Thursday | May 28, 2026 |

ಭೀಕರ ಬರದ ನಡುವೆಯೂ 1.36 ಕೋಟಿ ರು ವೆಚ್ಚದಲ್ಲಿ 7 ಹೊಸ ಕಾರುಗಳ ಖರೀದಿ

ಬೆಂಗಳೂರು; ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲ ಪರಿಸ್ಥಿತಿ ನಿಭಾಯಿಸಲು ಹಣದ ಕೊರತೆ ಮತ್ತು ಕೇಂದ್ರ ಸರ್ಕಾರವು ನೀಡುತ್ತಿರುವ ಪರಿಹಾರದ ಮೊತ್ತ ಸಾಕಾಗುತ್ತಿಲ್ಲ ಎಂದು ಪದೇ ಪದೇ ಬೀದಿಗಿಳಿಯುತ್ತಿರುವ ಹೊತ್ತಿನಲ್ಲೇ ಇದೀಗ ನವದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ಕಾರುಗಳನ್ನು ಖರೀದಿಸಲು ಮುಂದಾಗಿದೆ.

 

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಅಲ್ಪಾವಧಿಯಲ್ಲೇ ಸಚಿವರಿಗೆ 9.90 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ ಕಾರುಗಳನ್ನು ಖರೀದಿಸಿತ್ತು. ಅದೇ ಸಂದರ್ಭದಲ್ಲೂ ನವದೆಹಲಿಯಲ್ಲಿರುವ ಕರ್ನಾಟಕ ಭವನಕ್ಕೂ ಕಾರುಗಳನ್ನು ಖರೀದಿಸಿತ್ತು. ಆದರೂ ಪುನಃ ಕರ್ನಾಟಕ ಭವನಕ್ಕೆ ಹೊಸದಾಗಿ 7 ಕಾರುಗಳನ್ನು ಖರೀದಿಸಲು ಅನುಮತಿ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ನವದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ಕಾರುಗಳನ್ನು ಖರೀದಿಸಲು ಆರ್ಥಿಕ ಇಲಾಖೆಯು ಕರ್ನಾಟಕ ಪಾರದರ್ಶಕ ಕಾಯ್ದೆಯ 4(ಜಿ) ವಿನಾಯಿತಿ ನೀಡಿದೆ. ಈ ಸಂಬಂಧ 2024ರ ಏಪ್ರಿಲ್‌ 16ರಂದು ಅಧಿಸೂಚನೆ ಹೊರಡಿಸಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ನವದೆಹಲಿಯಲ್ಲಿರುವ ಕರ್ನಾಟಕ ಭವನಕ್ಕೆ ಅವಶ್ಯಕವಿರುವ 7 ವಾಹನಗಳನ್ನು ಪ್ರತಿ ವಾಹನಕ್ಕೆ  19,46,421 ರು.ಗಳಂತೆ ಒಟ್ಟಾರೆ 1,36,24,947 ರು.ಗಳ ವೆಚ್ಚದಲ್ಲಿ ಖರೀದಿಸಲು ಕೆಟಿಪಿಪಿ ಕಾಯ್ದೆ ಅಡಿ 4(ಜಿ) ವಿನಾಯಿತಿ ನೀಡಿದೆ.

 

ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮತ್ತು ಸದ್ಯ ಎದುರಾಗಿರುವ ಬರ ಪರಿಸ್ಥಿತಿ, ಬರ ಪರಿಹಾರಕ್ಕೆ ಅನುದಾನ ಒದಗಿಸಲು ಏದುಸಿರು ಬಿಡುತ್ತಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಟ್ರಾಮಾ ಕೇರ್‍‌ ಕೇಂದ್ರಕ್ಕೆ ಅನುದಾನವನ್ನೂ ಕಡಿತಗೊಳಿಸಿದೆ. ಹೀಗಿದ್ದರೂ ಕರ್ನಾಟಕ ಭವನಕ್ಕೆ ಹೊಸದಾಗಿ 7 ಕಾರುಗಳನ್ನು ಖರೀದಿಸಲು ಹೊರಟಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

 

ಟ್ರಾಮಾ ಕೇರ್ ಕೇಂದ್ರಕ್ಕೆ ಶೇ.60ರಷ್ಟು ಅನುದಾನ ಕಡಿತ; ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹಣವಿಲ್ಲವೇ?

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಓಡಾಟ ನಡೆಸಲು 2023ರಲ್ಲೇ ಹೊಸ ಕಾರನ್ನು ಖರೀದಿಸಲಾಗಿತ್ತು. ಅಲ್ಲದೇ  ಅನುದಾನ ಲಭ್ಯವಿಲ್ಲದಿದ್ದರೂ ಎಲ್ಲಾ  ಸಚಿವರಿಗೆ ಹೊಸ ಕಾರು ಖರೀದಿಸಲು ಹೆಚ್ಚುವರಿಯಾಗಿ ಅನುದಾನ ಒದಗಿಸಿತ್ತು.  ಅಲ್ಲದೇ ಹಳೆಯ ವಾಹನಗಳನ್ನು ಬದಲಾಯಿಸುವುದನ್ನು ಒಳಗೊಂಡಂತೆ ಹೊಸ ವಾಹನಗಳನ್ನು ಖರೀದಿಸಲು ಸಂಪೂರ್ಣವಾಗಿ ತಡೆಹಿಡಿಯಲಾಗಿತ್ತು. ಆದರೂ ರಾಜ್ಯ ಕಾಂಗ್ರೆಸ್‌ ಸರ್ಕಾರವು ಅನುದಾನವಿಲ್ಲದಿದ್ದರೂ  ಸಚಿವರಿಗೆ ಹೊಸ  ಕಾರುಗಳನ್ನು ಖರೀದಿಸಲು  9.90 ಕೋಟಿ ರು. ಅನುದಾನ ಒದಗಿಸಿತ್ತು.

 

ಹೊಸ ವಾಹನಗಳನ್ನು ಖರೀದಿಸುವುದಕ್ಕೆ ಸಂಬಂಧಿಸಿದಂತೆ ಹಿಂದಿನ ಸರ್ಕಾರವು  26.00 ಲಕ್ಷ ರು. ಮಿತಿ ವಿಧಿಸಿತ್ತು.  ಅದನ್ನು ತೆರವುಗೊಳಿಸದೆಯೇ 30.00 ಲಕ್ಷ ರು.ವೆಚ್ಚದಲ್ಲಿ ಸಚಿವರಿಗೆ ಹೊಸ ವಾಹನಗಳನ್ನು ಖರೀದಿಸುವ ಮೂಲಕ  ಸುತ್ತೋಲೆಯನ್ನೇ ಉಲ್ಲಂಘಿಸಿತ್ತು.

 

ರಾಜ್ಯದಲ್ಲಿ ಅತಿವೃಷ್ಟಿಯಿಂದ ಆದ ಪ್ರವಾಹ ಪೀಡಿತ ಕುಟುಂಬಗಳ ಪುನರ್‌ ವಸತಿ ಕಲ್ಪಿಸಲು ಹಾಗೂ ರಸ್ತೆ, ಸೇತುವೆ ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ಸುಸ್ಥಿತಿಗೆ ತರಲು ಸಂಪನ್ಮೂಲವನ್ನು ಕ್ರೋಢಿಕರಿಸಲು 2009ರ ಅಕ್ಟೋಬರ್‌ 21ರಂದೇ ಆರ್ಥಿಕ ಇಲಾಖೆಯು ಹಲವು ನಿರ್ಬಂಧಗಳನ್ನು ವಿಧಿಸಿ ಸುತ್ತೋಲೆ ಹೊರಡಿಸಿತ್ತು. 14 ವರ್ಷಗಳ ಹಿಂದೆಯೇ ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆದುಕೊಂಡಿಲ್ಲ. ಹೀಗಾಗಿ ಇದೇ ಸುತ್ತೋಲೆಯು 2024ರಲ್ಲಿಯೂ ಚಾಲ್ತಿಯಲ್ಲಿದೆ.

 

ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರ್ಥಿಕ ಇಲಾಖೆಯು ನೇರಾ ನೇರ ಸುತ್ತೋಲೆಯನ್ನು ಉಲ್ಲಂಘಿಸಿ 9.90 ಕೋಟಿ ರು. ವೆಚ್ಚದಲ್ಲಿ ಹೊಸ ಕಾರುಗಳನ್ನು ಖರೀದಿಸಿದೆ. ಅಲ್ಲದೇ 2009ರಲ್ಲಿ ಹೊರಡಿಸಿದ್ದ ಸುತ್ತೋಲೆ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಆದಿಯಾಗಿ ಯಾವೊಬ್ಬ ಅಧಿಕಾರಿಯೂ ಕಡತದಲ್ಲಿ ಉಲ್ಲೇಖಿಸಿಲ್ಲ, ಪ್ರಸ್ತಾವಿಸಿಯೂ ಇರಲಿಲ್ಲ.

 

ಸುತ್ತೋಲೆಯಲ್ಲೇನಿತ್ತು?

 

ಯಾವುದೇ ಹೊಸ ಹುದ್ದೆಗಳನ್ನು ಸೃಜಿಸುವ ಹಾಗೂ ಭರ್ತಿ ಮಾಡುವುದನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಕೆಲವು ವಿಶೇಷ ಪ್ರಕರಣಗಳಲ್ಲಿ ಅಂದರೆ ಯೋಜನಾ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕಾದಲ್ಲಿ ಅಥವಾ ಕೇಂದ್ರ ಸಹಾಯದ ಕಾರ್ಯಕ್ರಮಗಳಲ್ಲಿ ಆಡಳಿತ ಇಲಾಖೆಯು ಆರ್ಥಿಕ ಇಲಾಖೆಯ ಪರಿಶೀಲನೆಗೆ ಅಂತಹ ಪ್ರಸ್ತಾವನೆ ಕಳಿಸಬೇಕು.

 

ಹಳೆಯ ವಾಹನಗಳನ್ನು ಬದಲಾಯಿಸುವುದನ್ನು ಒಳಗೊಂಡಂತೆ ಹೊಸ ವಾಹನಗಳನ್ನು ಖರೀದಿಸುವುದನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಸಹಾಯನುದಾನಕ್ಕೆ ಒಳಪಡಿಸುವ ಯಾವುದೇ ಹೊಸ ಪ್ರಕರಣಗಳನ್ನು ಪರಿಗಣಿಸಬಾರದು. ವಿದೇಶಿ ನೆರವಿನ ಒಡಂಬಡಿಕೆಗೆ ಸಂಬಂಧಿಸಿದ ಪ್ರಕರಣಗಳ ಹೊರತಾಗಿ ಯಾವುದೇ ವಿದೇಶ ಪ್ರವಾಸವನ್ನು ಕರ್ನಾಟಕ ಸರ್ಕಾರ ಕೈಗೊಳ್ಳಬಾರದು. ತಾರಾ (ಸ್ಟಾರ್‌) ಹೋಟೆಲ್‌ಗಳಲ್ಲಿ ಅಧಿಕೃತ ಸಭೆಗಳನ್ನು ಕಾರ್ಯಾಗಾರಗಳನ್ನು ನಡೆಸಬಾರದು.

 

ಸಚಿವರು ಮತ್ತು ಸಚಿವ ಸ್ಥಾನಮಾನದ ಹೊಂದಿದ ಅಧಿಕಾರೇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ದರ್ಜೆ ಅಧಿಕಾರಿಗಳು, ಸಾರ್ವಜನಿಕ ಉದ್ದಿಮೆಗಳ ಎಲ್ಲಾ ಅಧ್ಯಕ್ಷರುಗಳು ಮತ್ತು ಅಧಿಕಾರಿಗಳು ಮಿತವ್ಯಯ ದರ್ಜೆಯಲ್ಲಿ ವಿಮಾನ ಪ್ರಯಾಣ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿತ್ತು.

 

ಆದರೆ ಸಚಿವರ ಒತ್ತಡ ಮತ್ತು ಬೇಡಿಕೆಗೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 30.00 ಲಕ್ಷ ರು. ವೆಚ್ಚದಲ್ಲಿ ಹೊಸ ಕಾರುಗಳನ್ನು ಖರೀದಿಸಲು ಅನುಮೋದನೆ ನೀಡಿ ಸುತ್ತೋಲೆಯನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಹೊಸ ಕಾರು ಖರೀದಿಗೆ ಹೆಚ್ಚುವರಿ ಅನುದಾನ

 

33 ನೂತನ ಸಚಿವರುಗಳಿಗೆ ಹೊಸ ಇನ್ನೋವಾ ಹೈಕ್ರಾಸ್‌ ಹೈಬ್ರಿಡ್‌ ವಾಹನಗಳನ್ನು ಪ್ರತಿ ವಾಹನಕ್ಕೆ 30.00 ಲಕ್ಷ ರು.ನಂತೆ 9.90 ಕೋಟಿ ರು. ವೆಚ್ಚದಲ್ಲಿ ಖರೀದಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 4(ಜಿ) ವಿನಾಯಿತಿ ಕೋರಿ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 2023-24ನೇ ಸಾಲಿನಲ್ಲಿ ಸಚಿವಾಲಯ ಮತ್ತು ಇತರೆ ಸರ್ಕಾರಿ ಅಧಿಕಾರಿಗಳಿಗೆ ( ಲೆಕ್ಕ ಶೀರ್ಷಿಕೆ; 4070-00-800-0-10) ಕಾರು ಖರೀದಿಗೆ ಅನುದಾನ ಲಭ್ಯವಿರಲಿಲ್ಲ.

ಸಚಿವರಿಗೆ ಹೊಸ ಕಾರುಗಳು; ಹೆಚ್ಚುವರಿ ಅನುದಾನ, ಖರೀದಿ ಮೊತ್ತ ಮಿತಿಯೂ ಹೆಚ್ಚಳ, ಸುತ್ತೋಲೆ ಉಲ್ಲಂಘನೆ

ಈ ಲೆಕ್ಕ ಶೀರ್ಷಿಕೆ ( 4070-00-800-0-10ಯಲ್ಲಿ )ಯಲ್ಲಿ 500.00 ಲಕ್ಷ ರು. ಮಾತ್ರ ಅನುದಾನವಿತ್ತು. ಆದರೆ 2023ರ ಆಗಸ್ಟ್‌ 13ರವರೆಗೆ 64.94 ಲಕ್ಷ ರು. ವೆಚ್ಚವಾಗಿ 435.06 ಲಕ್ಷ ರು. ಮಾತ್ರ ಲಭ್ಯವಿತ್ತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕರೂ ಆಗಿರುವ ಎ ಎಸ್‌ ಪೊನ್ನಣ್ಣ ಅವರಿಗೆ ಹೊಸ ವಾಹನ ಒದಗಿಸಲು ಆರ್ಥಿಕ ಇಲಾಖೆಯು ಸಹಮತಿ ವ್ಯಕ್ತಪಡಿಸಿತ್ತು. ಇದಕ್ಕಾಗಿ 30.00 ಲಕ್ಷ ರು.ಗಳನ್ನು ಕಾಯ್ದಿರಿಸಿದ್ದಲ್ಲಿ ಈ ಲೆಕ್ಕ ಶೀರ್ಷಿಕೆಯಲ್ಲಿ 405.06 ಲಕ್ಷ ರು. ಮಾತ್ರ ಲಭ್ಯವಿತ್ತು. ಹೀಗಾಗಿ ಸಚಿವರಿಗೆ ಹೊಸ ಕಾರುಗಳನ್ನು ಖರೀದಿಸಲು ಅನುದಾನವೇ ಇರಲಿಲ್ಲ.

 

 

‘ಆದ್ದರಿಂದ 33 ನೂತನ ಸಚಿವರುಗಳಿಗೆ ಹೊಸ ಇನ್ನೋವಾ ಹೈಕ್ರಾಸ್‌-ಹೈಬ್ರಿಡ್‌ ವಾಹನಗಳನ್ನು ಪ್ರತಿ ವಾಹನಕ್ಕೆ 30.00 ಲಕ್ಷ ರು.ನಂತೆ ಒಟ್ಟಾರೆ 9.90 ಕೋಟಿ ರು. ಹೆಚ್ಚುವರಿ ಅನುದಾನಕ್ಕೆ ಸಂಬಂಧಿಸಿದಂತೆ ( ಲೆಕ್ಕ ಶೀರ್ಷಿಕೆ; 4070-00-800-0-10) ಯಲ್ಲಿ ವಾಹನಗಳ ಖರೀದಿಗೆ ಲಭ್ಯವಿದ್ದ 405.06 ಲಕ್ಷ ರುಗಳಲ್ಲಿ ಸಾಂಕೇತಿವಾಗಿ 1 ಲಕ್ಷ ಹೊರತುಪಡಿಸಿದಲ್ಲಿ ಬಾಕಿ 585.94 ಲಕ್ಷ ರು. ಹೆಚ್ಚುವರಿಯಾಗಿ ಒದಗಿಸಿ ಬಿಡುಗಡೆ ಮಾಡಬೇಕಾಗಿದೆ,’ ಎಂದು ಆರ್ಥಿಕ ಇಲಾಖೆಯು ತನ್ನ ಟಿಪ್ಪಣಿ ಹಾಳೆಯಲ್ಲಿ ವಿವರಿಸಿತ್ತು. ಇದಷ್ಟೇ ಅಲ್ಲ ಹಿಂದಿನ ಸರ್ಕಾರವು ಹೊಸ ಕಾರುಗಳ ಖರೀದಿಗೆ 23.00ಲಕ್ಷ ರು.ನಿಂದ 26.00 ಲಕ್ಷ ರು.ಕ್ಕೆ ನಿಗದಿಪಡಿಸಿ ಮಿತಿಯನ್ನು ಹೇರಿತ್ತು.

 

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

Related Articles

Popular Categories

error: Content is protected !!