Sunday | April 12, 2026 |

37 ಸಾವಿರ ಮಂದಿಗೂ ಉದ್ಯೋಗ ಕಲ್ಪಿಸಿದೆಯೆಂದು ದಾರಿ ತಪ್ಪಿಸಿತೇ ಸರ್ಕಾರ?; ತಾಳೆಯಾಗದ ದತ್ತಾಂಶ

ಬೆಂಗಳೂರು; ಕೌಶಲ್ಯ ಅಭಿವೃದ್ಧಿಯ ತರಬೇತಿ ನೀಡಿ ಗಾರ್ಮೆಂಟ್ಸ್‌ಗಳಲ್ಲಿ  37,000 ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಅಂಕಿ ಅಂಶಗಳ ಮಾಹಿತಿ ಒದಗಿಸಿರುವ ಕೈ ಮಗ್ಗ ಮತ್ತು ಜವಳಿ ಇಲಾಖೆಯು ಸರ್ಕಾರವನ್ನೇ ದಾರಿತಪ್ಪಿಸಿರುವ ಸಂಗತಿ ಇದೀಗ ಬಹಿರಂಗವಾಗಿದೆ.

 

ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಅಸ್ತಿತ್ವದಲ್ಲಿದ್ದರೂ ಸಹ ಕೈಮಗ್ಗ ಮತ್ತು ಜವಳಿ ಇಲಾಖೆಯು ಸ್ವತಂತ್ರವಾಗಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಿ 18.31 ಕೋಟಿ ರು. ಖರ್ಚು ಮಾಡಿರುವುದು, ಕೌಶಲ್ಯ ತರಬೇತಿ ಪಡೆದಿರುವ ಸಂಖ್ಯೆ, ಉದ್ಯೋಗ ಪಡೆದಿರುವ ಸಂಖ್ಯೆಗೂ ಮತ್ತು ವೇತನ ಸಬ್ಸಿಡಿ ಮೊತ್ತದ ದತ್ತಾಂಶಗಳು ಒಂದಕ್ಕೊಂದು ತಾಳೆಯಾಗುತ್ತಿಲ್ಲ ಎಂಬುದನ್ನು ಹೊರಗೆಡವಿರುವ ಆರ್ಥಿಕ ಇಲಾಖೆಯು, ಕೈಮಗ್ಗ ಮತ್ತು ಜವಳಿ ಇಲಾಖೆಯ ಮುಖವಾಡವನ್ನು ಕಳಚಿದೆ.

 

37,000ಕ್ಕೂ ಹೆಚ್ಚು ಅಭ್ಯರ್ಥಿಗಳು ಕೌಶಲ್ಯ ತರಬೇತಿ ಪಡೆದಿದ್ದಾರೆ ಎಂದು ನೀಡಿರುವ ದತ್ತಾಂಶಕ್ಕೂ ಮತ್ತು ವೇತನ ಸಬ್ಸಿಡಿ ಮೊತ್ತಕ್ಕೂ ತಾಳೆಯಾಗುತ್ತಿಲ್ಲ. ಅಲ್ಲದೇ ಈ ಸಂಬಂಧ ಕೈಮಗ್ಗ ಮತ್ತು ಜವಳಿ ಇಲಾಖೆಯು ನೀಡಿರುವ ಸಮರ್ಥನೆಯನ್ನು ಆರ್ಥಿಕ ಇಲಾಖೆಯು (ಕಡತ ಸಂಖ್ಯೆ ; FD/292/EXP1/2023-EXP-1) ಒಪ್ಪಿಕೊಂಡಿಲ್ಲ ಎಂಬುದೂ ಸಹ ಗೊತ್ತಾಗಿದೆ.

 

ಕೌಶಲ್ಯಾಭಿವೃದ್ಧಿ ಪಡೆದಿದ್ದಾರೆ ಎನ್ನಲಾಗಿರುವ 37,000 ಅಭ್ಯರ್ಥಿಗಳಿಗೂ ಗಾರ್ಮೆಂಟ್ಸ್‌ಗಳಲ್ಲಿ ಉದ್ಯೋಗ ಕಲ್ಪಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯು ಹೇಳುತ್ತಿದೆಯಾದರೂ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ನಿತೀಶ್‌ ಕೆ ಅವರು ಇದೊಂದು ಅಸಮಂಜಸ ಉತ್ತರ ಎಂದು ಟಿಪ್ಪಣಿ ಹಾಳೆಯಲ್ಲಿ ನಮೂದಿಸಿದ್ದಾರೆ ಎಂದು ಗೊತ್ತಾಗಿದೆ.

 

ಕೌಶಲ್ಯಾಭಿವೃದ್ಧಿಗಾಗಿ 30 ಕೋಟಿ ರು. ಅನುದಾನಕ್ಕೆ ಸಲ್ಲಿಸಿದ್ದ ಪ್ರಸ್ತಾವನೆ ಆಧರಿಸಿ ಆರ್ಥಿಕ ಇಲಾಖೆಯು ಗಂಭೀರವಾಗಿ ಚರ್ಚೆ ನಡೆಸಿರುವ ಹೊತ್ತಿನಲ್ಲಿಯೇ ಕೌಶಲ್ಯಾಭಿವೃದ್ದಿ ಕಾರ್ಯಕ್ರಮಗಳು, ಬಳಕೆಯಾಗಿರುವ ಅನುದಾನ ಮತ್ತು ಉದ್ಯೋಗ ಅವಕಾಶ ಕಲ್ಪಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯು ನೀಡಿರುವ ಅಂಕಿ ಅಂಶಗಳು ತಾಳೆಯಾಗದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ಜವಳಿ ಇಲಾಖೆಯು 30,000 ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು 30 ಕೋಟಿ ರು. ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಕುರಿತು ಪ್ರಸ್ತಾವನೆಯನ್ನು ಪರಿಶೀಲಿಸಿರುವ ಆರ್ಥಿಕ ಇಲಾಖೆಯು ಹಣದ ಬೇಡಿಕೆ ಕುರಿತು ಅವಲೋಕಿಸಿದೆ. ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಸಚಿವ ಶಿವಾನಂದ ಪಾಟೀಲ್‌ ಅವರು ಅನುಮೋದಿಸಿದ್ದಾರೆ ಎಂದು ಗೊತ್ತಾಗಿದೆ.

 

‘ಇದುವರೆಗೆ ಜವಳಿ ಇಲಾಖೆ ಕೌಶಲ್ಯ ತರಬೇತಿಗಾಗಿ 18.31 ಕೋಟಿ ಖರ್ಚು ಮಾಡಿದೆ. ಸುಮಾರು 37,000 ಅಭ್ಯರ್ಥಿಗಳು ತರಬೇತಿ ಪಡೆದಿದ್ದಾರೆ ಮತ್ತು ಉದ್ಯೋಗವನ್ನು ಪಡೆದಿದ್ದಾರೆ ಎಂದು ಇಲಾಖೆ ಹೇಳುತ್ತಿದೆ. ಇದು ಅಸಾಧ್ಯ, ಆದಾಗ್ಯೂ ಆಡಳಿತ ಇಲಾಖೆಯ ಈ ಅಂಕಿ ಅಂಶವು ವೇತನ ಸಬ್ಸಿಡಿಗೆ ಸಂಬಂಧಿಸಿದ ದತ್ತಾಂಶದೊಂದಿಗೆ ತಾಳೆಯಾಗುವುದಿಲ್ಲ. ಜವಳಿ ನೀತಿಯ ಪ್ರಕಾರ ಕಳೆದ 4 ವರ್ಷಗಳಲ್ಲಿ ವೇತನ ಸಬ್ಸಿಡಿ ಅಡಿಯಲ್ಲಿ ಸಬ್ಸಿಡಿ ಕ್ಲೈಮ್‌ಗಳು ಶೂನ್ಯವಾಗಿದ್ದು, ಈ ತರಬೇತಿ ಪಡೆದ ಯಾವುದೇ ವ್ಯಕ್ತಿಗಳು ಗಾರ್ಮೆಂಟ್ ವಲಯದಲ್ಲಿ ಉದ್ಯೋಗವನ್ನು ಪಡೆದಿಲ್ಲ ಎಂದು ತೋರಿಸಿದೆ,’ ಎಂದು ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

 

200 ವ್ಯಕ್ತಿಗಳಿಗಿಂತ ಕಡಿಮೆ ಅಥವಾ 500 ಯುನಿಟ್‌ಗಳಿಗಿಂತ ಕಡಿಮೆ ಇರುವ ಗಾರ್ಮೆಂಟ್ ಘಟಕಗಳಲ್ಲಿ ಉದ್ಯೋಗ ಕಲ್ಪಿಸಲಾಗಿದೆ ಎಂದು ಆಡಳಿತ ಇಲಾಖೆಯು ನೀಡಿರುವ ಉತ್ತರವು ಅಸಮಂಜಸವಾಗಿದೆ ಎಂದು ಹೇಳಿರುವುದು ಗೊತ್ತಾಗಿದೆ.

 

ಪ್ರತ್ಯೇಕ ಕೌಶಲ್ಯ ಅಭಿವೃದ್ಧಿ ನಿರ್ವಹಣಾ ವ್ಯವಸ್ಥೆಯು ಅಸ್ತಿತ್ವದಲ್ಲಿದ್ದಾಗ ಪ್ರತಿಯೊಂದು ಇಲಾಖೆಯು ತನ್ನದೇ ಆದ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸ್ವತಂತ್ರವಾಗಿ ಕೈಗೊಳ್ಳುವುದು ಸರಿಯಲ್ಲ ಎಂದು ಹೇಳಿರುವ ಆರ್ಥಿಕ ಇಲಾಖೆಯು ಕೌಶಲ್ಯ ಅಭಿವೃದ್ಧಿಯನ್ನು ಕೈಗೊಳ್ಳಲು ಕೌಶಲ್ಯಾಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಬೇಕು ಎಂದು ಜವಳಿ ಇಲಾಖೆಗೆ ಸಲಹೆ ನೀಡಿದೆ ಎಂದು ತಿಳಿದು ಬಂದಿದೆ.

 

ಅದೇ ರೀತಿ ಬಜೆಟ್ ಕೊರತೆ ಇರುವ ಜವಳಿ ಮತ್ತು ಕೈಮಗ್ಗ ಇಲಾಖೆಯಲ್ಲಿ ಮತ್ತಷ್ಟು ದೊಡ್ಡ ಬದ್ಧತೆಗಳನ್ನು ಅನುಮೋದಿಸಿರುವುದಕ್ಕೂ ಆರ್ಥಿಕ ಇಲಾಖೆಯು ಆಕ್ಷೇಪಿಸಿದೆ. 2,000/- ಗಳ ಆರ್ಥಿಕ ನೆರವನ್ನು ವಾರ್ಷಿಕವಾಗಿ ನೇರ ನಗದು ವರ್ಗಾವಣೆ ಮುಖಾಂತರ ನೀಡುವ ಯೋಜನೆಯನ್ನು 2022-23 ನೇ ಸಾಲಿಗೆ ರೂ. 5,000/- ಗಳಿಗೆ ಹೆಚ್ಚಿಸಲಾಗಿದೆ.

 

ನೇಕಾರ ಸಮ್ಮಾನ ಯೋಜನೆಯಡಿ ಕೈಮಗ್ಗ ಮತ್ತು ಜವಳಿ ಇಲಾಖೆಯು 75 ಕೋಟಿ ರು. ಅನುದಾನ ಕೇಳಿದೆ. 10 ಹೆಚ್‌ಪಿ ವಿದ್ಯುತ್‌ ಸಾಮರ್ಥ್ಯದ ಪವರ್‍‌ ಲೂಮ್‌ಗಳಿಗೆ ಉಚಿತ ವಿದ್ಯುತ್‌ ನೀಡಬೇಕು ಎಂದೂ ಪ್ರಸ್ತಾವಿಸಿರುವುದು ಗೊತ್ತಾಗಿದೆ.

Hot this week

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

Topics

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

Related Articles

Popular Categories

error: Content is protected !!