ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಮುಖ್ಯಮಂತ್ರಿ ಶಿಫಾರಸ್ಸು; ಪೈಪೋಟಿ ಸೃಷ್ಟಿಸಿದ ‘ಕೃಷ್ಣಾ’ದ ಟಿಪ್ಪಣಿಗಳು

ಬೆಂಗಳೂರು; ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿನ ಒಂದೇ ಒಂದು ಲೆಕ್ಕಾಧಿಕಾರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಲೆಕ್ಕ ಪರಿಶೋಧನಾಧಿಕಾರಿಗಳನ್ನು ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಿರುವುದು ಇದೀಗ ಬಹಿರಂಗವಾಗಿದೆ.

 

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿ ಒಂದು ವರ್ಷ 4 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿರುವ ಎಂ ಜಿ ಮಂಜುನಾಥ ಅವರು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಯೋಜನಾ ಮುಖ್ಯಸ್ಥರು, ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪ್ರಧಾನ ನಿರ್ದೇಶಕರಿಗೆ ಪತ್ರ ಬರೆದಿದ್ದರು ಸಹ ಇವರ ಹುದ್ದೆಗೆ ನಾಲ್ವರು ಲೆಕ್ಕಪರಿಶೋಧನಾಕಾರಿಗಳನ್ನು ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿರುವುದು ನಾಲ್ವರು ಅಧಿಕಾರಿಗಳ ಮಧ್ಯೆಯೇ ಪೈಪೋಟಿ ಸೃಷ್ಟಿಸಿದಂತಾಗಿದೆ.

 

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಟಿಪ್ಪಣಿಗಳು ಮತ್ತು ಇಲಾಖೆಯ ಮುಖ್ಯಸ್ಥರು ಬರೆದಿರುವ ಪತ್ರದ ಪ್ರತಿಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದಲೇ ಅಧಿಕಾರಿ ನೌಕರರ ವರ್ಗಾವಣೆಗೆ ಶಿಫಾರಸ್ಸು ಪತ್ರಗಳು ಹೊರಬೀಳುತ್ತಿವೆ ಮತ್ತು ಗೃಹ ಕಚೇರಿಯನ್ನು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರು ನಿಯಂತ್ರಿಸುತ್ತಿದ್ದಾರೆ ಎಂಬ ಬಲವಾದ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ಅಧಿಕಾರಿಗಳ ಪೈಪೋಟಿಗೆ ಕಾರಣವಾಗಿರುವ ಮುಖ್ಯಮಂತ್ರಿಗಳ ಟಿಪ್ಪಣಿ ಪತ್ರಗಳು ಮುನ್ನೆಲೆಗೆ ಬಂದಿವೆ.

 

ಇರುವ ಒಂದು ಹುದ್ದೆಗೆ ನಾಲ್ವರ ವರ್ಗಾವಣೆಗೆ ಶಿಫಾರಸ್ಸು

 

ಬಿಬಿಎಂಪಿಯಲ್ಲಿ ಲೆಕ್ಕ ಪರಿಶೋಧನಾಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್‌ ಕೆ ಜಗದೀಶ್‌ ಅವರನ್ನು ರಾಜ್ಯ ರಸ್ತೆ ಅಭಿವೃದ್ದಿ ನಿಗಮದಲ್ಲಿ ಎಂ ಜಿ ಮಂಜುನಾಥ್ ಇವರ ಸ್ಥಳಕ್ಕೆ ವರ್ಗಾಯಿಸಲು ಸೂಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಯಿಂದ ಟಿಪ್ಪಣಿ ಹೊರಡಿಸಲಾಗಿದೆ.

 

ಇದೇ ಹುದ್ದೆಗೆ ಬಿಬಿಎಂಪಿಯಲ್ಲಿ ಮುಖ್ಯ ಲೆಕ್ಕಾಧಿಕಾರಿಯವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತೊಬ್ಬ ಲೆಕ್ಕಪರಿಶೋಧನಾಕಾರಿ ಕೆ ಎಚ್‌ ಶ್ರೀನಿವಾಸ್‌ ಅವರನ್ನು ಎಂ ಜಿ ಮಂಜುನಾಥ್‌ ಅವರ ಹುದ್ದೆಯ ಜಾಗಕ್ಕೆ ವರ್ಗಾಯಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಲ್ಲಿಸಿದ್ದ ಮನವಿ ಮೇಲೆಯೇ ಸಿದ್ದರಾಮಯ್ಯ ಅವರು ಇದನ್ನು ಪರಿಗಣಿಸಿ ಎಂದು ಷರಾ ಬರೆದಿರುವುದು ಗೊತ್ತಾಗಿದೆ.

 

ಅದೇ ರೀತಿ ಪೊಲೀಸ್‌ ಮಹಾನಿರ್ದೇಶಕರ ಕಚೇರಿಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ ನಾಗರಾಜು ಅವರು ಸಲ್ಲಿಸಿದ್ದ ಮನವಿ ಮೇಲೆಯೇ ಸಿದ್ದರಾಮಯ್ಯ ಅವರು ಮಂಜುನಾಥ್‌ ಅವರ ಜಾಗಕ್ಕೆ ಪರಿಗಣಿಸಿ ಎಂದು 2023ರ ಜೂನ್‌ 8ರಂದು ಷರಾ ಬರೆದಿದ್ದಾರೆ.

 

ಅದೇ ರೀತಿ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ ಎಸ್‌ ಪ್ರತಿಭ ಅವರನ್ನೂ ಮಂಜುನಾಥ ಜಿ ಇವರ ಸ್ಥಳಕ್ಕೆ ನಿಯುಕ್ತಿಗೊಳಿಸಲು ಸಿದ್ದರಾಮಯ್ಯ ಅವರು ಟಿಪ್ಪಣಿಯಲ್ಲಿ ಸೂಚಿಸಿರುವುದು ಟಿಪ್ಪಣಿ ಪ್ರತಿಯಿಂದ ಗೊತ್ತಾಗಿದೆ.

 

ಆದರೆ ಮಂಜುನಾಥ್‌ ಅವರ ಕಾರ್ಯಕ್ಷಮತೆ ಬಗ್ಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದ ಯೋಜನಾ ಮುಖ್ಯಸ್ಥರು ತೃಪ್ತಿ ವ್ಯಕ್ತಪಡಿಸಿದ್ದಾರೆ. ಇವರ ವರ್ಗಾವಣೆ ಸುಳಿವು ಹಿಡಿದ ಯೋಜನಾ ಮುಖ್ಯಸ್ಥರು ಕರ್ನಾಟಕ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪ್ರಧಾನ ನಿರ್ದೇಶಕರಿಗೆ 2023ರ ಜೂನ್‌ 23ರಂದು ಪತ್ರವನ್ನೂ ಬರೆದಿದ್ದಾರೆ.

 

ಪತ್ರದಲ್ಲೇನಿದೆ?

 

ಇಲಾಖೆಯಲ್ಲಿನ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ ಜಿ ಮಂಜುನಾಥ ಅವರನ್ನು ಇದೇ ಹುದ್ದೆ ಮತ್ತು ಇದೇ ಕಚೇರಿಯಲ್ಲಿಯೇ ಮುಂದುವರೆಸಬೇಕು. ಇವರು ಕಳೆದ 1 ವರ್ಷ 4 ತಿಂಗಳಿನಿಂದ ಲೆಕ್ಕಾಧಿಕಾರಿಯಾಗಿ ಈ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ.

 

ಇವರು ಯೋಜನೆಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ನಿರ್ವಹಣೆಯಲ್ಲಿ ಪರಿಣಿತಿ ಹೊಂದಿರುವದುರಿಂದ ಹಾಗೂ ಪ್ರಾಜೆಕ್ಟ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ ಅಡಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಕಾ:ಲಬದ್ಧ ಯೋಜನೆಯ ಕಾಮಗಾರಿಗಳನ್ನು ಪರಿಣಾಮಕಗಾರಿಯಾಗಿ ಅನುಷ್ಠಾನಗೊಳ್ಳಲು ಸಹಕಾರಿಯಾಗಿರುತ್ತದೆ.

 

ಈ ಕಚೇರಿ ವ್ಯಾಪ್ತಿಯ ಹಂತ 1,ಹಂತ 2 ಮತ್ತು ಹಂತ 3ರ ಕಾಮಗಾರಿಗಳ ಅಂತಿಮ ಬಿಲ್‌ಗಳನ್ನು ತೀರುವಳಿಗೊಳಿಸಲು ಹಂತ 4 ಘಟ್ಟ 1 ಮತ್ತು ಘಟ್ಟ 2 ರ ಗುತ್ತಿಗೆ ಬಿಲ್‌ಗಳನ್ನು ಪಾವತಿಸಲು ಇವರ ಸೇವೆಯು ಈ ಕಚೇರಿಗೆ ಅತ್ಯವಶ್ಯಕವಾಗಿರುತ್ತದೆ. ಆದ್ದರಿಂದ ಮುಖ್ಯ ಯೋಜನಾಧಿಕಾರಿಯವರ ಅವರನ್ನು ಯೋಜನಾ ಅನುಷ್ಠಾನ ಘಟಕದಲ್ಲಿಯೇ ಮುಂದುವರೆಸಲು ಈ ಮೂಲಕ ತಮ್ಮಲ್ಲಿ ಕೋರಿದೆ ಎಂದು ರಾಜ್ಯ ಲೆಕ್ಕಪತ್ರ ಇಲಾಖೆ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪ್ರಧಾನ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

Your generous support will help us remain independent and work without fear.

Latest News

Related Posts