Saturday | May 23, 2026 |

ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಇಲ್ಲ, ಅನುದಾನವೂ ಬಂದಿಲ್ಲ; ಸಿದ್ದಗಂಗಾ ಮಠದಿಂದ ಸಾಲ ಪಡೆದ ವಾರ್ಡನ್‌ಗಳು

ಬೆಂಗಳೂರು; ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯಡಿಯಲ್ಲಿರುವ ಬಹುತೇಕ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರು ತುಮಕೂರಿನ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲ ಪಡೆದಿರುವುದು ಇದೀಗ ಬಹಿರಂಗವಾಗಿದೆ.

 

ಅನ್ನಭಾಗ್ಯ ಯೋಜನೆ ಮೂಲಕ ಕರ್ನಾಟಕವನ್ನು ಹಸಿವು ಮುಕ್ತಗೊಳಿಸುತ್ತೇವೆ ಎಂದು ಕಾಂಗ್ರೆಸ್‌ ಸರ್ಕಾರವು ಭರ್ಜರಿ ಪ್ರಚಾರ ಪಡೆದುಕೊಂಡಿರುವ ಬೆನ್ನಲ್ಲೇ ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ವಾರ್ಡ್‌ನ್‌ಗಳು ಸಿದ್ದಗಂಗಾ ಮಠದಿಂದ ಸಾಲ ಪಡೆದಿರುವುದು ಮುನ್ನೆಲೆಗೆ ಬಂದಿದೆ.

 

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನು ಇಲ್ಲ ಎಂಬ ಕುರಿತು ಕರ್ನಾಟಕ ರಾಷ್ಟ್ರಸಮಿತಿಯ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರಿಗೆ ಹಲವರು ದೂರು ನೀಡಿದ್ದರು. ಈ ದೂರನ್ನಾಧರಿಸಿ ಹಿಂದುಳಿದ ವರ್ಗಗಳ ಜಿಲ್ಲಾ ಮತ್ತು ತಾಲೂಕು ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಿದ್ದರು.  ಅಲ್ಲದೇ ಇವರೊಂದಿಗಿನ ಮಾತುಕತೆ ವೇಳೆಯಲ್ಲಿ ಅಕ್ಕಿ ದಾಸ್ತಾನು ಇಲ್ಲ,  ಅದೇ ರೀತಿ ಅನುದಾನವೂ ಬಿಡುಗಡೆಯಾಗಿಲ್ಲ  ಎಂಬ ಮಾಹಿತಿ ಹೊರಬಿದ್ದಿದೆ. ಅದೇ ರೀತಿ  ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲ ಪಡೆದಿರುವುದನ್ನು ಜಿಲ್ಲಾ ಮತ್ತು ತಾಲೂಕು ಕಲ್ಯಾಣಾಧಿಕಾರಿಗಳು  ಖಚಿತಪಡಿಸಿದ್ದಾರೆ.

 

ಅಕ್ಕಿ ಕೊರತೆಗೆ ಸಂಬಂಧಿಸಿದಂತೆ ಹಾಸ್ಟೆಲ್‌ಗಳ ನಿಲಯಪಾಲಕರು ಮೇಲಾಧಿಕಾರಿಗಳಿಗೆ ದಾಸ್ತಾನಿನ ಕುರಿತು ಸಲ್ಲಿಸಿದ್ದ ಮಾಹಿತಿಯೂ  ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಕ್ಕಿ ಕೊರತೆ ಉಂಟಾಗಿರುವ ಕುರಿತು ನಿಲಯಪಾಲಕರು ಲಿಖಿತವಾಗಿ  ಮಾಹಿತಿ ನೀಡಿದ್ದರೂ ಸಹ ಸರ್ಕಾರವಾಗಲೀ ಇಲಾಖೆ ಮುಖ್ಯಸ್ಥರಾಗಲೀ ಇದುವರೆಗೂ  ಕ್ರಮ ಕೈಗೊಂಡಿಲ್ಲ. ಹೀಗಾಗಿ ನಿಲಯ ಪಾಲಕರು ಬೇರೆ ದಾರಿಯಿಲ್ಲದೇ ತುಮಕೂರಿನ ಸಿದ್ದಗಂಗಾ ಮಠದಿಂದಲೇ ಅಕ್ಕಿಯನ್ನು ಸಾಲ ಪಡೆದಿದ್ದಾರೆ ಎಂಬ ಮಾಹಿತಿಯು ತಿಳಿದು ಬಂದಿದೆ.

 

ಅಲ್ಲದೇ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್‌ ತಂಗಡಗಿ ಅವರು ಸಹ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನು ಲಭ್ಯತೆ, ಕೊರತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿಯೂ ಇಲ್ಲ ಎಂದು ಗೊತ್ತಾಗಿದೆ.

 

ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಮಾಸಿಕ ಬೇಡಿಕೆ ಪಟ್ಟಿಯಂತೆ ಅಕ್ಕಿ ಹಂಚಿಕೆಯಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ಅಕ್ಕಿ ಹಂಚಿಕೆಯಾಗಿದ್ದರೂ ವಿದ್ಯಾರ್ಥಿ ನಿಲಯಗಳಿಗೆ ಬಿಡುಗಡೆ ಮಾಡಿಲ್ಲ. ಹೀಗಾಗಿ ಅಕ್ಕಿಯನ್ನು ಎತ್ತುವಳಿ ಮಾಡಿಲ್ಲ. ಮೇಲಾಧಿಕಾರಿಗಳ ನಿರ್ಲಕ್ಷ್ಯವೇ ಅಕ್ಕಿ ಪರದಾಟಕ್ಕೆ ಮೂಲ ಕಾರಣ ಎನ್ನಲಾಗಿದೆ.

 

‘ಜನವರಿಯಿಂದ ಮಾರ್ಚ್‌ವರೆಗೆ ಅಕ್ಕಿಗಾಗಿ ಬೇಡಿಕೆ ಪಟ್ಟಿ ಸಲ್ಲಿಸಿದ್ದೆವು. ಇನ್ನೂ ಅಲಾಟ್‌ಮೆಂಟ್‌ ಆಗಿಲ್ಲ. ವೇಯ್ಟ್‌ ಮಾಡುತ್ತಿದ್ದೇವೆ. ಹೆಡ್‌ ಆಫೀಸ್‌ನಿಂದ ಇನ್ನೂ ಅನುದಾನ ಬಂದಿಲ್ಲ. ನಮ್ಮ ತಾಲೂಕಲ್ಲಿ ಹಣವಿಲ್ಲ. ಇದು ನಮ್ಮ ತಾಲೂಕಿನಲ್ಲಷ್ಟೇ ಅಲ್ಲ, ಇಡೀ ರಾಜ್ಯದ ಪರಿಸ್ಥಿತಿಯೂ ಇದೇ ರೀತಿ ಇದೆ,’ ಎಂದು ತಾಲೂಕು ಮಟ್ಟದ ಅಧಿಕಾರಿಯೊಬ್ಬರು ಕರ್ನಾಟಕ ರಾಷ್ಟ್ರಸಮಿತಿಯ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರೊಂದಿಗೆ ನಡೆದ ಮಾತುಕತೆ ವೇಳೆಯಲ್ಲಿ ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ.

 

ಪ್ರತಿ ವಿದ್ಯಾರ್ಥಿಗೆ ದಿನವೊಂದಕ್ಕೆ  58 ರು.ನಂತೆ  ತಿಂಗಳಿಗೆ 1,750 ರು.ಗಳನ್ನು ಸರ್ಕಾರವು ವೆಚ್ಚ ಮಾಡುತ್ತಿದೆ. ಸಾರ್ವಜನಿಕ ಪಡಿತರ ವ್ಯವಸ್ಥೆ ಮೂಲಕ ವಿದ್ಯಾರ್ಥಿನಿಲಯಗಳು ತಲಾ ಕೆ ಜಿ ಗೆ  6.50 ರು ನಿಂದ 7 ರು. ನಂತೆ ಅಕ್ಕಿ ಖರೀದಿಸುತ್ತವೆ ಎಂದು ತಿಳಿದು ಬಂದಿದೆ.

 

ಅಕ್ಕಿ ಕೊರತೆಯಾಗಿರುವ ವಿದ್ಯಾರ್ಥಿ ನಿಲಯಗಳ ಪಟ್ಟಿ

 

ತುಮಕೂರು ನಗರದ ರೇಲ್ವೇ ಸ್ಟೇಷನ್‌ ರಸ್ತೆಯಲ್ಲಿರುವ ಮೆಟ್ರಿಕ್‌ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಗಳು,

 

ಶಿರಾ ಗೇಟ್‌ ಸಮೀಪದ ಸಾಯಿ ಬಡಾವಣೆಯಲ್ಲಿರುವ ತಾಲೂಕಿನ ವಿದ್ಯಾರ್ಥಿ ನಿಲಯ,

 

ದಿಬ್ಬೂರು, ಕ್ಯಾತ್ಸಂದ್ರದಲ್ಲಿರುವ ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಸ್ನಾತಕೋತ್ತರ ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನು ಇಲ್ಲ ಎಂಬುದು ತಿಳಿದು ಬಂದಿದೆ.

 

ಉಳಿದಂತೆ ಹಲವು ವಿದ್ಯಾರ್ಥಿ ನಿಲಯಗಳಲ್ಲಿ ಈ ತಿಂಗಳಿಗಷ್ಟೇ ಅಕ್ಕಿ  ದಾಸ್ತಾನು ಇದೆ. ಇನ್ನೂ ವಿದ್ಯಾರ್ಥಿನಿಲಯಗಳಿಗೆ ಅಕ್ಕಿ ಪೂರೈಕೆಯಾಗಿಲ್ಲ ಎಂದು ಗೊತ್ತಾಗಿದೆ. ಹೀಗಾಗಿ ಈ ವಿದ್ಯಾರ್ಥಿ ನಿಲಯಗಳಲ್ಲಿನ 1,220 ವಿದ್ಯಾರ್ಥಿಗಳ ಊಟಕ್ಕೆ ಅಕ್ಕಿ ಇಲ್ಲದಂತಾಗಿದೆ ಎಂದು ಗೊತ್ತಾಗಿದೆ.

 

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರು ‘ಕೆಲ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನು ಇಲ್ಲ ಎಂದು ನಮಗೆ ಮೌಖಿಕವಾಗಿ ದೂರು ಹೇಳಿಕೊಂಡಿದ್ದರು. ಇದರ ಬಗ್ಗೆ ನಾವು ತಾಲೂಕು ಮತ್ತು ಜಿಲ್ಲಾ ಕಲ್ಯಾಣಾಧಿಕಾರಿಗಳನ್ನು ಇಂದು ಸಂಜೆ ಸಂಪರ್ಕ ಮಾಡಿದ್ದೆವು. ಅಕ್ಕಿ ಕೊರತೆ, ಅನುದಾನ ಬಾರದೇ ಇರುವುದು ಮತ್ತು ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲ ಪಡೆದಿರುವ ಮಾಹಿತಿ ನಮಗೆ ಗೊತ್ತಾಯಿತು. ಸರ್ಕಾರ ಈ ತಕ್ಷಣವೇ ವಿದ್ಯಾರ್ಥಿ ನಿಲಯಗಳಿಗೆ ಅಕ್ಕಿ ವಿತರಣೆ ಮಾಡಬೇಕು,’ ಎಂದು ಒತ್ತಾಯಿಸಿದ್ದಾರೆ.

 

ವಿದ್ಯಾರ್ಥಿ ನಿಲಯದ ನಿಲಯ ಪಾಲಕರೊಬ್ಬರೂ ಸಹ ‘ ಕೇಂದ್ರದಿಂದ ತ್ರೈಮಾಸಿಕವಾಗಿ ಹಂಚಿಕೆಯಾದ ಅಕ್ಕಿಯನ್ನು ಎತ್ತುವಳಿ ಮಾಡಲೇಬೇಕು. ಮಾಡದಿದ್ದಲ್ಲಿ ಬೇಡಿಕೆ ಇಲ್ಲ ಎಂದು ಭಾವಿಸಿ ಮುಂದಿನ ತ್ರೈಮಾಸಿಕಕ್ಕೆ ಕೇಂದ್ರದಿಂದ ಅಕ್ಕಿ ಹಂಚಿಕೆಯಾಗುವುದಿಲ್ಲ,’ ಎಂದು ಮಾಹಿತಿ ಒದಗಿಸಿದ್ದಾರೆ.

 

ವಿಶೇಷವೆಂದರೇ ಹಿಂದುಳಿದ ವರ್ಗಗಳ ಇಲಾಖೆಗೆ 2023-24ನೇ ಸಾಲಿನಲ್ಲಿ 3,072 ಕೋಟಿ ರು ಅನುದಾನವಿದೆ. ಈ ಪೈಕಿ ಜನವರಿ 22ರ ಅಂತ್ಯಕ್ಕೆ 2,013.35 ಕೋಟಿ ರು. ಬಿಡುಗಡೆಯಾಗಿದೆ. ಇದರಲ್ಲಿ 1,194.91 ಕೋಟಿ ರು. ಖರ್ಚಾಗಿದೆ. ಇದು ಒಟ್ಟು ಅನುದಾನಕ್ಕೆ ಶೇ.38.89ರಷ್ಟು ಪ್ರಗತಿಯಾಗಿದೆ.

 

ಡಾ ಜಿ ಪರಮೇಶ್ವರ್‍‌, ಕೆ ಎನ್‌ ರಾಜಣ್ಣ ಮತ್ತು ಟಿ ಬಿ ಜಯಚಂದ್ರ ಅವರು ಪ್ರತಿನಿಧಿಸಿರುವ ತುಮಕೂರು ಜಿಲ್ಲೆಯನ್ನು ಪ್ರತಿನಿಧಿಸಿರುವುದನ್ನು ಸ್ಮರಿಸಬಹುದು.

Hot this week

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...
Please Scan to make Your Contribution

Topics

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ...

Related Articles

Popular Categories

error: Content is protected !!