Sunday | May 3, 2026 |

ಡಿ ಕೆ ಶಿವಕುಮಾರ್‍‌ ವಿರುದ್ಧ ಸಿಬಿಐ ತನಿಖೆ; ಬಿಜೆಪಿ ಸರ್ಕಾರದ ಆದೇಶ ಹಿಂಪಡೆಯಲು ಸಚಿವ ಸಂಪುಟಕ್ಕೆ ಪ್ರಸ್ತಾವನೆ

ಬೆಂಗಳೂರು; ಆದಾಯ ಮೂಲಕ್ಕಿಂತ 200 ಕೋಟಿ ಹೆಚ್ಚು ಅಕ್ರಮ ಸಂಪಾದನೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮತ್ತು ಇತರರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಹಸ್ತಾಂತರಿಸಿದ್ದ ಪ್ರಕರಣವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಹಿಂಪಡೆದುಕೊಳ್ಳಲು ಮುಂದಾಗಿದೆ. ಈ ಸಂಬಂಧ ಗೃಹ ಇಲಾಖೆಯು  ಸಚಿವ ಸಂಪುಟಕ್ಕೆ ಪ್ರಸ್ತಾವನೆಯನ್ನು ಮಂಡಿಸಿದೆ.

 

ಸಿಬಿಐ ತನಿಖೆಗೆ ವಹಿಸಿರುವ ಆದೇಶವನ್ನು ಹಿಂಪಡೆದು ಪ್ರಕರಣವನ್ನು ಕರ್ನಾಟಕ ಪೊಲೀಸ್‌ ಇಲಾಖೆ ಅಥವಾ ಲೋಕಾಯುಕ್ತ ಪೊಲೀಸ್‌ ತನಿಖೆಗೆ ಹಸ್ತಾಂತರಿಸಲು ಗೃಹ ಇಲಾಖೆಯು ಸಚಿವ ಸಂಪುಟದ ಅನುಮೋದನೆಗೆ ಕಡತವನ್ನು ಮಂಡಿಸಿರುವುದು ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರವನ್ನು ನೀಡಿದಂತಾಗಿದೆ.

 

‘ರಾಜಕೀಯ ಉದ್ದೇಶಕ್ಕಾಗಿಯೇ ಬಿ.ಎಸ್‌. ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ  ನೀಡಿದ್ದರು. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಅವರು ಇತ್ತೀಚೆಗಷ್ಟೇ  ತಿರುಗೇಟು ನೀಡಿದ್ದರು. ಇದರ ಬೆನ್ನಲ್ಲೇ ಪ್ರಕರಣವನ್ನು ಸಿಬಿಐ ತನಿಖೆಯಿಂದಲೇ ಹಿಂಪಡೆಯಲು ಸಚಿವ ಸಂಪುಟಕ್ಕೆ ಸಲ್ಲಿಸಿರುವ ಪ್ರಸ್ತಾವನೆಯು ಮುನ್ನೆಲೆಗೆ ಬಂದಿದೆ.

 

ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ನೀಡಿ ಆದೇಶಿಸಿದ್ದ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿರುವ ಮೇಲ್ಮನವಿ ವಿಚಾರಣೆ ಕುರಿತು ಇದೇ ನವೆಂಬರ್‍‌ 29ರಂದು ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಿಗದಿಪಡಿಸಿರುವ ಬೆನ್ನಲ್ಲೇ ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಗೃಹ ಸಚಿವ ಡಾ ಜಿ ಪರಮೇಶ್ವರ್‍‌ ಅವರು ಅನುಮೋದಿಸಿದ್ದಾರೆ.

 

ಗೃಹ ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿರುವ ಪ್ರಸ್ತಾವನೆ ಮತ್ತು ಈ ಸಂಬಂಧ ರಾಜ್ಯ ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ನೀಡಿರುವ 28 ಪುಟಗಳ ಅಭಿಪ್ರಾಯದ (ಕಡತ ಸಂಖ್ಯೆ ಹೆಚ್‌ಡಿ 4 ಸಿಒಡಿ 2023 , ವಿಷಯ ಸಂಖ್ಯೆ ಸಿ 552/2023) ಪ್ರತಿಯೂ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ನೀಡಿರುವ 2023ರ ನವೆಂಬರ್‍‌ 21ರಂದು ನೀಡಿದ್ದ ಅಭಿಪ್ರಾಯವನ್ನಾಧರಿಸಿ ಸಿಬಿಐ ತನಿಖೆಗೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದುಕೊಳ್ಳುವ ಪ್ರಸ್ತಾವನೆಯನ್ನು ಮಂಡಿಸಿರುವುದು ಗೊತ್ತಾಗಿದೆ.

 

ಉಭಯ ಪಕ್ಷಕಾರರು ಜಂಟಿ ಮೆಮೊ ಹಾಕಿ ಮುಂದೂಡಿಕೆ ಕೋರಿದ ಹಿನ್ನೆಲೆಯಲ್ಲಿ ನವೆಂಬರ್‌ 29ಕ್ಕೆ ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಿಗದಿಪಡಿಸಿದೆ.

 

ಪ್ರಸ್ತಾವನೆಯಲ್ಲೇನಿದೆ?

 

ಅಂದಿನ ಮುಖ್ಯಮಂತ್ರಿಗಳ ನಿರ್ದೇಶನ ಹಾಗೂ ಅನುಮೋದನೆ ಅನ್ವಯ ಡಿ ಕೆ ಶಿವಕುಮಾರ್‍‌ ಮತ್ತು ಇತರರ ವಿರುದ್ಧ (ಸರ್ಕಾರದ ಆದೇಶ ಸಂಖ್ಯೆ ; E-HD/40/C0D/2019, ದಿನಾಂಕ 25-09-2019 ರಲ್ಲಿ ದೆಹಲಿ ವಿಶೇಷ ಪೊಲೀಸ್‌ ಎಸ್ಟಾಬ್ಲಿಷ್‌ಮೆಂಟ್‌ ಕಾಯ್ದೆ 1946 ಅಡಿ ಸೆಕ್ಷನ್‌ 6 ಅನ್ವಯ ತನಿಖೆ/ವಿಚಾರಣೆ ಕೈಗೊಳ್ಳಲು ಕೇಂದ್ರೀಯ ತನಿಖಾ ದಳ (ಸಿಬಿಐ)ಗೆ ವಹಿಸಿ ಆದೇಶಿಸಲಾಗಿದೆ.

 

ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿದ್ದ ಡಿ ಕೆ ಶಿವಕುಮಾರ್‍‌ ಅವರು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ರಿಟ್‌ ಅರ್ಜಿ (ಸಂಖ್ಯೆ 10479/2020) ಸಲ್ಲಿಸಿದ್ದರು. ನ್ಯಾಯಾಲಯವು ಈ ಪ್ರಕರಣವನ್ನು 2023ರ ಏಪ್ರಿಲ್‌ 20ರಂದು ಪ್ರಕರಣವನ್ನು ವಜಾಗೊಳಿಸಿದೆ.

 

ರಿಟ್‌ ಅರ್ಜಿಯ ತೀರ್ಪಿನ ವಿರುದ್ಧ ಡಿ ಕೆ ಶಿವಕುಮಾರ್‍‌ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ರಿಟ್‌ ಅಪೀಲ್‌ (ಸಂಖ್ಯೆ 646/2023) ದಾಖಲಿಸಿದ್ದಾರೆ. 2019ರ ಸೆ 25ರಂದು ಹಿಂದಿನ ಸರ್ಕಾರವು ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಕಾನೂನಾತ್ಮಕ ಅಂಶಗಳ ಕುರಿತು ಅಡ್ವೋಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಕೋರಲಾಗಿದೆ. ಅವರು ಈ ಆದೇಶವನ್ನು ಹಿಂಪಡೆಯಲು ಅಭಿಪ್ರಾಯ ನೀಡಿದ್ದಾರೆ.

 

ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದು ಸ್ಥಳೀಯ ಪೊಲೀಸ್‌ ಅಥವಾ ಲೋಕಾಯುಕ್ತ ಪೊಲೀಸ್‌ ತನಿಖೆಗೆ ಹಸ್ತಾಂತರಿಸಬೇಕು ಎಂದು ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ನೀಡಿರುವ ಅಭಿಪ್ರಾಯವನ್ನು ಎಂದು ಪ್ರಸ್ತಾವನೆಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಹಿಂಪಡೆಯಲು ನೀಡಿರುವ ಸಮರ್ಥನೆ ಏನು?

 

ಅಡ್ವೋಕೇಟ್‌ ಜನರಲ್‌ ಅವರು ನೀಡಿದ್ದ ಅಭಿಪ್ರಾಯವನ್ನು ಸವಿವರವಾಗಿ ಪರಿಶೀಲಿಸಲಾಗಿದೆ. 2019ರ ಸೆ.24 ಮತ್ತು ಸೆ.25ರ ನಡುವೆ ಅಂದಿನ ಅಡ್ವೋಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಕೋರಲಾಗಿತ್ತು.

 

ಎಫ್‌ಐಆರ್‍‌ ದಾಖಲಿಸದೇ ಕೇಂದ್ರ ಸರ್ಕಾರದ ಸಿಬ್ಬಂದಿ ಕುಂದುಕೊರತೆ ಮತ್ತು ಪಿಂಚಣಿ ಮಂತ್ರಾಲಯದ ದಿನಾಂಕ 2018ರ ನವೆಂಬರ್‍‌ 22ರಂದು ( ಪತ್ರ ಸಂಖ್ಯೆ 270/37/2018-AVD-11) ಮಾರ್ಗಸೂಚಿಗಳನ್ನು ಪಾಲಿಸದೇ ತನಿಖೆ/ವಿಚಾರಣೆ ಕೈಗೊಳ್ಳಲು ಕೇಂದ್ರೀಯ ತನಿಖಾ ದಳ (ಸಿಬಿಐ)ಗೆ ವಹಿಸಲು ಆದೇಶ ಹೊರಡಿಸಲಾಗಿದೆ.

 

ಪ್ರಕರಣವನ್ನು ತನಿಖೆ ಮಾಡಲು ಪೊಲೀಸರ ಅಸಮರ್ಥತೆಯನ್ನು ಯಾವುದೇ ರೀತಿಯಲ್ಲಿಯೂ ಪರಿಶೀಲಿಸಲಾಗಿರುವುದಿಲ್ಲ. ಮತ್ತು ಇದಕ್ಕೆ ಸಂಬಂಧಿಸಿದಂತೆ ಪ್ರೊಫಾರ್ಮಾದಲ್ಲಿ ಕಡ್ಡಾಯಪಡಿಸಿರುವ ಅಂತರ ರಾಜ್ಯ ಅಥವಾ ದೇಶವ್ಯಾಪ್ತಿಯ ಪರಿಣಾಮಗಳು ಇರುವಂತಹ ಯಾವುದೇ ಸಮರ್ಥನೆಯೂ ಸಹ ಇರುವುದಿಲ್ಲ.

 

ಆದ್ದರಿಂದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಸರ್ಕಾರವು ವಹಿಸಿರುವುದನ್ನು ಸಮರ್ಥಿಸಲು ಯಾವುದೇ ಅಗತ್ಯ ಮತ್ತು ಅಸಾಧಾರಣ ಸಂದರ್ಭಗಳನ್ನು 2019ರ ಸೆ.25ರಂದು ಸರ್ಕಾರದ ಆದೇಶವನ್ನು ಹೊರಡಿಸುವಾಗ ಪ್ರಸ್ತಾಪಿಸಿರುವುದಿಲ್ಲ ಈ ಎಲ್ಲಾ ಅಂಶಗಳು ಕೇಂದ್ರೀಯ ತನಿಖಾ ದಳದ ತನಿಖೆಗೆ ಅನುಮತಿ/ಸಮ್ಮತಿ ನೀಡಿರುವ ನಿರ್ಧಾರವು ಕಾನೂನಿಗೆ ಅನುಸಾರವಾಗಿರುವುದಿಲ್ಲ ಎಂದು ಸೂಚಿಸುತ್ತದೆ ಎಂದು ಗೃಹ ಇಲಾಖೆಯು ಸಮರ್ಥಿಸಿಕೊಂಡಿರುವುದು ಗೊತ್ತಾಗಿದೆ.

 

ಈ ಹಿನ್ನೆಲೆಯಲ್ಲಿ ಕರ್ನಾಟಕ ವ್ಯವಹಾರ ಹಂಚಿಕೆ ನಿಯಮಾವಳಿ 1977ರ ಒಂದನೇ ಅನುಸೂಚಿಯ ಐಟಂ 30ರ ಅನ್ವಯ ಡಿ ಕೆ ಶಿವಕುಮಾರ್‍‌ ಮತ್ತು ಇತರರ ವಿರುದ್ಧ ಸಿಬಿಐ ತನಿಖೆಗೆ ವಹಿಸಿ 2019ರರ ಸೆ.25ರಲ್ಲಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಮತ್ತು ಈ ಪ್ರಕರಣದ ತನಿಖೆಯನ್ನು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಗೆ ವಹಿಸಲು ಅನುಮೋದನೆ ನೀಡಬೇಕು ಎಂದು ಒಳಾಡಳಿತ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರವಿ ಎಸ್‌ ಅವರು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು ತಿಳಿದು ಬಂದಿದೆ.

 

ಅಕ್ರಮ ಆದಾಯ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ “ಉಭಯ ಪಕ್ಷಕಾರರು ಜಂಟಿ ಮೆಮೊ ಸಲ್ಲಿಸಿ, ವಿಚಾರಣೆ ಮುಂದೂಡಿಕೆ ಕೋರಿದರೆ ಪರಿಗಣಿಸಲಾಗುವುದು” ಎಂದಿತು. ಈ ಹಿನ್ನೆಲೆಯಲ್ಲಿ ಪಕ್ಷಕಾರರು ಜಂಟಿ ಮೆಮೊ ಸಲ್ಲಿಸಿದ್ದು, ಅದನ್ನು ಪರಿಗಣಿಸಿ ನ್ಯಾಯಾಲಯವು ವಿಚಾರಣೆಯನ್ನು ನವೆಂಬರ್‌ 29ಕ್ಕೆ ಮುಂದೂಡಿತ್ತು.

 

ಸರ್ವೋಚ್ಚ ನ್ಯಾಯಾಲಯವು ನವೆಂಬರ್‌ 11ರಂದು ತನ್ನ ಆದೇಶದಲ್ಲಿ ಶಿವಕುಮಾರ್‌ ಅವರ ಪರವಾಗಿ ನೀಡಿರುವ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಈಗಾಗಲೇ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಈ ಅಂಶವನ್ನು ಗಮನಿಸಿದ್ದ ಪೀಠವು ಮಧ್ಯಂತರ ಆದೇಶ ತೆರವು ಮಾಡುವಂತೆ ಸಿಬಿಐ ಕೋರಿದ್ದ ಅರ್ಜಿ ಹಾಗೂ ಮೇಲ್ಮನವಿಯನ್ನು ತುರ್ತಾಗಿ ಅಂದರೆ ಎರಡು ವಾರದಲ್ಲಿ ಇತ್ಯರ್ಥಪಡಿಸುವಂತೆ ಹೈಕೋರ್ಟ್‌ಗೆ ಸೂಚಿಸಿರುವುದನ್ನು ಸ್ಮರಿಸಬಹುದು.

 

ಪ್ರಕರಣದ ಹಿನ್ನೆಲೆ

 

2013ರಿಂದ 2018ರ ಅವಧಿಯಲ್ಲಿ ಡಿ.ಕೆ. ಶಿವಕುಮಾರ್‌ ಅವರು ಗೊತ್ತಾದ ಆದಾಯ ಮೂಲಕ್ಕಿಂತ 200 ಕೋಟಿ ಹೆಚ್ಚು ಅಕ್ರಮ ಸಂಪಾದನೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ ಸಿಬಿಐ ಎಫ್‌ಐಆರ್‌ ಹಾಕಿತ್ತು.

 

ಇದಕ್ಕೆ ರಾಜ್ಯ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ವಿಧಿಸುತ್ತಲೇ ಬಂದಿತ್ತು.

 

ಗೊತ್ತಾದ ಮೂಲಕ್ಕಿಂತಲೂ ಹೆಚ್ಚು ಆಸ್ತಿಯನ್ನು ಹೊಂದಿದ್ದರು ಎಂದು ಸಿಬಿಐ ತನ್ನ ಎಫ್‌ಐಆರ್‍‌ನಲ್ಲಿ ವಿವರಿಸಿತ್ತು.

 

 

ವಿಚಾರಣೆಯ ವೇಳೆ ಸಿಬಿಐ ತನಿಖೆಗೆ ಗ್ರೀನ್‌ ಸಿಗ್ನಲ್‌ ನೀಡಿತ್ತು. ಅದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಡಿ.ಕೆ. ಶಿವಕುಮಾರ್‌ ಚಿಂತನೆ ನಡೆಸಿದ್ದರು.

 

ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ” ಎಂದಿದ್ದನ್ನು ಸ್ಮರಿಸಬಹುದು.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!