ಉಗ್ರಾಣದಲ್ಲೇ ಕೊಳೆತ 20 ಕೋಟಿ ಮೊತ್ತದ ಪುಸ್ತಕಗಳು; ನಿರ್ದೇಶಕರ ವೈಫಲ್ಯವನ್ನು ಎತ್ತಿಹಿಡಿದ ತನಿಖಾ ಸಮಿತಿ

ಬೆಂಗಳೂರು;  ಸುಮಾರು 20.00 ಕೋಟಿಗೂ ಅಧಿಕ ಮೊತ್ತದಲ್ಲಿ ಖರೀದಿಸಿದ್ದ ಪುಸ್ತಕಗಳು ಜಿಲ್ಲಾ ಕೇಂದ್ರ ಗ್ರಂಥಾಲಯಗಳಿಗೆ ಸರಬರಾಜು ಆಗಿರಲಿಲ್ಲ. ಕೋಟ್ಯಂತರ ರುಪಾಯಿ ತೆತ್ತು ಖರೀದಿಸಿದ್ದ ಪುಸ್ತಕಗಳು ಉಗ್ರಾಣದಲ್ಲೇ ಕೊಳೆತು ಹೋಗಿದ್ದವು ಎಂಬುದನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದ ತನಿಖಾ ಸಮಿತಿಯು ಬಹಿರಂಗಗೊಳಿಸಿದೆ.

 

ಸಾರ್ವಜನಿಕ ಕೇಂದ್ರ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್‌ಕುಮಾರ್ ಹೊಸಮನಿ ಅವರನ್ನು ಅಮಾನತುಗೊಳಿಸಿರುವ ಬೆನ್ನಲ್ಲೇ ಅವರ ಅವಧಿಯಲ್ಲಿ ಖರೀದಿಯಾಗಿದ್ದ ಪುಸ್ತಕಗಳನ್ನು ಹೇಗೆ ನಿಷ್ಪ್ರಯೋಜಕಗೊಳಿಸಲಾಗಿತ್ತು ಎಂಬ ಸಂಗತಿಯು ಮುನ್ನೆಲೆಗೆ ಬಂದಿದೆ.

 

ಉಗ್ರಾಣದಲ್ಲೇ ಕೊಳೆತಿದ್ದ ಲಕ್ಷಾಂತರ ಪುಸ್ತಕಗಳು

 

1,44,9,969 ಪುಸ್ತಕಗಳನ್ನು ಖರೀದಿಸಿ 3 ವರ್ಷಗಳಾದರೂ ಜಿಲ್ಲಾ ಕೇಂದ್ರ ಗ್ರಂಥಾಲಯಗಳಿಗೆ ಸರಬರಾಜು ಮಾಡದೇ ಉಗ್ರಾಣದಲ್ಲಿ ವ್ಯರ್ಥವಾಗಿಡಲಾಗಿತ್ತು. ಈಗ ಅವುಗಳನ್ನು ಗ್ರಂಥಾಲಯಗಳಿಗೆ ಸರಬರಾಜು ಮಾಡಿದ ಪಕ್ಷದಲ್ಲಿ ಅವುಗಳಲ್ಲಿ ಹೆಚ್ಚಿನ ಪುಸ್ತಕಗಳು ಅದರಲ್ಲಿಯೂ ವಿಶೇಷವಾಗಿ ಪರಾಮರ್ಶನ ಸಾಮಗ್ರಿಗಳು, ಸ್ಪರ್ಧಾತ್ಮಕ ಪರೀಕ್ಷಾ ಸಂಬಂಧದ ಪುಸ್ತಕಗಳು ನಿಷ್ಪ್ರಯೋಜಕವಾಗಿರುವುದನ್ನು ತನಿಖಾ ಸಮಿತಿಯು ಪತ್ತೆ ಹಚ್ಚಿರುವುದು ಆದೇಶದಿಂದ ಗೊತ್ತಾಗಿದೆ.

 

‘ಅಂದರೆ ಗ್ರಂಥಾಲಯ ಪುಸ್ತಕಗಳು ಓದುಗರಿಗೂ ಲಭ್ಯವಾಗದೇ ಸರ್ಕಾರಕ್ಕೆ ಹಣವೂ ವೆಚ್ಚವಾಗಿ ಯೋಜನೆಯ ಮೂಲ ಉದ್ದೇಶವೇ ಈಡೇರದೇ ಸರ್ಕಾರದ ಹಣ ಪ್ರತ್ಯಕ್ಷವಾಗಿ 3-4 ವರ್ಷಗಳಿಂದ ಉಗ್ರಾಣದಲ್ಲಿ ಕೊಳೆಯುವಂತಾಗಿದೆ. ಈ ಕಾರ್ಯದಲ್ಲಿ ನಿರ್ದೇಶಕರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ವಿಫಲರಾಗಿರುತ್ತಾರೆ. ನಿರ್ದೇಶಕರ ಈ ಕ್ರಮವು ಕರ್ನಾಟಕ ಆರ್ಥಿಕ ಸಂಹಿತೆ ಅನುಚ್ಛೇಧ 15,16 ಹಾಗೂ ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳ ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ,’ ಎಂದು ತನಿಖಾ ವರದಿಯಲ್ಲಿ ವಿವರಿಸಿದೆ.

 

ಸಾರ್ವಜನಿಕ ಗ್ರಂಥಾಲಯ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 20.00 ಕೋಟಿಗೂ ಅಧಿಕ ಮೊತ್ತದಲ್ಲಿ ಖರೀದಿಸಿದ್ದ ಪುಸ್ತಕಗಳು ಉಪಯೋಗಕ್ಕೆ ಬಾರದಿರುವುದು, ಡಿಜಿಟಲ್‌ ಲೈಬ್ರರಿ ಯೋಜನೆ ಅನುಷ್ಠಾನದಲ್ಲಿ ಕೋಟ್ಯಂತರ ರುಪಾಯಿ ಪೋಲು ಮಾಡಿರುವುದು ಸೇರಿದಂತೆ ಹತ್ತಾರು  ಪ್ರಕರಣಗಳನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದ ತನಿಖಾ ಸಮಿತಿಯು ಪತ್ತೆ ಹಚ್ಚಿದೆ.

 

ಈ ಎಲ್ಲಾ ಪ್ರಕರಣಗಳನ್ನು ಪತ್ತೆ ಹಚ್ಚಿ ಪರಿಶೀಲಿಸಿರುವ ಸಮಿತಿಯು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್‌ ಹೊಸಮನಿ ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಿದೆ. ತನಿಖಾ ಸಮಿತಿಯು ನೀಡಿದ್ದ ವರದಿಯನ್ನಾಧರಿಸಿ ಸರ್ಕಾರವು 2024ರ ಮಾರ್ಚ್‌ 11ರಂದು ಸತೀಶ್‌ ಹೊಸಮನಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಅದೇಶ ಹೊರಡಿಸಿತ್ತು.

ಪುಸ್ತಕ ಖರೀದಿ ಸೇರಿ ಹತ್ತಾರು ಅಕ್ರಮಗಳನ್ನು ಹೊರಗೆಳೆದ ತನಿಖಾ ಸಮಿತಿ; ನಿರ್ದೇಶಕ ಹೊಸಮನಿ ಅಮಾನತು

 

 

ಪುಸ್ತಕ ಖರೀದಿ, ಡಿಜಿಟಲ್‌ ಗ್ರಂಥಾಲಯ ಯೋಜನೆ ಅನುಷ್ಠಾನ, ಇ-ಕಂಟೆಂಟ್‌ ಅಭಿವೃದ್ಧಿ, ಪುಸ್ತಕಗಳ ಸಾಗಾಣಿಕೆ, ಟೆಂಡರ್‌ ಅಕ್ರಮ, ನಿಯಮಗಳ ಉಲ್ಲಂಘನೆ, ಯೋಜನೆ ಅನುಷ್ಠಾನಗೂ ಮುನ್ನವೇ ಸರಬರಾಜುದಾರರು ಮತ್ತು ಸೇವಾದಾರರಿಗೂ ಮುಂಗಡವಾಗಿ ಹಣ ಪಾವತಿ, ಹಣ ದುರುಪಯೋಗ, ಅಧಿಕಾರ ದುರುಪಯೋಗವನ್ನು ಪತ್ತೆ ಹಚ್ಚಿತ್ತು.

 

ಸತೀಶ್‌ ಕುಮಾರ್‍‌ ಹೊಸಮನಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಮೊದಲು ಪತ್ರ ಬರೆದಿದ್ದ ವಿಧಾನ ಪರಿಷತ್ ಸದಸ್ಯ ಎಚ್‌ ವಿಶ್ವನಾಥ್‌ ಅವರು ಆ ನಂತರ ನಡೆದ ಬೆಳವಣಿಗೆಯಲ್ಲಿ ವಿಚಾರಣೆ ಕೈಬಿಡಬೇಕು ಎಂದು ಬರೆದಿದ್ದ ಪತ್ರ ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದರು. ಆದರೂ ತನಿಖಾ ಸಮಿತಿಯು ವಿಚಾರಣೆ ನಡೆಸಿತ್ತು.

 

ಹೊಸಮನಿ ವಿರುದ್ಧ ವಿಚಾರಣೆ ಕೈಬಿಡಲು ಸಿಎಂ ನಿರ್ದೇಶನ; ಮುನ್ನಲೆಗೆ ಬಂದ ಆಪ್ತ ಕಾರ್ಯದರ್ಶಿ ಟಿಪ್ಪಣಿ

ಹೊಸಮನಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್‌ ವಿಶ್ವನಾಥ್‌ ಪತ್ರ ಬರೆದಿದ್ದರು. ಆದರೀಗ ತನಿಖೆಯನ್ನೇ ಕೈಬಿಡಬೇಕು ಮತ್ತು ಅದೇ ಹುದ್ದೆಯಲ್ಲಿಯೇ ಮುಂದುವರೆಸಲು ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿಗೆ 2024ರ ಜನವರಿ 10ರಂದು ‌ ಪತ್ರ ಬರೆದಿದ್ದರು. ವಿಶ್ವನಾಥ್‌ ಅವರ ಈ ನಡೆಯು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿತ್ತು.

ಗ್ರಂಥಾಲಯ ಇಲಾಖೆ ಅಕ್ರಮ; ತನಿಖೆಗೆ ಬರೆದ ಪತ್ರವನ್ನೇ ಹಿಂಪಡೆದುಕೊಂಡ ಪರಿಷತ್‌ ಸದಸ್ಯ ವಿಶ್ವನಾಥ್‌

 

ಗ್ರಂಥಾಲಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ನಿರ್ದೇಶಕ  ಸತೀಶ್‌ ಕುಮಾರ್‍‌ ಹೊಸಮನಿ ಅವರು  ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ಸಲ್ಲಿಕೆಯಾಗಿತ್ತು.

 

‘ನಾನು ಹೇಳಿದ ಹಾಗೆ ಕೇಳು, ರಾತ್ರಿ ಊಟಕ್ಕೆ ರೆಡಿ ಮಾಡು’; ನಿರ್ದೇಶಕರ ವಿರುದ್ಧ ಲೈಂಗಿಕ ಕಿರಕುಳ ಆರೋಪ

 

ಇದರ ಬೆನ್ನಲ್ಲೇ ಗ್ರಂಥಾಲಯ ಇಲಾಖೆಯಲ್ಲಿ ಕಂಪ್ಯೂಟರ್‍‌, ಯುಪಿಎಸ್‌, ಝೆರಾಕ್ಸ್‌ ಉಪಕರಣ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆದಿತ್ತು.

 

ಗ್ರಂಥಾಲಯ ಇಲಾಖೆಯಲ್ಲಿ ಕಂಪ್ಯೂಟರ್‌, ಯುಪಿಎಸ್‌, ಝೆರಾಕ್ಸ್‌ ಉಪಕರಣ ಖರೀದಿ ಹಗರಣ; ತನಿಖಾ ವರದಿ

 

ವಿಶೇಷವೆಂದರೆ ಈ ಹಗರಣದಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎನ್ನಲಾಗಿದ್ದ ಬಹುತೇಕ ಅಧಿಕಾರಿಗಳು ನಿವೃತ್ತಿಯಾಗಿದ್ದರು.

 

ಕಂಪ್ಯೂಟರ್‍‌ ಖರೀದಿ ಹಗರಣ; ಕರ್ತವ್ಯಲೋಪವೆಸಗಿದ ಅಧಿಕಾರಿಗಳ ಪಟ್ಟಿ ಬಹಿರಂಗ, ಬಹುತೇಕರು ನಿವೃತ್ತಿ

 

ಕಂಪ್ಯೂಟರ್‍‌ ಮತ್ತಿತರೆ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಕುರಿತು ಕೆಲ ಅಧಿಕಾರಿಗಳಿಗೆ ಆರೋಪ ಪಟ್ಟಿಯೂ ಜಾರಿಯಾಗಿತ್ತು.

 

ಕಂಪ್ಯೂಟರ್‍‌ ಮತ್ತಿತರೆ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ; ಸರ್ಕಾರದಿಂದ ಆರೋಪ ಪಟ್ಟಿ ಜಾರಿ

ಹಿಂದಿನ ಬಿಜೆಪಿ ಸರ್ಕಾರದಲ್ಲಿಯೂ ಡಿಸಿಎಂಗಳ ಹೆಸರಿನಲ್ಲಿ 5 ಕೋಟಿ ಸಂಗ್ರಹಿಸಲು ಕೆಳ ಹಂತದ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

 

ಡಿಸಿಎಂಗಳಿಗೆ 5 ಕೋಟಿ ಸಂಗ್ರಹಿಸಲು ತಾಕೀತು; ಗ್ರಂಥಾಲಯ ನಿರ್ದೇಶಕರೇ ವಸೂಲಿಗಿಳಿದರೇ?

 

‘ಹಲವು ಗುರುತರವಾದ ಆರೋಪಗಳಿಗೆ ಗುರಿಯಾಗಿರುವ ಹೊಸಮನಿ ಅವರ ವಿರುದ್ಧ ತನಿಖೆ ನಡೆಯುತ್ತಿದೆಯಾದರೂ ನಿರ್ದೇಶಕರ ಹುದ್ದೆಯಲ್ಲಿಯೇ ಸರ್ಕಾರವು ಮುಂದುವರೆಸಿರುವುದು ಸರಿಯಲ್ಲ. ಆರೋಪಿತ ವ್ಯಕ್ತಿಯು ಅದೇ ಹುದ್ದೆಯಲ್ಲಿ ಮುಂದುವರೆದರೆ ದಾಖಲೆ, ಸಾಕ್ಷ್ಯ ನಾಶವಾಗಲಿದೆ. ಕನಿಷ್ಠ ವಿಚಾರಣೆ ಪೂರ್ಣಗೊಳ್ಳುವವರೆಗಾದರೂ ನಿರ್ದೇಶಕರನ್ನು ರಜೆ ಮೇಲೆ ತೆರಳಲು ನಿರ್ದೇಶಿಸಬೇಕಿತ್ತು, ‘ಎನ್ನುತ್ತಾರೆ ಗ್ರಂಥಾಲಯ ಇಲಾಖೆಯ ಅಧಿಕಾರಿಯೊಬ್ಬರು.

SUPPORT THE FILE

Latest News

Related Posts