ಆರ್ಥಿಕ ನಷ್ಟ; ಕಾಮಗಾರಿಗಳ ಮೊತ್ತ ಬಿಡುಗಡೆಗೆ ತಡೆಯೊಡ್ಡದಂತೆ ಸಿದ್ದರಾಮಯ್ಯಗೆ ಪತ್ರ ಬರೆದ ಕೆಂಪಣ್ಣ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್‌ ನೀಡಬೇಕು ಎಂದು ಬೇಡಿಕೆ ಇಟ್ಟಿದೆ ಎಂದು ಗುತ್ತಿಗೆದಾರರ ಸಂಘವು ಪ್ರಧಾನಿಗೆ ಬರೆದಿದ್ದ ಪತ್ರವನ್ನೇ ಮುಂದಿರಿಸಿಕೊಂಡು ಅಧಿಕಾರಕ್ಕೇರಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತೊಮ್ಮೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರು ಕಾಮಗಾರಿಗಳ ಮೊತ್ತ ಬಿಡುಗಡೆಗೆ ತಡೆಯೊಡ್ಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರೆದಿರುವ ಪತ್ರವು ಬಹಿರಂಗವಾಗಿದೆ.

 

ಜಲಸಂಪನ್ಮೂಲ, ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳಲ್ಲಿ ನಿರ್ವಹಿಸಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘವು ಮಾಡಿದ್ದ ಆರೋಪವು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಕಾರಣವಾಗಿತ್ತು.

 

ಇದೇ ಆರೋಪವನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದಿನ ಸರ್ಕಾರದಲ್ಲಿ ಕೈಗೊಂಡಿದ್ದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಬಾರದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿತ್ತು. ಆದರೀಗ ಆ ಸೂಚನೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗೆ 2023ರ ಮೇ 29ರಂದು ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಪತ್ರವು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪತ್ರದಲ್ಲೇನಿದೆ?

 

ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸುತ್ತೋಲೆ ಹೊರಡಿಸಲಾಗಿರುತ್ತದೆ. ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಮೊತ್ತವನ್ನೂ ಬಿಡುಗಡೆ ಮಾಡದಂತೆಯೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

 

ಇದರಿಂದ ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗುವುದರ ಜತೆಗೆ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಕಾಮಗಾರಿಗಳನ್ನು ನಿಲ್ಲಿಸಿದರೆ ಗುಣಮಟ್ಟ ಕಾಪಾಡಿಕೊಳ್ಳಲು ಅಸಾಧ್ಯವಾಗುತ್ತದೆ. ಅಲ್ಲದೇ ರಾಜ್ಯದ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಧಕ್ಕೆ ಉಂಟಾಗುತ್ತದೆ. ಕಾನೂನುಬದ್ಧವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಮುಂದುವರಿಸಲು ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಮೊತ್ತವನ್ನು ಬಿಡುಗಡೆ ಮಾಡಲು ಯಾವುದೇ ತಡೆಯೊಡ್ಡಬಾರದು. ಆದ್ದರಿಂದ ಈ ಸಂಬಂಧ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ. ಈ ಸಂಬಂಧ ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಬೇಕು ಎಂದು ಪತ್ರದಲ್ಲಿ ಗುತ್ತಿಗೆದಾರರ ಸಂಘವು ಕೋರಿದೆ.

 

ಕೋಲಾರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದ ಮುನಿರತ್ನ ಅವರ ಹೆಸರನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪಿಸಿದ್ದ ಸಂಘವು ಗುತ್ತಿಗೆದಾರರ ಕೆಲಸ ಮಂಜೂರು ಆಗಬೇಕೆಂದರೆ ಲಂಚ ಕೊಡಬೇಕು, ಇಲ್ಲದಿದ್ದರೆ ಗುತ್ತಿಗೆ ರದ್ದು ಮಾಡಲಾಗುವುದು,ಹಣ ಕಲೆಕ್ಟ್ ಮಾಡಿ ತನ್ನಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ನೇರವಾಗಿ ಬೆದರಿಕೆ ಹಾಕುತ್ತಾರೆ ಎಂದು ಕೆಂಪಣ್ಣ ದೂರಿದ್ದರು.

 

 

ಸರ್ಕಾರದ ಸಚಿವರು, ಶಾಸಕರು ಲಂಚ, ಭ್ರಷ್ಟಾಚಾರದಲ್ಲಿ ನಂಬರ್ 1, 2 ಸ್ಥಾನದಲ್ಲಿದ್ದಾರೆ. ಗುತ್ತಿಗೆದಾರರಿಂದ ಕಾಮಗಾರಿ ಹಣದಲ್ಲಿ ಶೇಕಡಾ 40ರಷ್ಟು ಲಂಚ ಪಡೆಯುತ್ತಾರೆ. ಅವರಿಗೆ ಇಷ್ಟೊಂದು ಲಂಚ ಹೋದರೆ ಉಳಿದ ಹಣದಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು ಹೇಗೆ ಸಾಧ್ಯ, ಗುತ್ತಿಗೆದಾರರು ಜನಪ್ರತಿನಿಧಿಗಳ ಕಿರುಕುಳದಿಂದ ನಲುಗಿ ಹೋಗುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದ್ದರು.

 

 

ಒಂದು ವರ್ಷ 2 ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ಸಿಎಂ ಮಾತಿಗೂ ಬೆಲೆ ಇಲ್ಲದಂತಾಗಿದೆ. ಮಾನ, ಮರ್ಯಾದೆ ಇಲ್ಲದ ಜನ ಪ್ರತಿನಿಧಿಗಳು ಇವರು. ಇನ್ನೂ 22 ಸಾವಿರ ಕೋಟಿ ಬಿಲ್ ಪೆಂಡಿಂಗ್ ಇದೆ. ಕೆಲವರದು 3 ವರ್ಷಗಳಿಂದ ಬಾಕಿ ಇದೆ. ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ ಇದಾಗಿದೆ. ಇದರಲ್ಲಿ ಬೊಮ್ಮಾಯಿ ಸೇರಿದಂತೆ ಎಲ್ಲರೂ ಇದ್ದಾರೆ. ಯಾರಿಗೂ ರ‍್ಯಾಂಕಿಂಗ್ ಕೊಡೋಕೆ ಆಗಲ್ಲ ಎಂದು ಆಪಾದಿಸಿದ್ದರು.

 

ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರನ್ನೂ ಭೇಟಿ ಮಾಡಿದ್ದ ಗುತ್ತಿಗೆದಾರರ ಸಂಘದ ನಿಯೋಗ ಚರ್ಚೆ ನಡೆಸಿತ್ತು. ಇದನ್ನಾಧರಿಸಿ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರಸ್ತಾಪಿಸಿದ್ದನ್ನು ಸ್ಮರಿಸಬಹುದು.
ಇದಕ್ಕೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಂಪರ್ಕಿಸಿದ್ದ ಗುತ್ತಿಗೆದಾರರ ಸಂಘವು ಸುಧಾರಣೆಗಳಿಗೆ ಬೇಡಿಕೆ ಇಟ್ಟಿತ್ತು. ಇದನ್ನಾಧರಿಸಿ ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಹಾಗೆಯೇ ವಿವಿಧ ಇಲಾಖೆಗಳಲ್ಲಿ ಬಾಕಿ ಇದ್ದ ಬಿಲ್‌ಗಳನ್ನು ವಿಲೇವಾರಿ ಮಾಡಿತ್ತು. ಗುತ್ತಿಗೆದಾರರ ಸಂಘವು ಬರೆದಿರುವ ಪತ್ರವನ್ನು ಕಾಂಗ್ರೆಸ್‌ ರಾಜಕೀಯಕ್ಕೆ ಬಳಸಿಕೊಂಡಿದೆ ಎಂದೂ ಅಂದಿನ ಸಚಿವ ಡಾ ಕೆ ಸುಧಾಕರ್‍‌ ಅವರು ಪ್ರತಿಕ್ರಿಯಿಸಿದ್ದರು.

 

‘ಇದು ಕೇವಲ ರಾಜಕೀಯ ಪ್ರೇರಿತ ಯತ್ನ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್‌ ಈ ವಿಚಾರವನ್ನು ಹೆಚ್ಚು ಸುದ್ದಿ ಮಾಡುತ್ತದೆ. ಈ ಮೂಲಕ ಬಿಜೆಪಿಯ ಬಗ್ಗೆ ಜನರಲ್ಲಿ ನಕಾರಾತ್ಮಕ ಭಾವನೆ ಉಂಟುಮಾಡಿ ಮತ ಕೇಳಲಾಗುತ್ತದೆ,’ ಎಂದು ಹೇಳಿದ್ದನ್ನು ಸ್ಮರಿಸಬಹುದು.

the fil favicon

SUPPORT THE FILE

Latest News

Related Posts