ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ; ಎಸ್‌ಪಿಪಿಯಾಗಿ ಜಗದೀಶ್‌ ನೇಮಕಕ್ಕೆ ಅವಕಾಶವಿಲ್ಲವೆಂದಿದ್ದ ಸರ್ಕಾರ

ಬೆಂಗಳೂರು; ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣದಲ್ಲಿ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ)ರನ್ನಾಗಿ ಬಿ ಎನ್‌ ಜಗದೀಶ್‌ ಅವರನ್ನು ಒಂದು ವರ್ಷದ ಹಿಂದೆಯೇ ನೇಮಕ ಮಾಡಿ ಹೊರಡಿಸಿದ್ದ ಅಧಿಸೂಚನೆಯನ್ನು ರಾಜ್ಯ ಸರ್ಕಾರವು ಹಿಂಪಡೆದುಕೊಂಡಿತ್ತು ಎಂಬುದು ಇದೀಗ ಬಹಿರಂಗವಾಗಿದೆ.

 

ಅಲ್ಲದೇ ಬಿ ಎನ್‌ ಜಗದೀಶ್ ಅವರನ್ನು ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಲು ಅವಕಾಶವಿಲ್ಲ ಎಂದು ಸಹ ಸರ್ಕಾರವು ಸ್ಪಷ್ಪಪಡಿಸಿತ್ತು.

 

ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು ಶಿಕ್ಷೆ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮೇಲ್ಮನವಿಯಲ್ಲಿ ಸರ್ಕಾರದ ಪರ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಿಲಾಗಿದೆಯೇ ಎಂಬುದನ್ನು ತಿಳಿಸುವಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿನ್ನೆಯಷ್ಟೇ ಸೂಚಿಸಿತ್ತು.

 

ಈ ಬೆಳವಣಿಗೆ ನಡುವೆಯೇ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣದಲ್ಲಿ ವಾದ ಮಂಡಿಸಲು ಬಿ ಎನ್‌ ಜಗದೀಶ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ)ರನ್ನಾಗಿ ನೇಮಕ ಮಾಡಿದ್ದ ಅಧಿಸೂಚನೆಯನ್ನು ಹಿಂಪಡೆದುಕೊಂಡಿರುವುದು ಮುನ್ನೆಲೆಗೆ ಬಂದಿದೆ.

 

ಈ ಕುರಿತು ಒಳಾಡಳಿತ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರು ಪೊಲೀಸ್‌ ಮಹಾನಿರ್ದೇಶಕರಿಗೆ 2025ರ ಆಗಸ್ಟ್‌ 30ರಂದೇ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಬೆಂಗಳೂರಿನ ಸಿಐಡಿ ವಿಶೇಷ ತನಿಖಾ ತಂಡವು ಸೈಬರ್‍‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ (ಸಂಖ್ಯೆ; 02/2024 ಹಾಗೂ 03/2024) ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಉದ್ಭವಿಸುವ ಪ್ರಕರಣದಲ್ಲಿ ಬಿ ಎನ್‌ ಜಗದೀಶ್‌ ಅವರನ್ನು ರಾಜ್ಯ ಸರ್ಕಾರಿ ಅಭಿಯೋಜಕರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಪೂರ್ವಾನ್ವಯವಾಗುವಂತೆ ನೇಮಿಸಲು ಪೊಲೀಸ್‌ ಮಹಾನಿರ್ದೇಶಕರು 2025ರ ಮೇ 5ರಂದು (ಪತ್ರ ಸಂಖ್ಯೆ ಅಪರಾಧ-2/65/ರಿ.ಅ/2024) ಸರ್ಕಾರವನ್ನು ಕೋರಿದ್ದರು.

 

ಒಳಾಡಳಿತ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಬರೆದಿರುವ ಪತ್ರದ ಪ್ರತಿ

 

ಈಗಾಗಲೇ ಬಿ ಎನ್‌ ಜಗದೀಶ್‌ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ (ಸಂಖ್ಯೆ 107/2024) ಹಾಗೂ ಮೈಸೂರು ಜಿಲ್ಲೆಯ ಕೆ ಆರ್ ನಗರ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ (ಸಂಖ್ಯೆ 149/2024), ಸಿಐಡಿ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ ( ಸಂಖ್ಯೆ 20/2024) ಪ್ರಕರಣಗಳಿಂದ ಉಚ್ಛ ನ್ಯಾಯಾಲಯದಲ್ಲಿ ಉದ್ಭವವಾಗುವ ಪ್ರಕರಣಗಳಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಿತ್ತು. ಈ ಸಂಬಂಧ 2024ರ ಏಪ್ರಿಲ್‌ 30 ಮತ್ತು ಮೇ 8ರಂದೇ ಅಧಿಸೂಚನೆ ಹೊರಡಿಸಿತ್ತು ಎಂದು ತಿಳಿದು ಬಂದಿದೆ.

 

ಈ ಮಧ್ಯೆ ಒಳಾಡಳಿತ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಂಭಾವನೆ ಕುರಿತು 2025ರ ಜುಲೈ 10ರಂದು ಸಭೆ ನಡೆದಿತ್ತು. ವಿಶೇಷವೆಂದರೇ ಉಚ್ಛ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರದ ಪರವಾಗಿ ಹಾಜರಾಗಲು ಹಿರಿಯ ವಕೀಲರಾದ ಪ್ರೊ ರವಿವರ್ಮ ಕುಮಾರ್‍‌ ಅವರನ್ನು ನೇಮಿಸಲಾಗಿತ್ತು. ಹೀಗಾಗಿ ಬಿ ಎನ್ ಜಗದೀಶ್‌ ಅವರ ನೇಮಕ ಅಧಿಸೂಚನೆಯನ್ನು ಹಿಂಪಡೆಯಲು ಜುಲೈ 10ರಂದು ನಡೆದಿದ್ದ ಸಭೆಯಲ್ಲಿ ನಿರ್ಣಯಿಸಿತ್ತು.

 

ಬಿ ಎನ್ ಜಗದೀಶ್‌ ನೇಮಕಕ್ಕೆ ಅವಕಾಶವಿಲ್ಲ

 

ಉಚ್ಛ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರದ ಪರವಾಗಿ ಹಾಜರಾಗಲು ಹಿರಿಯ ವಕೀಲರಾದ ಪ್ರೊ ರವಿವರ್ಮ ಕುಮಾರ್‍‌ ಅವರನ್ನು ನೇಮಿಸಲಾಗಿತ್ತು. ಹೀಗಾಗಿ 2024ರಲ್ಲಿ ಹೊರಡಿಸಿದ್ದ ಬಿ ಎನ್ ಜಗದೀಶ್‌ ಅವರ ನೇಮಕ ಅಧಿಸೂಚನೆಯನ್ನು ಹಿಂಪಡೆದಿರುವುದರಿಂದ ಪ್ರಜ್ವಲ್‌ ರೇವಣ್ಣ ವಿರುದ್ಧದ ಸೈಬರ್‍‌ ಕ್ರೈಂ ಪೊಲೀಸ್‌ ಠಾಣೆಯಲ್ಲಿನ ಮೊಕದ್ದಮೆ ಪ್ರಕರಣದಲ್ಲಿ ಜಗದೀಶ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಲು ಅವಕಾಶವಿಲ್ಲ ಎಂದು ಸರ್ಕಾರವು ಡಿಜಿಪಿ ಅವರಿಗೆ ತಿಳಿಸಿತ್ತು.

 

 

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಪ್ರಜ್ವಲ್‌ ವಿರುದ್ಧ ನಾಲ್ವರು ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ಎರಡು ಪ್ರಕರಣದಲ್ಲಿ ಈಗಾಗಲೇ ವಿಚಾರಣೆ ಆರಂಭವಾಗಿದೆ. ಅವುಗಳು ಪ್ರಾಥಮಿಕ ಹಂತದಲ್ಲಿವೆ. ಆಕ್ಷೇಪಣೆ ಸಲ್ಲಿಸಿದ್ದು, ವಾದ ಮಂಡಿಸಲು ಕಾಲಾವಕಾಶ ನೀಡಬೇಕು” ಎಂದು ಕೋರಿದ್ದನ್ನು ಸ್ಮರಿಸಬಹುದು.

 

ನಂತರ  ಬಿ ಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.   ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿತ್ತು. ಅಲ್ಲದೇ  ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಯ್ನಾ ಕೊಠಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ಸರ್ಕಾರ ನೇಮಿಸಿತ್ತು.

 

ವಿಭಾಗೀಯ ಪೀಠ ಹೇಳಿದ್ದೇನು?

 

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಕೆ ಎಸ್ ಮುದಗಲ್ ಮತ್ತು ವೆಂಕಟೇಶ್ ನಾಯಕ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು.

 

 

ಪ್ರಕರಣಕ್ಕೆ ಸಂಬಂಧಿಸಿದ ಸಮಗ್ರ ಸಾರಾಂಶವನ್ನು ಸಲ್ಲಿಸುವಂತೆ ಪ್ರಜ್ವಲ್ ಪರ ವಕೀಲರಿಗೆ ಸೂಚಿಸಿತ್ತು.

 

ನ್ಯಾಯಮೂರ್ರ್ತಿ ವೆಂಕಟೇಶ್‌ ನಾಯಕ್

 

ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನು (ಎಸ್‌ಪಿಪಿ) ನೇಮಕ ಮಾಡಿದಂತೆ ಮೇಲ್ಮನವಿಯಲ್ಲೂ ವಾದ ಮಂಡಿಸಲು ಎಸ್‌ಪಿಪಿ ನೇಮಕ ಮಾಡಲಾಗಿದೆಯೇ ಎಂಬ ಬಗ್ಗೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿತ್ತು. ಈ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.

 

ಪ್ರಕರಣದ ಸಂತ್ರಸ್ತೆ ನುಡಿದಿರುವ ಸಾಕ್ಷಿ ಮತ್ತು ಆಕೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳಲ್ಲಿ ವ್ಯತ್ಯಾಸವಿದೆ. ಘಟನೆಯ ಬಗ್ಗೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಪೊಲೀಸರು ಗನ್ನಿಗಢದ ಫಾರ್ಮ್‌ ಹೌಸ್‌ಗೆ ಬಂದಿದ್ದರು. ಅವರನ್ನು ನೋಡಿ ಸಂತ್ರಸ್ತೆ ಭೀತಿಗೊಂಡು ಅಲ್ಲಿಂದ ಪರಾರಿಯಾಗಿದ್ದಾಗಿ ತಿಳಿಸಿದ್ದರು. ಆನಂತರ, ಪೊಲೀಸರು ಆಕೆಯನ್ನು ಎಸ್‌ಐಟಿಯ ಬೆಂಗಳೂರು ಕಚೇರಿಗೆ ಕರೆದೊಯ್ದು, ದೂರು ದಾಖಲಿಸಲು ಮನವಿ ಮಾಡಿದ್ದರು ಎಂದು ಹೇಳಲಾಗಿದೆ. ಇದರ ಪ್ರಕಾರ ನೋಡುವುದಾದರೆ ಪೊಲೀಸರು ಸಂತ್ರಸ್ತೆಯನ್ನು ಹಿಂಬಾಲಿಸಿ, ಆಕೆಯಿಂದ ಬಲವಂತದಿಂದ ದೂರು ಪಡೆದಿದ್ದಾರೆ ಎಂಬುದನ್ನು ತಿಳಿಯುತ್ತದೆ ಎಂದು ಮೇಲ್ಮನವಿಯಲ್ಲಿ ಆರೋಪಿಸಲಾಗಿತ್ತು.

 

ಆರೋಪಿತ ಘಟನೆಯು 2021ರ ಜನವರಿ 1ರಿಂದ 2022ರ ಜನವರಿ 31ರವರೆಗೆ ನಡೆದಿದೆ. 2024ರ ಮೇ 10ರಂದು ಸಂತ್ರಸ್ತೆ ಪೊಲೀಸರನ್ನು ಬಸವನಗುಡಿಯಲ್ಲಿ ಅತ್ಯಾಚಾರ ಎಸಗಿದ್ದ ಸ್ಥಳಕ್ಕೆ ಕರೆದೊಯ್ದಿದ್ದರು. ಇಲ್ಲಿ ಕೃತ್ಯ ನಡೆದ ಹಾಸಿಗೆ ಮತ್ತು ಮಂಚ ತೋರಿಸಿದ್ದು, ಪ್ರಾಸಿಕ್ಯೂಷನ್‌ನ 6ನೇ ಸಾಕ್ಷಿಯಾದ ಲಿಂಗನಮೂರ್ತಿ ಅವರು ಹಾಸಿಗೆಯಲ್ಲಿ ಕೆಲವು ಕಲೆಗಳು ಪತ್ತೆಯಾಗಿದ್ದವು ಎಂದು ತಿಳಿಸಿದ್ದರು. ಮೂರು ವರ್ಷಗಳಾದರೂ ಹಾಸಿಗೆಯ ಮೇಲಿನ ಬಟ್ಟೆಯನ್ನು ತೊಳೆಯದಿರಲು ಹೇಗೆ ಸಾಧ್ಯ ಎಂಬ ಬಗ್ಗೆ ವಿಚಾರಣಾಧೀನ ನ್ಯಾಯಾಲಯಕ್ಕೆ ಯಾವುದೇ ಪ್ರಶ್ನೆ ಉದ್ಭವಿಸಿಲ್ಲ ಎಂದು ವಿಚಾರಣಾ‌ಧೀನ ನ್ಯಾಯಾಲಯದ ತೀರ್ಪಿನ ಬಗ್ಗೆ ಆಕ್ಷೇಪಿಸಿದ್ದರು.

 

ಗನ್ನಿಗಢದ ಫಾರ್ಮ್‌ ಹೌಸ್‌ನಲ್ಲಿ ಕಾರ್ಮಿಕರು ಉಳಿದುಕೊಳ್ಳಲು ನಿರ್ಮಿಸಲಾಗಿದ್ದ ಮನೆಯಲ್ಲಿ 2024ರ ಮೇ 28ರಂದು ಕೆಲ ಉಡುಪು ಮತ್ತು ತಲೆಗೂದಲನ್ನು ತನಿಖಾಧಿಕಾರಿ ಪತ್ತೆ ಮಾಡಿದ್ದಾಗಿ ತಿಳಿಸಿದ್ದರು. ಈ ಅಂಶವನ್ನು ಎಫ್‌ಐಆರ್‍‌ನಲ್ಲಿಯೂ ದಾಖಲಿಸಲಾಗಿತ್ತು.

 

ಎಫ್‌ಐಆರ್‍‌ ಪ್ರತಿ

 

ಆದರೆ, ಸಂತ್ರಸ್ತೆಯು ತನಿಖಾಧಿಕಾರಿಯನ್ನು ಅಲ್ಲಿಗೆ ಕರೆದೊಯ್ಯದಿದ್ದರೂ ಅವರಿಗೆ ಕನಸು ಬಿದ್ದಿದ್ದಾರೂ ಹೇಗೆ, ಸಂತ್ರಸ್ತೆಯ ಗೈರಿನಲ್ಲಿ ತನಿಖಾಧಿಕಾರಿಯು ಉಡುಪು ಮತ್ತು ತಲೆಗೂದಲನ್ನು ಜಪ್ತಿ ಮಾಡಿರುವುದು ಗಂಭೀರ ಲೋಪವಾಗಿದ್ದು, ಅದಕ್ಕೆ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎನ್ನುವುದು ಪ್ರಜ್ವಲ್ ರೇವಣ್ಣ ಪರ ವಕೀಲರು ವಾದಿಸಿದ್ದರು.

 

ಉಡುಪಿನಲ್ಲಿ ವೀರ್ಯದ ಕಲೆ ಪತ್ತೆಯಾಗಿದೆ ಎಂದು ಹೇಳಲಾಗಿತ್ತು. ಸಂತ್ರಸ್ತೆ 2022ರಲ್ಲಿ ಕೆಲಸ ತೊರೆದಿದ್ದಾರೆ. ಎಲ್ಲ ಕೊಠಡಿಗಳನ್ನು ಲಾಕ್‌ ಮಾಡಲಾಗಿತ್ತು ಎಂದು ಪ್ರಾಸಿಕ್ಯೂಷನ್‌ 8ನೇ ಸಾಕ್ಷಿ ಹೇಳಿದ್ದಾರೆ. ಎರಡನೇ ಕೊಠಡಿಯು ಬ್ಯಾಟರಿ, ಖಾಲಿ ಬಾಕ್ಸ್‌ಗಳು, ಬಣ್ಣದ ಡಬ್ಬಿಗಳು, ಕಾರ್ಪೆಟ್‌ ಇಡುವ ಸ್ಥಳವಾಗಿ ಭಾಸವಾಗುತ್ತಿತ್ತು ಎಂದು ಹೇಳಲಾಗಿತ್ತು. ಮೂರು ವರ್ಷಗಳಿಂದ ಬೀಗಬಿದ್ದಿದ್ದ ಈ ಕೊಠಡಿಯಲ್ಲಿ ವೀರ್ಯದ ಕಲೆ ಮತ್ತು ತಲೆಗೂದಲು ಪತ್ತೆಯಾಗುವುದಾದರೂ ಹೇಗೆ ಎಂದು ಪ್ರಜ್ವಲ್ ತಮ್ಮ ಮೇಲ್ಮನವಿಯಲ್ಲಿ ಆಕ್ಷೇಪವೆತ್ತಿದ್ದರು.

 

ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಕಳೆದ ಆಗಸ್ಟ್ 2ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದರು.

 

ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376(2)(ಕೆ)-ಪ್ರಬಲ ಸ್ಥಾನದಲ್ಲಿದ್ದುಕೊಂಡು ಮಹಿಳೆ ಮೇಲೆ ಅತ್ಯಾಚಾರ) ಅಪರಾಧಕ್ಕೆ ಜೀವಾವಧಿ ಶಿಕ್ಷೆ ಹಾಗೂ ಹಾಗೂ ₹5 ಲಕ್ಷ ದಂಡ, 376(2)(ಎನ್)-(ಮಹಿಳೆಯ ಮೇಲೆ ಪದೇಪದೆ ಅತ್ಯಾಚಾರ) ಅಪರಾಧಕ್ಕೆ ಜೀವನ ಪರ್ಯಂತ ಸೆರೆವಾಸ ಹಾಗೂ ₹5 ಲಕ್ಷ ದಂಡದ ಗರಿಷ್ಠ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿತ್ತು.

 

ಇದಲ್ಲದೆ, ಸೆಕ್ಷನ್ 354 (ಎ)-(ಲೈಂಗಿಕ ದೌರ್ಜನ್ಯ) ಅಡಿಯ ಅಪರಾಧಕ್ಕೆ 3 ವರ್ಷ ಜೈಲು, ₹25 ಸಾವಿರ ದಂಡ; ಸೆಕ್ಷನ್ 354 (ಬಿ)-(ವಿವಸ್ತ್ರಗೊಳಿಸುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ ಅಥವಾ ಬಲಪ್ರಯೋಗ) ಅಡಿಯ ಅಪರಾಧಕ್ಕೆ 7 ವರ್ಷ ಕಾರಾಗೃಹ ಶಿಕ್ಷೆ, ₹50 ಸಾವಿರ ದಂಡ; ಸೆಕ್ಷನ್ 354 (ಸಿ)-(ಮಹಿಳೆಯ ಖಾಸಗಿ ದೃಶ್ಯಗಳನ್ನು ನೋಡುವುದು ಅಥವಾ ಸೆರೆಹಿಡಿಯುವುದು) ಅಪರಾಧಕ್ಕೆ 3 ವರ್ಷ ಜೈಲು, ₹25 ಸಾವಿರ ದಂಡ; ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯ ಅಪರಾಧಕ್ಕೆ 2 ವರ್ಷ ಜೈಲು ಶಿಕ್ಷೆ, ₹10 ಸಾವಿರ ದಂಡ ವಿಧಿಸುವ ಅವಕಾಶವಿದೆ.

 

ಸೆಕ್ಷನ್ 201 (ಅಪರಾಧದ ಸಾಕ್ಷ್ಯ ನಾಶ) ಅಡಿಯ ಅಪರಾಧಕ್ಕೆ 3 ವರ್ಷ ಸೆರೆವಾಸ, ₹25 ಸಾವಿರ ದಂಡ; ಮಾಹಿತಿ ತಂತ್ರಜ್ಞಾನ (ಐಟಿ) ಕಾಯಿದೆ ಸೆಕ್ಷನ್ 66(ಇ)-(ವ್ಯಕ್ತಿಯ ಖಾಸಗಿತನ ಉಲ್ಲಂಘಿಸಿ ಚಿತ್ರ ಸೆರೆ ಹಿಡಿಯುವುದು ಹಾಗೂ ಹಂಚುವುದು) ಅಡಿಯ ಅಪರಾಧಕ್ಕೆ 3 ವರ್ಷ ಜೈಲು, ₹25 ಸಾವಿರ ದಂಡ ವಿಧಿಸಿ ಆದೇಶಿಸಿತ್ತು.

 

ಒಟ್ಟು ದಂಡದ ಮೊತ್ತ ₹11.60 ಲಕ್ಷದಲ್ಲಿ ₹11.25 ಲಕ್ಷವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಿದ್ದ ನ್ಯಾಯಾಲಯ, ಎಲ್ಲ ಶಿಕ್ಷೆಗಳೂ ಏಕಕಾಲಕ್ಕೆ ಜಾರಿಯಾಗಲಿವೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿರವುದನ್ನು ಸ್ಮರಿಸಬಹುದು.

Your generous support will help us remain independent and work without fear.

Latest News

Related Posts