ಬೆಂಗಳೂರು; ಆರೋಪಿ ನಿಂಗಪ್ಪನೊಂದಿಗೆ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ಅವರು ಅಪರಾಧಿಕ ಒಳ ಸಂಚು ನಡೆಸಿ ಹಣ ವಸೂಲಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಲೋಕಾಯುಕ್ತ ರಿಜಿಸ್ಟ್ರಾರ್ ಅವರು ಸರ್ಕಾರಕ್ಕೆ ಪತ್ರ ಬರೆದಿರುವುದು ಇದೀಗ ಬಹಿರಂಗವಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರಿಗೆ 2025ರ ಜೂನ್ 23ರಂದು 2 ಪುಟಗಳ ಪತ್ರ (ಸಂಖ್ಯೆ; ಲೋಕ್/ಆಡಳಿತ-1/17/2025-26) ಬರೆದಿದ್ದಾರೆ. ಈ ಪತ್ರದಲ್ಲಿರುವ ಸಂಗತಿಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.
ರಿಜಿಸ್ಟ್ರಾರ್ ಎಂ ಚಂದ್ರಶೇಖರ ರೆಡ್ಡಿ ಅವರು ಪತ್ರ ಬರೆದಿರುವುದನ್ನು ಮುಖ್ಯ ಕಾರ್ಯದರ್ಶಿಗಳ ಕಚೇರಿಯ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್’ಗೆ ಖಚಿತಪಡಿಸಿದ್ದಾರೆ.
ಇದೇ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ, ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ಹೆಸರು, ಮುಖ್ಯಮಂತ್ರಿಗಳ ಸಚಿವಾಲಯದ ಇಬ್ಬರು ಅಧಿಕಾರಿಗಳ ಹೆಸರು ತಳಕು ಹಾಕಿಕೊಂಡಿತ್ತು. ಕರ್ನಾಟಕ ರಾಷ್ಟ್ರಸಮಿತಿ, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ, ನೈಜ ಹೋರಾಟಗಾರರ ವೇದಿಕೆಯು ಲೋಕಾಯುಕ್ತ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕು, ಎಸ್ಪಿ ಶ್ರೀನಾಥ್ ಜೋಷಿ ಅವರನ್ನು ವಜಾಗೊಳಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು.
ಈ ಬೆಳವಣಿಗೆಗಳ ನಡುವೆಯೇ ಲೋಕಾಯುಕ್ತ ರಿಜಿಸ್ಟ್ರಾರ್ ಅವರು ಇಡೀ ಪ್ರಕರಣದ ಬಗ್ಗೆ ಸರ್ಕಾರಕ್ಕೆ ನೀಡಿರುವ ದಾಖಲೆ, ಪರಿಶೀಲನಾ ವರದಿ, ವಾಟ್ಸಾಪ್ ಸಂದೇಶಗಳ ಪ್ರತಿಗಳು ಮುನ್ನೆಲೆಗೆ ಬಂದಿವೆ.
ರಿಜಿಸ್ಟ್ರಾರ್ ಅವರು ಬರೆದಿರುವ 2 ಪುಟಗಳ ಪತ್ರದಲ್ಲಿ ವಿಶೇಷತೆಗಳೇನು ಇಲ್ಲ. ಆರೋಪಿ ನಿಂಗಪ್ಪನ ವಿರುದ್ಧ ದಾಖಲಿಸಿರುವ ಎಫ್ಐಆರ್ ಮತ್ತು ಈ ಸಂಬಂಧ ಬಿಡುಗಡೆ ಮಾಡಿದ್ದ ಪತ್ರಿಕಾ ಹೇಳಿಕೆಯಲ್ಲಿದ್ದ ಅಂಶಗಳನ್ನೇ ರಿಜಿಸ್ಟ್ರಾರ್ ಪುನರುಚ್ಚರಿಸಿರುವುದು ತಿಳಿದು ಬಂದಿದೆ.
ರಿಜಿಸ್ಟ್ರಾರ್ ಬರೆದಿರುವ ಪತ್ರದಲ್ಲೇನಿದೆ?
ಸರ್ಕಾರಿ ಅಧಿಕಾರಿಗಳೊಂದಿಗೆ ಹಣ ವಸೂಲಿ ಮಾಡಿರುವ ಪ್ರಕರಣದಲ್ಲಿ ಎಸ್ಪಿ ಶ್ರೀನಾಥ್ ಜೋಷಿ ಅವರು ಆರೋಪಿ ನಿಂಗಪ್ಪನೊಂದಿಗೆ ಭಾಗಿಯಾಗಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಪ್ರಾಥಮಿಕ ವಿಚಾರಣೆಯಲ್ಲಿ ದೃಢಪಡಿಸಿರುವುದನ್ನು ರಿಜಿಸ್ಟ್ರಾರ್ ಅವರು ಸರ್ಕಾರಕ್ಕೆ ಖಚಿತಪಡಿಸಿರುವುದು ಗೊತ್ತಾಗಿದೆ.
ಅಲ್ಲದೇ ಇದೇ ಪ್ರಕರಣದಲ್ಲಿ ಎಸ್ಪಿ ಶ್ರೀನಾಥ್ ಜೋಷಿ ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ರಿಜಿಸ್ಟ್ರಾರ್ ಅವರು ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವುದು ಸಹ ತಿಳಿದು ಬಂದಿದೆ. ಆದರೆ ಶ್ರೀನಾಥ್ ಜೋಷಿ ಅವರನ್ನು ಅಮಾನತುಗೊಳಿಸಬೇಕು ಎಂದು ಸ್ಪಷ್ಟವಾಗಿ ಪತ್ರದಲ್ಲಿ ಬರೆದಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಕಚೇರಿಯ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್’ಗೆ ಖಚಿತಪಡಿಸಿದ್ದಾರೆ.
ಎಸ್ಪಿ ಶ್ರೀನಾಥ್ ಜೋಷಿ ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ಲೋಕಾಯುಕ್ತ ಬಿ ಎಸ್ ಪಾಟೀಲ್ ಅವರು ನಿರ್ದೇಶಿಸಚ ಸಿದ್ದಾರೆ ಎಂದು ರಿಜಿಸ್ಟ್ರಾರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ.
‘ಲೋಕಾಯುಕ್ತವರಿಂದ ನಿರ್ದೇಶಿಸಲ್ಪಟ್ಟಿರುವ ಪ್ರಕಾರ ಕರ್ನಾಟಕ ಲೋಕಾಯುಕ್ತ ಬೆಂಗಳೂರು ನಗರ ವಿಭಾಗ 1ರಲ್ಲಿ ಪೊಲೀಸ್ ಅಧೀಕ್ಷಕರ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಾಥ ಜೋಷಿ ಅವರು ಅಖಿಲ ಭಾರತ ಸೇವೆಗಳ ನಿಯಮಗಳು 1968ರ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಇವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಹಾಗೂ ಜರುಗಿಸಿದ ಕ್ರಮಗಳ ಬಗ್ಗೆ ಈ ಕಚೇರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು,’ ಎಂದು ರಿಜಿಸ್ಟ್ರಾರ್ ಚಂದ್ರಶೇಖರ್ ರೆಡ್ಡಿ ಅವರು ಕೋರಿರುವುದು ಗೊತ್ತಾಗಿದೆ.
ಎಸ್ಪಿ ಶ್ರೀನಾಥ್ ಜೋಷಿ ಅವರೊಂದಿಗೆ ಆರೋಪಿ ನಿಂಗಪ್ಪ ನಿಕಟ ಸಂಪರ್ಕ ಇಟ್ಟುಕೊಂಡಿದ್ದಾನೆ. ಸರ್ಕಾರಿ ಅಧಿಕಾರಿಗಳಿಗೆ ಅಕ್ರಮವಾಗಿ ಆಸ್ತಿ ಹೊಂದಿರುವ ಬಗ್ಗೆ ಬೆದರಿಸಿ ಅವರಿಂದ ಲಂಚದ ಹಣವನ್ನು ವಸೂಲು ಮಾಡುವ ಕುರಿತು ಅಪರಾಧಿಕ ಒಳಸಂಚು ನಡೆಸಿದ ಬಗ್ಗೆ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿರುತ್ತದೆಂದು, ಆರೋಪಿ ನಿಂಗಪ್ಪ, ಶ್ರೀನಾಥ್ ಜೋಷಿ ಅವರೊಂದಿಗೆ ಹಣ ವಸೂಲಿ ಕುರಿತು ಮಾತನಾಡಿರುವ ಆಡಿಯೋ ರೆಕಾರ್ಡಿಂಗ್ಗಳು ಇರುತ್ತವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ ಎಂದು ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.
24 ಕ್ರಿಪ್ಟೋ ವ್ಯಾಲೆಟ್, 4.92 ಕೋಟಿ ಹೂಡಿಕೆ
ಶ್ರೀನಾಥ್ ಜೋಷಿ ಮತ್ತು ನಿಂಗಪ್ಪ ಇವರಿಬ್ಬರೂ ಅಬಕಾರಿ ಇಲಾಖೆ ಅಧಿಕಾರಿಗಳಿಂದ ಕೋಡ್ ವರ್ಡ್ ಕೆ ಜಿ ಮುಖಾಂತರ ವಾಟ್ಸಾಪ್ ಸಂದೇಶದ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ್ದಾರೆ. ಮತ್ತು ಹಣದ ವ್ಯವಹಾರ ನಡೆಸಿರುವುದು ಮೊಬೈಲ್ ನಂಬರ್ ಹಾಗೂ ಸಿಡಿಆರ್ ಪರಿಶೀಲನೆಯಿಂದ ಕಂಡು ಬಂದಿದೆ. ಅಕ್ರಮವಾಗಿ ಸಂಗ್ರಹಿಸಿದ ಕಪ್ಪು ಹಣವನ್ನು ಬಿಳಿ ಹಣವಾಗಿ ಪರಿವರ್ತಿಸಲು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುವುದು ಕಂಡು ಬಂದಿದೆ.
ನಿಂಗಪ್ಪನ ಮೊಬೈಲ್ ಪರಿಶೀಲನೆಯಲ್ಲಿ ಸುಮಾರು 24 ಕ್ರಿಪ್ಟೋ ವ್ಯಾಲೆಟ್ಗಳಿವೆ. ಅವುಗಳಲ್ಲಿ 13 ವ್ಯಾಲೆಟ್ಗಳಲ್ಲಿ ಸುಮಾರು 4.92 ಕೋಟಿ ಹಣ ಹೂಡಿಕೆ ಮಾಡಿರುವುದು ಗಮನಕ್ಕೆ ಬಂದಿದೆ ಎಂದು ಪತ್ರದಲ್ಲಿ ತಿಳಿಸಿರುವುದು ಗೊತ್ತಾಗಿದೆ.
‘ಇದರಿಂದ ಸದರಿ ಆರೋಪಿತರು ನಿಂಗಪ್ಪ ಹಾಗೂ ಶ್ರೀನಾಥ್ ಜೋಷಿ ಮತ್ತು ಇನ್ನಿತರೆ ಬೇರೆ ಇಲಾಖೆಯ ಅಧಿಕಾರಿ ಅಲ್ಲದೇ ಖಾಸಗಿ ವ್ಯಕ್ತಿಗಳೊಡನೆ ಸೇರಿ ಸಂಗ್ರಹಿಸಿದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುವುದು ಕಂಡು ಬಂದಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ,’ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಗಮನಕ್ಕೆ ತಂದಿರುವುದು ಗೊತ್ತಾಗಿದೆ.
ಆಗಬೇಕಿದೆ ಹಣದ ಮೂಲ ಪತ್ತೆ
ಆರೋಪಿ ನಿಂಗಪ್ಪ, ಕ್ರಿಪ್ಟೋ ಕರೆನ್ಸಿಯಲ್ಲಿ 4.92 ಕೋಟಿ ಹೂಡಿಕೆ ಮಾಡಿರುವುದನ್ನು ಪ್ರೀಜ್ ಮಾಡಿಸಿ ಅಮಾನತಿಲ್ಲಿಡಲಾಗಿದೆ. ಹೂಡಿಕೆ ಮಾಡಿರುವ ಹಣದ ಮೂಲವನ್ನು ಪತ್ತೆ ಮಾಡಬೇಕಾಗಿದೆ. ಈ ಹಣದಲ್ಲಿ ಎಸ್ಪಿ ಶ್ರೀನಾಥ್ ಜೋಷಿ ಅವರು ಅಕ್ರಮವಾಗಿ ಸಂಗ್ರಹಿಸಿರುವ ಹಣವು ಇರುವ ಬಗ್ಗೆ ತನಿಖೆ ಮುಂದುವರೆದಿದೆ. ಅವರ ಮನೆ ಮೇಲೆ ಶೋಧನಾ ವಾರಂಟ್ ಪಡೆದು ಶೋಧ ಮಾಡಲಾಗಿದೆ. ಅದೇ ದಿವಸ ವಿಚಾರಣೆಗೆ ಹಾಜರಾಗುವಂತೆ ಬಿಎನ್ಎಸ್ಎಸ್ ಕಲಂ 35(3) ಅಡಿಯಲ್ಲಿ ನೋಟೀಸ್ ಸಹ ನೀಡಲಾಗಿತ್ತು ಎಂದು ವಿವರಿಸಲಾಗಿದೆ.
‘ಮೇಲ್ಕಂಡ ಎಲ್ಲಾ ವಿಷಯಗಳಿಂದ ಬೆಂಗಳೂರು ನಗರ ಪೊಲೀಸ್ ವಿಭಾಗದ ಹಿಂದಿನ ಪೊಲೀಸ್ ಅಧೀಕ್ಷಕ ಜೋಷಿ ಶ್ರೀನಾಥ್ ಮಹದೇವ ಅವರು ಆರೋಪಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ಈವರೆಗಿನ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ,’ ಎಂದು ಸರ್ಕಾರದ ಗಮನಕ್ಕೆ ತಂದಿರುವುದು ತಿಳಿದು ಬಂದಿದೆ.
ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಎಸ್ಪಿ ಶ್ರೀನಾಥ್ ಜೋಷಿ ಅವರು ಅಖಿಲ ಭಾರತ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಇವರ ವಿರುದ್ಧ ನಿಯಮಾನಸಾರ ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಹಾಗೂ ಜರುಗಿಸಿದ ಕ್ರಮಗಳ ಬಗ್ಗೆ ಲೋಕಾಯುಕ್ತ ಕಚೇರಿಗೆ ಅಗತ್ಯ ಮಾಹಿತಿ ಒದಗಿಸಬೇಕು ಎಂದು ಕೋರಿರುವುದು ಸಹ ಗೊತ್ತಾಗಿದೆ.
ಈ ಪತ್ರದೊಂದಿಗೆ ಎಡಿಜಿಪಿ ಅವರು 2025ರ ಜೂನ್ 23ರಂದು ನೀಡಿರುವ ವರದಿ , ದೂರು ಪರಿಶೀಲನಾ ವರದಿ, ಎಫ್ಐಆರ್, ಡಿವೈಎಸ್ಪಿ ಅವರು ನೀಡಿರುವ ವಿಶೇಷ ವರದಿಯೂ, ವಾಟ್ಸಾಪ್ ಸಂದೇಶಗಳ ಪ್ರತಿಗಳೂ ಸಹ ಸೇರಿವೆ.
ಕ್ರಿಪ್ಟೋ ಕರೆನ್ಸಿಯಲ್ಲಿ ಲೋಕಾಯುಕ್ತದ ಮತ್ತೊಬ್ಬ ಎಸ್ಪಿಯೂ ಸಹ ಹೂಡಿಕೆ ಮಾಡಿದ್ದಾರೆ. ಈ ಸಂಬಂಧ ಗಿರಿರಾಜ್ ಎಂಬ ಮಧ್ಯವರ್ತಿಯೊಬ್ಬನನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು.
ಸುಲಿಗೆ; ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ, ಮತ್ತೊಬ್ಬ ಎಸ್ಪಿಯ ಹೆಸರು ಬಾಯ್ಬಿಟ್ಟ ಮಧ್ಯವರ್ತಿ ಗಿರಿರಾಜ್?
ಹಣ ಸುಲಿಗೆ ಸಂಬಂಧ ಲೋಕಾಯುಕ್ತ ಪೊಲೀಸರು ಸೂಕ್ತ ಪುರಾವೆ, ಸಾಕ್ಷ್ಯಗಳನ್ನು ಪತ್ತೆ ಹಚ್ಚಿದ್ದರೂ ಸಹ ಶ್ರೀನಾಥ್ ಜೋಷಿ ಅವರನ್ನು ಅಮಾನತುಗೊಳಿಸಲು ಶಿಫಾರಸ್ಸು ಮಾಡಿರಲಿಲ್ಲ.
ಸುಲಿಗೆ ಆರೋಪ; ಸಾಕ್ಷ್ಯ ಇದ್ದರೂ ಎಸ್ಪಿ ಶ್ರೀನಾಥ ಜೋಷಿ ಅಮಾನತಿಗೆ ಶಿಫಾರಸ್ಸು ಮಾಡದ ಲೋಕಾಯುಕ್ತ
ಲೋಕಾ ಹೆಸರಿನಲ್ಲಿ ವಸೂಲಿ ಮಾಡಿದ್ದ ಹಣವನ್ನು ಹವಾಲಾ ರೂಪದಲ್ಲಿ ಪರಿವರ್ತಿಸಲಾಗಿತ್ತು. ಮತ್ತು ಆರೋಪಿ ನಿಂಗಪ್ಪ, ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿದ್ದ ಎಂಬ ಸಂಗತಿಯು ಸಹ ಬಹಿರಂಗವಾಗಿತ್ತು.
ಲೋಕಾ ಹೆಸರಿನಲ್ಲಿ ಹಣ ವಸೂಲಿ ಪ್ರಕರಣ; ಕಾಂಗ್ರೆಸ್ ಪಕ್ಷದ ಬುಡಕ್ಕೆ ಬರಲಿದೆಯೇ, ಹವಾಲಾ ನಂಟಿದೆಯೇ?
ಆರೋಪಿ ನಿಂಗಪ್ಪನಿಗೆ ಕಪ್ಪ ಕೊಟ್ಟಿರುವ ಅಬಕಾರಿ ಅಧಿಕಾರಿಗಳ ಪೈಕಿ ಒಬ್ಬ ಅಧಿಕಾರಿ ಮೈಸೂರಿನ ಸಚಿವರೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದ. ಮತ್ತು ಮುಖ್ಯಮಂತ್ರಿಗಳ ಸಲಹೆಗಾರರೊಬ್ಬರೊಂದಿಗೆ ಮತ್ತೊಬ್ಬ ಅಧಿಕಾರಿಯ ಸಂಬಂಧವಿದೆ ಎಂದು ಹೇಳಲಾಗಿತ್ತು.
ನಿಂಗಪ್ಪನಿಗೆ ಕಪ್ಪ ಕೊಟ್ಟ ಅಧಿಕಾರಿಗಳೊಂದಿಗೆ ಸಿಎಂ ಸಲಹೆಗಾರರು, ಮೈಸೂರಿನ ಸಚಿವರ ನಂಟು?
ಲೋಕಾಯುಕ್ತರು, ಉಪ ಲೋಕಾಯುಕ್ತರು ದಾಳಿ ನಡೆಸಿ ಸ್ವಯಂ ಪ್ರೇರಿತವಾಗಿ ದಾಖಲಿಸುತ್ತಿದ್ದ ಪ್ರಕರಣಗಳೇ ಆರೋಪಿ ನಿಂಗಪ್ಪನಿಗೆ ಹಣ ವಸೂಲಿಗೆ ಮೂಲವಾಗಿದ್ದವು.
ಲೋಕಾಯುಕ್ತರೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣದ ಆರೋಪಿಗಳ ಬೆನ್ನೆತ್ತಿದ್ದ ಆರೋಪಿ ನಿಂಗಪ್ಪ?
ಹಾಗೆಯೇ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ತಿಂಗಳಿಗೆ 3 ಲಕ್ಷ ರು. ಹಣಕ್ಕಾಗಿ ಬೇಡಿಕೆ ಇರಿಸಿದ್ದ. 3 ಲಕ್ಷವನ್ನು 3 ಕೆ ಜಿ ರೈಸ್ ಎಂಬುದಾಗಿ ಕೋಡ್ ವರ್ಡ್ ಬಳಸಿದ್ದ. ಮತ್ತು ಆರೋಪಿ ನಿಂಗಪ್ಪನಿಗೆ ಲಕ್ಷಾಂತರ ರುಪಾಯಿಗಳನ್ನು ನೀಡಿದ್ದ ಅಬಕಾರಿ ಇಲಾಖೆಯ ಕೆಲವು ಆಯುಕ್ತರ ಹೆಸರುಗಳನ್ನೂ ‘ದಿ ಫೈಲ್’, ಹೊರಗೆಡವಿತ್ತು.
ತಿಂಗಳಿಗೆ 3 ಲಕ್ಷಕ್ಕೆ ಬೇಡಿಕೆ, ಹಣದ ಮೌಲ್ಯಕ್ಕೆ ‘ಕೆ ಜಿ’ ಕೋಡ್ವರ್ಡ್; ಅಧಿಕಾರಿಗಳ ಹೆಸರು ಬಾಯ್ಬಿಟ್ಟ ನಿಂಗಪ್ಪ
ಲೋಕಾಯುಕ್ತ ಹೆಸರು ಹೇಳಿ ಹಣ ವಸೂಲಿ ಮಾಡುತ್ತಿದ್ದ ಎಂಬ ಆರೋಪದ ಮೇರೆಗೆ ಬಂಧಿತನಾಗಿರುವ ಆರೋಪಿ ನಿಂಗಪ್ಪನ ಪ್ರಕರಣವು ಅಧಿಕಾರಿಗಳ ವರ್ಗದಲ್ಲಿ ಭಾರೀ ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಇದೀಗ ನೇರವಾಗಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರ ಹೆಸರು ತಳಕು ಹಾಕಿಕೊಂಡಿತ್ತು.
ನಿಂಗಪ್ಪನಿಗೆ ಅಬಕಾರಿ, ಬಿಬಿಎಂಪಿ ಅಧಿಕಾರಿಗಳೇ ಗುರಿ; ಎಫ್ಐಆರ್ನಲ್ಲಿಲ್ಲ ಎಸ್ಪಿ ಜೋಷಿ ಹೆಸರು
ಆರೋಪಿ ನಿಂಗಪ್ಪನು ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಷಿ ಅವರನ್ನು ಬೆಂಗಳೂರಿನ ಐಷಾರಾಮಿ ಹೋಟೆಲ್ವೊಂದರಲ್ಲಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರನ್ನು ಭೇಟಿ ಮಾಡಿಸಿದ್ದ ಎಂದು ಗೊತ್ತಾಗಿದೆ. ಆರೋಪಿ ನಿಂಗಪ್ಪನಿಗೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರ ಆಪ್ತ ಸಹಾಯಕ ಎಂದು ಹೇಳಲಾಗಿರುವ ರಮೇಶ್ ಎಂಬಾತನೂ ಪರಿಚಯವಿದ್ದ ಎಂದು ಹೇಳಲಾಗಿದೆ.
ಲೋಕಾ ಎಸ್ಪಿ ಜೋಷಿ, ನಿಂಗಪ್ಪನೊಂದಿಗೆ ಅಬಕಾರಿ ಸಚಿವ ತಿಮ್ಮಾಪುರ ನಂಟು; ಐಷಾರಾಮಿ ಹೋಟೆಲ್ನಲ್ಲಿ ಭೇಟಿ?
ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದಲೂ ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಎಂದು ಲೋಕಾಯುಕ್ತ ಪೊಲೀಸ್ ವಿಭಾಗವು ಇದೀಗ ಅಧಿಕೃತವಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು.
ಅಲ್ಲದೇ ಆರೋಪಿ ನಿಂಗಪ್ಪ ಎಂಬಾತನು 6 ತಿಂಗಳಿನಿಂದಲೂ ಅಧಿಕಾರಿಗಳಿಂದ ವಸೂಲಿ ಮಾಡಿದ್ದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ ಮಾಡಿದ್ದ ಎಂದು ‘ದಿ ಫೈಲ್’, ವರದಿ ಪ್ರಕಟಿಸಿತ್ತು. ಈ ವರದಿಯು ಅಧಿಕಾರಿ ವರ್ಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಲೋಕಾಯುಕ್ತ ಪೊಲೀಸ್ ವಿಭಾಗವು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿಯೂ ಕ್ರಿಪ್ಟೋ ಕರೆನ್ಸಿಯಲ್ಲಿ ಆರೋಪಿಯು ಹೂಡಿಕೆ ಮಾಡಿದ್ದಾನೆ ಎಂದು ಅಧಿಕೃತವಾಗಿ ಹೇಳಿತ್ತು.
ಇದು ‘ದಿ ಫೈಲ್’, ವರದಿಗೆ ಮತ್ತಷ್ಟು ಬಲ ಬಂದಂತಾಗಿದೆ.
ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?
ಪತ್ರಿಕಾ ಹೇಳಿಕೆಯಲ್ಲೇನಿತ್ತು?
ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದ ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈ ರೀತಿ ವಸೂಲಿ ಮಾಡಿದ ಹಣವನ್ನು ತನ್ನ ಹಾಗೂ ತನ್ನಸಂಬಂಧಿಕರುಗಳ ಹೆಸರಿನಲ್ಲಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುತ್ತೇನೆಂದು ಒಪ್ಪಿಕೊಂಡಿರುತ್ತಾನೆ ಎಂದು ಹೇಳಲಾಗಿದೆ.
ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ
ಕೆಲ ವರ್ಷಗಳ ಹಿಂದೆ ನಿಂಗಪ್ಪ, ಸೇವೆಯಿಂದ ವಜಾಗೊಂಡಿದ್ದ. ಬಳಿಕ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳನ್ನು ಬೆದರಿಸಿ ಸುಲಿಗೆಯನ್ನೇ ವೃತ್ತಿ ಮಾಡಿಕೊಂಡಿದ್ದ. ಈ ಸಂಬಂಧ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ಜೈಲು ಸೇರಿದ್ದ ಎಂದು ತಿಳಿದು ಬಂದಿದೆ.
ಲೋಕಾ ಪೊಲೀಸರ ಶೋಧ; ಬರಿಗೈಯಲ್ಲಿ ಮರಳಿದ ಪೊಲೀಸರು, ತಲೆಮರೆಸಿಕೊಂಡಿದ್ದಾರೆಯೇ ಜೋಷಿ?
ವಿಶೇಷವೆಂದರೇ ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೂ ಲೋಕಾಯುಕ್ತರಾಗಿದ್ದ ಭಾಸ್ಕರರಾವ್ ಅವರ ಪುತ್ರ ಮತ್ತು ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಹಲವರಿಂದ ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಆ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿಯಾಗಿದ್ದ ಸೋನಿಯಾ ನಾರಂಗ್ ಅವರು ಈ ಪ್ರಕರಣವನ್ನು ಬಹಿರಂಗಪಡಿಸಿದ್ದರು. ಅಲ್ಲದೇ ಲೋಕಾಯುಕ್ತ ಹುದ್ದೆಗೆ ಭಾಸ್ಕರರಾವ್ ಅವರು ರಾಜೀನಾಮೆ ನೀಡಿದ್ದರು. ಹಾಗೂ ಅವರ ಪುತ್ರ ಅಶ್ವಿನ್ ರಾವ್ ಸಹ ಪೊಲೀಸರ ಬಂಧನಕ್ಕೆ ಒಳಗಾಗಿದ್ದ.
ಈ ಪ್ರಕರಣದ ನಂತರ ಲೋಕಾಯುಕ್ತಕ್ಕಿದ್ದ ಪೊಲೀಸ್ ಅಧಿಕಾರವನ್ನು ಮೊಟಕುಗೊಳಿಸಿ, ಭ್ರಷ್ಟಾಚಾರ ನಿಗ್ರಹ ದಳವನ್ನು ಸ್ಥಾಪಿಸಲಾಗಿತ್ತು. ಆ ನಂತರ ಎಸಿಬಿಯನ್ನೂ ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಗೆ ಪುನಃ ಪೊಲೀಸ್ ಅಧಿಕಾರವನ್ನು ಮರು ಸ್ಥಾಪಿಸಲಾಗಿತ್ತು. ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸಿರುವ ಹೊತ್ತಿನಲ್ಲೇ ಲೋಕಾಯುಕ್ತ ಹೆಸರಿನಲ್ಲಿ ನಿಂಗಪ್ಪ ಎಂಬಾತ ಹಣ ವಸೂಲಿ ಮಾಡಿರುವ ಪ್ರಕರಣವು ಮುನ್ನೆಲೆಗೆ ಬಂದಿದೆ. ಅಲ್ಲದೇ ಲೋಕಾಯುಕ್ತ ಸಂಸ್ಥೆಯ ವಿಶ್ವಾಸಾರ್ಹತೆಯ ಪ್ರಶ್ನೆಯೂ ಎದುರಾಗಿದೆ.