Tuesday | May 26, 2026 |

ನವ ನಗರೋತ್ಥಾನ; 15 ತಿಂಗಳಾದರೂ ಬಿಡುಗಡೆಯಾಗದ ಅನುದಾನ, ಬರಿದಾದ ಬೊಕ್ಕಸ?

ಬೆಂಗಳೂರು; ಮುಖ್ಯಮಂತ್ರಿ ನವ ನಗರೋತ್ಥಾನ ಕ್ರಿಯಾ ಯೋಜನೆಗೆ 15 ತಿಂಗಳ ಹಿಂದೆಯೇ ಅನುಮೋದನೆ ದೊರೆತಿದ್ದರೂ ನಗರಾಭಿವೃದ್ಧಿ ಇಲಾಖೆಯು ಅನುದಾನ ಬಿಡುಗಡೆ ಮಾಡುತ್ತಿಲ್ಲ. ಈ ಅನುದಾನಕ್ಕಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರು ವಿಕಾಸಸೌಧ ಮತ್ತು ವಿಧಾನಸೌಧ ಮೆಟ್ಟಿಲು ಹತ್ತಿ ಬಸವಳಿದು ಹೋಗಿದ್ದಾರೆ.

 

ರಾಜಧಾನಿಯ ಅಭಿವೃದ್ಧಿಗಾಗಿ ಈ ಹಿಂದಿನ ಬಿಜೆಪಿ ಸರ್ಕಾರವು ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಒದಗಿಸಿದ್ದ 8149.27 ಕೋಟಿ ರೂ. ಪೈಕಿ 485.06 ಕೋಟಿ ವೆಚ್ಚದ ಕಾಮಗಾರಿಗಳನ್ನು ಈಗಿನ ಕಾಂಗ್ರೆಸ್‌ ಸರಕಾರವು ಕೈಬಿಟ್ಟಿರುವ ನಡುವೆಯೇ ಪ್ರತಿಪಕ್ಷಗಳ ಶಾಸಕರು ಪ್ರತಿನಿಧಿಸಿರುವ ಕ್ಷೇತ್ರಗಳಿಗೆ 15 ತಿಂಗಳಾದರೂ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ವಿಚಾರವು ಮುನ್ನೆಲೆಗೆ ಬಂದಿದೆ.

 

ಮುಖ್ಯಮಂತ್ರಿ ನವ ನಗರೋತ್ಥಾನ ಯೋಜನೆಯಡಿಯಲ್ಲಿ ಅನುದಾನ ಬಿಡುಗಡೆ ಮಾಡುವಲ್ಲಿ ನಗರಾಭಿವೃದ್ಧಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಈ ಸಂಬಂಧ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಶಾಸಕರು ಮನವಿ, ದೂರುಗಳನ್ನು ಸಲ್ಲಿಸಿದ್ದಾರೆ. ಈ ದೂರುಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಕ್ರಿಯಾ ಯೋಜನೆಗಳಿಗೆ ಅನುಮೋದನೆ ದೊರೆತಿರುವ ಪ್ರಸ್ತಾವನೆಗಳಿಗೆ ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕಮಿಷನ್‌ ಗಾಗಿ ಬೇಡಿಕೆ ಇರಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

 

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಹಲವು ಕ್ಷೇತ್ರಗಳಿಗೆ ಅನುದಾನದ ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿರುವ ಅನುದಾನವನ್ನು ಕಾಂಗ್ರೆಸ್‌ ಸರ್ಕಾರವು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡಿಲ್ಲ.
ಈ ಸಂಬಂಧ ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್‌ ಮುನಿರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 2024ರ ಮೇ 8ರಂದೇ ಪತ್ರ ಬರೆದಿದ್ದಾರೆ. ಅಲ್ಲದೇ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರ ಗಮನಕ್ಕೂ ತಂದಿದ್ದಾರೆ ಎಂದು ಗೊತ್ತಾಗಿದೆ.

 

ಪತ್ರದಲ್ಲೇನಿದೆ?

 

ಬೆಂಗಳೂರಿನ ದಾಸರಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ 8 ವಾರ್ಡ್‌ಗಳ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ದೊರೆತಿತ್ತು. ಸರ್ಕಾರದ ಆದೇಶದಂತೆ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿಲ್ಲಿ 110 ಕೋಟಿ ರು. ಅಂದಾಜು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ಸಿಕ್ಕಿತ್ತು.

 

110 ಕೋಟಿ ರು ಅನುದಾನದ ಪೈಕಿ ಈಗಾಗಲೇ ಬೃಹತ್‌ ರಸ್ತೆ ವಿಭಾಗದ ವತಿಇಂದ ಚೊಕ್ಕಸಂದ್ರ ವಾರ್ಡ್‌ ನಂ 39ರಲ್ಲಿ 20 ಕೋಟಿ ರು.ಗಳ ಕಾಮಗಾರಿಗಳಿಗೆ ಕಾರ್ಯಾದೇಶವಾಗಿದ್ದು ಕೆಲಸ ಪ್ರಗತಿಯಲ್ಲಿದೆ. ಇತ್ತೀಚೆಗೆ ಉಳಿದ 90 ಕೋಟಿ ರು.ಗಳ ಅನುದಾನದ ಪೈಕಿ 12 ಕೋಟಿ ರು.ಗಳ ಅನುದಾನದ ಪ್ರಸ್ತಾವನೆಗೆ ಮಂಜೂರಾತಿಯಾಗಿರುವುದು ಪತ್ರದಿಂದ ತಿಳಿದು ಬಂದಿದೆ.

 

ಉಳಿಕೆ 78 ಕೋಟಿ ರು. ಅನುದಾನಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ 2023ರ ಜನವರಿ 12ರಲ್ಲಿ ನಗರಾಭಿವೃದ್ಧಿ ಇಲಾಖೆಗೆ ಅನುಮೋದನೆ ಕೋರಿ ಪ್ರಸ್ತಾವನೆ ಸಲ್ಲಿಸಿರುವುದು ಗೊತ್ತಾಗಿದೆ.

 

ಒಟ್ಟು 5 ಪ್ರಸ್ತಾವನೆಗಳಿಗೆ ಸುಮಾರು 15 ತಿಂಗಳು ಕಳೆದರೂ ಸಹ ನಗರಾಭಿವೃದ್ಧಿ ಇಲಾಖೆಯಿಂದ ಅನುಮೋದನೆ ದೊರೆತಿರುವುದಿಲ್ಲ. ಸರ್ಕಾರವು ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದರೂ ಸಹ ಇದುವರೆಗೂ ನಗರಾಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆಗೆ ಅನುಮೋದನೆ ನೀಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

 

‘ಈ ಪ್ರಸ್ತಾವನೆಗಳಿಗೆ ತುರ್ತಾಗಿ ಅನುಮೋದನೆ ನೀಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು,’ ಎಂದು ದಾಸರಹಳ್ಳಿ ಶಾಸಕ ಎಸ್‌ ಮುನಿರಾಜು ಅವರು 2024ರ ಮೇ 28ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ಗೊತ್ತಾಗಿದೆ.

 

ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಐದು ಹಳ್ಳಿಗಳ ರಸ್ತೆ ಅಭಿವೃದ್ಧಿ ಮತ್ತು ದುರಸ್ತಿಗೆ ಹೆಚ್ಚುವರಿಯಾಗಿ ಒದಗಿಸಿದ್ದ 25 ಕೋಟಿ ರೂ. ವೆಚ್ಚದ ಕಾಮಗಾರಿಗಳ ಟೆಂಡರ್‌ಗೆ ನೀಡಲಾಗಿದ್ದ ಅನುಮೋದನೆಯನ್ನೂ ಹಿಂಪಡೆದಿರುವುದನ್ನು ಸ್ಮರಿಸಬಹುದು.

 

ಅಕ್ಟೋಬರ್ 2021 ರಲ್ಲಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಬಿಜೆಪಿ ಸರ್ಕಾರವು ಬೆಂಗಳೂರಿಗೆ ಅಮೃತ್ ನಗರೋತ್ಥಾನ ಯೋಜನೆಯಡಿ ರೂ.6,000 ಕೋಟಿ ಅನುದಾನವನ್ನು ಘೋಷಿಸಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ರಸ್ತೆ ಮೂಲಸೌಕರ್ಯ, ಕೆರೆಗಳು, ಮಳೆನೀರು ಚರಂಡಿಗಳು, ಆಸ್ಪತ್ರೆಗಳು ಮುಂತಾದ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿತ್ತು.

 

ಅಮೃತ್‌ ನಗರೋತ್ಥಾನ ಯೋಜನೆಯಡಿ 2,146 ಕಿ.ಮೀ ರಸ್ತೆಗಳ ಅಭಿವೃದ್ಧಿ (ಒಳಚರಂಡಿ ಸೇರಿದಂತೆ), 67 ಕೆರೆಗಳು ಮತ್ತು 11 ಹೊಸ ಉದ್ಯಾನಗಳ ಅಭಿವೃದ್ಧಿ, ಅಸ್ತಿತ್ವದಲ್ಲಿರುವ 15 ಉದ್ಯಾನವನಗಳ ನವೀಕರಣ, 42 ಹೊಸ ಶಾಲಾ ಕಟ್ಟಡಗಳು ಮತ್ತು ಅಸ್ತಿತ್ವದಲ್ಲಿರುವ 26 ಶಾಲೆಗಳ ನವೀಕರಣ, ನಿರ್ಮಾಣ 40 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 84 ಹಳೆಯ ಪ್ರಾಥಮಿಕ ಕೇಂದ್ರಗಳ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿತ್ತು.

 

2022-23ರಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ಹೊಸ ಶಾಲಾ ಕಟ್ಟಡಗಳ ನಿರ್ಮಾಣದ ರೂಪದಲ್ಲಿ ಬಿಬಿಎಂಪಿ ಶಾಲೆಗಳ ನವೀಕರಣವನ್ನು ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿಯ ಬಜೆಟ್‌ನಲ್ಲಿ ಉಲ್ಲೇಖಿಸಿತ್ತು. ಅಸ್ತಿತ್ವದಲ್ಲಿರುವ ಶಾಲೆಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಮತ್ತು ತರಗತಿ ಕೊಠಡಿಗಳನ್ನು ನಿರ್ಮಿಸಲು ಕಟ್ಟಡಗಳನ್ನು ಖಚಿತಪಡಿಸಿಕೊಳ್ಳಲು ಬಳಸಲಾಗಿದೆ ಎಂದು ತಿಳಿದು ಬಂದಿದೆ.

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

Related Articles

Popular Categories

error: Content is protected !!