ಗ್ರಂಥಾಲಯ ಇಲಾಖೆ ಅಕ್ರಮ; ತನಿಖೆಗೆ ಬರೆದ ಪತ್ರವನ್ನೇ ಹಿಂಪಡೆದುಕೊಂಡ ಪರಿಷತ್‌ ಸದಸ್ಯ ವಿಶ್ವನಾಥ್‌

ಬೆಂಗಳೂರು; ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ವಿರುದ್ಧ ತನಿಖೆ ನಡೆಯುತ್ತಿರುವ ಹೊತ್ತಿನಲ್ಲಿಯೇ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಅವರು ರಂಗ ಪ್ರವೇಶ ಮಾಡಿದ್ದಾರೆ.

 

ವಿಶೇಷವೆಂದರೇ ಹೊಸಮನಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್‌ ವಿಶ್ವನಾಥ್‌ ಪತ್ರ ಬರೆದಿದ್ದರು. ಆದರೀಗ ತನಿಖೆಯನ್ನೇ ಕೈಬಿಡಬೇಕು ಮತ್ತು ಅದೇ ಹುದ್ದೆಯಲ್ಲಿಯೇ ಮುಂದುವರೆಸಲು ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿಗೆ 2024ರ ಜನವರಿ 10ರಂದು ‌ ಪತ್ರ ಬರೆದಿದ್ದಾರೆ. ವಿಶ್ವನಾಥ್‌ ಅವರ ಈ ನಡೆಯು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.

 

ವಿಶ್ವನಾಥ್‌ ಅವರು ಬರೆದಿರುವ ಪತ್ರ ಹಾಗೂ ಸಿದ್ದರಾಮಯ್ಯ ಅವರ ಟಿಪ್ಪಣಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಎಚ್ ವಿಶ್ವನಾಥ್‌ ಅವರು ತಮ್ಮ ನಿಲುವು ಬದಲಿಸಿರುವುದರ ಹಿಂದೆ ಪ್ರಕಾಶಕರೊಬ್ಬರ ಪಾತ್ರವಿದೆ ಎಂದು ಗೊತ್ತಾಗಿದೆ. ಈ ಮೊದಲು ನಿರ್ದೇಶಕರ ವಿರುದ್ಧ ಆರೋಪಗಳ ಕುರಿತಾಗಿ ತನಿಖೆ ನಡೆಸಬೇಕು ಎಂದು ವಿಶ್ವನಾಥ್‌ ಅವರಿಂದಲೇ ಪತ್ರ ಬರೆಸಿದ್ದ ಪ್ರಕಾಶಕರೇ, ಆ ನಂತರ ತನಿಖೆ ನಡೆಸುವುದು ಬೇಡ ಎಂದು ಮತ್ತೊಂದು ಪತ್ರವನ್ನು ಬರೆಸಿದ್ದಾರೆ ಎಂದು ತಿಳಿದು ಬಂದಿದೆ.

 

ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಹಣ ದುರುಪಯೋಗ, ಡಿಜಿಟಲ್‌ ಗ್ರಂಥಾಲಯ ವಿದ್ಯುನ್ಮಾನ ಉಪಕರಣಗಳ ಖರೀದಿಯಲ್ಲಿ ಅಕ್ರಮ ಸೇರಿದಂತೆ ಇನ್ನಿತರೆ ಗುರುತರವಾದ ಆಪಾದನೆಗಳಿಗೆ ಸತೀಶ್‌ ಕುಮಾರ್‍‌ ಹೊಸಮನಿ ಅವರು ಗುರಿಯಾಗಿದ್ದಾರೆ. ಈ ಎಲ್ಲಾ ಆಪಾದನೆಗಳ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಕಾವೇರಿ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

 

ಸತೀಶ್‌ಕುಮಾರ್‍‌ ಹೊಸಮನಿ ಅವರ ವಿರುದ್ಧ ಆಪಾದನೆಗಳ ಪಟ್ಟಿ ಸಮೇತ ವಿಶ್ವನಾಥ್‌ ಅವರು 2023ರ ನವೆಂಬರ್‍‌ನಲ್ಲಿ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಪತ್ರಗಳನ್ನು (728/ಅಎಚ್‌ವಿ/ಕವಿಪಸ/2022-23 ದಿನಾಂಕ 03/11/2023) ಬರೆದಿದ್ದರು. ಈ ಪತ್ರವನ್ನಾಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ನಿರ್ದೇಶನ ನೀಡಿದ್ದರು.

 

ಸಿದ್ದರಾಮಯ್ಯರ ಟಿಪ್ಪಣಿಯಲ್ಲೇನಿತ್ತು?

 

ಗ್ರಂಥಾಲಯ ಇಲಾಖೆಗೆ ಸೆಸ್‌ ರೂಪದಲ್ಲಿ ಹಣ ಸಂಗ್ರಹವಾಗುತ್ತಿದ್ದು ಇಲಾಖೆಯು ಕಳೆದ ಮೂರು ವರ್ಷಗಳಲ್ಲಿ ಪುಸ್ತಕಗಳನ್ನು ಖರೀದಿಸಿರುವುದಿಲ್ಲ. ಈ ಸಂಬಂಧ ಯಾವುದೇ ಕ್ರಮವಹಿಸದೇ ಕೋಟ್ಯಂತರ ರುಪಾಯಿ ಹಣವನ್ನು ಡಿಜಿಟಲ್‌ ಗ್ರಂಥಾಲಯದ ಹೆಸರಿನಲ್ಲಿ ಪೋಲು ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಅಧಿಕಾರಿ ವಿರುದ್ಧ ನ್ಯಾಯಾಧೀಶರು ಅಥವಾ ಉನ್ನತ ಮಟ್ಟದ ಸಮಿತಿ ರಚಿಸಿ ಎಲ್ಲಾ ಚಟುವಟಿಕೆಗಳನ್ನು ಕೂಲಂಕಷವಾಗಿ ತನಿಖೆಗೊಳಪಡಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ ಕೋರಿದ್ದಾರೆ.

 

ಗ್ರಂಥಾಲಯಗಳಿಗೆ ಬಾಕಿ ಇರುವ ಮೂರು ವರ್ಷಗಳ ಪುಸ್ತಕಗಳನ್ನು ಖರೀದಿಸಲು ಹಾಗೂ ಇನ್ನು ಮುಂದೆ ಕನ್ನಡ ಪುಸ್ತಕಗಳ ಬೆಲೆಗಳನ್ನು ಮುದ್ರಣ ಕಾಗದ ಬೆಲೆಗನುಗುಣವಾಗಿ ಕಾಲಕಾಲಕ್ಕೆ ಪರಿಷ್ಕರಿಸಬೇಕು.  ಪ್ರಕಟವಾದ ವರ್ಷವೇ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಅಗತ್ಯ ಕ್ರಮ ವಹಿಸಬೇಕು.

 

ಹಾಗೂ ಒಂದು ಉನ್ನತ ಮಟ್ಟದ ಸಮಿತಿ ರಚಿಸಿ ಗ್ರಂಥಾಲಯ ಇಲಾಖೆಯ ನಿರ್ದೇಶಕರ ಕರ್ತವ್ಯಲೋಪ, ಹಣ ದುರ್ಬಳಕೆ, ಅವ್ಯವಹಾರಗಳ ಬಗ್ಗೆ ವಿವರವಾದ ತನಿಖೆ ನಡೆಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದರು.

 

ಸಿದ್ದರಾಮಯ್ಯ ಅವರ ಟಿಪ್ಪಣಿಯಲ್ಲಿನ ನಿರ್ದೇಶನದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೀಶ್‌ಕುಮಾರ್‍‌ ಸಿಂಗ್‌ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಬಿ ಬಿ ಕಾವೇರಿ ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು.

 

ಈ ತಂಡವು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಕೇಂದ್ರ ಕಚೇರಿಯಲ್ಲಿನ ಹಲವು ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದೆ. ಈ ಹೊತ್ತಿನಲ್ಲಿ ವಿಧಾನ ಪರಿಷತ್‌  ಸದಸ್ಯ ಎಚ್‌ ವಿಶ್ವನಾಥ್‌ ಅವರು ನಿರ್ದೇಶಕರ ವಿರುದ್ಧ ತನಿಖೆಯನ್ನೇ ನಡೆಸುವುದು ಬೇಡ ಎಂದು ಪತ್ರ ಬರೆದಿದ್ದಾರೆ.

 

ಜನವರಿಯಲ್ಲಿ ವಿಶ್ವನಾಥ್‌ ಬರೆದಿದ್ದ ಪತ್ರದಲ್ಲೇನಿದೆ?

 

ಸಾರ್ವಜನಿಕ ಗ್ರಂಥಾಲಯ ನಿರ್ದೇಶಕ ಡಾ ಸತೀಶ್‌ ಕುಮಾರ್‍‌ ಹೊಸಮನಿ ಅವರ ಕುರಿತು ತನಿಖೆ ಕೈಗೊಳ್ಳುವಂತೆ ಈ ಹಿಂದೆ ಪತ್ರ ಬರೆಯಲಾಗಿತ್ತು. ಆದರೆ ನೈಜ ಪರಿಸ್ಥಿತಿಯನ್ನು ಪರಿಶೀಲಿಸಿದಾಗ ಈಗಾಗಲೇ ಪ್ರತಿ ವರ್ಷ ಮಹಾಲೇಖಪಾಲರು ಹಾಗೂ ಸ್ಥಳೀಯ ಲೆಕ್ಕ ಪರಿಶೋಧನ ಇಲಾಖೆಯಿಂದ ಪ್ರತಿ ವರ್ಷ ಲೆಕ್ಕ ತಪಾಸಣೆಯನ್ನು ಕೈಗೊಳ್ಳಲಾಗಿದ್ದು ಯಾವುದೇ ದೋಷಾರೋಪಗಳು ಇರುವುದಿಲ್ಲ ಎಂದು ತಿಳಿದು ಬಂದಿರುತ್ತದೆ.

 

ಸರ್ಕಾರದ ಮಾರ್ಗದರ್ಶನದಂತೆ ಗ್ರಂಥಾಲಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಪುಸ್ತಕ ಖರೀದಿ ಪ್ರಕ್ರಿಯೆಗಳನ್ನು ನಿರ್ವಹಿಸಲಾಗಿದೆ. ಲೆಕ್ಕ ತನಿಖಾ ವರದಿಗಳಲ್ಲಿ ಯಾವುದೇ ಆಕ್ಷೇಪಣೆಗಳು ವ್ಯಕ್ತವಾಗಿರುವುದಿಲ್ಲ. ಆದ್ದರಿಂದ ಈ ಮೇಲಿನ ಎಲ್ಲಾ ವಾಸ್ತವಾಂಶಗಳನ್ನು ಗಮನಲ್ಲಿರಿಸಿಕೊಂಡು ನಿರ್ದೇಶಕರ ವಿರುದ್ಧ ನಡೆಯುತ್ತಿರುವ ವಿಚಾರಣೆಯನ್ನು ಕೈಬಿಡಬೇಕು ಎಂದು ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಅವರಿಗೆ ಬರೆದಿದ್ದಾರೆ.

 

ಗ್ರಂಥಾಲಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ಸಲ್ಲಿಕೆಯಾಗಿತ್ತು.

 

‘ನಾನು ಹೇಳಿದ ಹಾಗೆ ಕೇಳು, ರಾತ್ರಿ ಊಟಕ್ಕೆ ರೆಡಿ ಮಾಡು’; ನಿರ್ದೇಶಕರ ವಿರುದ್ಧ ಲೈಂಗಿಕ ಕಿರಕುಳ ಆರೋಪ

 

ಇದರ ಬೆನ್ನಲ್ಲೇ ಗ್ರಂಥಾಲಯ ಇಲಾಖೆಯಲ್ಲಿ ಕಂಪ್ಯೂಟರ್‍‌, ಯುಪಿಎಸ್‌, ಝೆರಾಕ್ಸ್‌ ಉಪಕರಣ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆದಿತ್ತು.

 

ಗ್ರಂಥಾಲಯ ಇಲಾಖೆಯಲ್ಲಿ ಕಂಪ್ಯೂಟರ್‌, ಯುಪಿಎಸ್‌, ಝೆರಾಕ್ಸ್‌ ಉಪಕರಣ ಖರೀದಿ ಹಗರಣ; ತನಿಖಾ ವರದಿ

 

ವಿಶೇಷವೆಂದರೆ ಈ ಹಗರಣದಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎನ್ನಲಾಗಿದ್ದ ಬಹುತೇಕ ಅಧಿಕಾರಿಗಳು ನಿವೃತ್ತಿಯಾಗಿದ್ದರು.

 

ಕಂಪ್ಯೂಟರ್‍‌ ಖರೀದಿ ಹಗರಣ; ಕರ್ತವ್ಯಲೋಪವೆಸಗಿದ ಅಧಿಕಾರಿಗಳ ಪಟ್ಟಿ ಬಹಿರಂಗ, ಬಹುತೇಕರು ನಿವೃತ್ತಿ

 

ಕಂಪ್ಯೂಟರ್‍‌ ಮತ್ತಿತರೆ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಕುರಿತು ಕೆಲ ಅಧಿಕಾರಿಗಳಿಗೆ ಆರೋಪ ಪಟ್ಟಿಯೂ ಜಾರಿಯಾಗಿತ್ತು.

 

ಕಂಪ್ಯೂಟರ್‍‌ ಮತ್ತಿತರೆ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ; ಸರ್ಕಾರದಿಂದ ಆರೋಪ ಪಟ್ಟಿ ಜಾರಿ

ಹಿಂದಿನ ಬಿಜೆಪಿ ಸರ್ಕಾರದಲ್ಲಿಯೂ ಡಿಸಿಎಂಗಳ ಹೆಸರಿನಲ್ಲಿ 5 ಕೋಟಿ ಸಂಗ್ರಹಿಸಲು ಕೆಳ ಹಂತದ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

 

ಡಿಸಿಎಂಗಳಿಗೆ 5 ಕೋಟಿ ಸಂಗ್ರಹಿಸಲು ತಾಕೀತು; ಗ್ರಂಥಾಲಯ ನಿರ್ದೇಶಕರೇ ವಸೂಲಿಗಿಳಿದರೇ?

 

‘ಹಲವು ಗುರುತರವಾದ ಆರೋಪಗಳಿಗೆ ಗುರಿಯಾಗಿರುವ ಹೊಸಮನಿ ಅವರ ವಿರುದ್ಧ ತನಿಖೆ ನಡೆಯುತ್ತಿದೆಯಾದರೂ ನಿರ್ದೇಶಕರ ಹುದ್ದೆಯಲ್ಲಿಯೇ ಸರ್ಕಾರವು ಮುಂದುವರೆಸಿರುವುದು ಸರಿಯಲ್ಲ. ಆರೋಪಿತ ವ್ಯಕ್ತಿಯು ಅದೇ ಹುದ್ದೆಯಲ್ಲಿ ಮುಂದುವರೆದರೆ ದಾಖಲೆ, ಸಾಕ್ಷ್ಯ ನಾಶವಾಗಲಿದೆ. ಕನಿಷ್ಠ ವಿಚಾರಣೆ ಪೂರ್ಣಗೊಳ್ಳುವವರೆಗಾದರೂ ನಿರ್ದೇಶಕರನ್ನು ರಜೆ ಮೇಲೆ ತೆರಳಲು ನಿರ್ದೇಶಿಸಬೇಕಿತ್ತು, ‘ಎನ್ನುತ್ತಾರೆ ಗ್ರಂಥಾಲಯ ಇಲಾಖೆಯ ಅಧಿಕಾರಿಯೊಬ್ಬರು.

the fil favicon

SUPPORT THE FILE

Latest News

Related Posts