Wednesday | June 10, 2026 |

ಶಾಲಾ ಮಕ್ಕಳ ಸಮವಸ್ತ್ರ ಹೊಲಿಗೆ ವೆಚ್ಚಕ್ಕೂ ಪೋಷಕರ ಜೇಬಿಗೆ ಕೈ ಹಾಕಿದೆ ಸರ್ಕಾರ; ಬೊಕ್ಕಸದಲ್ಲಿ ಹಣವಿಲ್ಲವೇ?

ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೂ ನೀಡಲು ಶಿಕ್ಷಕರನ್ನು ದಾನಿಗಳ ಮುಂದೆ ಕೈಯೊಡ್ಡಿಸಿರುವ ಕಾಂಗ್ರೆಸ್‌ ಸರ್ಕಾರವು ಇದೀಗ ಸಮವಸ್ತ್ರ  ಹೊಲಿಗೆ ವೆಚ್ಚಕ್ಕಾಗಿ ನೇರವಾಗಿ ಪೋಷಕರ ಜೇಬಿಗೆ ಕೈ ಹಾಕಿದೆ.

 

ಐದು ಗ್ಯಾರಂಟಿಗಳಿಗೆ ಸಂಪನ್ಮೂಲ ಕ್ರೋಢೀಕರಣ ಮತ್ತು ಬಾಹ್ಯ ಮೂಲಗಳಿಂದ ಸಾಲ ಎತ್ತುವುದು ಹೇಗೆ ಎಂಬ ಲೆಕ್ಕಾಚಾರದಲ್ಲಿ ಮುಳುಗಿರುವ ಸರ್ಕಾರವು ಶಾಲಾ ವಿದ್ಯಾರ್ಥಿಗಳ ಎರಡನೇ ಜೊತೆ ಸಮವಸ್ತ್ರ ಬಟ್ಟೆಯನ್ನಷ್ಟೇ ನೀಡಿ ಕೈತೊಳೆದುಕೊಂಡಿದೆ.

 

1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳ ಸಮವಸ್ತ್ರದ ಹೊಲಿಗೆ ವೆಚ್ಚವನ್ನು ಪೋಷಕರೇ ಭರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯು 2023ರ ಜೂನ್‌ 22ರಂದು ಹೊರಡಿಸಿರುವ ಸುತ್ತೋಲೆಯು ಹೈಕೋರ್ಟ್ ಆದೇಶವನ್ನು ನೇರಾ ನೇರ ಉಲ್ಲಂಘಿಸಿದಂತಾಗಿದೆ.

 

‘ಸಮವಸ್ತ್ರದ ಬಟ್ಟೆಯನ್ನು ಮಾತ್ರ ಸರ್ಕಾರದಿಂದ ಉಚಿತವಾಗಿ ನೀಡುತ್ತಿದ್ದು ಹೊಲಿಗೆ ವೆಚ್ಚವನ್ನು ಫಲಾನುಭವಿ ಮಕ್ಕಳ ಪೋಷಕರೇ ಭರಿಸಬೇಕು,’ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಶಿಕ್ಷಣ ಇಲಾಖೆಯು ಹೊರಡಿಸಿರುವ ಈ ಸುತ್ತೋಲೆಯನ್ನು ಸಚಿವ ಮಧು ಬಂಗಾರಪ್ಪ ಅವರು ಅನುಮೋದಿಸಿದ್ದಾರೆ ಎಂದು ಗೊತ್ತಾಗಿದೆ.

 

ಬಟ್ಟೆಯ ಬೆಲೆಗಿಂತ ಹೊಲಿಗೆ ವೆಚ್ಚ ಹೆಚ್ಚಾಗಿದೆ. ಒಂದು ಸೆಟ್ ಶರ್ಟ್ ಮತ್ತು ಪ್ಯಾಂಟ್‌ಗೆ ಹೊಲಿಗೆ ವೆಚ್ಚ ಕನಿಷ್ಠ 350 ರು.ನಿಂದ 800 ರು.ವರೆಗೆ ಖರ್ಚು ಮಾಡಬೇಕಿದೆ.

 

ಮಾಸ್ಟರ್ ಮಂಜುನಾಥ್ ಪ್ರಕರಣದಲ್ಲಿ ಎರಡನೇ ಸೆಟ್‌ಗೆ ಹೊಲಿಗೆ ಹಾಕಿದ ಸಮವಸ್ತ್ರವನ್ನು ಸರ್ಕಾರ ನೀಡುವಂತೆ ರಾಜ್ಯ ಉಚ್ಛ ನ್ಯಾಯಾಲಯವು ಆದೇಶಿಸಿತ್ತು. ಆದರೀಗ ಹೊಲಿಗೆ ಹಾಕದ ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸುವ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

 

ರಾಜ್ಯದ ಹಲವು ಶಾಲೆಗಳು ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರಗಳನ್ನು ಪೂರ್ಣ ಪ್ರಮಾಣದಲ್ಲಿ  ವಿತರಿಸಿಲ್ಲ. ಸ್ವೀಕರಿಸಿದ್ದ ಉಚಿತ ಸಮವಸ್ತ್ರಗಳನ್ನು ದೀರ್ಘಕಾಲದವರೆಗೂ ಗೋದಾಮಿನಲ್ಲಿಡಲಾಗುತ್ತಿದೆಯೇ ವಿನಃ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುತ್ತಿಲ್ಲ  ಎಂಬುದು ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳ ತಪಾಸಣೆಯು ಬಹಿರಂಗಗೊಳಿಸಿತ್ತು.

 

ಗೋದಾಮಿನಲ್ಲೇ ಧೂಳು, ಶೇ.17ರಷ್ಟು ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ ಸಮವಸ್ತ್ರ; ತಪಾಸಣೆ

 

 

 

ವಿದ್ಯಾವಿಕಾಸ ಯೋಜನೆಯಡಿ 2022-23ನೇ ಸಾಲಿನ 2ನೇ ಜೊತೆ ಸಮವಸ್ತ್ರವನ್ನು 2023-24ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಸರಬರಾಜು ಮಾಡಲು ಸರ್ಕಾರವು ಆದೇಶಿಸಿತ್ತು.

 

ಆದರೆ  ಪ್ರಸಕ್ತ ಶೈಕ್ಷಣಿಕ ವರ್ಷದ ಒಂದು ತಿಂಗಳು ಪೂರ್ಣಗೊಂಡಿದ್ದರೂ ಇನ್ನೂ ಶೇ.17ರಷ್ಟು ಮಕ್ಕಳಿಗೆ ಸಮವಸ್ತ್ರ ತಲುಪಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಅವರು ವಿಧಾನಪರಿಷತ್‌ನಲ್ಲಿ ಮಂಜುನಾಥ ಭಂಡಾರಿ ಅವರು ಕೇಳಿದ್ದ ಪ್ರಶ್ನೆಗೆ ಉತ್ತರವನ್ನೂ ನೀಡಿದ್ದರು.

 

 

 

ಅದರಂತೆ ಸರಬರಾಜಾಗಿರುವ ಸಮವಸ್ತ್ರಗಳನ್ನು ಫಲಾನುಭವಿ ಮಕ್ಕಳಿಗೆ ಹಂಚಿಕೆ ಮಾಡಬೇಕಿದ್ದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಅಧಿಕಾರಿಗಳು ಅದನ್ನು ದೀರ್ಘಕಾಲದವರೆಗೂ ಗೋದಾಮಿನಲ್ಲೇ ಇಡುತ್ತಿರುವುದರ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯು 2023ರ ಜೂನ್‌ 22ರಂದೇ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿತ್ತು.

 

 

‘ಸ್ವೀಕರಿಸಿದ ಸಮವಸ್ತ್ರಗಳನ್ನು ಯಾವುದೇ ಕಾರಣಗಳಿಂದ ದೀರ್ಘಕಾಲ ಗೋದಾಮಿನಲ್ಲಿ ಶೇಖರಿಸದೆ ಶಾಲಾ ಮಕ್ಕಳಿಗೆ ವಿತರಿಸುವ ಕಾರ್ಯಕ್ರಮ ತ್ವರಿತವಾಗಿ ನಿರ್ವಹಿಸಬೇಕು. ಈ ಬಗ್ಗೆ ಹಲವಾರು ಬಾರಿ ಸುತ್ತೋಲೆ ನೀಡಿದ್ದರೂ ಸಹ ಮೇಲಾಧಿಕಾರಿಗಳು ತಪಾಸಣೆಗೆ ಬಂದಂತಹ ಸಂದರ್ಭದಲ್ಲಿ ಕೆಲವು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಮವಸ್ತ್ರಗಳು ಹಂಚಿಕೆ ಆಗದೇ ಗೋದಾಮಿನಲ್ಲಿರುವುದನ್ನು ಈ ಹಿಂದೆ ಗಮನಿಸಲಾಗಿದೆ,’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ ವಿಶಾಲ್‌ ಅವರು 2023ರ ಜೂನ್‌ 22ರಂದು  ಹೊರಡಿಸಿರುವ ಸುತ್ತೋಲೆಯಲ್ಲಿ ವಿವರಿಸಿದ್ದರು.

 

 

ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸಲು ಅತ್ಯಾಸಕ್ತಿ ವಹಿಸಿದ್ದ ರಾಜ್ಯ ಸರ್ಕಾರವು 2022-23ನೇ ಶೈಕ್ಷಣಿಕ ವರ್ಷವು ಆರಂಭವಾಗಲು ಇನ್ನು ಐದು ದಿನಗಳು ಬಾಕಿ ಇದ್ದರೂ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು ಮೂರು ಲಕ್ಷ ಮಕ್ಕಳಿಗೆ ಎರಡನೇ ಜತೆ ಸಮವಸ್ತ್ರ ಪೂರೈಕೆ ಮಾಡಿರಲಿಲ್ಲ.  ಸಮವಸ್ತ್ರ ಖರೀದಿ ಮತ್ತು ಪೂರೈಕೆ ಸಂಬಂಧ ಸರ್ಕಾರವು  ಟೆಂಡರ್‌ ಪ್ರಕ್ರಿಯೆಯಲ್ಲಿಯೇ ಕಾಲಹರಣ ಮಾಡಿತ್ತು.

 

2021-22ನೇ ಸಾಲಿನ ಮೊದಲನೇ ಜೊತೆ ಸಮವಸ್ತ್ರ ಖರೀದಿ ಮತ್ತು ಪೂರೈಕೆಗೆ ಕರೆದಿದ್ದ ಇ- ಟೆಂಡರ್‌ ಪ್ರಕ್ರಿಯೆಯಲ್ಲಿ ಹೊರಹೊಮ್ಮಿದ್ದ ದರವು ಎರಡನೇ ಜೊತೆಗೆ ನಮೂದಿಸಿದ್ದ ಅಂದಾಜು ದರದಲ್ಲಿ ಶೇ.30ರಷ್ಟು ಹೆಚ್ಚಾಗಿತ್ತು.  2021-22ನೇ ಸಾಲಿನ ವಿದ್ಯಾವಿಕಾಸ ಯೋಜನೆಯಡಿ ಸರ್ಕಾರಿ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ 2ನೇ ಜೊತೆ ಸಮವಸ್ತ್ರ ಸರಬರಾಜು ಸಂಬಂಧಿಸಿದಂತೆ ಮೂಲ ದರಗಳನ್ನು ಪುನರ್‌ ನಿಗದಿ ಮಾಡಿ ಅಲ್ಪಾವಧಿಗೆ ಮರು ಟೆಂಡರ್‌ ಆಹ್ವಾನಿಸಿತ್ತು.

 

ಬಿಡ್‌ದಾರರೊಂದಿಗೆ ನಡೆದ ದರ ಸಂಧಾನ ನಂತರ ಅಂತಿಮವಾಗಿ 99.15 ಕೋಟಿ ರು.ಗೆ ಅಂತಿಮಗೊಳಿಸಿದ್ದ ಸರ್ಕಾರವು ಈ ಅನುದಾನವನ್ನು ಮಂಜೂರು ಮಾಡಿತ್ತು. ಆದರೆ ಹಿಂದಿನ ಟೆಂಡರ್‌ಗೆ ಹೋಲಿಸಿದರೆ 7.3 ಕೋಟಿ ರು. ಅಧಿಕವಾಗಿತ್ತು.

 

ಈ ಹಿಂದಿನ ಟೆಂಡರ್‌ ಮೊತ್ತ ಮತ್ತು ಹೊಸದಾಗಿ ಕರೆದಿರುವ ಟೆಂಡರ್ ಮೊತ್ತ ಅಧಿಕವಾಗಲು ಇಂಧನ ಬೆಲೆ ಸೇರಿದಂತೆ ಇನ್ನಿತರೆ ಕಾರಣಗಳನ್ನು ಇಲಾಖೆಯು ಒದಗಿಸಿದೆ. ‘ಇತ್ತೀಚಿನ ದಿನಗಳಲ್ಲಿ ಎಲ್ಲಾ ಇಂಧನಗಳು, ಕಚ್ಚಾ ಸಾಮಗ್ರಿಗಳು, ವೇತನ ಮತ್ತು ಇನ್ನಿತರೆ ಪೂರಕ ವಸ್ತುಗಳ ಹಾಗೂ ಸೇವೆಗಳ ಬೆಲೆ ಹೆಚ್ಚಾಗಿರುತ್ತದೆಯಲ್ಲದೆ ಕೊರತೆಯೂ ಇದೆ. ಸರ್ಕಾರದ ಶಾಲೆಗಳಲ್ಲಿ ಸುಮಾರು ಮೂರು ಲಕ್ಷ ಮಕ್ಕಳ ದಾಖಲಾತಿ ಹೆಚ್ಚಾಗಿರುತ್ತದೆ. ಆದ್ದರಿಂದ ಸಮವಸ್ತ್ರದ ಬಟ್ಟೆಯ ಪರಿಮಾಣವು ಸುಮಾರು 124 ಲಕ್ಷ ಮೀಟರ್‌ನಿಂದ 136 ಲಕ್ಷ ಮೀಟರ್‌ ಅಧಿಕವಾಗಿದೆ. 2021-22ನೇ ಸಾಲಿನ ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ಹೊರಹೊಮ್ಮಿದ ದರವು ಅಂದಾಜು ದರಗಳಿಗಿಂತ ಶೇ. 17.41 ಕಡಿಮೆ ಇರುತ್ತದೆ. ಅಂದಾಜು ದರವು 47.00 ಕೋಟಿ ರು. ಆಗಿರುತ್ತದೆ,’ ಎಂದು ಅಧಿಕಾರಿಗಳು ವಿವರಿಸಿದ್ದರು.

 

ಶಿಕ್ಷಣ ಇಲಾಖೆಯ ಟಿಪ್ಪಣಿ ಹಾಳೆ ಪ್ರತಿ

 

2021-22ನೇ ಸಾಲಿನ ಮೊದಲನೆ ಜೊತೆ ಸಮವಸ್ತ್ರದ ಟೆಂಡರ್‌ ದರಗಳು ಅಂದಿನ ಸನ್ನಿವೇಶಗಳಿಗೆ (ಕೊರೋನ ಸಮಯ) ಸೀಮಿತವಾಗಿ ಕಡಿಮೆ ಆಗಿದೆ. ಆದರೀಗ ಎರಡನೇ ಬಾರಿಗೆ ಕರೆಯಲಾಗಿದ್ದ ಅಲ್ಪಾವಧಿ ಟೆಂಡರ್‌ನಲ್ಲಿ ಹೊರಹೊಮ್ಮಿದ ಅಂತಿಮ ಟೆಂಡರ್‌ ದರಗಳು ಮತ್ತುಇನ್ನಿತರೆ ವೆಚ್ಚಗಳು ಸೇರಿ 99.15 ಕೋಟಿ ರು. ಆಗಿದೆ. ಈ ಮೊತ್ತವು ಮಂಜೂರಾಗಿರುವ ಅನುದಾನಕ್ಕಿಂತ 7.30 ಕೋಟಿ ರು. ಹೆಚ್ಚುವರಿಯಾಗಿತ್ತು.

 

ಶಾಲಾರಂಭಕ್ಕೆ ಐದೇ ಐದು ದಿನ ಬಾಕಿ; ವಿದ್ಯಾರ್ಥಿಗಳಿಗೆ ದೊರಕದ ಸಮವಸ್ತ್ರ, ಟೆಂಡರ್‌ನಲ್ಲೇ ಕಾಲಹರಣ

 

‘2022-23ನೇ ಶೈಕ್ಷಣಿಕ ವರ್ಷವು 2022ರ ಮೇ 16ರಿಂದ ಪ್ರಾರಂಭವಾಗಲಿದ್ದು ಮಕ್ಕಳಿಗೆ ಸಮವಸ್ತ್ರ ಒದಗಿಸಲು ಕೂಡಲೇ ಕ್ರಮವಹಿಸಬೇಕಾಗಿದೆ. 2021-22ನೇ ಸಾಲಿನ ಎರಡನೆ ಜೊತೆ ಉಚಿತ ಸಮವಸ್ತ್ರ ಸರಬರಾಜಿಗೆ 99.15 ಕೋಟಿ ರು. ಭರಿಸಲು ಅರ್ಥಿಕ ಇಲಾಖೆ ಅನುಮೋದನೆ ಪಡೆಯಬಹುದಾಗಿದೆ,’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಕೋರಿತ್ತು.

 

2021ರ ಡಿಸೆಂಬರ್‌ 31ರಂದು ಕರೆದಿದ್ದ ಟೆಂಡರ್‌ನಲ್ಲಿ ಅರವಿಂದ್‌ ಕೋಟ್ಸ್‌ ಇಂಡಿಯಾ ಲಿಮಿಟೆಡ್‌, ಪದಂಚಂದ್‌ ಮಿಲಾಪ್‌ಚಂದ್‌ಜೈನ್‌ ಭಾಗವಹಿಸಿದ್ದರು. ಇದರಲ್ಲಿ ಅರವಿಂದ್‌ ಕೋಟ್ಸ್‌ 2ನೇ ಮತ್ತು ಪದಂಚಂದ್‌ 3ನೇ ಬಿಡ್‌ದಾರರಾಗಿ ಹೊರಹೊಮ್ಮಿದ್ದರು. ಪ್ಯಾಕೇಜ್‌ 1 ಮತ್ತು 2ರ ಐಟಂ ಸಂಖ್ಯೆ 1,2 ಮತ್ತು 3ರ ಕನಿಷ್ಠ ದರಗಳಿಗೆ ಇಳಿಸಲು ಈ ಬಿಡ್‌ದಾರರು ಸಹಮತಿ ಸೂಚಿಸಿರಲಿಲ್ಲ.

 

ಹೀಗಾಗಿ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿದ್ದ 91.85 ಕೋಟಿ ರು.ಗೆ 7 ಲಕ್ಷ ಅಧಿಕ ಸೇರ್ಪಡೆಗೊಂಡು ಒಟ್ಟು 91.92 ಕೋಟಿ ರು. ಆಗಿತ್ತು. ಕೆಟಿಪಿಪಿ ಕಾಯ್ದೆ 2000 ನಿಯಮ 12(5)ರ ಪ್ರಕಾರ ಶೇ. 25ರಷ್ಟು ಹೆಚ್ಚುಕಡಿಮೆ ಮಾಡಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಮೂರು ಪ್ಯಾಕೇಜ್‌ಗಳನ್ನು ಪದಂಚಂದ್‌ ಮಿಲಾಪ್‌ಚಂದ್‌ ಜೈನ್‌ ಅವರಿಗೆ ಒಟ್ಟು 71.55 ಕೋಟಿ ರು. ವೆಚ್ಚದಲ್ಲಿ ಸಮವಸ್ತ್ರ ಬಟ್ಟೆ ಒದಗಿಲು ಆದೇಶ ನೀಡಲು ಆಯುಕ್ತರು ಕೋರಿದ್ದರು.

Hot this week

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...
Please Scan to make Your Contribution

Topics

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

Related Articles

Popular Categories

error: Content is protected !!