದ್ದ ಸಂಭಾಷಣೆಯ ಧ್ವನಿಮುದ್ರಿಕೆಯೂ ತಮ್ಮ ಬಳಿ ಇದೆ ಎಂದು ದೂರುದಾರರು ಮುಖ್ಯ ಕಾರ್ಯದರ್ಶಿ ಗಮನಕ್ಕೆ ತಂದಿದ್ದರು.

 

‘ನನಗೀಗ ಯಾವುದೇ ದಾರಿ ಕಾಣಿಸುತ್ತಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ. ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದೇನೆ. ನನಗೆ ಹೆಣ್ಣು ಮಗಳಿದ್ದಾಳೆ. ನಾನು ನನ್ನ ಜವಾಬ್ದಾರಿಯಿಂದ ಪಲಾಯನ ಮಾಡಲು ಮನಸು ಒಪ್ಪುತ್ತಿಲ್ಲ. ನಾನು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಧ್ವನಿ ಮುದ್ರಣ, ವಾಟ್ಸಾಪ್‌ ಸಂದೇಶಗಳು ನನ್ನ ಬಳಿ ಇವೆ. ತನಿಖೆಯ ಸಂದರ್ಭದಲ್ಲಿ ಇವೆಲ್ಲವನ್ನೂ ಮುಂದಿರಿಸುತ್ತೇನೆ. ಪ್ರಕರಣವನ್ನು ವಿಶೇಷ ತನಿಖಾ ತಂಡ ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು,’ ಎಂದು ದೂರಿನಲ್ಲಿ ಕೋರಿದ್ದರು.

the fil favicon

SUPPORT THE FILE

Latest News

Related Posts