40 ಪರ್ಸೆಂಟ್‌ ಕಮಿಷನ್‌; ದೂರಿನಲ್ಲಿ ಪ್ರಸ್ತಾವವೇ ಇಲ್ಲ, ಖಚಿತ ಅಭಿಪ್ರಾಯ ತಳೆಯಲು ಕಷ್ಟಸಾಧ್ಯವೆಂದ ಆಯೋಗ

ಬೆಂಗಳೂರು; ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿದ್ದ 40 ಪರ್ಸೆಂಟ್ ಲಂಚದ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಎಲ್ಲಿಯೂ ಸಹ ಶೇ.40ರಷ್ಟು ಕಮಿಷನ್‌ ಬಗ್ಗೆ ಪ್ರಸ್ತಾಪವೇ ಇಲ್ಲ. ಹಾಗೂ ಈ ದಾಖಲೆಗಳು ಯಾವ ಸಂದರ್ಭದಲ್ಲೂ ಕಮಿಷನ್‌ ಆರೋಪವನ್ನು ಸಾಬೀತುಪಡಿಸಲು ಪೂರಕವಾಗಿರುವುದಿಲ್ಲ ಎಂದು ನ್ಯಾಯಮೂರ್ತಿ ಹೆಚ್‌ ಎನ್‌ ನಾಗಮೋಹನ್‌ ದಾಸ್‌ ವಿಚಾರಣೆ ಆಯೋಗವು ಅಭಿಪ್ರಾಯಪಟ್ಟಿದೆ.

 

ನ್ಯಾ.ಎಚ್.ಎನ್. ನಾಗಮೋಹನ್ ದಾಸ್ ವಿಚಾರಣಾ ಆಯೋಗವು ಸಲ್ಲಿಸಿರುವ ವರದಿಯಲ್ಲಿನ ಅಂಶಗಳ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ವಿಶೇಷ ತನಿಖಾ ತಂಡ(ಎಸ್‍ಐಟಿ) ರಚಿಸಲು ಸಚಿವ ಸಂಪುಟ ನಿರ್ಧರಿಸಿರುವ ಬೆನ್ನಲ್ಲೇ ವಿಚಾರಣೆ ಆಯೋಗದ ವರದಿಯ ಸಂಪುಟಗಳಲ್ಲಿನ ಮಹತ್ವದ ಅಂಶಗಳು ಮುನ್ನೆಲೆಗೆ ಬಂದಿವೆ.

 

ನಾಗಮೋಹನ್‌ ದಾಸ್‌ ಅವರ ನೇತೃತ್ವದ ವಿಚಾರಣೆ ಆಯೋಗದ ವರದಿಯ ಸಂಪುಟಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ರಾಜ್ಯ ಗುತ್ತಿಗೆದಾರರ ಸಂಘವು ಮಾಡಿದ್ದ ಶೇ.40ರಷ್ಟು ಕಮಿಷನ್‌ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ವಿಚಾರಣೆ ಆಯೋಗವು 372 ಪುಟಗಳನ್ನು ಒಳಗೊಂಡ 5 ಸಂಪುಟ ಮತ್ತು ಹೆಚ್ಚುವರಿಯಾಗಿ 1,593 ಪುಟಗಳ ದಾಖಲೆಗಳನ್ನು ಪರಾಮರ್ಶಿಸಿತ್ತು.

 

ಶೇ.40ರಷ್ಟು ಕಮಿಷನ್‌ಗಿಂತಲೂ ಹೆಚ್ಚಿನ ಭ್ರಷ್ಟಾಚಾರ, ಕೆಆರ್‍ಐಡಿಎಲ್‌ ಮತ್ತು ನಿರ್ಮಿತಿ ಕೇಂದ್ರಗಳ ಕಾರ್ಯನಿರ್ವಹಣೆ, ಎಸ್‌ ಆರ್‍‌ ದರಗಳು, ಪಾರದರ್ಶಕತಾ ಕಾಯ್ದೆ, ಪ್ಯಾಕೇಜ್‌ ಪದ್ಧತಿ ರದ್ದತಿ, ಟೆಂಡರ್‍‌ನಲ್ಲಿ ಶೇ. 40ರಷ್ಟು ಕಮಿಷನ್‌ ದಂಧೆ ಎಂದು ಆಯೋಗವು ವರ್ಗೀಕರಿಸಿ ವಿಚಾರಣೆ ನಡೆಸಿತ್ತು ಎಂಬುದು ಲಭ್ಯವಿರುವ ದಾಖಲೆಯಿಂದ ಗೊತ್ತಾಗಿದೆ.

 

ಈ ಪೈಕಿ ಶೇ. 40 ಕಮಿಷನ್‌ಕ್ಕಿಂತಲೂ ಹೆಚ್ಚಿನ ಭ್ರಷ್ಟಾಚಾರದ ಆರೋಪ ಕುರಿತು ವಿಚಾರಣೆ ನಡೆಸಿದ್ದ ಆಯೋಗವು ಈ ಆರೋಪದ ಬಗ್ಗೆ ಖಚಿತ ಅಭಿಪ್ರಾಯ ತಳೆದಿಲ್ಲ. ಮತ್ತು ಇದು ಆಯೋಗಕ್ಕೆ ಕಷ್ಟಸಾಧ್ಯವಾಗಿದೆ. ಹಾಗೂ ಗುತ್ತಿಗೆದಾರರ ಸಂಘವು ಮಾಡಿರುವ ಶೇ. 40ರಷ್ಟು ಕಮಿಷನ್ ಆರೋಪ ನೂರಕ್ಕೆ ನೂರು ಸತ್ಯವಾಗಿರದೇ ಇರಬಹುದು ಎಂದು ವರದಿಯಲ್ಲಿ ಅಭಿಪ್ರಾಯಿಸಿರುವುದು ವರದಿಯಿಂದ ತಿಳಿದು ಬಂದಿದೆ.

 

ತನಿಖೆಯ ಸಾರಾಂಶದಲ್ಲೇನಿದೆ?

 

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ನೀಡಿರುವ ದಾಖಲೆಗಳಲ್ಲಿ ಎಲ್ಲಿಯೂ ಸಹ ಶೇ. 40ರಷ್ಟು ಕಮಿಷನ್ ಬಗ್ಗೆ ಪ್ರಸ್ತಾಪವಿಲ್ಲ. ಹಾಗೂ ಈ ದಾಖಲೆಗಳು ಯಾವ ಸಂದರ್ಭದಲ್ಲೂ ಕಮಿಷನ್‌ ಆರೋಪವನ್ನು ಸಾಬೀತುಪಡಿಸಲು ಪೂರಕವಾಗಿರುವುದಿಲ್ಲ.

 

 

ಅವಶ್ಯ ದಾಖಲೆ ಹಾಗೂ ಪುರಾವೆಗಳನ್ನು ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಅಲ್ಲದೇ ಗುತ್ತಿಗೆದಾರರು ನೀಡುವ ದೂರುಗಳು, ಹೇಳಿಕೆಗಳ ಗೌಪ್ಯತೆ ಕಾಪಾಡಲು ಮತ್ತು ಅವಶ್ಯಕತೆ ಇರುವವರಿಗೆ ಸೂಕ್ತ ರಕ್ಷಣೆ ಒದಗಿಸಲಾಗುವ ಬಗ್ಗೆ ಆಶ್ವಾಸನೆ ನೀಡಿದರೂ ಸಹ ಯಾವುದೇ ಸ್ಪಷ್ಟೀಕರಣ ಸಲ್ಲಿಕೆಯಾಗಿರುವುದಿಲ್ಲ. ಆದ್ದರಿಂದ ಈ ಆರೋಪದ ಬಗ್ಗೆ ಖಚಿತ ಅಭಿಪ್ರಾಯ ತಳೆಯುವುದು ಆಯೋಗಕ್ಕೆ ಕಷ್ಟಸಾಧ್ಯವಾಗಿದೆ ಎಂದು ಅಭಿಪ್ರಾಯಿಸಿರುವುದು ಗೊತ್ತಾಗಿದೆ.

 

ಆಯೋಗದ ಶಿಫಾರಸ್ಸೇನು?

 

ಗುತ್ತಿಗೆದಾರರ ಸಂಘವು ಮಾಡಿರುವ ಶೇ.40ರಷ್ಟು ಕಮಿಷನ್‌ ಆರೋಪವು ನೂರಕ್ಕೆ ನೂರು ಸತ್ಯವಾಗಿರದೇ ಇರಬಹುದು. ಆರೋಪ ಮಾಡಿರುವ ಗುತ್ತಿಗೆದಾರರ ಸಂಘವು ಆರೋಪವನ್ನು ಸಾಬೀತುಪಡಿಸಲು ವಿಫಲವಾಗಿರಬಹುದು. ಬಲಿಪಶುಗಳಾಗುತ್ತೇವೆ ಎಂಬ ಭಯ ಮತ್ತು ಆತಂಕ ಇದಕ್ಕೆ ಕಾರಣವಾಗಿರಬಹುದು ಎಂದು ವರದಿಯಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಸಾರ್ವಜನಿಕ ದೂರುಗಳ ತನಿಖೆ ನಡೆಸಿದಾಗ ಟೆಂಡರ್‍‌ ಪ್ರಕ್ರಿಯೆಯ ಪೂರ್ವದಲ್ಲಿ ಮತ್ತು ಆನಂತರದ ಪ್ರಕ್ರಿಯೆಯಲ್ಲಿ ಕಂಡು ಬಂದ ವಿಳಂಬ, ಕಾನೂನುಗಳ ಉಲ್ಲಂಘನೆ, ಸ್ವಜನಪಕ್ಷಪಾತ ಇತ್ಯಾದಿಗಳು ಮೇಲ್ನೋಟಕ್ಕೆ ಭ್ರಷ್ಟಾಚಾರ ಕಾಣುತ್ತದೆ. ಆದರೆ ಶೇ. 40ರಷ್ಟು ಕಮಿಷನ್‌ ಆರೋಪದಲ್ಲಿ ಸ್ವಲ್ಪ ಮಟ್ಟಿಗೆ ಸತ್ಯವಿರುವುದನ್ನು ಅಲ್ಲಗಳೆಯುವಂತಿಲ್ಲ ಎಂದು ವರದಿಯಲ್ಲಿ ಅಭಿಪ್ರಾಯಿಸಿರುವುದು ತಿಳಿದು ಬಂದಿದೆ.

 

 

‘ನಮ್ಮ ವ್ಯವಸ್ಥೆಯಲ್ಲಿ ಕೆಲವು ಭ್ರಷ್ಟಾಚಾರವನ್ನು ಯಾವುದೇ ಮುಜುಗರವಿಲ್ಲದೆ ಒಪ್ಪಿಕೊಂಡಿದ್ದಾರೆ. ಮತ್ತೆ ಕೆಲವರು ಮೌನವಾಗಿದ್ದಾರೆ. ಭ್ರಷ್ಟಾಚಾರವು ಸಾಮಾಜಿಕ ಅನಿಷ್ಟ ಎಂದು ಗೊತ್ತಿದ್ದರೂ ಮೂಕ ಪ್ರೇಕ್ಷಕರಾಗಿದ್ದಾರೆ. ಜಾಗತೀಕರಣದ ಸಂಸ್ಕೃತಿ ಜನರ ಹೋರಾಟದ ಮನೋಭಾವವನ್ನು ಹಿಸುಕಿ ಹಾಕಿದೆ,’ ಎಂದು ವರದಿಯಲ್ಲಿ ವಿಷಾದ ವ್ಯಕ್ತಪಡಿಸಿರುವುದು ಗೊತ್ತಾಗಿದೆ.

 

ಅಲ್ಲದೇ ‘ಇಂತಹ ವ್ಯವಸ್ಥೆಯಲ್ಲಿ ಮಾನವೀಯ ಮೌಲ್ಯಗಳು ಮಾಯವಾಗುತ್ತವೆ. ಭ್ರಷ್ಟಾಚಾರ ನಮ್ಮ ಗಮನಕ್ಕೆ ಬಂದಾಗ ತಪ್ಪಿತಸ್ಥರು ಗೊತ್ತಾದಾಗ ಅವರ ವಿರುದ್ಧ ಯಾವುದೇ ಕ್ರಮಕೈಗೊಳ್ಳದೇ ಅವರನ್ನು ಶಿಕ್ಷಿಸದೇ ಮೂಕ ಪ್ರೇಕ್ಷಕರಾಗಿದ್ದೇವೆ, ‘ ಎಂದು ವರದಿಯಲ್ಲಿ ಹೇಳಿದೆ.

 

3 ಲಕ್ಷ ಕಾಮಗಾರಿಗಳ ಪೈಕಿ 1,729 ಕಾಮಗಾರಿಗಳ ಬಗ್ಗೆ ಆಪಾದನೆಗಳಿವೆ. ಯೋಜನೆ, ಹಣ ಬಿಡುಗಡೆ, ಎಲ್ಒಸಿ ಬಿಡುಗಡೆಯ ಸರಿಯಾದ ರೀತಿಯ ಮಾಹಿತಿ ಇಲ್ಲ. ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಸಹ ಸಚಿವ ಸಂಪುಟವು ಚರ್ಚೆ ನಡೆಸಿತ್ತು.

 

ಅನುದಾನಕ್ಕಿಂತ ಹೆಚ್ಚು ಬಿಲ್ ಆಗಿದೆ, ಕಾಮಗಾರಿಗಳ ಬಗ್ಗೆ ಸಂಶಯಗಳಿವೆ. ಕೆಲವು ಕಡೆ ಟೆಂಡರ್ ಹಂಚಿಕೆ ವೇಳೆಯೇ ಮಧ್ಯವರ್ತಿಗಳ ಕೆಲಸ ಆಗಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ವಿಚಾರಣಾ ಆಯೋಗದ ವರದಿಯ ಆಧಾರದ ಮೇಲೆ ಎಸ್‍ಐಟಿ ರಚನೆ ಮಾಡಲು ನಿರ್ಧರಿಸಲಾಗಿದೆ. ಇದರಲ್ಲಿ ತಾಂತ್ರಿಕ ತಜ್ಞರು, ಪರಿಣಿತರು ಇರಲಿದ್ದಾರೆ. ಎರಡು ತಿಂಗಳಲ್ಲಿ ವರದಿ ಕೊಡುವಂತೆ ಎಸ್‍ಐಟಿಗೆ ಸೂಚನೆ ನೀಡಲು ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದನ್ನು ಸ್ಮರಿಸಬಹುದು.

SUPPORT THE FILE

Latest News

Related Posts