Monday | April 13, 2026 |

ಕೋವಿಡ್‌ ಅಕ್ರಮ; ದೂರು ಹಿಂಪಡೆಯಲು ಅನುಮತಿ ಕೋರಿ ಪತ್ರ, ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು; ಕೋವಿಡ್‌ ಸಂದರ್ಭದಲ್ಲಿ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯೂ ಸೇರಿದಂತೆ ಮತ್ತಿತರ ಇಲಾಖೆಗಳು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಭ್ರಷ್ಟಾಚಾರ ಎಸಗಿವೆ ಎಂಬ ಆರೋಪಗಳ ಕುರಿತಾಗಿ ದಾಖಲೆ ಸಹಿತ   ಸಲ್ಲಿಸಿದ್ದ ಎಲ್ಲಾ ದೂರುಗಳನ್ನೂ ಹಿಂಪಡೆಯಲು ಅನುಮತಿ ಕೋರಿರುವ  ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಲೋಕಾಯುಕ್ತಕ್ಕೆ  ಪತ್ರ ಬರೆದಿದ್ದಾರೆ.

 

 

ಏಕಕಾಲದಲ್ಲಿ ನ್ಯಾಯಾಂಗ ಮತ್ತು ಲೋಕಾಯುಕ್ತ ಸಂಸ್ಥೆಯು  ಸಮಾನಾಂತರವಾಗಿ ತನಿಖೆ ನಡೆಸಲು ಸಾಧ್ಯವೇ ಎಂಬ ಕಾನೂನಾತ್ಮಕ ಪ್ರಶ್ನೆಯೂ ಉದ್ಭವಿಸಿದ್ದರ ಬೆನ್ನಲ್ಲೇ ಇದೀಗ ಬಗಲಿ ಅವರು ಲೋಕಾಯುಕ್ತದಿಂದಲೇ ಎಲ್ಲಾ ದೂರುಗಳನ್ನು ಹಿಂಪಡೆಯಲು ಮುಂದಾಗಿರುವುದು ಮುನ್ನೆಲೆಗೆ ಬಂದಿದೆ.

 

 

ಲೋಕಾಯುಕ್ತಕ್ಕೆ ಸಲ್ಲಿಸಿದ್ದ ದೂರುಗಳನ್ನು ಹಿಂಪಡೆಯುವ ಸಂಬಂಧ  ಬಗಲಿ ಅವರು 2023ರ ಸೆ.27ರಂದು  ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

ಕೋವಿಡ್‌ ಅಕ್ರಮಗಳ ಕುರಿತು ತನಿಖೆ ನಡೆಸಲು ಕಾಂಗ್ರೆಸ್‌ ಸರ್ಕಾರವು ರಚಿಸಿರುವ  ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್ ಡಿ ಕುನ್ಹಾ ಅವರ ನೇತೃತ್ವದ  ತನಿಖಾ ಆಯೋಗಕ್ಕೆ ಸಲ್ಲಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ.

 

3 ವರ್ಷಗಳ ಹಿಂದೆಯೇ ಲೋಕಾಯುಕ್ತಕ್ಕೆ 38  ದೂರುಗಳನ್ನು ಸಲ್ಲಿಸಿದ್ದರು. ಈ ಪೈಕಿ 2 ದೂರುಗಳನ್ನು ಲೋಕಾಯುಕ್ತ ಸಂಸ್ಥೆಯು ಯಾವುದೇ ಕ್ರಮವಿಲ್ಲದೆಯೇ ಮುಕ್ತಾಯಗೊಳಿಸಿತ್ತು.

 

 

ಕಳೆದ ಮೂರು ವರ್ಷಗಳ ಹಿಂದೆಯೇ ದಾಖಲೆ ಸಹಿತ ಸಲ್ಲಿಕೆಯಾಗಿದ್ದ  ಕೋವಿಡ್‌ ಅಕ್ರಮಗಳ ಕುರಿತಾದ ದೂರುಗಳ ಹೆಚ್ಚಿನ  ತನಿಖೆ ನಡೆಸಲು ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ  ವರ್ಗಾಯಿಸಿತ್ತು. ಆದರೆ  ಲೋಕಾಯುಕ್ತ ಪೊಲೀಸ್‌ ವಿಭಾಗದಿಂದ ಇನ್ನೂ ತನಿಖಾ ವರದಿಗಳು  ಲೋಕಾಯುಕ್ತರ ಕೈ ಸೇರಿಲ್ಲ. ವರದಿ ಸಲ್ಲಿಸುವ ಸಂಬಂಧ ಲೋಕಾಯುಕ್ತರು ಹಲವು ನೆನಪೋಲೆಗಳನ್ನು ಬರೆದಿದ್ದರು.

 

ಈ ಎಲ್ಲಾ  ಪ್ರಕರಣಗಳು ಲೋಕಾಯುಕ್ತರ ಪರಿಧಿಯಲ್ಲಿಯೇ  ಅಂತಿಮ ಪರಿಶೀಲನೆಯಲ್ಲಿವೆ. ಕೆಲ ದೂರುಗಳನ್ನು  ಲೋಕಾಯುಕ್ತ ಪೊಲೀಸ್‌ ವಿಭಾಗವು ತನಿಖೆ ಮುಂದುವರೆಸಿದೆ. ಹಲವು ದೂರುಗಳಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಾದ ಹಿರಿಯ ಐಎಎಸ್‌ ಅಧಿಕಾರಿಗಳು ಸ್ಪಷ್ಟೀಕರಣವನ್ನೂ ನೀಡಿದ್ದಾರೆ. ಅಕ್ರಮಗಳು ನಡೆದೇ ಇಲ್ಲವೆಂದೂ ಸಮರ್ಥನೆ ಮತ್ತು ಇದಕ್ಕೆ ಪೂರಕವಾಗಿ ದಾಖಲಾತಿಗಳನ್ನೂ ಒದಗಿಸಿದ್ದಾರೆ.

 

ಈ ಹಂತದಲ್ಲಿ  ರಾಜ್ಯ ಕಾಂಗ್ರೆಸ್‌ ಸರ್ಕಾರವು ಕೋವಿಡ್‌ ಅಕ್ರಮಗಳ ಕುರಿತು ತನಿಖೆ ನಡೆಸಲು ನ್ಯಾಯಾಂಗ ತನಿಖಾ ಆಯೋಗವನ್ನು  ರಚಿಸಿತ್ತು. ಹೀಗಾಗಿ  ಏಕಕಾಲದಲ್ಲಿ ನ್ಯಾಯಾಂಗ ಮತ್ತು ಲೋಕಾಯುಕ್ತ ಸಂಸ್ಥೆಯು  ಸಮಾನಾಂತರವಾಗಿ ತನಿಖೆ ನಡೆಸಲು ಸಾಧ್ಯವೇ ಎಂಬ ಕಾನೂನಾತ್ಮಕ ಪ್ರಶ್ನೆಯೂ ಉದ್ಭವಿಸಿತ್ತು.

ಕೋವಿಡ್‌ ಅಕ್ರಮ; ಲೋಕಾಯುಕ್ತ ವಿಚಾರಣೆ ಮಧ್ಯೆಯೇ ಸಮಾನಾಂತರ ತನಿಖೆ, ಎದುರಾದ ಕಾನೂನಾತ್ಮಕ ಪ್ರಶ್ನೆ

 

ಕೋವಿಡ್‌ ಅಕ್ರಮಗಳ ಕುರಿತು ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಕಳೆದ 2 ವರ್ಷಗಳ ಹಿಂದೆಯೇ ಲೋಕಾಯುಕ್ತದಲ್ಲಿ 40 ದೂರುಗಳನ್ನು ಸಲ್ಲಿಸಿದ್ದರು. ಈ ಪೈಕಿ 2 ದೂರುಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಲೋಕಾಯುಕ್ತರು ಯಾವುದೇ ಕ್ರಮವಿಲ್ಲದೆಯೇ ಮುಕ್ತಾಯಗೊಳಿಸಿದ್ದಾರೆ.  ಇನ್ನೂ  38 ದೂರುಗಳ ವಿಚಾರಣೆಯು ಕಳೆದ 2 ವರ್ಷಗಳಿಂದಲೂ ತೆವಳುತ್ತಲೇ ಇದೆ. ಈ ದೂರುಗಳ ವಿಚಾರಣೆಯು 2023ರ ಸೆಪ್ಟಂಬರ್‌ ಮತ್ತು ಅಕ್ಟೋಬರ್‌ನ ವಿವಿಧ ದಿನಾಂಕಗಳಂದು ನಡೆಯಲಿದೆ ಎಂದು ಗೊತ್ತಾಗಿದೆ.

 

ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್ಸ್‌, ಪಲ್ಸ್‌ ಆಕ್ಸಿಮೀಟರ್‌, ಡಯಾಲಿಸಿಸ್‌ ಯಂತ್ರ, ಥರ್ಮೋಮೀಟರ್‌, ಆಂಬ್ಯುಲೆನ್ಸ್‌, ಆರ್‌ಎನ್‌ಎ ಉಪಕರಣ, ಸಿರಿಂಜ್‌, ಮಾಸ್ಕ್‌, ಥರ್ಮಲ್​ಸ್ಕ್ಯಾನರ್, ಆಕ್ಸಿಜನ್ ಉಪಕರಣ ಸೇರಿದಂತೆ ಹಲವು ರೀತಿಯ ಉಪಕರಣ, ಸಾಧನಗಳ ಖರೀದಿಯಲ್ಲಿ  ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರುಗಳನ್ನು ಸಲ್ಲಿಸಿದ್ದರು.

 

ಈ ಎಲ್ಲಾ ದೂರುಗಳಲ್ಲಿಯೂ ಅಂದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಬಿ ಶ್ರೀರಾಮುಲು, ಡಾ ಕೆ ಸುಧಾಕರ್‌, ಕೆಎಸ್‌ಎಂಎಸ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಐಎಎಸ್‌ ಅಧಿಕಾರಿ ಡಾ ಮಂಜುಶ್ರೀ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ ಕಾರ್ಯದರ್ಶಿಯಾಗಿದ್ದ ಜಾವೇದ್‌ ಅಖ್ತರ್‌, ಪಂಕಜ್‌ಕುಮಾರ್‌ ಪಾಂಡೆ, ಪ್ರಭುಲಿಂಗ ಕವಳಿಕಟ್ಟಿ,  ಅರುಂಧತಿ ಚಂದ್ರಶೇಖರ್‌, ಮುಖ್ಯ ಪರಿವೀಕ್ಷಕ ಮಹೇಶ್‌ಕುಮಾರ್‌, ಡಾ ಪ್ರಿಯಾಲತಾ, ಡಾ ಲತಾ ಪರಿಮಳ ಸೇರಿದಂತೆ ಹಿರಿಯ ಐಎಎಸ್‌ ಅಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.

 

 

ಕೋವಿಡ್‌-19ರ ಜಾಗೃತಿ ಕಾರ್ಯಕ್ರಮಗಳ ಹೆಸರಿನಲ್ಲಿ ಖಾಸಗಿ ವಾಹನಗಳನ್ನು ಬಳಸದೆಯೇ 5 ಕೋಟಿ ರು.ಗೂ ಹೆಚ್ಚಿನ ಮೊತ್ತಕ್ಕೆ ಬಿಲ್‌ ಸೃಷ್ಟಿಸಿರುವ ಕರ್ನಾಟಕ ಡ್ರಗ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆಯ ಬಿಲ್ವಿದ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ವಿಶೇ‍ಷವೆಂದರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರನ್ನು ದೂರಿನಲ್ಲಿ ಮೊದಲ ಪ್ರತಿವಾದಿಯನ್ನಾಗಿಸಲಾಗಿತ್ತು.

 

 

ಮಾಸ್ಕ್‌ ತಯಾರಿಕೆ ಕಂಪನಿಗಳಲ್ಲದ ಸಾಫ್ಟ್‌ವೇರ್‌ ಕಂಪನಿಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಮೂರು ಪದರುಳ್ಳ ಮತ್ತು ಎನ್‌-95 ಮಾಸ್ಕ್‌ಗಳನ್ನು ಖರೀದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಸೇರಿದಂತೆ ಇನ್ನಿತರೆ ಐಎಎಸ್‌ ಅಧಿಕಾರಿಗಳಿಂದ ವಿವರಣೆ ಕೇಳಿತ್ತು.

 

ಆಂಧ್ರಪ್ರದೇಶ ಮೂಲದ ಎಸ್‌ಪಿವೈ ಆಗ್ರೋ ಇಂಡಸ್ಟ್ರೀಸ್‌ನಿಂದ 2,500 ರು. ದರದಲ್ಲಿ ಸ್ಯಾನಿಟೈಸರ್‌ ಖರೀದಿಸಿರುವ ಪ್ರಕರಣವೂ ಸೇರಿದಂತೆ ವಿವಿಧ ಕಂಪನಿಗಳಿಂದ ವಿವಿಧ ದರಗಳಲ್ಲಿ ಸ್ಯಾನಿಟೈಸರ್‌ ಖರೀದಿಸಿರುವುದಕ್ಕೆ ಸಂಬಂಧಿಸಿದಂತೆ ಅಂದಿನ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಸೇರಿದಂತೆ ಮೂವರು ಐಎಎಸ್‌ ಅಧಿಕಾರಿಗಳ ವಿರುದ್ಧವೂ ದೂರು ಸಲ್ಲಿಕೆಯಾಗಿತ್ತು.

 

ಸಾಫ್ಟ್‌ವೇರ್‌ ಕಂಪನಿ ಮತ್ತು ಕೃಷಿ ಉತ್ಪನ್ನಗಳ ತಯಾರಿಕೆ ಕಂಪನಿಯಿಂದ ಪಿಪಿಇ ಕಿಟ್‌ ಖರೀದಿಸಿದ್ದ ಪ್ರಕರಣಗಳ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಸಲ್ಲಿಸಿದ್ದ ದೂರಿನನ್ವಯ ವರದಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆ ಸೂಚಿಸಿತ್ತು.

 

4 ಪಟ್ಟು ಹೆಚ್ಚುವರಿ ದರ ತೆತ್ತು ಆರ್‌ಟಿಪಿಸಿಆರ್‌ ಉಪಕರಣಗಳನ್ನು ಖರೀದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಸಹಿತ ಸಲ್ಲಿಕೆಯಾಗಿರುವ ದೂರಿನ ವಿಚಾರಣೆ ನಡೆಯುತ್ತಿದೆ. ಈ ಎಲ್ಲಾ ಪ್ರಕರಣಗಳ ಕುರಿತು ‘ದಿ ಫೈಲ್‌’ ದಾಖಲೆ ಸಹಿತವಾಗಿ ಸರಣಿ ರೂಪದಲ್ಲಿ 50 ವರದಿಗಳನ್ನು ಪ್ರಕಟಿಸಿತ್ತು.

 

‘ದಿ ಫೈಲ್‌’ ಹೊರಗೆಡವಿದ ಕೋವಿಡ್‌ ಭ್ರಷ್ಟಾಚಾರದ 50 ಮುಖಗಳು

ಐಎಸ್‌ಒ ಗುಣಮಟ್ಟ ಸೂಚಿಸುವ ಪ್ರಮಾಣ ಪತ್ರ ಮತ್ತು ಸೂಕ್ತ ಪುರಾವೆಗಳೇ ಇಲ್ಲದಿರುವುದು, ಆಸ್ಪತ್ರೆಗಳಲ್ಲಿ ಹಲವು ವರ್ಷಗಳ ಕಾಲ ಬಳಸಿರುವ, ಮುರಿದಿರುವ ಮತ್ತು ಬಳಕೆಗೆ ಯೋಗ್ಯವಲ್ಲದ ವೆಂಟಿಲೇಟರ್‌ಗಳನ್ನು ದಾಸ್ತಾನಿಗೆ ಪಡೆದಿರುವ ಬಗೆಗಿನ ದೂರಿನ ವಿಚಾರಣೆ ತೆವಳುತ್ತಿದೆ.

Hot this week

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

Topics

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

Related Articles

Popular Categories

error: Content is protected !!