Saturday | July 18, 2026 |

‘ದ ಪಾಲಿಸಿ ಫ್ರಂಟ್‌’ ಗೆ ಗುತ್ತಿಗೆ ನವೀಕರಣಕ್ಕೆ ಸಿಎಂಗೆ ಕಡತ ಸಲ್ಲಿಕೆ!; ಈ ಬಾರಿಯೂ ಟೆಂಡರ್‍‌ನಿಂದ ವಿನಾಯಿತಿ?

ಬೆಂಗಳೂರು; ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ  ಪ್ರಚಾರ ಮಾಡುವ ಸಂಬಂಧ ‘ದ ಪಾಲಿಸಿ ಫ್ರಂಟ್‌’ ಗೆ ಒಂದು ವರ್ಷದ ಹಿಂದೆ ನೀಡಿದ್ದ ಹೊರಗುತ್ತಿಗೆಯನ್ನು ನವೀಕರಿಸಲು ಎಂಸಿಅಂಡ್‌ಎ ಕಂಪನಿಯು ಮುಂದಾಗಿದೆ. ಇದಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿಗಳಿಗೆ ಕಡತ ಸಲ್ಲಿಕೆಯಾಗಿದೆ!

 

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಕೆಲವೇ ಕೆಲವೇ ತಿಂಗಳಲ್ಲಿ  ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಚಾರ ಮಾಡಲು ಮುಂದಾಗಿತ್ತು. ಈ ಸೇವೆಗಳನ್ನು ಪಡೆಯಲು ಯಾವುದೇ  ಸ್ಪರ್ಧಾತ್ಮಕ ಟೆಂಡರ್ ಕರೆದಿರಲಿಲ್ಲ.  ದರಪಟ್ಟಿಯನ್ನು ಪಡೆದು ಪಾಲಿಸಿ ಫ್ರಂಟ್‌ ಗೆ 7.20 ಕೋಟಿ ರು. ವೆಚ್ಚದಲ್ಲಿ  ಗುತ್ತಿಗೆ ನೀಡಲಾಗಿತ್ತು. ಇದೀಗ ಹೊರಗುತ್ತಿಗೆಯ ಒಂದು ವರ್ಷ ಪೂರ್ಣಗೊಳಿಸಿದೆ. ಹೀಗಾಗಿ ಇದೇ ಕಂಪನಿಯಿಂದಲೇ ಸೇವೆಗಳನ್ನು ಪಡೆಯಲು ಎಂಸಿ ಅಂಡ್‌ ಎ ಕಂಪನಿಯು ಮುಂದಾಗಿದೆ.

 

ಇದಕ್ಕೆ ಸಂಬಂಧಿಸಿದ ಕಡತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿದೆ ಎಂದು ಎಂಸಿ ಅಂಡ್ ಎ ನ ಹಿರಿಯ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಖಚಿತಪಡಿಸಿದ್ದಾರೆ.

 

ಗುತ್ತಿಗೆ ಅವಧಿ ಪೂರ್ಣಗೊಂಡ ನಂತರ ಇದೇ ಸೇವೆಗಳ ಪಡೆಯುವ ತುರ್ತು ಮತ್ತು ಅಗತ್ಯತೆಗಳಿದ್ದರೆ ಹೊಸದಾಗಿ ಸ್ಪರ್ಧಾತ್ಮಕ ಟೆಂಡರ್ ಆಹ್ವಾನಿಸಬೇಕಿತ್ತು. ಆದರೆ ಈ ಯಾವ ಪ್ರಕ್ರಿಯೆಯನ್ನೂ ನಡೆಸದೆಯೇ ನೇರವಾಗಿ ಗುತ್ತಿಗೆಯನ್ನೇ ನವೀಕರಿಸಲು ಕಡತ ಸಲ್ಲಿಸಿರುವುದಕ್ಕೆ ಅಧಿಕಾರಿಗಳ ವಲಯದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

 

ಮತ್ತೊಂದು ಸಂಗತಿ ಎಂದರೇ ದ ಪಾಲಿಸಿ ಫ್ರಂಟ್‌  ನೀಡುತ್ತಿರುವ ಸೇವೆಗಳನ್ನು ನೀಡಲು ಮತ್ತೊಂದು ಕಂಪನಿಯು ಎಂಸಿ ಅಂಡ್ ಎ ಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಆ ಕಂಪನಿಯ ಪ್ರಸ್ತಾವನೆಯನ್ನು ಎಂಸಿ ಅಂಡ್ ಎ ಯು ತಿರಸ್ಕರಿಸಿದೆ ಎಂದು ಗೊತ್ತಾಗಿದೆ. ಈ ಕಂಪನಿಯ ಹಿಂದೆ ಸರ್ಕಾರದ ಮತ್ತೊಬ್ಬ ಪ್ರಭಾವಿ ಸಚಿವರೊಬ್ಬರಿದ್ದರು. ಆದರೂ ಸಹ ಅವರ ಪ್ರಸ್ತಾವನೆಯನ್ನು ಹಿಂದಿಕ್ಕುವಲ್ಲಿ ದ ಪಾಲಿಸಿ ಫ್ರಂಟ್‌ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.

 

‘ದ ಪಾಲಿಸಿ ಫ್ರಂಟ್‌’ ಕಂಪನಿಗೆ ನೀಡಿದ್ದ ಹೊರಗುತ್ತಿಗೆ ಕುರಿತು ‘ದಿ ಫೈಲ್‌’ ಸರಣಿ ವರದಿಗಳನ್ನು ಪ್ರಕಟಿಸಿತ್ತು.

 

ವಾಟ್ಸಾಪ್‌ ಸಂಭಾಷಣೆಗೆ 1.45 ಕೋಟಿ ರು. ಸೇರಿದಂತೆ ಒಟ್ಟಾರೆ 1.71 ಕೋಟಿ ರು. ವೆಚ್ಚವಾಗಲಿದೆ ಎಂದು ‘ದ ಪಾಲಿಸಿ ಫ್ರಂಟ್‌’  ಸಲ್ಲಿಸಿದ್ದ ವಾಣಿಜ್ಯ ಪ್ರಸ್ತಾವನೆಯು ಬಹಿರಂಗವಾಗಿತ್ತು.

 

ಈ ಸಂಬಂಧ ‘ದಿ ಫೈಲ್‌’ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಆರ್ಥಿಕ ಇಲಾಖೆಯು ಒದಗಿಸಿದ್ದ  42 ಪುಟಗಳ ದಾಖಲೆಗಳಲ್ಲಿ ‘ದ ಪಾಲಿಸಿ ಫ್ರಂಟ್‌’ನ ವಾಣಿಜ್ಯ ಪ್ರಸ್ತಾವನೆ ಮತ್ತು ಮನವಿ ಮಾತ್ರ ಇತ್ತು. ಇದನ್ನು ಹೊರತುಪಡಿಸಿದರೆ ಈ ಸೇವೆಗಳ ಕುರಿತಾಗಿ ಪೂರ್ವಾನುಭವ ಹೊಂದಿರುವ ಬಗ್ಗೆ ಯಾವ ದಾಖಲೆಗಳೂ ಇಲ್ಲ. ಮತ್ತು ಆರ್ಥಿಕ ಇಲಾಖೆಯ (ವೆಚ್ಚ-7) ಅಧಿಕಾರಿಗಳೂ ಸಹ ಇದರ ಬಗ್ಗೆ ಎಲ್ಲಿಯೂ ಚಕಾರ ಎತ್ತಿರಲಿಲ್ಲ.

 

‘ದ ಪಾಲಿಸಿ ಫ್ರಂಟ್‌’ನ ವಾಣಿಜ್ಯ ಪ್ರಸ್ತಾವನೆ ಬಹಿರಂಗ; ವಾಟ್ಸಾಪ್‌ ಸಂಭಾಷಣೆ ಸೇರಿ 1.45 ಕೋಟಿ ವೆಚ್ಚ

 

ಈ ಕಂಪನಿಗೆ ನೀಡಿದ್ದ ಹೊರಗುತ್ತಿಗೆ ವಿಚಾರವು ಸದನದಲ್ಲಿಯೂ ಪ್ರತಿಧ್ವನಿಸಿತ್ತು.

 

 

 

‘ಪಟ್ಟು, ಮಟ್ಟು, ಗುಟ್ಟು ರಟ್ಟಾಗ್ಬೇಕು, ಮಟ್ಟು ಯಾರಂತ ನೋಡ್ಬೇಕು’; ಸದನದಲ್ಲಿ ಪ್ರತಿಧ್ವನಿಸಿದ ‘ದಿ ಫೈಲ್‌’ ವರದಿ

 

ಸುಳ್ಳು ಸುದ್ದಿಗಳ  ತಡೆಗಟ್ಟುವಿಕೆ ಮತ್ತು ಸರ್ಕಾರದ ಸಾಧನೆ, ಯೋಜನೆಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ನಿರ್ವಹಣೆ ಮಾಡಲು ಕೆಎಸ್‌ಎಂಸಿ ಅಂಡ್‌ ಎ ಮೂಲಕ ಕಾರ್ಯಾದೇಶ ಪಡೆದುಕೊಂಡಿರುವ ‘ದ ಪಾಲಿಸಿ ಫ್ರಂಟ್‌’ ಗೆ ಕಚೇರಿಯೇ ಇಲ್ಲ ಎಂಬ ಸಂಗತಿಯು ಚರ್ಚೆಗೆ ಗ್ರಾಸವಾಗಿತ್ತು.

 

7.20 ಕೋಟಿ ರು ಗುತ್ತಿಗೆ; ಕಾರ್ಯಾದೇಶದಲ್ಲಿರುವ ವಿಳಾಸದಲ್ಲಿ ‘ದ ಪಾಲಿಸಿ ಫ್ರಂಟ್‌’ ಕಚೇರಿಯೇ ಇಲ್ಲ

 

ಆಡಳಿತ ಕಾರ್ಯತಂತ್ರ ಮತ್ತು ಆರ್ಥಿಕ ಹಿತಾಸಕ್ತಿ ವಿಷಯ, ಮಾಹಿತಿಗಳು ಒಳಗೊಂಡಿದೆ ಎಂದು ಕುಂಟು ನೆಪವೊಡ್ಡಿ ‘ದ ಪಾಲಿಸಿ ಫ್ರಂಟ್‌’ ಗೆ ನೀಡಿರುವ ಗುತ್ತಿಗೆ ಸಂಬಂಧಿತ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ನೀಡಲು ಸರ್ಕಾರವು ನಿರಾಕರಿಸಿದ್ದು  ಚರ್ಚೆಗೆ ಗ್ರಾಸವಾಗಿತ್ತು.  ಈ ಕುರಿತು ಟ್ವೀಟ್‌ ಮಾಡಿದ್ದ  ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಅವರು ಪಾರದರ್ಶಕತೆ ಇಲ್ಲದೆಯೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ ಎಂದು ಪ್ರಶ್ನಿಸಿದ್ದರು.

ದ ಪಾಲಿಸಿ ಫ್ರಂಟ್‌ಗೆ ಗುತ್ತಿಗೆ; ಪಾರದರ್ಶಕತೆಯಿಲ್ಲದೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ?

 

ಮುಕ್ತ  ಟೆಂಡರ್‍‌ ಆಹ್ವಾನಿಸದೆಯೇ ನಿರ್ದಿಷ್ಟವಾಗಿ ‘ದ ಪಾಲಿಸಿ ಫ್ರಂಟ್‌’ ನಿಂದಲೇ ಸೇವೆ ಪಡೆಯಲು ಎಂಸಿಅಂಡ್‌ಎಯು ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಆರ್ಥಿಕ ಇಲಾಖೆಯು ನೀಡಿದ್ದ  4(ಜಿ) ವಿನಾಯಿತಿಯು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದ ಸಮಗ್ರ ಕಡತವನ್ನು ಒದಗಿಸಲು ನಿರಾಕರಿಸಿರುವುದು ‘ದ ಪಾಲಿಸಿ ಫ್ರಂಟ್‌’ನ ಸುತ್ತ ಎದ್ದಿರುವ ಅನುಮಾನಗಳನ್ನು ಮತ್ತಷ್ಟು ಬಲಪಡಿಸಿದಂತಾಗಿತ್ತು.

 

‘ದ ಪಾಲಿಸಿ ಫ್ರಂಟ್‌’ಗೆ 7.20 ಕೋಟಿ ರು. ಮೊತ್ತದ ಗುತ್ತಿಗೆ; ಸಮಗ್ರ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

 

ವಿಶೇಷವೆಂದರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ 4(ಜಿ) ವಿನಾಯಿತಿ ನೀಡಿರುವ ಆರ್ಥಿಕ ಇಲಾಖೆಯು ಆರ್‌ಟಿಐ ಅಡಿಯಲ್ಲಿ ಸಮಗ್ರ ಕಡತವನ್ನೂ ಒದಗಿಸಿತ್ತು.  ಆದರೆ ಕೆಎಸ್‌ಎಂಸಿ ಅಂಡ್‌ ಎ ಕಂಪನಿಯು ತನ್ನ ಹಂತದಲ್ಲಿ ಇದೇ  ವಿಚಾರಕ್ಕೆ ಸಂಬಂಧಿಸಿದಂತೆ ಸೃಜಿಸಿದ್ದ ಕಡತವನ್ನು ಒದಗಿಸಲು ನಿರಾಕರಿಸಿರುವುದು ಮತ್ತಷ್ಟು ಸಂಶಯಗಳಿಗೆ ಆಸ್ಪದ ಮಾಡಿಕೊಟ್ಟಂತಾಗಿತ್ತು.  ಅದಷ್ಟೇ ಅಲ್ಲ,  ಕಡತವನ್ನು ಒದಗಿಸಲು ನಿರಾಕರಿಸುವ  ಮೂಲಕ ‘ದ ಪಾಲಿಸಿ ಫ್ರಂಟ್‌’  ಮತ್ತು ಅದರ ಹಿಂದಿರುವವರನ್ನು ರಹಸ್ಯವಾಗಿರಿಸಲು ಯತ್ನಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು.

 

ಮುಕ್ತ  ಟೆಂಡರ್‍‌ ಆಹ್ವಾನಿಸದೆಯೇ ನಿರ್ದಿಷ್ಟವಾಗಿ ‘ದ ಪಾಲಿಸಿ ಫ್ರಂಟ್‌’ ನಿಂದಲೇ ಸೇವೆ ಪಡೆಯಲು ಎಂಸಿಅಂಡ್‌ಎಯು ಸಲ್ಲಿಸಿದ್ದ ಪ್ರಸ್ತಾವನೆಗೆ 4(ಜಿ) ವಿನಾಯಿತಿ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ; ‘ದ ಪಾಲಿಸಿ ಫ್ರಂಟ್‌’ಗೆ 7.20 ಕೋಟಿ ಕೊಟ್ಟ ಸರ್ಕಾರ

 

ಸರ್ಕಾರದ ಸಾಧನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ 2026ರವರೆಗೆ ಪ್ರಚಾರ ಮಾಡಲು ವಾರ್ತಾ, ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು 2023ರ ಆಗಸ್ಟ್‌ 28ರಂದು ಪ್ರಸ್ತಾವವನ್ನು ಸಲ್ಲಿಸಿದ್ದರು.  ಅಲ್ಲದೇ ಸುಳ್ಳು ಸುದ್ದಿಗಳನ್ನು ತಡೆಗಟ್ಟುವ ಉದ್ದೇಶವನ್ನೂ ಇದೇ ಪ್ರಸ್ತಾವನೆಯಲ್ಲಿ ವಿವರಿಸಿದ್ದನ್ನು ಸ್ಮರಿಸಬಹುದು.

Hot this week

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...
Please Scan to make Your Contribution

Topics

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

Related Articles

Popular Categories

error: Content is protected !!