ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ನಾಗರೀಕ ಸೌಲಭ್ಯ ಉದ್ದೇಶಗಳಿಗಾಗಿ ಮೀಸಲಿರಿಸಿದ್ದ ನಿವೇಶನವನ್ನು  ಉಚಿತವಾಗಿ  ಮಂಜೂರು ಮಾಡಲು ಹೊರಟಿರುವ ನಗರಾಭಿವೃದ್ಧಿ ಇಲಾಖೆಯು ಕಡತವನ್ನು ಸಚಿವ ಸಂಪುಟಕ್ಕೆ  ಮಂಡಿಸಿದೆ.

 

ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಹೊರಬೀಳಲಿದೆ.

 

ವಿಶೇಷವೆಂದರೇ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣ ಉದ್ದೇಶಕ್ಕಾಗಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು  ಈ ಮೊದಲು ಖಾಸಗಿ ಬಡಾವಣೆಯಲ್ಲಿನ ಸಿ ಎ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಲು ಕೋರಿದ್ದರು. ಆದರೀಗ ನಗರಾಭಿವೃದ್ಧಿ ಇಲಾಖೆಯು ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರವು ಅನುಮೋದಿಸಿರುವ ಬಡಾವಣೆಯಲ್ಲಿನ ಸಿ ಎ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಲು ಕಡತ ಮಂಡಿಸಿದೆ.

 

ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಅಗಲಕುರ್ಕಿ ಗ್ರಾಮದಲ್ಲಿ ಅನುಮೋದಿತ ಬಡಾವಣೆಯಲ್ಲಿ ನಿವೇಶನ ಕೋರಿದ್ದರು. ಆದರೀಗ ನಗರಾಭಿವೃದ್ದಿ ಇಲಾಖೆಯು  ಸ್ಥಳವನ್ನು ಬದಲಾಯಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಅಗಲಕುರ್ಕಿಯ ಬದಲಿಗೆ ಅಣಕನೂರು ಗ್ರಾಮದ ಅನುಮೋದಿತ ಬಡಾವಣೆಯಲ್ಲಿ ಸಿ ಎ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಲು ನಿರ್ಧರಿಸಿರುವುದು ಸಚಿವ ಸಂಪುಟದ ಕಾರ್ಯಸೂಚಿಯಿಂದ ತಿಳಿದು ಬಂದಿದೆ.

 

ಕಾರ್ಯಸೂಚಿಯಲ್ಲೇನಿದೆ?

 

ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಣಕನೂರು ಗ್ರಾಮದ ಅನುಮೋದಿತ ಬಡಾವಣೆಯಲ್ಲಿ 3404.26 ಚ ಮೀ ವಿಸ್ತೀರ್ನದ ನಾಗರಿಕ ಸೌಲಭ್ಯ ನಿವೇಶನವನ್ನು ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಭವನ ಟ್ರಸ್ಟ್‌ ಇವರಿಗೆ ಉಚಿತವಾಗಿ ಮಂಜೂರು ಮಾಡುವ ಬಗ್ಗೆ ಕಡತವನ್ನು ಮಂಡಿಸಿರುವುದು ಗೊತ್ತಾಗಿದೆ.

 

 

ವಿಶೇಷವೆಂದರೇ ಚಿಕ್ಕಬಳ್ಳಾಪುರ ಜಿಲ್ಲೆಗೆ  ಉಸ್ತುವಾರಿ ಸಚಿವ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್‍‌ ಅವರ ಸೂಚನೆಯಂತೆ ನಗರಾಭಿವೃದ್ದಿ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣಕ್ಕೆ ನಿವೇಶನವನ್ನು ಮಂಜೂರು ಮಾಡಲು ತಯಾರಿ ನಡೆಸಿತ್ತು. ಈ ಕುರಿತು ‘ದಿ ಫೈಲ್‌’, ಮೇ 5ರಂದೇ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

ಕಾಂಗ್ರೆಸ್‌ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ

 

ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ಮನವಿಯಲ್ಲೇನಿತ್ತು?

 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಉಚಿತವಾಗಿ ನಿವೇಶನವನ್ನು ಮಂಜೂರು ಮಾಡಬೇಕು ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ ಎನ್‌ ಕೇಶವರೆಡ್ಡಿ ಅವರು 2024ರ ಡಿಸೆಂಬರ್‍‌ 4ರಂದು ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್‌ ಅವರಿಗೆ ಮನವಿ ಸಲ್ಲಿಸಿದ್ದರು.

 

ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಅಗಲಕುರ್ಕಿ ಗ್ರಾಮದ ಸರ್ವೆ ನಂಬರ್‍‌ 89/1, 89/2, 89/3 ಹಾಗೂ ಸರ್ವೆ ನಂಬರ್‍‌ 90, 91ರಲ್ಲಿ ಒಟ್ಟು 7 ಎಕರೆ 17 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆಗೆ ನಕ್ಷೆ ಅನುಮೋದನೆಯಾಗಿದೆ.  ಈ ಬಡಾವಣೆಯಲ್ಲಿರುವ 1,507.57 ಚ ಮೀ ಅಳತೆಯ ನಿವೇಶನವನ್ನು ನಾಗರಿಕ ಸೌಲಭ್ಯ  ನಿವೇಶನಕ್ಕಾಗಿ ಕಾಯ್ದರಿಸಿದೆ. ಈ ಜಮೀನನ್ನು ಜಿಲ್ಲಾ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಉಚಿತವಾಗಿ ಮಂಜೂರು ಮಾಡಬೇಕು ಎಂದು ಕೋರಿದ್ದರು.

 

 

7 ಎಕರೆ 17 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ ಖಾಸಗಿ ಬಡಾವಣೆ ಅಭಿವೃದ್ಧಿಗೊಂಡಿದೆ. ಈ ಖಾಸಗಿ ಬಡಾವಣೆಯಲ್ಲಿ 1,507.57 ಚ ಮೀ ಅಳತೆಯ ನಿವೇಶನವು ನಾಗರಿಕ ಸೌಕರ್ಯಗಳಿಗೆ ಮೀಸಲಿರಿಸಿದೆ. ಈ ನಿವೇಶನವನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕಟ್ಟಡ ನಿರ್ಮಾಣ ಮಾಡಲು ನಿವೇಶನದ ಒಟ್ಟು ಅಳತೆ 1,507.57 ಚ ಮೀ ಇದ್ದು ಉಪ ನೋಂದಣಿ ಮೌಲ್ಯ (ಎಸ್‌ ಆರ್‍‌ ವ್ಯಾಲ್ಯು) ಚ ಮೀಟರ್‍‌ಗೆ 10,500 ರು ಇದೆ. ಒಟ್ಟು 1,58,29,500 ರು ಗಳಾಗಲಿದೆ. ಪ್ರಾರಂಭಿಕ ಠೇವಣಿ ಶೇ. 10ರಷ್ಟು ಎಂದರೆ 15,82, 950 ರುಗಳನ್ನು ಪಾವತಿಸಬೇಕು ಎಂದು ತಿಳಿಸಿತ್ತು.

 

ಉಚಿತ ಮಂಜೂರಿಗೆ ಕೋರಿದ ಜಿಲ್ಲಾ ಕಾಂಗ್ರೆಸ್‌

 

ಅಗಲಕುರ್ಕಿಯಲ್ಲಿನ ಖಾಸಗಿ ಬಡಾವಣೆಯಲ್ಲಿರುವ ಸಿ ಎ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ ಎನ್‌ ಕೇಶವರೆಡ್ಡಿ ಅವರು ಮನವಿಯಲ್ಲಿ ಕೋರಿದ್ದಾರೆ.

 

‘ಅಗಲಕುರ್ಕಿ ಗ್ರಾಮದ ಸರ್ವೆ ನಂಬರ್‍‌ 89/1, 89/2, 89/3, 90/ 91ರಲ್ಲಿ 07-17 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ ಅಭಿವೃದ್ಧಿಪಡಿಸಿರುವ ಖಾಸಗಿ ಬಡಾವಣೆಯಲ್ಲಿ 1,507.57 ಚ ಮೀಟರ್‍‌ ವಿಸ್ತೀರ್ಣ ಹೊಂದಿರುವ ನಾಗರಿಕ ಸೌಲಭ್ಯ ನಿವೇಶನವನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕಟ್ಟಡ ನಿರ್ಮಾಣ ಮಾಡಲು ಉಚಿತವಾಗಿ ನಿವೇಶವನ್ನು ಮಂಜೂರು ಮಾಡಬೇಕು ಮತ್ತು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು,’ ಎಂದು ಕೇಶವರೆಡ್ಡಿ ಅವರು ಸಚಿವ ಬೈರತಿ ಸುರೇಶ್‌ ಅವರಿಗೆ ಕೋರಿರುವುದು ಪತ್ರದಿಂದ ತಿಳಿದು ಬಂದಿದೆ.

 

ಸಚಿವ ಸಂಪುಟಕ್ಕೆ ಮಂಡಿಸಲು ಒಪ್ಪಿಗೆ ನೀಡಿದ್ದ ಆರ್ಥಿಕ ಇಲಾಖೆ

 

ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯು (ನಅಇ 15 ಬಿ ಇ ಎಂ 2025)  ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ಕೋರಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಆರ್ಥಿಕ ಇಲಾಖೆಯು ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಬೇಕು ಎಂದು ( ಆಇ 105/ವೆಚ್ಚ-9/2025, 23.04.205)  ಸೂಚಿಸಿತ್ತು.  ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಅನುಮೋದಿಸಿದ್ದರು.

 

 

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ವಶದಲ್ಲಿರುವ ನಿವೇಶನವನ್ನು ಜಿಲ್ಲಾ ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಸಚಿವ ಸಂಪುಟವು ಅನುಮೋದಿಸಿತ್ತು.

 

ಕಾಂಗ್ರೆಸ್‌ ಪಕ್ಷಕ್ಕೆ ನಗರ ಪಾಲಿಕೆ ಆಸ್ತಿ ಮಂಜೂರು; ಬಿಜೆಪಿ ಹಾದಿ ತುಳಿದ ಕಾಂಗ್ರೆಸ್‌, ಕಡಿಮೆ ಬೆಲೆ ನಿಗದಿಯೇಕೆ?

 

ಆದರೀಗ ಆರ್ಥಿಕ ಇಲಾಖೆಯು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಸ್ತಿಯನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಒಪ್ಪಿಗೆ ಸೂಚಿಸಿತ್ತು. ಇದರ ಅಭಿಪ್ರಾಯದ ಮೇರೆಗೆ ಸಚಿವ ಸಂಪುಟವೂ 2025ರ ಫೆ.20ರಂದು ನಡೆದ ಸಭೆಯಲ್ಲಿ ಮಂಜೂರು ಮಾಡಿತ್ತು.

 

ಇದನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ಬೀರಪ್ಪ ಹಾಗೂ ಸಂತೋಷ್ ಎಸ್.ಚವಾಣ್  ಅವರು ಪಿಐಎಲ್‌ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನೋಟೀಸ್‌ ಜಾರಿ ಮಾಡಿತ್ತು.

 

ಆರ್ಥಿಕ ಇಲಾಖೆಯ ಅಭಿಪ್ರಾಯದಲ್ಲೇನಿತ್ತು?

 

ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಕ್ರಮ ವಹಿಸುವಂತೆ ಆಡಳಿತ ಇಲಾಖೆಗೆ ತಿಳಿಸಿದೆ,’ ಎಂದು ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯು 2025ರ ಫೆ.3ರಂದೇ ತನ್ನ ಅಭಿಪ್ರಾಯವನ್ನು ತಿಳಿಸಿತ್ತು.

 

 

ಈ ಅಭಿಪ್ರಾಯವನ್ನು ಮುಂದಿರಿಸಿದ್ದ ನಗರಾಭಿವೃದ್ಧಿ ಇಲಾಖೆಯು ಸಹ ಸಚಿವ ಸಂಪುಟದ ಮುಂದೆ ಪ್ರಸ್ತಾವನೆಯನ್ನು ಮಂಡಿಸಿತ್ತು.

 

 

ಈ ಆಸ್ತಿಯನ್ನು  ಕಡಿಮೆ ಬೆಲೆಯಲ್ಲಿ  ಮಂಜೂರು ಮಾಡುವ ಸಂಬಂಧ  ಪ್ರಸ್ತಾವನೆ ಸಲ್ಲಿಸಿದೆ. ಈ ಪ್ರಸ್ತಾವನೆ ಅಧರಿಸಿ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಆಯುಕ್ತರು ಪೌರಾಡಳಿತ ನಿರ್ದೇಶನಾಲಯಕ್ಕೆ ಕಡತ ಮಂಡಿಸಿದ್ದರು.

 

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್, ಶಾಸಕ ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ ಮತ್ತಿತರರು ಈ ಪ್ರಸ್ತಾವನೆಗೆ ಶಿಫಾರಸ್ಸು ಮಾಡಿದ್ದರು.  ಇದನ್ನಾಧರಿಸಿ ಆರ್ಥಿಕ ಇಲಾಖೆಯ ಅಭಿಪ್ರಾಯ ಪಡೆಯಲು ಕಡತವನ್ನು ಪೌರಾಡಳಿತ ಇಲಾಖೆಯು ಕಡತವನ್ನು (DMA/DEV/OTH/285/2024)  ಮಂಡಿಸಿದ್ದರು.

 

ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ

 

ಪೌರಾಡಳಿತ ಇಲಾಖೆಯ ಪ್ರಸ್ತಾವನೆಯಲ್ಲೇನಿತ್ತು?

 

ಕೆಪಿಸಿಸಿಗೆ ಕಾರ್ಯಾಲಯ ಕಚೇರಿ ನಿರ್ಮಾಣ ಮಾಡಲು  ಉದ್ದೇಶಿತ ಆಸ್ತಿಯು ಮಹಾನಗರಪಾಲಿಕೆಯ ಆಸ್ತಿಯಾಗಿದೆ.  ಸರ್ಕಾರವು ನಿಗದಿಪಡಿಸಿರುವ ಮಾರ್ಗಸೂಚಿಗಳ ರೀತಿ ಪಾಲಿಕೆಯ ಆಸ್ತಿಗಳನ್ನು ಕೆಲವು ಉದ್ದೇಶಗಳನ್ನು ಹೊರತುಪಡಿಸಿ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಲು ಅವಕಾಶವಿದೆ. ಈ ಪ್ರಕರಣದಲ್ಲಿಯೂ ಸಾರ್ವಜನಿಕ ಹರಾಜು ಮುಖಾಂತರವೇ ಆಸ್ತಿಯನ್ನು ಹಂಚಿಕೆ ಮಾಡಬೇಕಾಗಿದೆ ಎಂದು ತಿಳಿಸಿತ್ತು.

 

 

ಆದರೆ ಈ ಪ್ರಸ್ತಾವಿತ ವಿಷಯಕ್ಕೆ ಪಾಲಿಕೆಯ ಕೌನ್ಸಿಲ್‌ ಸಭೆಯಲ್ಲಿ ಅನುಮೋದನೆ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರು ಧಾರವಾಡ ಜಿಲ್ಲಾ ಕಾಂಗ್ರೆಸ್‌ ಕಾರ್ಯಾಲಯ ನಿರ್ಮಾಣ ಮಾಡುವ ಸಲುವಾಗಿ ಜಾಗವನ್ನು ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ತಗುಲುವ ವೆಚ್ಚವನ್ನು ಈಗಿನ ಸರ್ಕಾರದ ದರ ಅಥವಾ ಅದಕ್ಕಿಂತ ಕಡಿಮೆ ಬೆಲೆಯನ್ನು ಭರಿಸಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನು ಒಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ರಸ್ತಾವನೆಯನ್ನು ಸಚಿವ ಸಂಪುಟದ ಅನುಮೋದನೆಗೆ ಮಂಡಿಸಲು ಸೂಚಿಸಿದ್ದಾರೆ ಎಂದು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿತ್ತು.

 

ಮಹಾನಗರಪಾಲಿಕೆಗಳ ಆಸ್ತಿ, ಜಾಗವನ್ನು ಮಾರಾಟ ಮಾಡಲು ಕರ್ನಾಟಕ ಮಹಾನಗರಪಾಲಿಕೆಎಗಳ ಅಧಿನಿಯಮ 1976ರ ಕಲಂ 176 (6) ಅಡಿ ಪಾಲಿಕೆಗಳ ಜಾಗಗಳನ್ನು ಮಾರಾಟ, ಗುತ್ತಿಗೆ ನೀಡಲು ಸರ್ಕಾರದ ಪೂರ್ವಾನುಮೋದನೆ ಪಡೆಯಬೇಕು. ಆದರೆ ನಗರ ಸ್ಥಳೀಯ ಸಂಸ್ಥೆಗಳ ಜಾಗವನ್ನು ವಿಲೇವಾರಿ ಮಾಡುವ ಕುರಿತು 2003ರ ಜೂನ್‌ 2ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ಪ್ರಕಾರ ಕೆಪಿಸಿಸಿ ಕಚೇರಿ ನಿರ್ಮಾಣ ಮಾಡಲು ಪ್ರಸ್ತಾಪಿಸಿರುವ ಜಾಗವನ್ನು ಹರಾಜು ಮೂಲಕವೇ ವಿಲೇವಾರಿ ಮಾಡಬೇಕು ಎಂದು ಟಿಪ್ಪಣಿ ಹಾಳೆಯಲ್ಲಿ ವಿವರಿಸಿತ್ತು.

 

 

 

‘ಆದರೆ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಕಾರ್ಯಾಲಯ ನಿರ್ಮಿಸಲು ಜಾಗವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಂಜೂರು ಮಾಡಬೇಕು ಎಂದು ಕೋರಿದೆ. ಹೀಗಾಗಿ ಪಾಲಿಕೆಯ ಒಡೆತನದಲ್ಲಿರುವ 2,988.29 ಚ ಮೀ ವಿಸ್ತೀರ್ಣ ಜಾಗವನ್ನು ಕೆಪಿಸಿಸಿಗೆ ಮಾರುಕಟ್ಟೆ ದರದಲ್ಲಿ ಮಂಜೂರು ಮಾಡುವ ಕುರಿತು ಸಚಿವ ಸಂಪುಟಕ್ಕೆ ಟಿಪ್ಪಣಿ ಸಿದ್ಧಪಡಿಸಬೇಕು,’  ಎಂದು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿತ್ತು.

 

ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಸಹಮತಿ, ಅಭಿಪ್ರಾಯ ಪಡೆಯಲು ಆದೇಶ ನೀಡಬೇಕು ಎಂದು ನಗರಾಭಿವೃದ್ಧಿ ಇಲಾಖೆಯು 2024ರ ಡಿಸೆಂಬರ್‍‌ 31ರಂದು ಕಡತ ಮಂಡಿಸಿತ್ತು.

 

 

 

ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿತ್ತು.

 

ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?

 

ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಸಂಬಂಧ ಕಾಯ್ದರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ವರದಿ ನೀಡಿದ್ದರೂ ಇದೇ ಜಾಗದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿ ಕಟ್ಟಡ ನಿರ್ಮಾಣ ಮಾಡಲು ಖಾಲಿ ನಿವೇಶನ ಮಂಜೂರು ಮಾಡಲು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ್ದನ್ನು ಸ್ಮರಿಸಬಹುದು.

 

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌ ಸೇರಿದಂತೆ ಸಂಘ ಪರಿವಾರದ ಇನ್ನಿತರೆ ಸಂಘ ಸಂಸ್ಥೆಗಳಿಗೂ ಗೋಮಾಳ, ಸರ್ಕಾರಿ ಜಮೀನು, ಬಿ ಖರಾಬು ಜಮೀನುಗಳನ್ನು ಚಿಲ್ಲರೆ ದರದಲ್ಲಿ ಮಂಜೂರು ಮಾಡಿತ್ತು.

 

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

 

ಇದೀಗ ಕಾಂಗ್ರೆಸ್‌ ಸರ್ಕಾರವು ಸಹ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್‌ ಭವನಗಳಿಗೆ ಕಟ್ಟಡ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧೀನದಲ್ಲಿ ಮತ್ತು ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿರುವ ನಿವೇಶನಗಳ ಮೇಲೆ ಕಣ್ಣು ಹಾಕಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

SUPPORT THE FILE

Latest News

Related Posts