‘ದಿ ಫೈಲ್‌’-ವಾರ್ತಾಭಾರತಿ ವರದಿ ಪರಿಣಾಮ; ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು; ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರ ಆಯ್ಕೆ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಹಲವು ಅಭ್ಯರ್ಥಿಗಳಿಗೆ ವಾಮಮಾರ್ಗದಲ್ಲಿ ನೇಮಕ ಆದೇಶ ನೀಡಿ ಅಕ್ರಮ ಎಸಗಿರುವ ಪ್ರಕರಣದ ಕುರಿತು ‘ದಿ ಫೈಲ್‌’ ಮತ್ತು ವಾರ್ತಾಭಾರತಿ ವರದಿ ಪ್ರಕಟಿಸಿದ್ದರ ಬೆನ್ನಲ್ಲೇ ರಾಜ್ಯ ಸರ್ಕಾರವು ಇದೀಗ ಪ್ರಕರಣದ ಕುರಿತು ತನಿಖೆ ನಡೆಸಲು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

 

ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌, ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ದೊಡ್ಡ ಸದ್ದು ಮಾಡಿದ್ದರ ಬೆನ್ನಲ್ಲೇ ಶಿಕ್ಷಣ ಇಲಾಖೆಯಲ್ಲಿಯೂ ಸದ್ದಿಲ್ಲದೇ ನಡೆದಿದೆ ಎನ್ನಲಾಗಿರುವ ಅಕ್ರಮದ ಕುರಿತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ನೀಡಿದ್ದ ದೂರನ್ನಾಧರಿಸಿ ‘ದಿ ಫೈಲ್‌’ ಮತ್ತು ವಾರ್ತಾಭಾರತಿಯು ಜುಲೈ  5ರಂದು ವರದಿ ಪ್ರಕಟಿಸಿತ್ತು.

ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ; ಆಯ್ಕೆಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ವಾಮಮಾರ್ಗದಲ್ಲಿ ಆದೇಶ?

 

ವರದಿ ಪ್ರಕಟವಾದ ಒಂದೇ ತಿಂಗಳಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕರಣದ ಕುರಿತು ದಾಖಲಾತಿಗಳನ್ನು ಪರಿಶೀಲಿಸಿ ಪ್ರಾಥಮಿಕ ವಿಚಾರಣೆ ನಡೆಸಿತ್ತು. ನೇಮಕಾತಿಯಲ್ಲಿ ಅಕ್ರಮವಾಗಿ ಕುರಿತಂತೆ 11 ಜನ ಶಿಕ್ಷಕರು ಅಕ್ರಮವಾಗಿ ನೇಮಕವಾಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿತ್ತು.

 

ಇಡೀ ಪ್ರಕರಣವನ್ನು ಸಮಗ್ರ ತನಿಖೆ ನಡೆಸುವ ನಿಟ್ಟಿನಲ್ಲಿ 2022ರ ಆಗಸ್ಟ್‌ 18ರಂದು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಆದೇಶದಲ್ಲೇನಿದೆ?

 

2014-15ನೇ ಸಾಲಿನ ಸಹ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವಾಗಿರುವ ಕುರಿತಂತೆ ಪ್ರಾಥಮಿಕ ವಿಚಾರಣೆಯಲ್ಲಿ ಮೊದಲಿಗೆ 11 ಜನ ಶಿಕ್ಷಕರು ಅಕ್ರಮವಾಗಿ ನೇಮಕಾತಿಯಾಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಅಕ್ರಮ ನೇಮಕಾತಿಯಾಗಿರುವ ಸಾಧ್ಯತೆಗಳಿವೆ. ಈ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 56/2022, ಐಪಿಸಿ ಕಲಂ 34, 420, 465, 468, 471ರ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಐಡಿಗೆ ವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕೋರಿದೆ.

 

ಈ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸ್‌ ಠಾಣೆಯ ಅಪರಾಧ ಸಂಖ್ಯೆ 56/2022ರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಿದೆ. ಈ ತನಿಖೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯುಕ ಸಿಐಡಿ ತಂಡದವರಿಗೆ ಸಂಪೂರ್ಣ ಸಹಕಾರ ಮತ್ತು ಅವಶ್ಯ ಮಾಹಿತಿ ದಾಖಲಾತಿಗಳನ್ನು ಒದಗಿಸಬೇಕು. ಸಿಐಡಿ ತಂಡವು ಈ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ತನಿಖಾ ವರದಿಯ್ನು ನ್ಯಾಯಾಲಯಕ್ಕೆ ತ್ವರಿತವಾಗಿ ಸಲ್ಲಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಕೈಗೊಂಡ ಕ್ರಮದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒಳಾಡಳಿತ ಇಲಾಖೆ (ಅಪರಾಧಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಮುಹಮ್ಮದ್‌ ಇಬ್ರಾಹಿಂ ಅವರು ಆದೇಶದಲ್ಲಿ ಸೂಚಿಸಿದ್ದಾರೆ.

 

ಪ್ರಕರಣದ ಹಿನ್ನೆಲೆ

 

ತುಮಕೂರು ಜಿಲ್ಲೆಯ ಕುಣಿಗಲ್, ಗುಬ್ಬಿ, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ವಿವಿಧೆಡೆ ಅಕ್ರಮವಾಗಿ ನೇಮಕವಾಗಿರುವ ಶಿಕ್ಷಕರ ಹೆಸರುಗಳು ಮತ್ತು ಅಕ್ರಮ ಹೇಗೆಲ್ಲಾ ನಡೆದಿದೆ ಎಂಬುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿರುವ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಈ ಸಂಬಂಧ ಮುಖ್ಯಮಂತ್ರಿ, ಸಚಿವ ಬಿ ಸಿ ನಾಗೇಶ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರವೊಂದನ್ನು 2022ರ ಜುಲೈ 4ರಂದು ಬರೆದಿತ್ತು.

 

ನವೀನ್ ಕುಮಾರ್ ಬಿ.ಎನ್ ಸಹ ಶಿಕ್ಷಕರು (ಕೆ.ಪಿ.ಎಸ್ ಅಮೃತೂರು, ಕುಣಿಗಲ್ ತಾಲ್ಲೂಕು ಸಿದ್ರಾಮಪ್ಪ ಬಿರಾದಾರ ಸಹ ಶಿಕ್ಷಕರು (ಹತ್ತಳ್ಳಿ ಹಿರಿಯ ಪ್ರಾಥಮಿಕ ಶಾಲೆ,ವಿಜಯಪುರ ಜಿಲ್ಲೆಯ ಚಡಚಣ ತಾಲೂಕು), ಮಹೇಶ್ ಸುಸಲಾದಿ ಸಹ ಶಿಕ್ಷಕರು, (ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಹತ್ತಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ) , ದೇವೇಂದ್ರ ನಾಯಕ ಸಹ ಶಿಕ್ಷಕರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ಮಾಹಿತಿ ಒದಗಿಸಿದ್ದರು.

 

‘ಪ್ರೌಢಶಾಲೆಗಳಲ್ಲಿ ಖಾಲಿ ಇದ್ದ ಹಿರಿಯ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಬಹುದೊಡ್ಡ ಮತ್ತು ಕಂಡು ಕೇಳರಿಯದಂತಹ ಅಕ್ರಮಗಳು ಕಳೆದ ಹಲವು ವರ್ಷಗಳಿಂದಲೂ ನಡೆದಿವೆ. ಇದೇ ರೀತಿಯ ಅಕ್ರಮವು ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ನೇಮಕಾತಿಯ ಆಯ್ಕೆ ಪಟ್ಟಿಯಲ್ಲಿ ಹೆಸರು ಇಲ್ಲದೇ ಇರುವ ಅಭ್ಯರ್ಥಿಗಳಿಗೂ ಅಕ್ರಮವಾಗಿ ನೇಮಕಾತಿ ಪತ್ರ ನೀಡುವ ಮೂಲಕ ದೊಡ್ಡಮಟ್ಟದ ಭ್ರಷ್ಟಾಚಾರ ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ,’ ಎಂದು ಸರ್ಕಾರದ ಗಮನಕ್ಕೆ ಪ್ರಾಥಮಿಕ ಮಾಹಿತಿಯನ್ನು ವೇದಿಕೆಯ ರಾಜ್ಯಾಧ್ಯಕ್ಷ ಬಿ ಎಸ್‌ ಮಲ್ಲಿಕಾರ್ಜುನಯ್ಯ ಅವರು ಪತ್ರದಲ್ಲಿ ಒದಗಿಸಿದ್ದಾರೆ

 

ಈ ಅಭ್ಯರ್ಥಿಗಳೆಲ್ಲ ಈ ಹಿಂದೆ 2014-2015 ಸಾಲಿನಲ್ಲಿ ಪ್ರೌಢಶಾಲೆ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಇವರುಗಳು ಬೆಂಗಳೂರು ವಿಭಾಗದಲ್ಲಿ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಬರೆದ ನಂತರ ಇವರ ಹೆಸರು ನೇಮಕಾತಿಯ ಆಯ್ಕೆ ಪಟ್ಟಿಯಲ್ಲಿ ಹೆಸರು ಇರುವುದಿಲ್ಲ. ಬೆಂಗಳೂರು ವಿಭಾಗದ ಸಹ ನಿರ್ದೇಶಕರಾಗಿದ್ದ ಡಿ ಕೆ ಶಿವಕುಮಾರ್ (ಈಗ ನಿವೃತ್ತ) ದ್ವಿತೀಯ ದರ್ಜೆ ಸಹಾಯಕ ಪ್ರಸಾದ್ ಇವರು ಅಕ್ರಮ ನೇಮಕಕ್ಕೆ ಸಹಕರಿಸು ಮೂಲಕ ಭ್ರಷ್ಟಾಚಾರ ಎಸಗಿದ್ದಾರೆ. ಬಿಜಾಪುರ ಮೂಲದ ರಾಚಯ್ಯ ಹಿರೇಮಠ, ಇವರು ಮಧ್ಯವರ್ತಿಯಾಗಿದ್ದಾರೆ,’ ಎಂದು ಪತ್ರದಲ್ಲಿ ಆರೋಪಿಸಿದ್ದರು.

 

 

ಶಿಕ್ಷಕರ ಅಕ್ರಮ ನೇಮಕಾತಿ ಸಂಬಂಧ ‘ದಿ ಫೈಲ್‌ ಮತ್ತು ವಾರ್ತಾಭಾರತಿ’ ವರದಿ ಪ್ರಕಟಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆಯು ದಾಖಲಾತಿಗಳನ್ನು ಪರಿಶೀಲಿಸಿತ್ತಲ್ಲದೆ ಇನ್ನೂ ಒಂದಷ್ಟು ಪ್ರಕರಣಗಳನ್ನು ಪತ್ತೆ ಹಚ್ಚಿದ್ದರು. ಹೀಗಾಗಿ ವಿಧಾನಸೌಧ ಠಾಣೆಯಲ್ಲಿ ಒಟ್ಟು ಎರಡು ಎಫ್‌ಐಆರ್‌ಗಳು (ಅಪರಾಧ ಸಂಖ್ಯೆ 55/2022) ದಾಖಲಿಸಿದೆ.

 

ಅಕ್ರಮ ಹೇಗೆಲ್ಲಾ ನಡೆದಿದೆ?

 

ನೇಮಕಾತಿ ಸಂಬಂಧ ಮೊದಲು ಪ್ರಕಟಿಸುವ ಆಯ್ಕೆ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು ಇರುವುದಿಲ್ಲ. ನೇಮಕಾತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಆಯ್ಕೆ ಪಟ್ಟಿಯಲ್ಲಿದ್ದ ಕೆಲವು ಅಭ್ಯರ್ಥಿಗಳು ಯಾವುದೋ ಕಾರಣದಿಂದ ಕೆಲಸಕ್ಕೆ ಹಾಜರಾಗದೇ ಇರುವ ಕಾರಣಕ್ಕೆ ಈ ಹುದ್ದೆಗಳು ಖಾಲಿ ಇರುತ್ತವೆ. ಹೀಗೆ ಖಾಲಿಯಾದ ಹುದ್ದೆಗಳಗೆ ಇವರು cut of percentage ಇರುವ ಅಭ್ಯರ್ಥಿಗಳನ್ನು ಪಟ್ಟಿಮಾಡಿ ನೇಮಕ ಮಾಡಿಕೊಳ್ಳದೇ ನೇಮಕಾತಿಯನ್ನು ಮುಂದೂಡುತ್ತಾರೆ. ಇದು ವರ್ಷಗಟ್ಟಲೇ ಹೀಗೆಯೇ ಮುಂದುವರೆಯುತ್ತದೆ ಎಂದು ವೇದಿಕೆಯು ಪತ್ರದಲ್ಲಿ ವಿವರಿಸಿತ್ತು.

 

ಆ ನಂತರದ ದಿನಗಳಲ್ಲಿ ಹಿಂದೆ ನಡೆದಿದ್ದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳನ್ನು ಈ ಜಾಲವು ಸಂಪರ್ಕಿಸುತ್ತದೆ. ಇಂತಹ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಆಯ್ಕೆಯಾಗಲು ನಿಗದಿತ ಅಂಕಗಳು ಪಡೆಯದಿದ್ದರೂ ಲಕ್ಷಾಂತರ ರುಪಾಯಿ ಲಂಚ ಪಡೆದು ಇವರಿಗೆ ಮೂಲ ಸಿಂಧುತ್ವ ಪ್ರಮಾಣ ಪತ್ರ, ಪೊಲೀಸ್ ವೆರಿಫಿಕೇಶನ್ ಪತ್ರ ಕಳಿಸಿಕೊಟ್ಟಿದ್ದಾರೆ. ಆ ನಂತರ ಮೇಲಾಧಿಕಾರಿಗಳ ಗಮನಕ್ಕೆ ತರದೆಯೇ ನೇಮಕಾತಿ ಆದೇಶ ನೀಡಿದ್ದಾರೆ ಎಂದು ವೇದಿಕೆಯು ಪತ್ರದಲ್ಲಿ ಆರೋಪಿಸಿದೆ.

 

ಇದಾದ ನಂತರ ಖಾಲಿ ಇರುವ ಸರ್ಕಾರಿ ಪ್ರೌಢಶಾಲೆಯ ಸ್ಥಳ ತೋರಿಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಳ ತೋರಿಸಿ ನೇಮಕಾತಿ ಆದೇಶ ನೀಡಿದ್ದಾರೆ. ಆದರೆ ನೇಮಕಾತಿ ನಿಯಮದ ಪ್ರಕಾರ ಮೊದಲನೇ ಆಯ್ಕೆ ಪಟ್ಟಿಯಲ್ಲಿ ನೇಮಕಾತಿ ಆಗದಿರುವ ಅಭ್ಯರ್ಥಿಗಳಿಗೆ ಕಟ್ ಆಫ್ ಪರ್ಸೆಂಟೇಜ್ ಎಷ್ಟಕ್ಕೆ ನಿಲ್ಲಿಸಲಾಗಿದೆಯೋ ಅದರ ಕೆಳಗಿನ ಅಂಕ ಪಡೆದ ಅಭ್ಯರ್ಥಿಗಳಿಗೆ ಈ ಎರಡನೇ ಪಟ್ಟಿಯಲ್ಲಿ ಹೆಸರು ಪ್ರಕಟಿಸಿ ನೇಮಕಾತಿ ಆದೇಶ ನೀಡಬೇಕು. ಇಲ್ಲದಿದ್ದರೆ ಖಾಲಿ ಹುದ್ದೆಗಳನ್ನು ಸರ್ಕಾರಕ್ಕೆ ಮರು ಹಿಂದಿರುಗಿಸಬೇಕು. ಆದರೆ ಇಲ್ಲಿ ಈ ಯಾವ ಪ್ರಕ್ರಿಯೆಯೂ ನಡೆದಿಲ್ಲ. ಹಣ ಪಡೆದು ಅಕ್ರಮವಾಗಿ ನೇಮಕ ನಡೆಸಲಾಗಿದೆ ಎಂದು ವೇದಿಕೆಯು ಆಪಾದಿಸಿತ್ತು.

 

ಈ ರೀತಿಯಾಗಿ ನೂರಾರು ಜನ ಅಭ್ಯರ್ಥಿಗಳಿಗೆ ಅಕ್ರಮವಾಗಿ ನೇಮಕಾತಿ ಆದೇಶ ಪ್ರತಿ ನೀಡಿ ಅಕ್ರಮ ನಡಸಲಾಗಿದೆ. ಇಡೀ ಪ್ರಕರಣೆದ ಕುರಿತು ಬೆಂಗಳೂರು ವಿಭಾಗದ ಸಹ ನಿರ್ದೇಶಕ ಡಿ ಕೆ ಶಿವಕುಮಾರ್ (ಈಗ ನಿವೃತ್ತ) ದ್ವಿತೀಯ ದರ್ಜೆ ಸಹಾಯಕ ಪ್ರಸಾದ್ ಇವರನ್ನು ತನಿಖೆಗೊಳಪಡಿಸಬೇಕು ಎಂದು ಪತ್ರದಲ್ಲಿ ವೇದಿಕೆಯು ಒತ್ತಾಯಿಸಿತ್ತು.

 

‘ಈ ನೇಮಕಾತಿಗಳ ಮೂಲ ಆಯ್ಕೆಪಟ್ಟಿ, ಸರ್ಕಾರದ ಅಧಿಸೂಚನೆ, ಪೊಲೀಸ್‌ ವೆರಿಫಿಕೇಷನ್‌, ಈ ಅಧಿಸೂಚನೆ ಪ್ರಕಾರ ನಡೆದಿರುವ ನೇಮಕಾತಿಯ ಎಲ್ಲಾ ಪ್ರಕ್ರಿಯೆಗಳ ಮೂಲ ದಾಖಲಾತಿಗಳನ್ನು ದೂರುದಾರರ ಸಮ್ಮುಖದಲ್ಲಿ ಪರಿಶೀಲನೆ, ಪಾರದರ್ಶಕ ತನಿಖೆ ನಡೆಯಬೇಕು. 2014-15ರಿಂದ ಇಲ್ಲಿಯವರೆಗೂ ನಡೆದಿರುವ ಶಿಕ್ಷಕರ ನೇಮಕಾತಿಯ ಎಲ್ಲಾ ಪ್ರಕ್ರಿಯೆಗಳ ಮೂಲ ದಾಖಲೆಗಳೊಂದಿಗೆಯೇ ತನಿಖೆ ನಡೆಯಬೇಕು,’ ಎಂದು ಬಿ ಎಸ್‌ ಮಲ್ಲಿಕಾರ್ಜುನಯ್ಯ ಅವರು ಪತ್ರದಲ್ಲಿ ಕೋರಿದ್ದರು.

 

ಬೆಂಗಳೂರು ವಿಭಾಗದಲ್ಲಿ ಇಂತಹದೊಂದು ಪ್ರಕರಣ ನಡೆದಿದೆ ಎಂದು ಶಂಕಿಸಿರುವ ವೇದಿಕೆಯು ಈ ಪ್ರಕರಣವು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಗಮನಕ್ಕೆ ಬಂದಿಲ್ಲ. ಅಥವಾ ಅವರನ್ನೂ ಕತ್ತಲಲ್ಲಿ ಇರಿಸಲಾಗಿದೆ. ಹಾಗೆಯೇ ಈ ಪ್ರಕರಣವು ಗೊತ್ತಿದ್ದೂ ಸುಮ್ಮನಿರುವ ಮೂಲಕ ಅಕ್ರಮಕ್ಕೆ ಕುಮ್ಮಕ್ಕು ಕೊಟ್ಟಿದ್ದಾರೋ ಎಂಬುದನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದನ್ನು ಸ್ಮರಿಸಬಹುದು.

 

 

ಪಟ್ಟಿ ಇಲ್ಲಿದೆ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಬೋರನ ಕಣಿವೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿನ ಸಹ ಶಿಕ್ಷಕರಾದ ಶಮೀನಾಜ್‌ ಬಾನು, ಕುಣಿಗಲ್‌ ತಾಲೂಕಿನ ಕೊಡವತ್ತಿ ಗ್ರಾಮದ ರಾಜೇಶ್ವರಿ ಜಗ್ಲಿ,

 

ತಿಪಟೂರು ತಾಲೂಕಿನ ಆಲ್ದೂರ್‌ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಮಲಾ, ಕುಣಿಗಲ್‌ ತಾಲೂಕಿನ ನಾಗಸಂದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನಾಗರತ್ನ, ತುರುವೇಕೆರೆ ತಾಲೂಕಿನ ಹುಲಿಕಲ್ ಗ್ರಾಮದ ದಿನೇಶ್‌ ಎಚ್‌, ಚಿಕ್ಕನಾಯಕನಹಳ್ಳಿಯ ಅಮೃತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನವೀನ್‌ ಕುಮಾರ್‌ ಜಿ ಎನ್‌, ಗುಬ್ಬಿ ತಾಲೂಕಿನ ಕೆ ಮತ್ತಿಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೇವೇಂದ್ರ ನಾಯ್ಕ ಎಸ್‌,

 

ಕುಣಿಗಲ್‌ ತಾಲೂಕಿನ ಹೊಳಗೇರಿಪುರ ಸರ್ಕಾರಿ ಪ್ರೌಢಶಾಲೆಯ ಹರೀಶ್‌ ಆರ್‌, ತುರುವೇಕೆರೆ ತಾಲೂಕಿನ ಹುಲಿಕೆರೆ ಗ್ರಾಮದ ಪ್ರಸನ್ನ ಬಿ ಎಂ, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮಹೇಶ್ ಶ್ರೀಮಂತ ಅವರನ್ನು ಸಿಐಡಿ ಪೊಲೀಸರು ದಸ್ತಗಿರಿ ಮಾಡಿಕೊಂಡಿದ್ದಾರೆ ಎಂದು ಸಿಐಡಿ ಪ್ರಕಟಣೆ ತಿಳಿಸಿದೆ.

the fil favicon

SUPPORT THE FILE

Latest News

Related Posts