ಡಿಪಿಎಆರ್‍‌ ಅಧಿಸೂಚನೆ ಬದಿಗೊತ್ತಿ ಕುಲಸಚಿವ ಹುದ್ದೆಗೆ ಪ್ರಾಧ್ಯಾಪಕರ ನೇಮಕ; ಸಂಘರ್ಷಕ್ಕೆಡೆ ಮಾಡಿಕೊಟ್ಟಿತೇ?

ಬೆಂಗಳೂರು; ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇದ್ದ ಕುಲಸಚಿವರ ಹುದ್ದೆಗೆ ಕೆಎಎಸ್‌ ಅಧಿಕಾರಿಗಳನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಹೊರಡಿಸಿದ್ದ ಅಧಿಸೂಚನೆಯನ್ನೇ ಬದಿಗೊತ್ತಿರುವ  ಉನ್ನತ ಶಿಕ್ಷಣ ಇಲಾಖೆಯು ಕುಲಸಚಿವರ ಹುದ್ದೆಗಳಿಗೆ  ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರನ್ನು ನೇಮಕಗೊಳಿಸಿ ಅಧಿಸೂಚನೆ ಹೊರಡಿಸುತ್ತಿರುವುದು ಇದೀಗ ಬಹಿರಂಗವಾಗಿದೆ.

 

ಶಿವಮೊಗ್ಗದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ  ಕೆಎಎಸ್‌ ಅಧಿಕಾರಿಯನ್ನು ನೇಮಕಗೊಳಿಸಿ  ಅಧಿಸೂಚನೆ ಹೊರಡಿಸಿದ 9 ದಿನದೊಳಗೇ ಅವರನ್ನು ಎತ್ತಂಗಡಿ ಮಾಡಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ ಪಿ ಕಣ್ಣನ್‌ ಅವರನ್ನು ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.

 

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ವಿಶ್ವವಿದ್ಯಾಲಯಗಳ ಕುಲಸಚಿವರ ಹುದ್ದೆಗೆ ಕೆಎಎಸ್‌ ಆಯ್ಕೆ ಶ್ರೇಣಿ, ಹಿರಿಯ ಶ್ರೇಣಿ ಅಧಿಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸುತ್ತಿದ್ದರೇ ಇತ್ತ ಉನ್ನತ ಶಿಕ್ಷಣ ಇಲಾಖೆಯು ಅದೇ ಕುಲಸಚಿವರ ಹುದ್ದೆಗೆ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರನ್ನು ನೇಮಕಗೊಳಿಸಿ ಅಧಿಸೂಚನೆ ಹೊರಡಿಸುತ್ತಿದೆ. ಕುಲಸಚಿವರ ಹುದ್ದೆಗೆ ನೇಮಕ ಪ್ರಕ್ರಿಯೆಗಳಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆ ನಡುವೆ ಜಟಾಪಟಿ ಆರಂಭವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

 

ವಿಶ್ವವಿದ್ಯಾಲಯಗಳ ಕುಲಸಚಿವರ ಹುದ್ದೆಗಳಿಗೆ ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ  ಅತ್ಯಲ್ಪ ದಿನಗಳಲ್ಲೇ ಅವರನ್ನು ಎತ್ತಂಗಡಿಗೊಳಿಸಿ ಪ್ರಾಧ್ಯಾಪಕರುಗಳನ್ನೇ ನೇಮಿಸಿ ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯ ವಿಭಾಗ)ಯು  ಹೊರಡಿಸುತ್ತಿರುವ  ಅಧಿಸೂಚನೆಯನ್ನು  ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್‍‌ ಅವರು ಅನುಮೋದಿಸಿದ್ದಾರೆ ಎಂದು ಗೊತ್ತಾಗಿದೆ.

 

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಐಎಎಸ್‌ ಅಥವಾ ಕೆಎಎಸ್‌ ಅಧಿಕಾರಿಗಳನ್ನೇ ಕುಲಸಚಿವರು ಹಾಗೂ ಕೆಎಎಸ್‌ ಅಧಿಕಾರಿಯನ್ನೇ ಮೌಲ್ಯಮಾಪನ ಕುಲಸಚಿವರನ್ನಾಗಿ ಕಡ್ಡಾಯವಾಗಿ ನೇಮಕ ಮಾಡಬೇಕು. ಅದರಂತೆಯೇ ಕುವೆಂಪು ವಿಶ್ವವಿದ್ಯಾಲಯಕ್ಕೆ ಮೊದಲು ಕೆಎಎಸ್‌ ಅಧಿಕಾರಿಯನ್ನು ನೇಮಕಗೊಳಿಸಿ ಅಧಿಸೂಚನೆ ಹೊರಡಿಸಿತ್ತು.

 

ಆದರೆ ಕೆಲವೇ ಕೆಲವು ದಿನಗಳಲ್ಲೇ ಕೆಎಎಸ್‌ ಅಧಿಕಾರಿಯನ್ನು ಎತ್ತಂಗಡಿ ಮಾಡಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ಪುನಃ ನೇಮಕಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯು ಕರ್ನಾಟಕ ವಿಶ್ವವಿದ್ಯಾಲಯ 2017ರ ವಿಧೇಯಕವನ್ನು ಉಲ್ಲಂಘಿಸಿದಂತಾಗಿದೆ.

 

ವಿಶೇಷವೆಂದರೇ ಬೆಂಗಳೂರು, ಮಂಗಳೂರು, ಕೃಷ್ಣದೇವರಾಯ, ರಾಯಚೂರು, ಮಂಡ್ಯ, ನೃಪತುಂಗ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳಿಗೆ ಕೆಎಎಸ್‌ ಅಧಿಕಾರಿಗಳನ್ನು ನೇಮಿಸಿದೆಯಾದರೂ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಕೆಎಎಸ್‌ ಅಧಿಕಾರಿಯನ್ನು ಮಾತ್ರ ಎತ್ತಂಗಡಿ ಮಾಡಿದೆ. ಉಳಿದ ವಿಶ್ವವಿದ್ಯಾಲಯಗಳಿಗೆ ಕೆಎಎಸ್‌ ಅಧಿಕಾರಿಯನ್ನು ಮುಂದುವರೆಸಲಾಗಿದೆ.

 

ಕೆಎಎಸ್‌ ಅಧಿಕಾರಿಗಳೂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ನೌಕರರ ವರ್ಗಾವಣೆಯಲ್ಲಿಯೂ ಶಾಸಕರ ಒತ್ತಡ ಮತ್ತು ಕಮಿಷನ್‌ ಆರೋಪ ಕೇಳಿ ಬರುತ್ತಿರುವ ಬೆನ್ನಲ್ಲೇ ವಿಶ್ವವಿದ್ಯಾಲಯಗಳಿಗೆ ಕೆಎಎಸ್‌ ಅಧಿಕಾರಿಗಳನ್ನು ನೇಮಕಗೊಳಿಸಿ ಅಧಿಸೂಚನೆ ಹೊರಡಿಸಿ ನಂತರ ದಿಢೀರ್‍‌ ಎಂದು ಪ್ರಾಧ್ಯಾಪಕರುಗಳನ್ನೇ ಕುಲಸಚಿವರನ್ನಾಗಿ ನೇಮಿಸುತ್ತಿರುವುದು ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಮಾತುಗಳೂ ಕೇಳಿ ಬಂದಿವೆ.

 

ಕುವೆಂಪು ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಖಾಲಿ ಇದ್ದ ಕುಲಸಚಿವರ ಹುದ್ದೆಗೆ ಕೆಎಎಸ್‌ (ಆಯ್ಕೆ ಶ್ರೇಣಿ) ಅಧಿಕಾರಿ ಮಾರುತಿ ಎಂ ಪಿ ಅವರನ್ನು ನೇಮಿಸಿ 2023ರ ಜುಲೈ 17ರಂದು ಅಧಿಸೂಚನೆ ಹೊರಡಿಸಿತ್ತು.

 

ಆದರೆ 2023ರ ಜುಲೈ 26ರಂದು ಇದೇ ಕುವೆಂಪು ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇಂಗ್ಲೀಷ್‌ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕ ಪ್ರೊ ಪಿ ಕಣ್ಣನ್‌ ಅವರನ್ನು ಕುಲಸಚಿವರ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಿದೆ.

 

ಆದರೆ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೆಎಎಸ್ ಆಯ್ಕೆ ಶ್ರೇಣಿ ಅಧಿಕಾರಿ ಜವರೇಗೌಡ ಟಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ಕೆಎಎಸ್‌ ಅಧಿಕಾರಿ ಹೆಚ್‌ ಜಿ ಚಂದ್ರಶೇಖರಯ್ಯ, ಮಂಗಳೂರು ವಿಶ್ವವಿದ್ಯಾಲಯಕ್ಕೆ ಕೆಎಎಸ್‌ ಅಧಿಕಾರಿ ಮೊಹಮ್ಮದ್‌ ನಯೀಮ್‌ ಮೊಮಿನ್‌, ನೃಪತುಂಗ ವಿಶ್ವವಿದ್ಯಾಲಯಕ್ಕೆ ಕೆಎಎಸ್‌ ಅಧಿಕಾರಿ ಮಮತಾದೇವಿ ಜಿ ಎಸ್‌, ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಕೆಎಎಸ್‌ ಹಿರಿಯ ಶ್ರೇಣಿ ಅಧಿಕಾರಿ ಮಲ್ಲಿಕಾರ್ಜುನ ಬಿ, ಮಂಡ್ಯ ವಿಶ್ವವಿದ್ಯಾಲಯಕ್ಕೆ ಕೆಎಎಸ್‌ ಹಿರಿಯ ಶ್ರೇಣಿ ಅಧಿಕಾರಿ ಚಂದ್ರಯ್ಯ ಆರ್‍‌, ರಾಯಚೂರು ವಿಶ್ವವಿದ್ಯಾಲಯಕ್ಕೆ ಕೆಎಎಸ್‌ ಅಧಿಕಾರಿ ಪ್ರಸನ್ನಕುಮರಾ ವಿ ಕೆ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕೆಎಎಸ್‌ ಅಧಿಕಾರಿ ಶೇಕ್‌ ಲತೀಫ್‌ ಅವರನ್ನು ಕುಲಸಚಿವರನ್ನಾಗಿ ನೇಮಿಸಿದೆ.

 

‘ಕರ್ನಾಟಕ ವಿಶ್ವವಿದ್ಯಾಲಯ ವಿಧೇಯಕ-2017’ ರ ಪ್ರಕಾರ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಐಎಎಸ್‌ ಅಥವಾ ಕೆಎಎಸ್‌ ಅಧಿಕಾರಿಗಳನ್ನೇ ಕುಲಸಚಿವರು ಹಾಗೂ ಕೆæಎಎಸ್‌ ಅಧಿಕಾರಿಯನ್ನು ಮೌಲ್ಯಮಾಪನ ಕುಲಸಚಿವರನ್ನಾಗಿ ಕಡ್ಡಾಯವಾಗಿ ನೇಮಕ ಮಾಡಬೇಕು.

 

ಹಿಂದಿನ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಕನ್ನಡ ವಿವಿ ಹೊರತುಪಡಿಸಿ ರಾಜ್ಯದ ಉಳಿದೆಲ್ಲ ವಿವಿಗಳಿಗೂ ಏಕರೂಪದ ನಿಯಮಗಳನ್ನು ಜಾರಿಗೊಳಿಸಲು ‘ಕರ್ನಾಟಕ ವಿಶ್ವವಿದ್ಯಾಲಯ ವಿಧೇಯಕ-2017’ ರೂಪಿಸಿದ್ದರು.

 

ವಿವಿಯ ಕುಲಸಚಿವರ ಹುದ್ದೆಗೆ ಐಎಎಸ್‌ ಅಥವಾ ಕೆಎಎಸ್‌ ಅಧಿಕಾರಿಗಳನ್ನೇ ನೇಮಿಸಬೇಕೆಂದು ವಿಧೇಯಕದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇನ್ನು ಮೌಲ್ಯಮಾಪನ ಕುಲಸಚಿವರ ಹುದ್ದೆಯನ್ನು ‘ಪರೀಕ್ಷಾ ನಿಯಂತ್ರಕ’ರನ್ನಾಗಿ ಬದಲಿಸಲಾಗುತ್ತಿದ್ದು, ಈ ಹುದ್ದೆಗೆ ವಿವಿಯ ಹಿರಿಯ ಪ್ರೊಫೆಸರ್‌ ಅಥವಾ ಕೆಎಎಸ್‌ ಅಧಿಕಾರಿಯನ್ನು ನೇಮಿಸಬೇಕು ಎಂದಿದೆ.

 

ಈ ನಡುವೆ, ”ವಿವಿಯ ಆಡಳಿತ ಸುಗಮವಾಗಿ ನಡೆಯಬೇಕಾದರೆ ಕುಲಸಚಿವ (ಆಡಳಿತ) ಹುದ್ದೆಗೆ ಐಎಎಸ್‌ ಅಥವಾ ಕೆಎಎಸ್‌ ಅಧಿಕಾರಿಗಳನ್ನೇ ನೇಮಿಸುವುದು ಸೂಕ್ತ. ಪ್ರೊಫೆಸರ್‌ಗಳು ಎಂದಿಗೂ ಪ್ರೊಫೆಸರ್‌ಗಳೇ. ಈ ಪೈಕಿ ಹಲವರಿಗೆ ಮಾತ್ರ ಆಡಳಿತ ಅಥವಾ ಮೌಲ್ಯಮಾಪನ ಕಾರ್ಯವನ್ನು ನಿರ್ವಹಿಸುವ ಸಾಮರ್ಥ್ಯ‌ವಿದ್ದರೆ, ಇನ್ನೂ ಕೆಲವರಿಗೆ ಈ ಹುದ್ದೆಗಳನ್ನು ನಿಭಾಯಿಸುವುದು ಕಷ್ಟವಾಗಲಿದೆ. ಪ್ರಸ್ತುತ ಹಿರಿತನ ಇಲ್ಲವೇ ರಾಜಕೀಯ ಲಾಬಿಯಿಂದ ರಿಜಿಸ್ಟ್ರಾರ್‌ಗಳು ನೇಮಕಗೊಳ್ಳುತ್ತಿದ್ದಾರೆ. ಹೀಗಾಗಿ, ಐಎಎಸ್‌ ಅಥವಾ ಕೆಎಎಸ್‌ ಅಧಿಕಾರಿಗಳನ್ನೇ ಈ ಹುದ್ದೆಗಳಿಗೆ ನೇಮಿಸಬೇಕು” ಎಂದು ಶಿಕ್ಷಣ ತಜ್ಞರು ರಾಜ್ಯ ಸರಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದ್ದರು.

 

ಈ ಹಿಂದಿನ ಕಾಯಿದೆಯಲ್ಲೂ ಪ್ರೊಫೆಸರ್‌ಗಳ ಜತೆಗೆ ಕೆಎಎಸ್‌ ಅಧಿಕಾರಿಗಳನ್ನೂ ಕುಲಸಚಿವರ ಹುದ್ದೆಗೆ ನೇಮಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ರಿಜಿಸ್ಟ್ರಾರ್‌ಗಳನ್ನು ನೇಮಿಸುವಾಗ ಸರಕಾರ ಪ್ರೊಫೆಸರ್‌ಗಳಿಗೇ ಆದ್ಯತೆ ನೀಡುತ್ತಿತ್ತು ಎಂದು ತಿಳಿದು ಬಂದಿದೆ.

 

ಈ ವಿಷಯದಲ್ಲಿ ಮೊದಲಿನಿಂದಲೂ ಶಿಕ್ಷಣ ತಜ್ಞರು ಹಾಗೂ ಉನ್ನತ ಶಿಕ್ಷಣ ಇಲಾಖೆಯ ನಡುವೆ ತಿಕ್ಕಾಟ ಮುಂದುವರಿಯುತ್ತಲೇ ಇದೆ. ”ಆಡಳಿತಶಾಹಿಯನ್ನೇ ಏಕೆ ಕುಲಸಚಿವರ ಹುದ್ದೆಗೆ ನೇಮಿಸಬೇಕು? ಪ್ರೊಫೆಸರ್‌ಗಳು ಕೂಡ ವಿವಿಯ ಆಡಳಿತವನ್ನು ನಿಭಾಯಿಸಲು ಸಮರ್ಥರಿದ್ದಾರೆ. ಕೆಎಎಸ್‌ ಅಧಿಕಾರಿಗಳನ್ನೂ ಕುಲಸಚಿವರ ಹುದ್ದೆಗೆ ನೇಮಿಸಲು ಅವಕಾಶವಿದೆ. ಆದರೆ, ಇದುವರೆಗೆ ಈ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಪ್ರೊಫೆಸರ್‌ಗಳು ಅಸಮರ್ಥರೇ?”ಎಂಬ ಮಾತುಗಳು ಕೇಳಿಬಂದಿವೆ.

 

”ಕುಲಸಚಿವರ ಹುದ್ದೆಗೆ ಕೆಎಎಸ್‌ ಅಧಿಕಾರಿಗಳನ್ನು ನೇಮಿಸುವುದು ಸೂಕ್ತ. ಏಕೆಂದರೆ, ಪ್ರೊಫೆಸರ್‌ಗಳು ತರಗತಿಗಳಿಂದ ಹೊರಗುಳಿಯುವ ಮೂಲಕ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವುದರಿಂದ ವಂಚಿತರಾಗಲಿದ್ದಾರೆ. ಅಲ್ಲದೆ, ಈ ಹುದ್ದೆ ನಿಭಾಯಿಸುವಂಥವರು ಬಹಳ ಒತ್ತಡದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ಪ್ರೊಫೆಸರ್‌ಗಳು ಸಮರ್ಪಣಾ ಮನೋಭಾವದಿಂದ ಬೋಧನಾ ವೃತ್ತಿಯಲ್ಲೇ ಮುಂದುವರಿಬೇಕು” ಎನ್ನುತ್ತಾರೆ ವಿವಿಯ ಕುಲಸಚಿವರೊಬ್ಬರು.

 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಿಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಆದೇಶದಲ್ಲಿ ಒಂದೇ ಪಂಚಾಯ್ತಿಗೆ ಇಬ್ಬರು ಪಿಡಿಒಗಳನ್ನು ವರ್ಗಾಯಿಸಿರುವುದು ಇದೀಗ ಬಹಿರಂಗವಾಗಿದೆ. ಈ ಪಂಚಾಯ್ತಿಗೆ ಯಾರು ಅಧಿಕಾರ ವಹಿಸಿಕೊಳ್ಳಬೇಕು ಎಂಬ ಬಗ್ಗೆ ಇಬ್ಬರು ಪಿಡಿಒಗಳ ನಡುವೆಯೇ ಪೈಪೋಟಿಗೆ ಸೃಷ್ಟಿಸಿದಂತಾಗಿತ್ತು.

ಸುತ್ತೋಲೆ ಬದಿಗಿರಿಸಿ 208 ಪಿಡಿಒಗಳ ವರ್ಗಾ, ಒಂದೇ ಪಂಚಾಯ್ತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

 

 

ವರ್ಗಾವಣೆ ಆದೇಶದ 35ನೇ ಕ್ರಮಾಂಕದಲ್ಲಿರುವ ಪ್ರತಿಭಾ ಅವರನ್ನು ಕೋಲಾರ ತಾಲೂಕಿನ ಮಾರ್ಜೇನಹಳ್ಳಿ ಗ್ರಾಮ ಪಂಚಾಯ್ತಿಯಿಂದ ಕುಣಿಗಲ್‌ ಗ್ರಾಮಾಂತರ ತಾಲೂಕಿನ ಕಿತ್ತಾಮಂಗಲ ಗ್ರಾಮ ಪಂಚಾಯ್ತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

 

ಮೂಡಿಗೆರೆ ಪ್ರಾದೇಶಿಕ ವಲಯದಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ ಜಿ ಮೋಹನ್‌ ಕುಮಾರ್‍‌ ಅವರನ್ನು ಬೆಳ್ತಂಗಡಿ ಪ್ರಾದೇಶಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತ್ಯಾಗರಾಜು ಅವರ ಜಾಗಕ್ಕೆ ವರ್ಗಾಯಿಸಲು ಕೋರಿದೆ ಎಂದು 2023ರ ಜೂನ್‌ 14ರಂದು ಸಿದ್ದರಾಮಯ್ಯ ಅವರು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವ ಈಶ್ವರ್‍‌ ಖಂಡ್ರೆ ಅವರಿಗೆ ಟಿಪ್ಪಣಿ ಹೊರಡಿಸಿದ್ದರು. ಈ ಟಿಪ್ಪಣಿ ಹೊರಡಿಸಿದ 15 ದಿನದೊಳಗೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಹೊನ್ನಾವರ ವಿಭಾಗ ಮತ್ತು ವಲಯದಲ್ಲಿ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಕ್ರಮ್‌ ಆರ್‍‌ ಎಂ ಅವರನ್ನು ವರ್ಗಾಯಿಸಬೇಕು ಎಂದು ಅರಣ್ಯ ಸಚಿವರಿಗೆ 2023ರ ಜೂನ್‌ 30ರಂದು ಸೂಚಿಸಿದ್ದರು.

 

ಸಿಎಂ ಕಚೇರಿಯಲ್ಲಿ ನಿಲ್ಲದ ವರ್ಗಾವಣೆ ಭರಾಟೆ; ಅರಣ್ಯಾಧಿಕಾರಿಯ ಒಂದೇ ಹುದ್ದೆಗೆ ಇಬ್ಬರಿಗೆ ಶಿಫಾರಸ್ಸು

 

ಸರ್ಕಾರಿ ಅಧಿಕಾರಿ, ನೌಕರರ ವರ್ಗಾವಣೆ ಪ್ರಕ್ರಿಯೆಗಳಲ್ಲಿ ಕಮಿಷನ್‌, ಲಂಚ ಪಡೆದು ವರ್ಗಾವಣೆ ವ್ಯಾಪಾರ ನಡೆಸಿದ್ದರೇ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿಗೆ ಸದನದಲ್ಲಿಯೇ ಸವಾಲು ಎಸೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾಗಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ಹುದ್ದೆಗೆ ಮೂರು ಬಾರಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದರು.  ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮನಸೋ ಇಚ್ಛೆ ಅಧಿಕಾರಿ, ನೌಕರರ ವರ್ಗಾವಣೆಗಳನ್ನು ಮಾಡುತ್ತಿರುವುದರ ಬಗ್ಗೆ ಅಧಿಕಾರಿಶಾಹಿಯೊಳಗೆ ಅಸಮಾಧಾನಕ್ಕೆ ಕಾರಣವಾಗಿತ್ತು.

 

ಎಸ್‌ ಟಿ ಕಲ್ಯಾಣ ಇಲಾಖೆ ನಿರ್ದೇಶಕರ ಹುದ್ದೆ; ಮೂರೇ ಮೂರು ದಿನದಲ್ಲಿ ಇಬ್ಬರು ಅಧಿಕಾರಿಗಳ ವರ್ಗಾವಣೆ

 

ಮಣಿಪುರ ಮೂಲದ ಕರ್ನಾಟಕ ಕೇಡರ್‍‌ನ (KN 2020) ಐಎಎಸ್‌ ಅಧಿಕಾರಿಯಾಗಿರುವ ನೋನ್‌ಜಾಯ್‌ ಮೊಹ್ಮದ್‌ ಅಲಿ ಅಕ್ರಮ್‌ ಶಾ ಅವರನ್ನು ಕಳೆದ 8 ತಿಂಗಳಲ್ಲಿ 6 ಬಾರಿ ವಿವಿಧ ಸ್ಥಳ-ಹುದ್ದೆಗಳಿಗೆ ವರ್ಗಾವಣೆ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.

 

8 ತಿಂಗಳಲ್ಲಿ 6 ಬಾರಿ ವರ್ಗಾವಣೆ; ಫುಟ್ಬಾಲ್‌ ಚೆಂಡಿನಂತಾದ ಮಣಿಪುರ ಮೂಲದ ಐಎಎಸ್‌ ಅಧಿಕಾರಿ ಅಕ್ರಮ್‌ ಶಾ

 

ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್‌ (ಕಿರಿಯ ಶ್ರೇಣಿ) ಅಧಿಕಾರಿಗಳನ್ನು ಯಾವುದೇ ಸಕಾರಣವಿಲ್ಲದೇ ಮತ್ತು ಅತಿ ವಿಶೇಷ ಸಂದರ್ಭವಿಲ್ಲದಿದ್ದರೂ ಅವಧಿಪೂರ್ವ ವರ್ಗಾವಣೆ ಮಾಡಿ ವರ್ಗಾವಣೆಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರಿಯಾಗಿದ್ದರು.

 

 

ಸಕಾರಣಗಳಿಲ್ಲದಿದ್ದರೂ ನಾಲ್ವರು ಕೆಎಎಸ್‌ ಅಧಿಕಾರಿಗಳ ಅವಧಿಪೂರ್ವ ವರ್ಗಾವಣೆ; ಮಾರ್ಗಸೂಚಿ ಉಲ್ಲಂಘನೆ!

 

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿದ್ದ ಲೆಕ್ಕಪರಿಶೋಧನಾಕಾರಿ ಒಂದು ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಅಧಿಕಾರಿಗಳಿಗೆ ಶಿಫಾರಸ್ಸು ಟಿಪ್ಪಣಿ ಹೊರಡಿಸಿದ್ದರು.

ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಮುಖ್ಯಮಂತ್ರಿ ಶಿಫಾರಸ್ಸು; ಪೈಪೋಟಿ ಸೃಷ್ಟಿಸಿದ ‘ಕೃಷ್ಣಾ’ದ ಟಿಪ್ಪಣಿಗಳು

 

ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಮತ್ತು ಬಿಜೆಪಿಯು ತೀವ್ರವಾಗಿ ಟೀಕಿಸಿದ್ದರು. ವರ್ಗಾವಣೆ ಹಿಂದೆ ಇರುವವರು ಯಾರು ಆ ಅತೀಂದ್ರ ಎಂದು ಟ್ವೀಟ್‌ ಕೂಡ ಮಾಡಿದ್ದರು.

‘ದಿ ಫೈಲ್‌’ ವರದಿ ಉಲ್ಲೇಖ; ‘ಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ, 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು?

 

ಸರ್ಕಾರಿ ಅಧಿಕಾರಿ, ನೌಕರರ ವರ್ಗಾವಣೆಗೆ ಜೂನ್‌ 30 ಕಡೇ ದಿನ ಎಂದು ಹೇಳಿದ್ದ ಸರ್ಕಾರವು ಕಡೇ ಗಳಿಗೆಯಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಇದೇ ಜುಲೈ 3ರವರೆಗೂ ವಿಸ್ತರಿಸಿದ್ದರು.

ಸುತ್ತೋಲೆ ಉಲ್ಲಂಘಿಸಿ ಕೆಎಎಸ್‌, ಪಿಡಿಒ, ಅಬಕಾರಿ ನಿರೀಕ್ಷಕರು ಸೇರಿ 63 ಮಂದಿ ವರ್ಗಾವಣೆ

ಇದಾದ ನಂತರವೂ ವರ್ಗಾವಣೆ ಅಧಿಸೂಚನೆಗಳು ಹೊರಬಿದ್ದಿದ್ದವು. ವಿಶೇಷವೆಂದರೆ ಸರ್ಕಾರಿ ಜಮೀನನ್ನು ಮಾಜಿ ಸಚಿವ ಬಿ ಶ್ರೀರಾಮುಲು ಅವರಿಗೆ ಅಕ್ರಮವಾಗಿ ನೋಂದಣಿ ಮಾಡಿಕೊಡಲು ಸುಳ್ಳು ದಾಖಲೆಗಳನ್ನೇ ನೈಜವೆಂದು ನಂಬಿಸಿದ ಆರೋಪದ ಮೇರೆಗೆ ವಿಚಾರಣೆ ಎದುರಿಸಿದ್ದ ಶಶಿಧರ ಬಗಲಿ ಅವರನ್ನು ವಿಶೇಷ ಭೂಸ್ವಾಧೀನಾಧಿಕಾರಿಯನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಗಾವಣೆಗೊಳಿಸಿ ಅಧಿಸೂಚನೆ ಹೊರಡಿಸಿದ್ದರು.

ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನನ್ನೂ ಸೇರಿಸಿ ನೋಂದಾಯಿಸಿದ್ದ ಅಧಿಕಾರಿಗೆ ಭೂಸ್ವಾಧೀನಾಧಿಕಾರಿ ಹುದ್ದೆ

ಇದಷ್ಟೇ ಅಲ್ಲ, ಎಪಿಪಿಗಳ ನೇಮಕದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ದೋಷಾರೋಪಣೆ ಪಟ್ಟಿಯಲ್ಲಿ  2ನೇ ಆರೋಪಿ ಎಂದು ಹೆಸರಿಸಿದ್ದ ನಾರಾಯಣಸ್ವಾಮಿ ಅವರನ್ನು ಅಭಿಯೋಜನಾ ಇಲಾಖೆಯ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು.

ಎಪಿಪಿಗಳ ಅಕ್ರಮ ನೇಮಕದಲ್ಲಿ ಭಾಗಿಯಾಗಿದ್ದ 2ನೇ ಆರೋಪಿ ಅಧಿಕಾರಿಗೆ ಆಡಳಿತಾಧಿಕಾರಿ ಹುದ್ದೆ

ಹಾಗೆಯೇ ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಅಭಿವೃದ್ಧಿಪಡಿಸಲಾಗಿದ್ದ ತಂತ್ರಾಂಶವನ್ನೇ ದುರುಪಯೋಗಪಡಿಸಿಕೊಂಡಿದ್ದ ಆರೋಪವೂ ಕೇಳಿ ಬಂದಿತ್ತು.

ಲಂಚ; ಆಯಕಟ್ಟಿನ ಹುದ್ದೆಗಳನ್ನೇ ಬ್ಲಾಕ್‌ ಮಾಡಿ ತಂತ್ರಾಂಶ ದುರುಪಯೋಗಪಡಿಸಿಕೊಂಡ ಅಧಿಕಾರಿಗಳು?

ಕಾಸಿಗಾಗಿ ಪೋಸ್ಟಿಂಗ್‌ ಎಂಬ ಆರೋಪ ಕೇಳಿ ಬಂದಿದ್ದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ ಎಸ್ ಪ್ರಹ್ಲಾದ್‌ ಎಂಬುವರನ್ನು ಬಿಬಿಎಂಪಿಯಲ್ಲಿನ ಮುಖ್ಯ ಇಂಜಿನಿಯರ್‌ ಹುದ್ದೆಗೆ ವರ್ಗಾವಣೆ ಮಾಡಲು ಟಿಪ್ಪಣಿ ಹೊರಡಿಸಿದ್ದರು.

ಕಾಸಿಗಾಗಿ ಪೋಸ್ಟಿಂಗ್‌ ಆರೋಪ ಬೆನ್ನಲ್ಲೇ ಎಸಿಬಿ ದಾಳಿಗೊಳಗಾಗಿದ್ದ ಮುಖ್ಯಇಂಜಿನಿಯರ್‍‌ಗೆ ಹೊಸ ಹುದ್ದೆ

ಇದಷ್ಟೇ ಅಲ್ಲ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕೂಡ ಆಯಕಟ್ಟಿನ ಹುದ್ದೆಗೆ ಕೆ ಟಿ ನಾಗರಾಜ್‌ ಅವರನ್ನು ನೇಮಿಸಿದ್ದರ ಬಗ್ಗೆಯೂ ಆರೋಪಗಳು ಕೇಳಿ ಬಂದಿದ್ದವು.

ಆದಾಯಕ್ಕಿಂತ ಶೇ. 207.11ರಷ್ಟು ಹೆಚ್ಚು ಆಸ್ತಿ ಹೊಂದಿರುವ ಆರೋಪಿತ ಅಧಿಕಾರಿ, ಡಿಕೆಶಿಗೆ ತಾಂತ್ರಿಕ ಸಲಹೆಗಾರ

47 ಕೋಟಿ ರು. ಆರ್ಥಿಕ ನಷ್ಟಕ್ಕೆ ಕಾರಣರಾಗಿದ್ದ ಆರೋಪಿತ ಅಧಿಕಾರಿಗೆ ಸಾರ್ವಜನಿಕ ಆರೋಗ್ಯ ತರಬೇತಿ ಸಂಸ್ಥೆಯ ನಿರ್ದೇಶಕರ ಹುದ್ದೆಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ವರ್ಗಾಯಿಸಿದ್ದರು.

47 ಕೋಟಿ ನಷ್ಟ; ಆರೋಪಿತ ಅಧಿಕಾರಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಯಲ್ಲಿ ತರಬೇತಿ ಅಧಿಕಾರಿ ಹುದ್ದೆ

 

ವರ್ಗಾವಣೆ ಪ್ರಕ್ರಿಯೆಯಲ್ಲಿ ಯಾವುದೇ ವ್ಯಾಪಾರವಾಗಲೀ, ದಂಧೆಯನ್ನಾಗಲಿ ನಡೆದಿಲ್ಲ ಮತ್ತು ಇದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು.

the fil favicon

SUPPORT THE FILE

Latest News

Related Posts