Tuesday | July 7, 2026 |

ಆಂಬ್ಯುಲೆನ್ಸ್; ಶೈಕ್ಷಣಿಕ ಹಿನ್ನೆಲೆ ಕಂಪನಿಗೆ 1,260 ಕೋಟಿ ಮೊತ್ತದ ಟೆಂಡರ್‌,100 ಕೋಟಿ ಲಂಚದ ಆರೋಪ

ಬೆಂಗಳೂರು; ಶೈಕ್ಷಣಿಕ ಸೇವೆಗಳ ಒದಗಿಸುವ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದಕ್ಕೆ 1,260 ಕೋಟಿ ರು ಮೊತ್ತದಲ್ಲಿ ‘108’ ಆರೋಗ್ಯ ಕವಚದ ತುರ್ತು ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್‌  ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಿದ್ಧತೆ ನಡೆಸಿದೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.

 

 

ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಇನ್ನು ಐದೇ ಐದು ದಿನಗಳು ಬಾಕಿ ಇರುವಾಗಲೇ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದರಿಂದ ದೊಡ್ಡ ಮೊತ್ತದ ಲಂಚ ನೀಡಲಾಗಿದೆ ಎಂದು  ಇಲಾಖೆಗೆ ಸಲ್ಲಿಕೆಯಾಗಿರುವ ದೂರು ಕೂಡ  ಮುನ್ನೆಲೆಗೆ ಬಂದಿದೆ. ಈ ಪ್ರಕ್ರಿಯೆಯಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಪ್ರಭಾವಿ ಸಚಿವರೊಬ್ಬರು ಭಾಗಿಯಾಗಿದ್ದಾರೆ ಎಂಬ ಆಪಾದನೆಯೂ ಕೇಳಿ ಬಂದಿದೆ. ಈ ಸಂಬಂಧ ಖಾಸಗಿ ಸಂಸ್ಥೆಯೊಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ  ಲಿಖಿತ ದೂರು ಸಲ್ಲಿಸಿದೆ ಎಂದು ಗೊತ್ತಾಗಿದೆ.

 

 

ಅಲ್ಲದೇ ಸಚಿವರೊಬ್ಬರಿಗೆ 100 ಕೋಟಿ ರು., ಇಲಾಖೆಯ ಉನ್ನತ ಅಧಿಕಾರಿಗಳಿಗೆ 10 ಕೋಟಿ, ಉಪ ನಿರ್ದೇಶಕರೊಬ್ಬರಿಗೆ 10 ಕೋಟಿ ಮತ್ತು ಸಮಿತಿಯ ಸದಸ್ಯರುಗಳಿಗೂ 1 ಕೋಟಿ ಲಂಚ ನೀಡಲಾಗಿದೆ. ಲಂಚದ ಹಣವನ್ನು ಪಡೆಯುವಾಗ ಉಪ ನಿರ್ದೇಶಕರೊಬ್ಬರು ಸಿಕ್ಕಿಬಿದ್ದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆಯಲ್ಲದೆ ಹಣವನ್ನು ಪಡೆದು ಬ್ಯಾಗ್‌ನಲ್ಲಿ ಇರಿಸುತ್ತಿರುವ ಫೋಟೋಗಳನ್ನೂ ದೂರಿನಲ್ಲಿ ಲಗತ್ತಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಫೋಟೋಗಳು ಮತ್ತು ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಸದಾಶಿವನಗರದಲ್ಲಿರುವ ಸಚಿವರೊಬ್ಬರ ನಿವಾಸದ ನೆಲಮಹಡಿಯ ಕೊಠಡಿಯಲ್ಲಿ ಲಂಚದ ಹಣವನ್ನು ಖಾಸಗಿ ಕಂಪನಿಯೊಂದರಿಂದ ಉಪ ನಿರ್ದೇಶಕರೊಬ್ಬರು ಸ್ವೀಕರಿಸಿದ್ದಾರೆ ಎಂದೂ ದೂರಿನಲ್ಲಿ ಹೇಳಲಾಗಿದೆ. ಲಂಚದ ಹಣ ಪಡೆದು ಬ್ಯಾಗ್‌ನಲ್ಲಿ ಇರಿಸುತ್ತಿರುವ ಉಪ ನಿರ್ದೇಶಕರ ಪ್ರತಿಕ್ರಿಯೆಗಾಗಿ ‘ದಿ ಫೈಲ್‌’ ಕರೆ ಮಾಡಿತ್ತಾದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.

 

 

ಈ ಪ್ರಕರಣವನ್ನು ಲೋಕಾಯುಕ್ತ ಅಥವಾ ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ದೂರಿನಲ್ಲಿ ಕೋರಿರುವುದು ಗೊತ್ತಾಗಿದೆ.

 

 

ತುರ್ತು ವೈದ್ಯಕೀಯ ಪ್ರತಿಕ್ರಿಯೆ ಸೇವೆ 108- ಆರೋಗ್ಯ ಕವಚ ಸೇವೆಯಡಿ ರಾಜ್ಯದಲ್ಲಿರುವ ಅಂದಾಜು 7 ಕೋಟಿ ಜನಸಂಖ್ಯೆಗೆ ತಕ್ಕಂತೆ ಇನ್ನೂ 290 ಆಂಬುಲೆನ್ಸ್‌ಗಳು ಅವಶ್ಯಕತೆ ಇದ್ದರೂ ಕೇವಲ 40 ಆಂಬುಲೆನ್ಸ್‌ಗಳನ್ನು ಖರೀದಿಸಲು ಸಹಮತಿ ವ್ಯಕ್ತಪಡಿಸಿದ್ದ ಆರ್ಥಿಕ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂಬ ಆರೋಪಕ್ಕೂ ಗುರಿಯಾಗಿತ್ತು.

 

ರಾಜ್ಯದಲ್ಲಿ 2014-15ನೇ ಸಾಲಿನಲ್ಲಿದ್ದ ಜನಸಂಖ್ಯೆ ಆಧಾರದ ಮೇಲೆ 2021-22ರವರೆಗೆ 710 ಅಂಬುಲೆನ್ಸ್‌ಗಳಿವೆ. ಆದರೆ ಕೇವಲ 489 ಮಾತ್ರ ಕಾರ್ಯನಿರ್ವಹಿಸುತ್ತಿವೆ. ಅನುಮೋದಿತ ಸಂಖ್ಯೆ ಪ್ರಕಾರ ಇನ್ನೂ 221 ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸಬೇಕಿತ್ತು. ಅನುಮೋದಿತ ಸಂಖ್ಯೆಗಿಂತಲೂ ಕಡಿಮೆ ಸಂಖ್ಯೆಯಲ್ಲಿ ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಅಂಬ್ಯುಲೆನ್ಸ್‌ಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಲು ಅನುಮತಿ ನೀಡಬೇಕಿದ್ದ ಆರ್ಥಿಕ ಇಲಾಖೆಯು ಕೇವಲ 40 ಆಂಬ್ಯುಲೆನ್ಸ್‌ಗಳನ್ನು ಖರೀದಿಸಲು ಸಹಮತಿ ವ್ಯಕ್ತಪಡಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿತ್ತು.

 

ಪ್ರಸ್ತುತ 108 ಆರೋಗ್ಯ ಕವಚ ಸೇವೆಯಲ್ಲಿ ಒಟ್ಟು 710 ಆಂಬುಲೆನ್ಸ್‌ಗಳು ಸೇವೆ ಒದಗಿಸುತ್ತಿವೆ. ಈ ಸಂಖ್ಯೆಯನ್ನು 2014-15ನೇ ಸಾಲಿನ ಜನಸಂಖ್ಯೆ ಆಧಾರದ ಮೇಲೆ ನಿರ್ಧರಿಸಲಾಗಿತ್ತು. ಪ್ರಸ್ತುತ ಜನಸಂಖ್ಯೆ ಆಧಾರದ ಮೇಲೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಮಾರ್ಗಸೂಚಿಗಳನ್ವಯ ಹಾಲಿ ಇರುವ 710 ಅಂಬ್ಯುಲೆನ್ಸ್‌ಗಳ ಸಂಖ್ಯೆಯನ್ನು 1,000ಕ್ಕೆ ಹೆಚ್ಚಿಸಬೇಕಾಗಿದೆ. ಅಲ್ಲದೆ ಈಗಿರುವ ಕರೆ ಕೇಂದ್ರದ ಆಸನ ಸಂಖ್ಯೆಯನ್ನು 54ರಿಂದ 75ಕ್ಕೆ ಹೆಚ್ಚಿಸಿ ಆಂಬ್ಯುಲೆನ್ಸ್‌ 108 ಸೇವೆಯನ್ನು 1,698.44 ಕೋಟಿಗಳ ವೆಚ್ಚದಲ್ಲಿ 5 ವರ್ಷಗಳ ಅವಧಿಗೆ ಪಡೆಯಲು ಅರ್ಹ ಸೇವಾದಾರರನ್ನು ಆಯ್ಕೆ ಮಾಡಬೇಕಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸ್ತಾವನೆ ಸಲ್ಲಿಸಿತ್ತು.

 

ಈ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಆರ್ಥಿಕ ಇಲಾಖೆಯು ‘ ಆಡಳಿತ ಇಲಾಖೆಯ ಪ್ರಸ್ತಾವನೆಗೆ ಸಂಬಂಧಿಸಿದಂತೆ 108- ಆಂಬ್ಯುಲೆನ್ಸ್‌ ಸಂಖ್ಯೆಯನ್ನು 750 ಗಳಿಗೆ ಸೀಮಿತಗೊಳಿಸಿ ಹಾಗೂ 54 ಕರೆ ಕೇಂದ್ರದ ಆಸನ ಸಂಖ್ಯೆಯನ್ನು ಪ್ರಸ್ತಾಪಿಸಿದಂತೆ 75ಕ್ಕೆ ಹೆಚ್ಚಿಸಿ 1,260 ಕೋಟಿಗಳ ವೆಚ್ಚದಲ್ಲಿ 5 ವರ್ಷಗಳ ಅವಧಿಗೆ ಸೇವೆಯನ್ನು ಟೆಂಡರ್ ಮೂಲಕ ಪಡೆಯಲು ಸಹಮತಿಸಿದೆ,’ ಎಂದು 2021ರ ಡಿಸೆಂಬರ್‌ 7ರಂದು ಆರ್ಥಿಕ ಇಲಾಖೆಯು ಆರೋಗ್ಯ ಇಲಾಖೆಗೆ ತಿಳಿಸಿತ್ತು. ಈ ಕುರಿತು ‘ದಿ ಫೈಲ್‌’ ವರದಿಯನ್ನು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

ಆಂಬ್ಯುಲೆನ್ಸ್‌ ಸಂಖ್ಯೆ ಹೆಚ್ಚಳಕ್ಕೆ ಕೊಕ್ಕೆ; ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಉಲ್ಲಂಘನೆ

 

ಪ್ರಸಕ್ತ ಸಾಲಿನಲ್ಲಿರುವ ಅಂದಾಜು 7 ಕೋಟಿ ಜನಸಂಖ್ಯೆಗೆ ತಕ್ಕಂತೆ 1,000 ಅಂಬುಲೆನ್ಸ್‌ಗಳಿರಬೇಕು. ಈ ಸಂಖ್ಯೆಯನ್ನು ಹೆಚ್ಚಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವನೆ ಪೈಕಿ ಕೇವಲ 40 ಆಂಬುಲೆನ್ಸ್‌ಗಳನ್ನು ಹೆಚ್ಚಿಸಲು ಅನುಮತಿ ನೀಡಿರುವ ಆರ್ಥಿಕ ಇಲಾಖೆಯು ಇನ್ನು 250 ಅಂಬುಲೆನ್ಸ್‌ಗಳ ಖರೀದಿಗೆ ಅನುಮತಿ ನೀಡದಿರುವುದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳ ನೇರ ಉಲ್ಲಂಘನೆಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳುತ್ತಾರೆ.

 

ಅಲ್ಲದೆ ಪ್ರಸಕ್ತ 710 ಆಂಬ್ಯುಲೆನ್ಸ್‌ಗಳಿಗೆ ಎದುರಾಗಿ 489 ಆಂಬ್ಯುಲೆನ್ಸ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. 1,350 ಇಎಂಟಿ ಮತ್ತು ಪೈಲಟ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 2020-21ನೇ ಸಾಲಿನಲ್ಲಿ 108 ಆಂಬ್ಯುಲೆನ್ಸ್‌ ಸೇವೆಗಾಗಿ ಒದಗಿಸಿದ ಮೊತ್ತದಲ್ಲಿ 86.31 ಕೋಟಿ ಮಾತ್ರ ವೆಚ್ಚವಾಗಿದೆ. ಇದು ಅಂದಾಜು ಮೊತ್ತದ ಶೇ.50ರಷ್ಟು ಮಾತ್ರ ವೆಚ್ಚವಾಗಿದೆ ಎಂಬುದು ಆರ್ಥಿಕ ಇಲಾಖೆಯ ಪತ್ರದಿಂದ ಗೊತ್ತಾಗಿದೆ.

Hot this week

ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ; ಅಭಿವೃದ್ಧಿ ಹೊಂದಿದ ಜಮೀನುಗಳ ಸರ್ವೇ ನಂಬರ್‍‌ ವಿವರಣೆ ನೀಡದ ಅಧಿಕಾರಿವರ್ಗ

ಬೆಂಗಳೂರು; ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗುತ್ತಿಹೊಳೆ ಗ್ರಾಮದಲ್ಲಿ ವೀರಭದ್ರೇಶ್ವರ ಏತ...

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...
Please Scan to make Your Contribution

Topics

ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ; ಅಭಿವೃದ್ಧಿ ಹೊಂದಿದ ಜಮೀನುಗಳ ಸರ್ವೇ ನಂಬರ್‍‌ ವಿವರಣೆ ನೀಡದ ಅಧಿಕಾರಿವರ್ಗ

ಬೆಂಗಳೂರು; ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗುತ್ತಿಹೊಳೆ ಗ್ರಾಮದಲ್ಲಿ ವೀರಭದ್ರೇಶ್ವರ ಏತ...

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...

Related Articles

Popular Categories

error: Content is protected !!