ಬೆಂಗಳೂರು; ಉಡುಪಿ ಜಿಲ್ಲೆ ಮತ್ತು ತಾಲೂಕಿನ ಅಂಜಾರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಅಂದಾಜು 35 ಲಕ್ಷ ರು ಮೌಲ್ಯದ ಗೋಮಾಳ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡುವ ಪ್ರಸ್ತಾವವನ್ನು ಆರ್ಥ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರಸ್ಕರಿಸಿದ್ದರೂ ಸಹ ಅವರೇ ಅಧ್ಯಕ್ಷತೆ ವಹಿಸಿದ್ದ ಸಚಿವ ಸಂಪುಟ ಸಭೆಯು ಅದೇ ಪ್ರಸ್ತಾವವನ್ನು ಅನುಮೋದಿಸಿರುವುದು ಇದೀಗ ಬಹಿರಂಗವಾಗಿದೆ.
ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ನಾಗರಿಕ ಮೂಲಭೂತ ಸೌಕರ್ಯಗಳಿಗಾಗಿ ಮೀಸಲಿರಿಸಿರುವ ನಿವೇಶನಗಳನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಾರುಕಟ್ಟೆ ದರದಲ್ಲಿನ ಶೇ.5ರಷ್ಟು ದರದಲ್ಲಿ ಮಂಜೂರು ಮಾಡಿ, ಅಪಾರ ಪ್ರಮಾಣಲ್ಲಿ ನಷ್ಟ ಸಂಭವಿಸಿರುವ ಮಧ್ಯೆಯೇ ಉಡುಪಿ ಜಿಲ್ಲೆಯ ಗೋಮಾಳ ಪ್ರಕರಣವೂ ಮುನ್ನೆಲೆಗೆ ಬಂದಿದೆ.
ಉಡುಪಿ ಜಿಲ್ಲೆ ಮತ್ತು ತಾಲೂಕಿನ ಅಂಜಾರು ಗ್ರಾಮದ ಸರ್ವೆ ನಂಬರ್ 32ರಲ್ಲಿ ಒಟ್ಟಾರೆ 86 ಸೆಂಟ್ಸ್ ವಿಸ್ತೀರ್ಣದ ಗೋಮಾಳ ಜಮೀನಿದೆ.

ಈ ಪೈಕಿ 20 ಸೆಂಟ್ಸ್ ಭೂಮಿಯನ್ನು ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣ ಮಾಡಲು ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡಲು ಉಡುಪಿ ಜಿಲ್ಲಾಧಿಕಾರಿಯವರು 2025ರ ಜನವರಿ 10ರಂದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು.
ಈ ಪ್ರಸ್ತಾವಿತ ಜಮೀನು ಭೂ ಲಭ್ಯತಾ ಪಟ್ಟಿಯಲ್ಲಿರಲಿಲ್ಲ. ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಹೊಂದಿರುವ ಈ ಜಮೀನು, ಸರ್ಕಾರಿ ಅನಾಧೀನ ವರ್ಗೀಕರಣವಾಗಿತ್ತು. ಈ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡಲು ಕಂದಾಯ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವ (ಆರ್ಡಿ8 ಎಲ್ಜಿಎ/2025) ಮಂಡಿಸಿತ್ತು.
ನಿಯಮದಲ್ಲಿ ಅವಕಾಶವೇ ಇಲ್ಲ
ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 22(ಎ)(2) ಅನ್ವಯ ನಗರ ಮಿತಿಯೊಳಗೆ ಇರುವ ಸರ್ಕಾರಿ ಜಮೀನನ್ನು ಯಾವುದೇ ವ್ಯಕ್ತಿಗಳಿಗೆ ಅಥವಾ ಖಾಸಗಿ ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶವೇ ಇಲ್ಲ. ಆದರೂ ಕಾಂಗ್ರೆಸ್ ಭವನ ಟ್ರಸ್ಟ್ಗೆ ಗೋಮಾಳ ಮಂಜೂರು ಮಾಡುವ ಪ್ರಸ್ತಾವವನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾವ ಮಂಡಿಸಲು ಸಚಿವ ಕೃಷ್ಣಬೈರೇಗೌಡ ಅವರು ಸೂಚಿಸಿದ್ದರು.
1969ರ ನಿಯಮ 27ನ್ನು ಬಳಸಿಕೊಂಡಿರುವ ಕಂದಾಯ ಇಲಾಖೆಯು ನಿಯಮ 22 ಎ (2)ನ್ನು ಸಡಿಲಿಸಿ ಕೃಷಿಯೇತರ ಮಾರುಕಟ್ಟೆ ಮೌಲ್ಯದ ಶೇ.100ರಷ್ಟು ಮತ್ತು ಇನ್ನಿತರೆ ಶಾಸನಬದ್ಧ ಶುಲ್ಕಗಳನ್ನು ವಿಧಿಸಿ ಕಾಂಗ್ರೆಸ್ ಭವನ ಟ್ರಸ್ಟ್ಗೆ 20 ಸೆಂಟ್ಸ್ ಜಮೀನನ್ನು ಮಂಜೂರು ಮಾಡಲು ಸಚಿವ ಸಂಪುಟ ನಿರ್ಣಯಕ್ಕೆ ಮಂಡಿಸಿತ್ತು.
ಆರ್ಥಿಕ ಪರಿಣಾಮಗಳೇನು?
ಉಡುಪಿ ಜಿಲ್ಲೆ, ಉಡುಪಿ ತಾಲೂಕಿನ ಅಂಜಾರು ಗ್ರಾಮದಲ್ಲಿರುವ ಈ ಜಮೀನಿಗೆ ಪ್ರತಿ ಸೆಂಟ್ಸ್ಗೆ 40,000 ರು ಮಾರ್ಗಸೂಚಿ ಮೌಲ್ಯವಿದೆ. ಮಾರುಕಟ್ಟೆ ಮೌಲ್ಯ 69,667 ರು ಇದ್ದರೇ ಅಭಿವೃದ್ಧಿ ಹೊಂದಿದ ಜಾಗಕ್ಕೆ 72,846 ರು ಇದೆ. ಮಾರುಕಟ್ಟೆಯಲ್ಲಿ ಪ್ರತಿ ಸೆಂಟ್ಸ್ಗೆ 1,86,575 ರು ಇದೆ ಎಂದು ಕಂದಾಯ ಇಲಾಖೆಯು ಆರ್ಥಿಕ ಪರಿಣಾಮಗಳನ್ನು ಸಚಿವ ಸಂಪುಟದಲ್ಲಿ ವಿವರಿಸಿರುವುದು ಗೊತ್ತಾಗಿದೆ.
ಈ ಪ್ರಸ್ತಾವನೆಗೆ ಕಂದಾಯ ಇಲಾಖೆಯು ಕಾನೂನು ಇಲಾಖೆಯ ಅಭಿಪ್ರಾಯ ಕೋರಿತ್ತು.
ಪ್ರಸ್ತಾವ ಒಪ್ಪದ ಕಾನೂನು ಇಲಾಖೆ
ಕಾಂಗ್ರೆಸ್ ಭವನ ಟ್ರಸ್ಟ್ ಗೆ 20 ಸೆಂಟ್ಸ್ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಲು ಕಾನೂನು ಇಲಾಖೆಯು ಒಪ್ಪಿರಲಿಲ್ಲ. ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 22(ಎ)(2) ಅಡಿ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನುಗಳನ್ನು ಯಾವುದೇ ಖಾಸಗಿ ವ್ಯಕ್ತಿ ಅಥವಾ ಖಾಸಗಿ ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶವಿಲ್ಲ ಎಂದು ಕಾನೂನು ಇಲಾಖೆಯು ತನ್ನ ಅಭಿಪ್ರಾಯವನ್ನು ಸಮರ್ಥಿಸಿಕೊಂಡಿತ್ತು.
ಆರ್ಥಿಕ ಇಲಾಖೆಯಿಂದಲೂ ತಿರಸ್ಕೃತ
ಕಂದಾಯ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವವನ್ನು ಕಾನೂನು ಇಲಾಖೆ ಮಾತ್ರವಲ್ಲ, ಆರ್ಥಿಕ ಇಲಾಖೆಯೂ ಸಹ ತಿರಸ್ಕರಿಸಿತ್ತು. ‘ ಆಡಳಿತ ಇಲಾಖೆಯ ಪ್ರಸ್ತಾವವನ್ನು ಪರಿಶೀಲಿಸಲಾಗಿದೆ. ಉಡುಪಿ ತಾಲೂಕು ಅಂಜಾರು ಗ್ರಾಮದ ಸರ್ವೆ ನಂಬರ್ 32ರಲ್ಲಿನ 0.20 ಎಕರೆ ಜಮೀನನ್ನು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇವರಿಗೆ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಗೆ ಮಂಜೂರು ಮಾಡುವ ಪ್ರಸ್ತಾವವನ್ನು 2025ರ ಜುಲೈ 22ರಂದೇ ತಿರಸ್ಕರಿಸಿದೆ. ಇದೇ ಅಭಿಪ್ರಾಯವನ್ನು ಪುನರುಚ್ಛರಿಸಲಾಗಿದೆ,’ ಎಂದು ಆರ್ಥಿಕ ಇಲಾಖೆಯು ಅಭಿಪ್ರಾಯಿಸಿತ್ತು. ವಿಶೇಷವೆಂದರೇ ಈ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಅನುಮೋದಿಸಿದ್ದರು.
ಆದರೂ ಸಹ ಈ ಪ್ರಸ್ತಾವವನ್ನು ಸಚಿವ ಸಂಪುಟಕ್ಕೆ ಮಂಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು.
ಕಂದಾಯ ಇಲಾಖೆಯ ನಿರ್ಧಾರವೇನು?
ಕಾಂಗ್ರೆಸ್ ಭವನ ಟ್ರಸ್ಟ್ಗೆ ಸರ್ಕಾರಿ ಜಮೀನು ಮಂಜೂರು ಮಾಡಲು ಕಾನೂನು ಮತ್ತು ಆರ್ಥಿಕ ಇಲಾಖೆಯು ಸಹಮತಿಸಿಲ್ಲ. ಆದರೆ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 27ರಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 22ಎ (2)ನ್ನು ಸಡಿಲಿಸಿ, ಪ್ರಸ್ತಾಪಿತ ಜಮೀನಿನ ಪ್ರಚಲಿತ ಕೃಷಿಯೇತರ ಮಾರುಕಟ್ಟೆ ಮೌಲ್ಯದ ಶೇ.100ರಷ್ಟು ಮತ್ತು ಇನ್ನಿತರೆ ಶಾಸನಬದ್ಧ ಶುಲ್ಕಗಳನ್ನು ವಿಧಿಸಿ ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡಲು ಕಂದಾಯ ಇಲಾಖೆಯು ನಿರ್ಧರಿಸಿತ್ತು. ಇದನ್ನು ಸಚಿವ ಕೃಷ್ಣಬೈರೇಗೌಡರು ಸಹ ಅನುಮೋದಿಸಿದ್ದರು.
ಕಾಂಗ್ರೆಸ್ ಭವನ ಟ್ರಸ್ಟ್ಗೆ ನಾಗರಿಕ ಮೂಲಭೂತ ಸೌಲಭ್ಯಗಗಳಿಗಾಗಿ ಕಾಯ್ದರಿಸಿದ್ದ ನಿವೇಶನಗಳನ್ನು ಮಂಜೂರು ಮಾಡಲು ಸಚಿವ ಸಂಪುಟಕ್ಕೆ ಮಂಡಿಸಿದ್ದ ಪ್ರಸ್ತಾವದಲ್ಲಿ ಶೇ.5ರಷ್ಟು ದರ ಎಂದು ಎಲ್ಲಿಯೂ ನಮೂದಿಸಿರಲಿಲ್ಲ. ಸಚಿವ ಸಂಪುಟಕ್ಕೆ ಮಂಡಿಸಿದ್ದ ಪ್ರಸ್ತಾವದಲ್ಲಿ ದರದ ಮೊತ್ತ ನಮೂದಿಸದೇ ಇದ್ದರೂ ಸಹ ನಗರಾಭಿವೃದ್ಧಿ ಇಲಾಖೆಯು ಶೇ.5ರಷ್ಟು ದರದಲ್ಲಿ ಸಿ ಎ ನಿವೇಶನಗಳನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ನಗರ ಸ್ಥಳೀಯ ಸಂಸ್ಥೆಗಳ ಸಾರ್ವಜನಿಕ ಉದ್ದೇಶಗಳನ್ನು ಹೊರತುಪಡಿಸಿ ಬೇರೆ ಉದ್ದೇಶಗಳಿಗೆ ನಗರ ಸ್ಥಳೀಯ ಸಂಸ್ಥೆಗಳ ಮಾಲೀಕತ್ವದಲ್ಲಿರುವ ನಾಗರಿಕ ಸೌಲಭ್ಯದ ನಿವೇಶನಗಳನ್ನು ಹಂಚಿಕೆ ಮಾಡಲು ಅವಕಾಶವಿಲ್ಲ. ಈ ಸಂಬಂಧ ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೇ (ಸರ್ಕಾರದ ಅಧಿಸೂಚನೆ ದಿನಾಂಕ; 24/05/2017) ಅಧಿಸೂಚನೆ ಹೊರಡಿಸಿತ್ತು. ಆದರೀಗ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲೇ 2017ರ ಅಧಿಸೂಚನೆಯನ್ನೇ ಉಲ್ಲಂಘಿಸಿತ್ತು.
ಕಾಂಗ್ರೆಸ್ ಭವನ ಟ್ರಸ್ಟ್ಗೆ ನಿವೇಶನ; ತನ್ನದೇ ಅಧಿಸೂಚನೆ ಉಲ್ಲಂಘಿಸಿದ ಕಾಂಗ್ರೆಸ್ ಸರ್ಕಾರ
ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿನ ಪುರಸಭೆಗಳ ವ್ಯಾಪ್ತಿಯಲ್ಲಿ 25 ನಿವೇಶನಗಳನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಚಿವ ರಹೀಂ ಖಾನ್ ಅವರಿಗೆ ನಿರ್ದೇಶನ ನೀಡಿದ್ದರು.
ಕಾಂಗ್ರೆಸ್ ಭವನ ಟ್ರಸ್ಟ್ಗೆ 25 ನಿವೇಶನ; ಪೌರಾಡಳಿತ ಇಲಾಖೆ ಕುತ್ತಿಗೆ ಮೇಲೆ ಕುಳಿತ ಡಿ ಕೆ ಶಿವಕುಮಾರ್
ಕೊಪ್ಪಳ ನಗರದಲ್ಲಿ ಸರ್ಕಾರಿ ಮಾರ್ಗಸೂಚಿ ದರದ ಪ್ರಕಾರ 1.31 ಕೋಟಿ ರು ಬೆಲೆಬಾಳುವ ಸಿ ಎ ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ಕೇವಲ 13.19 ಲಕ್ಷ ರುಪಾಯಿಗೆ ರಿಯಾಯಿತಿ ದರದಲ್ಲಿ ಮಂಜೂರು ಮಾಡಿತ್ತು.
ಕಾಂಗ್ರೆಸ್ ಭವನ ಟ್ರಸ್ಟ್ಗೆ ಕೊಪ್ಪಳದಲ್ಲೂ ನಿವೇಶನ; 1.18 ಕೋಟಿ ನಷ್ಟ, ನಿಯಮ ಉಲ್ಲಂಘಿಸಿದ ಸರ್ಕಾರ
ರಾಜ್ಯ ಕಾಂಗ್ರೆಸ್ ಸರ್ಕಾರವು ನಗರಾಭಿವೃದ್ಧಿ, ಪೌರಾಡಳಿತ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ವಶ ಅಥವಾ ಸ್ವಾಧೀನದಲ್ಲಿರುವ ಸರ್ಕಾರಿ ಜಾಗಗಳನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡುತ್ತಿರುವ ಪ್ರಕರಣದಲ್ಲಿ ಹಿತಾಸಕ್ತಿ ಸಂಘರ್ಷ ಎದುರಾಗಿತ್ತು.
ತುಮಕೂರು ಮಹಾನಗರ ಪಾಲಿಕೆಯ ಸುಪರ್ದಿಯಲ್ಲಿರುವ ಬಹು ಕೋಟಿ ಬೆಲೆಬಾಳುವ ಒಟ್ಟು ಜಮೀನಿನ ಪೈಕಿ 2 ಎಕರೆ ಜಾಗವನ್ನು ಸಾರ್ವಜನಿಕ ಹರಾಜು ನಡೆಸದೇ ನೇರವಾಗಿ ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಈ ಜಾಗವು ವ್ಯಾಜ್ಯದಿಂದ ಕೂಡಿದೆಯಲ್ಲದೇ ನ್ಯಾಯಾಲಯದಲ್ಲಿ ಅಸಲು ದಾವೆ ಅರ್ಜಿಯ ವಿಚಾರಣೆಯು ಇನ್ನೂ ಇತ್ಯರ್ಥಗೊಂಡಿಲ್ಲ. ಆದರೂ ಸಹ ಕಾಂಗ್ರೆಸ್ ಭವನ ಟ್ರಸ್ಟ್ಗೆ 2 ಎಕರೆ ಜಮೀನು ಮಂಜೂರು ಮಾಡಲು ಸಚಿವ ಸಂಪುಟವು ತೀರ್ಮಾನ ತೆಗೆದುಕೊಂಡಿತ್ತು.
ಕಾಂಗ್ರೆಸ್ ಭವನ ಟ್ರಸ್ಟ್ಗೆ ಚಿಲ್ಲರೆ ದರದಲ್ಲಿ 2 ಎಕರೆ ಜಮೀನು; ಹರಾಜು ನಡೆಸದೇ ಮಂಜೂರು, ನಿಯಮ ಉಲ್ಲಂಘನೆ
ಹೀಗೆ ಬಹುಕೋಟಿಯಷ್ಟು ಬೆಲೆ ಬಾಳುವ ಈ ಜಮೀನನ್ನು ಮಾರ್ಗಸೂಚಿ ಮೌಲ್ಯದ ಕೇವಲ ಶೇ.5ರಷ್ಟು ಅಂದರೇ 90 ಲಕ್ಷ ರು ದರ ವಿಧಿಸಿ ಈಗ ಕಾಂಗ್ರೆಸ್ ಪಕ್ಷಕ್ಕೆ ಮಂಜೂರು ಮಾಡಲಾಗಿದೆ. ಸಚಿವ ಸಂಪುಟವು ಕೈಗೊಂಡಿರುವ ತೀರ್ಮಾನವು (ಸಂಖ್ಯೆ ಸಿ; 396/2025) ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟಕ್ಕೆ ಕಾರಣವಾಗಿತ್ತು.
ಕಾಂಗ್ರೆಸ್ ಭವನ ಟ್ರಸ್ಟ್ಗೆ ನಿವೇಶನ; ಆರ್ಡಿಪಿಆರ್ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?
ಬೆಳಗಾವಿಯಲ್ಲಿನ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು (ಕೆಪಿಸಿಸಿ) ರಾಜ್ಯಾದ್ಯಂತ 100 ಕಾಂಗ್ರೆಸ್ ಭವನಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ಸಂಬಂಧ ಪಕ್ಷಕ್ಕೆ ಗುರಿ ನೀಡಿದ್ದರು. ಹೀಗಾಗಿ ಎಲ್ಲಾ ಸಚಿವರೂ ನಗರ ಮತ್ತು ಗ್ರಾಮೀಣ ಸ್ಥಳೀಯ ಸರ್ಕಾರಗಳ ಅಧೀನದಲ್ಲಿರುವ ಮತ್ತು ಅವುಗಳ ಹೆಸರಿನಲ್ಲಿರುವ ಜಮೀನು, ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು.
ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣ; ಪಂಚಾಯ್ತಿಗಳ ಜಾಗದ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್ ಭವನ ಟ್ರಸ್ಟ್
ಕಾಂಗ್ರೆಸ್ ಭವನ ಟ್ರಸ್ಟ್ ಯಾವ ಕಾಯ್ದೆ ಅಡಿ ನೋಂದಣಿಯಾಗಿದೆ ಎಂಬುದರ ಕುರಿತು ಇಲಾಖೆಯು ಪ್ರಶ್ನಿಸಿತ್ತು.
ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?
ಹಿಂದುಳಿದ ಮತ್ತು ನಾಯಕ ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಸ್ಥಾಪನೆ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗಾಗಿ ಕಾಯ್ದಿರಿಸಿದ್ದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡಲು ಸಚಿವ ಸಂಪುಟವು ಈಚೆಗಷ್ಟೇ ಅನುಮೋದನೆ ನೀಡಿತ್ತು.
ಹಿಂದುಳಿದ ಜಾತಿಗಳ ಜನರ ಸ್ಮಶಾನ, ನಿವೇಶನ ಉದ್ದೇಶದ ಸರ್ಕಾರಿ ಭೂಮಿ ಮೇಲೂ ಕಾಂಗ್ರೆಸ್ ಭವನ ಟ್ರಸ್ಟ್ನ ಕಣ್ಣು
ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಅಗಲಕುರ್ಕಿ ಗ್ರಾಮದಲ್ಲಿ ಅನುಮೋದಿತ ಬಡಾವಣೆಯಲ್ಲಿ ನಿವೇಶನ ಕೋರಿದ್ದರು. ಆದರೀಗ ನಗರಾಭಿವೃದ್ದಿ ಇಲಾಖೆಯು ಸ್ಥಳವನ್ನು ಬದಲಾಯಿಸಿತ್ತು.
ಕಾಂಗ್ರೆಸ್ ಭವನ ಟ್ರಸ್ಟ್ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ
ಚಿಕ್ಕಬಳ್ಳಾಪುರ ಜಿಲ್ಲೆಗೆ ಉಸ್ತುವಾರಿ ಸಚಿವ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಅವರ ಸೂಚನೆಯಂತೆ ನಗರಾಭಿವೃದ್ದಿ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಭವನದ ಕಟ್ಟಡ ನಿರ್ಮಾಣಕ್ಕೆ ನಿವೇಶನವನ್ನು ಮಂಜೂರು ಮಾಡಲು ತಯಾರಿ ನಡೆಸಿತ್ತು. ಈ ಕುರಿತು ‘ದಿ ಫೈಲ್’, ಮೇ 5ರಂದೇ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.
ಕಾಂಗ್ರೆಸ್ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ವಶದಲ್ಲಿರುವ ನಿವೇಶನವನ್ನು ಜಿಲ್ಲಾ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಸಚಿವ ಸಂಪುಟವು ಅನುಮೋದಿಸಿತ್ತು.
ಕಾಂಗ್ರೆಸ್ ಪಕ್ಷಕ್ಕೆ ನಗರ ಪಾಲಿಕೆ ಆಸ್ತಿ ಮಂಜೂರು; ಬಿಜೆಪಿ ಹಾದಿ ತುಳಿದ ಕಾಂಗ್ರೆಸ್, ಕಡಿಮೆ ಬೆಲೆ ನಿಗದಿಯೇಕೆ?
ಆದರೀಗ ಆರ್ಥಿಕ ಇಲಾಖೆಯು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಸ್ತಿಯನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಒಪ್ಪಿಗೆ ಸೂಚಿಸಿತ್ತು. ಇದರ ಅಭಿಪ್ರಾಯದ ಮೇರೆಗೆ ಸಚಿವ ಸಂಪುಟವೂ 2025ರ ಫೆ.20ರಂದು ನಡೆದ ಸಭೆಯಲ್ಲಿ ಮಂಜೂರು ಮಾಡಿತ್ತು.
ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ
ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿತ್ತು.
ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ರಾಷ್ಟ್ರೋತ್ಥಾನ ಪರಿಷತ್, ಜನಸೇವಾ ಟ್ರಸ್ಟ್ ಸೇರಿದಂತೆ ಸಂಘ ಪರಿವಾರದ ಇನ್ನಿತರೆ ಸಂಘ ಸಂಸ್ಥೆಗಳಿಗೂ ಗೋಮಾಳ, ಸರ್ಕಾರಿ ಜಮೀನು, ಬಿ ಖರಾಬು ಜಮೀನುಗಳನ್ನು ಚಿಲ್ಲರೆ ದರದಲ್ಲಿ ಮಂಜೂರು ಮಾಡಿತ್ತು.
ರಾಷ್ಟ್ರೋತ್ಥಾನ ಪರಿಷತ್, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್’ನ 13 ವರದಿಗಳು
ಇದೀಗ ಕಾಂಗ್ರೆಸ್ ಸರ್ಕಾರವು ಸಹ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಭವನಗಳಿಗೆ ಕಟ್ಟಡ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧೀನದಲ್ಲಿ ಮತ್ತು ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿರುವ ನಿವೇಶನಗಳ ಮೇಲೆ ಕಣ್ಣು ಹಾಕಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.









