ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಇನ್ನೂ 15,429.51 ಕೋಟಿ ರು ಬಾಕಿ ಮೊತ್ತ ಪಾವತಿಸಿಲ್ಲ.
ಗುತ್ತಿಗೆದಾರರಿಗೆ ಇಷ್ಟೊಂದು ಮೊತ್ತವನ್ನು ಬಾಕಿ ಉಳಿಸಿಕೊಂಡಿರುವ ಕಾರಣ ರಾಜ್ಯದ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಬೃಹತ್ ನೀರಾವರಿ ಯೋಜನೆಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುತ್ತಿಲ್ಲ. ಅಲ್ಲದೇ ಕಾಲುವೆ ಕಾಮಗಾರಿಗಳು, ಜಲಾಶಯಗಳ ನಿರ್ಮಾಣ ಸೇತುವೆ ಮತ್ತಿತರೆ ಮೂಲಸೌಕರ್ಯ ಕಾಮಗಾರಿಗಳ ಪೈಕಿ ಬಹುತೇಕ ಕುಂಠಿತಗೊಂಡಿದೆ.
ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿನ ನೀರಾವರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ ಮೊತ್ತದ ಕುರಿತು ವಿಧಾನಪರಿಷತ್ನ ಪ್ರತಿಪಕ್ಷ ನಾಯಕ ಛಲವಾದಿ ಟಿ ನಾರಾಯಣಸ್ವಾಮಿ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಜಲಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ ಅವರು ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.
ಜಲಸಂಪನ್ಮೂಲ ಇಲಾಖೆಯಡಿ ಬರುವ ಕೃಷ್ಣಾಭಾಗ್ಯ ಜಲನಿಗಮ, ಕರ್ನಾಟಕ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮಗಳಿಗೆ ಪ್ರತಿ ವರ್ಷ ಆಯವ್ಯಯದಲ್ಲಿ ಸಾವಿರಾರು ಕೋಟಿ ರುಪಾಯಿ ಹಂಚಿಕೆ ಮಾಡುತ್ತದೆ. ಈ ಅನುದಾನದಲ್ಲಿ ಬಂಡವಾಳ ವೆಚ್ಚ ಹಾಗೂ ಇತರೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ಕಾಮಗಾರಿಗಳಿಗೆ ಅನುದಾನ ಒದಗಿಸಿದೆ. 1/12ನೇ ಆಧಾರದ ಮೇಲೆ ಪ್ರತಿ ತಿಂಗಳು ಆಯಾ ಲೆಕ್ಕ ಶೀರ್ಷಿಕೆಯಡಿಯಲ್ಲಿ ಅನುದಾನ ಬಿಡುಗಡೆ ಮಾಡುತ್ತಿದೆ. ಅದನ್ನು ನಿಗಮಗಳು ಯೋಜನೆ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಬಿಲ್ಗಳ ಪಾವತಿಗಾಗಿ ನಿಗದಿತವಾಗಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಚಿವ ಚೆಲುವರಾಯಸ್ವಾಮಿ ಅವರು ಉತ್ತರಿಸಿರುವುದು ಗೊತ್ತಾಗಿದೆ.
ಅಲ್ಲದೇ ಕಾಮಗಾರಿಗಳ ಬಿಲ್ಗಳನ್ನು ಗುತ್ತಿಗೆದಾರರಿಗೆ ಸಕಾಲದಲ್ಲಿ ಪಾವತಿಸದೇ ನೀರಾವರಿ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಿರುವ ಪ್ರಕರಣಗಳು ವರದಿಯಾಗಿಲ್ಲ ಎಂದು ಉತ್ತರಿಸಿದ್ದಾರೆ. ಅದೇ ರೀತಿ ಗುತ್ತಿಗೆದಾರರಿಗೆ ಬಾಕಿ ಇರುವ ಮೊತ್ತದ ವಿವರಗಳನ್ನೂ ಉತ್ತರದಲ್ಲಿ ಒದಗಿಸಿದ್ದಾರೆ.

ಈ ಉತ್ತರದ ಪ್ರಕಾರ ಕೃಷ್ಣ ಭಾಗ್ಯ ಜಲನಿಗಮ ವ್ಯಾಪ್ತಿಯಲ್ಲಿ 1,649.57 ಕೋಟಿ ರು., ಕರ್ನಾಟಕ ನೀರಾವರಿ ನಿಗಮದಲ್ಲಿ 4,696.86 ಕೋಟಿ ರು., ಕಾವೇರಿ ನೀರಾವರಿ ನಿಗಮದಲ್ಲಿ 3,305.66 ಕೋಟಿ ರು., ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 5,777.42 ಕೋಟಿ ರು ಸೇರಿ ಒಟ್ಟಾರೆ 15,429.51 ಕೋಟಿ ರುಪಾಯಿನಷ್ಟು ಬಾಕಿ ಇದೆ ಇರುವುದು ಗೊತ್ತಾಗಿದೆ.
ಸಕಾಲದಲ್ಲಿ ಹಣ ಪಾವತಿಯಾಗದ ಕಾರಣ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಗುತ್ತಿಗೆದಾರರು ಸಹ ಬೃಹತ್ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಅರ್ಧದಲ್ಲಿಯೇ ನಿಲ್ಲಿಸಿದ್ದಾರೆ. ಇದರಿಂದಾಗಿ ಕೃಷಿ ಭೂಮಿಗೆ ನೀರು ಒದಗಿಸುವ ಸರ್ಕಾರದ ಗುರಿಗೆ ಹಿನ್ನಡೆಯಾಗುತ್ತಿದೆ ಎಂದು ಹಲವು ಗುತ್ತಿಗೆದಾರರೇ ಆರೋಪಿಸಿದ್ದರು. ಆದರೀಗ ಸರ್ಕಾರವು ಕೊಟ್ಟಿರುವ ಉತ್ತರದದಲ್ಲಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ಒದಗಿಸಿಲ್ಲ. ಬದಲಿಗೆ ನಿಗಮವಾರು ಬಾಕಿ ಇರುವ ಮೊತ್ತದ ವಿವರವನ್ನಷ್ಠೇ ನೀಡಿದ್ದಾರೆ.
‘ಒಟ್ಟಾರೆ ಯೋಜನೆಗಳ ಪ್ರಗತಿಯ ಹಿತದೃಷ್ಟಿಯಿಂದ ಮತ್ತು ಮಾಹೆವಾರು ಒದಗಿಸುತ್ತಿರುವ ಅನುದಾನದಿಂದ ಕಾಮಗಾರಿಗಳನ್ನು ಸರಿದೂಗಿಸಿಕೊಂಡು ಹೋಗಲಾಗುತ್ತಿದೆ. ಆದ್ಯತೆ ಮೇರೆಗೆ ಕಾಮಗಾರಿಗಳ ಬಿಲ್ಗಳನ್ನು ಪಾವತಿಸಲು ಕ್ರಮ ಜರುಗಿಸಲಾಗುತ್ತಿದೆ,’ ಎಂದು ಉತ್ತರದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

ರಾಜ್ಯದಲ್ಲಿ ಸಂಪೂರ್ಣವಾಗಿ ಸ್ಥಗಿತಗೊಂಡಿರುವ ಭಾರೀ ನೀರಾವರಿ ಯೋಜನೆಗಳಿಗೆ ಮರು ಜೀವ ನೀಡಲು ಹಾಗೂ ಗುತ್ತಿಗೆದಾರರಿಗೆ ಪಾವತಿಸಬೇಕಿರುವ ಸಾವಿರಾರು ಕೋಟಿ ರುಪಾಯಿಗಳ ಬಾಕಿ ಬಿಲ್ಗಳನ್ನು ವಿಲೇವಾರಿ ಮಾಡಲು ಸರ್ಕಾರವು ರೂಪಿಸಿರುವ ಆರ್ಥಿಕ ಕ್ರಿಯಾ ಯೋಜನೆ ಏನು, ಯಾವ ನಿರ್ದಿಷ್ಟ ಕಾಲಮಿತಿಯೊಳಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಿ ರೈತರ ಹಿತದೃಷ್ಟಿಯಿಂದ ಈ ನೀರಾವರಿ ಕಾಮಗಾರಿಗಳನ್ನು ಯಾವಾಗ ಪೂರ್ಣಗೊಳಿಸಲಾಗುವುದು ಎಂದು ಕೇಳಿದ್ದ ಪ್ರಶ್ನೆಗೆ ಸರ್ಕಾರವು ನಿರ್ದಿಷ್ಟವಾಗಿ ಉತ್ತರಿಸಿಲ್ಲ.
ಬದಲಿಗೆ ‘ಆರ್ಥಿಕ ಇಲಾಖೆಯಿಂದ ಹೊರಡಿಸಲಾಗುವ ತ್ರೈಮಾಸಿಕ ಕಂತಿನ ಹಣ ಬಿಡುಗಡೆ ಆರ್ಥಿಕ ಅಧಿಕಾರ ಪ್ರತ್ಯಾಯೋಜನೆಯ ಅನ್ವಯ ಪ್ರತಿ ವರ್ಷ ಆಯವ್ಯಯದಲ್ಲಿ ಹಂಚಿಕೆಯಾದ ಅನುದಾನವನ್ನು ಮಾಹೆವಾರು 1/12 ಅನುಪಾತದಂತೆ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಮೊತ್ತವನ್ನು ಲೆಕ್ಕ ಶೀರ್ಷಿಕೆವಾರು ಬಾಕಿ ಬಿಲ್ಗಳನ್ನು ಜೇಷ್ಠತೆ ಆಧಾರದ ಮೇಲೆ ಪಾವತಿಸಲು ಕ್ರಮವಹಿಸಲಾಗುತ್ತಿದೆ,’ ಎಂದು ವಿವರಿಸಿದೆ.
ನಿಗಮಗಳಿಗೆ ಮಾಹೆವಾರು ಬಿಡುಗಡೆ ಮಾಡಲಾಗುವ ಅನುದಾನದಲ್ಲಿ ಯೋಜನೆಗಳ ಪ್ರಗತಿಯ ಹಿತದೃಷ್ಟಿಯಿಂದ ಆದ್ಯತೆ ಹಾಗೂ ಅನುದಾನ ಲಭ್ಯತೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಎಲ್ಲಾ ರೀತಿಯ ಬಾಕಿ ಬಿಲ್ಗಳನ್ನು ಪಾವತಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದೆ.
ಕೃಷ್ಣಾ ಭಾಗ್ಯ ಜಲನಿಗಮ, ಕಾವೇರಿ ಮತ್ತು ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಭೂ ಸ್ವಾಧೀನ, ನಬಾರ್ಡ್, ಎಸ್ಸಿಪಿ, ಟಿಎಸ್ಪಿ, ವಿದ್ಯುತ್ ವೆಚ್ಚ, ದುರಸ್ತಿ ಮತ್ತು ನಿರ್ವಹಣೆ ಅಡಿಯಲ್ಲಿ 2023ರ ಏಪ್ರಿಲ್ 1ರ ಅಂತ್ಯಕ್ಕೆ 15,088 ಕಾಮಗಾರಿಗಳು ಪ್ರಗತಿಯಲ್ಲಿದ್ದು ಇದೇ ಅವಧಿಯಲ್ಲಿ ಬಿಡುಗಡೆಗೆ 38,607.01 ಕೋಟಿ ರು. ಬಾಕಿ ಇತ್ತು.
ಅದೇ ರೀತಿ ಕಾಮಗಾರಿಗಳ ಪ್ರಗತಿಗೆ ಅನುಗುಣವಾಗಿ ನಿಗಮದಲ್ಲಿ ಬಾಕಿ ಬಿಲ್ಗಳು ಇರುವ ಕಾರಣ ನಿರೀಕ್ಷಿತ ಭೌತಿಕ ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಮತ್ತು ಏಪ್ರಿಲ್ ತಿಂಗಳಿಗೆ ಬಂಡವಾಳ ಲೆಕ್ಕ ಶೀರ್ಷಿಕೆಯಡಿಯಲ್ಲಿ ಬಿಡುಗಡೆ ಮಾಡಲಾಗಿದ್ದ 66 ಕೋಟಿ ರು.ಗಳು ಕಾವೇರಿ ನೀರಾವರಿ ನಿಗಮದ ಖಾತೆಗೆ ಜಮೆ ಆಗಿಲ್ಲ ಎಂಬ ಸಂಗತಿಯನ್ನು ನಿಗಮದ ಅಧಿಕಾರಿಗಳು ಸರ್ಕಾರದ ಗಮನಕ್ಕೆ ತಂದಿದ್ದರು.
ಒಟ್ಟು 38,607.01 ಕೋಟಿ ರು ಪೈಕಿ 677.06 ಕೋಟಿ ರು.ಗಳನ್ನು ಬಿಡುಗಡೆ ಮಾಡಲು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅನುಮೋದನೆ ನೀಡಿದ್ದಾರೆ. ಈ ಸಂಬಂಧ 2023ರ ಜುಲೈ 24 ಮತ್ತು ಆಗಸ್ಟ್ 7ರಂದು ಅನುದಾನ ಬಿಡುಗಡೆ ಮಾಡಿರುವ ಜಲಸಂಪನ್ಮೂಲ ಇಲಾಖೆಯು ಆದೇಶ ಹೊರಡಿಸಿತ್ತು.
ಕೃಷ್ಣಾ ಭಾಗ್ಯ ಜಲನಿಗಮ, ಕಾವೇರಿ ನೀರಾವರಿ, ಕರ್ನಾಟಕ ನೀರಾವರಿ ನಿಗಮವು ಅನುದಾನ ಬಿಡುಗಡೆಗೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ‘ಕಾಮಗಾರಿಗಳ ಪ್ರಗತಿಗೆ ಅನುಗುಣವಾಗಿ ನಿಗಮದಲ್ಲಿ ಬಾಕಿ ಬಿಲ್ಗಳು ಇದ್ದು, ನಿರೀಕ್ಷಿತ ಭೌತಿಕ ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ. 2023ರ ಜೂನ್ ಮತ್ತು ಜುಲೈ ತಿಂಗಳಿಗೆ 161.83 ಕೋಟಿ ರು. ಅನುದಾನ ಬಿಡುಗಡೆ ಮಾಡಬೇಕು,’ ಎಂದು ಕೃಷ್ಣಭಾಗ್ಯ ಜಲನಿಗಮವು ಪ್ರಸ್ತಾವನೆ ಸಲ್ಲಿಸಿತ್ತು.

2023ರ ಏಪ್ರಿಲ್ 1ರ ಅಂತ್ಯಕ್ಕೆ ಒಟ್ಟು 3,662 ಕಾಮಗಾರಿಗಳು ಪ್ರಗತಿಯಲ್ಲಿದ್ದವು. ಇದೇ ಅವಧಿ ಅಂತ್ಯಕ್ಕೆ ಒಟ್ಟಾರೆ 18,877.34 ಕೋಟಿ ಮೊತ್ತ ಬಾಕಿ ಇದೆ. ಇದರಲ್ಲಿ ಬಂಡವಾಳ ವೆಚ್ಚ ಲೆಕ್ಕ ಶೀರ್ಷಿಕೆಯಲ್ಲಿ 9,405.20 ಕೋಟಿ ರು., ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಹಾಗೂ ಬಿಟಿಡಿಎನಲ್ಲಿ 4,103.37 ಕೋಟಿ ರು., 2023-24ರ ಭೂ ಸ್ವಾಧೀನಕ್ಕಾಗಿ ಸಕ್ಷಮ ಪ್ರಾಧಿಕಾರ ಸಲ್ಲಿಸಿರುವ ಬೇಡಿಕೆ ಅನುದಾನಕ್ಕೆ 5,100.00 ಕೋಟಿ ರು., ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಡಿಯಲ್ಲಿ 270 ಕೋಟಿ ರು. ಬಾಕಿ ಇತ್ತು. ಆದರೆ ಸರ್ಕಾರವು ಒಟ್ಟಾರೆ 161.83 ಕೋಟಿ ರು. ಬಿಡುಗಡೆ ಮಾಡಿ 2023ರ ಜುಲೈ 24ರಂದು ಆದೇಶ ಹೊರಡಿಸಿತ್ತು.

ಅದೇ ರೀತಿ ಕರ್ನಾಟಕ ನೀರಾವರಿ ನಿಗಮದಲ್ಲಿಯೂ 2023ರ ಏಪ್ರಿಲ್ 1ರ ಅಂತ್ಯಕ್ಕೆ 6,564 ಕಾಮಗಾರಿಗಳಿದ್ದವು. ಈ ಸಂಬಂಧ 14,770.48 ಕೋಟಿ ರು. ಬಾಕಿ ಇದೆ. 2023-24ನೇ ಸಾಲಿನಲ್ಲಿ ನಿಗಮದ ಕಾಮಗಾರಿಗಳಿಗೆ ವಿವಿಧ ವಿಭಾಗಗಳಲ್ಲಿ ಬಾಕಿ ಇರುವ ಬಿಲ್ಗಳ ಪಾವತಿಗಾಗಿ ನಿಗಮಕ್ಕೆ ಹಂಚಿಕೆಯಾಗಿರುವ ಅನುದಾನದಲ್ಲಿ 2023ರ ಜುಲೈ ನಲ್ಲಿ ವಿವಿಧ ಲೆಕ್ಕ ಶೀರ್ಷಿಕೆಗಳಡಿಯಲ್ಲಿ ಒಟ್ಟು 598.38 ಲಕ್ಷ ರು. ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ನಿಗಮವು 2023ರ ಜೂನ್ನಲ್ಲಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿತ್ತು.

ಕರ್ನಾಟಕ ನೀರಾವರಿ ನಿಗಮಕ್ಕೆ ಒಟ್ಟಾರೆ 292.61 ಕೋಟಿ ರು.ಗಳನ್ನು ಬಿಡುಗಡೆ ಮಾಡಿ 2023ರ ಆಗಸ್ಟ್ 7ರಂದು ಆದೇಶ ಹೊರಡಿಸಲಾಗಿದೆ. ಕರ್ನಾಟಕ ನೀರಾವರಿ ನಿಗಮಕ್ಕೆ ಏಪ್ರಿಲ್ನಲ್ಲಿ ಬಂಡವಾಳ ವೆಚ್ಚ ಲೆಕ್ಕ ಶೀರ್ಷಿಕೆಯಡಿಯಲ್ಲಿ ಬಿಡುಗಡೆಯಾಗಿದ್ದ 92.60 ಕೋಟಿ ರು., ಎಸ್ಸಿಪಿ ಲೆಕ್ಕ ಶೀರ್ಷಿಕೆಯಡಿಯಲ್ಲಿ ಬಿಡುಗಡೆಯಾಗಿದ್ದ 36.34 ಕೋಟಿ ಹಾಗೂ ನಬಾರ್ಡ್ ಅಡಯಲ್ಲಿ ಬಿಡುಗಡೆಯಾಗಿದ್ದ 130.00 ಕೋಟಿ ರು.ಗಳ ಅನುದಾನವನ್ನು ವಿನಿಯೋಗಿಸಬೇಕು ಎಂದು ಆದೇಶದಲ್ಲಿ ಸೂಚಿಸಿತ್ತು.

ಅದೇ ರೀತಿ ಕಾವೇರಿ ನೀರಾವರಿ ನಿಗಮದಲ್ಲಿ 2023ರ 2023ರ ಏಪ್ರಿಲ್ 1ರ ಅಂತ್ಯಕ್ಕೆ ಒಟ್ಟು 4,862 ಕಾಮಗಾರಿಗಳು ಪ್ರಗತಿಯಲ್ಲಿದ್ದವು. ಜೂನ್ 30ರ ಅಂತ್ಯಕ್ಕೆ ಬಂಡವಾಳ ವೆಚ್ಚ ಬಾಕಿ ಬಿಲ್ಗಳ ಪಾವತಿ, ವೇತನ ಪಾವತಿಗೆ ಮತ್ತು ನಿರ್ವಹಣಾ ವಿದ್ಯುತ್ ಬಾಕಿ ಬಿಲ್ ಪಾವತಿಗೆ 4,959.19 ಕೋಟಿ ರು. ಅನುದಾನ ಅಗತ್ಯವಿತ್ತು.

ಜುಲೈ ತಿಂಗಳಿಗೆ ವಿವಿಧ ಲೆಕ್ಕ ಶೀರ್ಷಿಕೆಗಳಡಿಯಲ್ಲಿ 217.59 ಕೋಟಿ ರು., ಅನುದಾನವನ್ನು ಹಾಗೂ ಡ್ರಿಪ್ ಯೋಜನೆ ಅಡಿಯಲ್ಲಿ 10.27 ಕೋಟಿ ರು., ಅರಂಭಿಕ ಮೊತ್ತವಿದ್ದು ಬಾಕಿ ಬಿಲ್ ಗಳು 12.16ಕೋಟಿ ರು.ಗಳಿರುತ್ತವೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಜುಲೈ ತಿಂಗಳಿಗೆ 5.04 ಕೋಟಿ ರು. ಸೇರಿ ಒಟ್ಟಾರೆ 222.63 ಕೋಟಿ ರು. ಅನುದಾನ ಬಿಡುಗಡೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅಲ್ಲದೇ ಏಪ್ರಿಲ್ ತಿಂಗಳಿಗೆ ಬಂಡವಾಳ ಲೆಕ್ಕ ಶೀರ್ಷಿಕೆಯಡಿಯಲ್ಲಿ ಬಿಡುಗಡೆ ಮಾಡಲಾಗಿದ್ದ 66 ಕೋಟಿ ರು.ಗಳು ನಿಗಮದ ಖಾತೆಗೆ ಜಮೆ ಆಗಿರಲಿಲ್ಲ.
ನೀರಾವರಿ ನಿಗಮಗಳಿಗೆ 38,607 ಕೋಟಿ ರು.ಬಾಕಿ; 677.06 ಕೋಟಿ ಬಿಡುಗಡೆ, ಭೌತಿಕ ಪ್ರಗತಿಗೆ ಅಡ್ಡಿ
ಈ ಕುರಿತು ದಿ ಫೈಲ್ 2023ರ ಆಗಸ್ಟ್ 21ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.
ನೀರಾವರಿ ನಿಗಮಗಳ ಗುತ್ತಿಗೆದಾರರ ಅಲೆದಾಟ; 2 ವರ್ಷಗಳಾದರೂ ಪಾವತಿಯಾಗದ 12,845 ಕೋಟಿ
ಅದೇ ರೀತಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಗುತ್ತಿಗೆದಾರರು ಬಾಕಿ ಮೊತ್ತಕ್ಕಾಗಿ ಅಲೆದಾಡಿದ್ದರು. ಈ ಕುರಿತು ದಿ ಫೈಲ್ 2022ರ ಏಪ್ರಿಲ್ 14ರಂದು ದಾಖಲೆ ಸಹಿತ ವರದಿ ಪ್ರಕಟಿಸಿತ್ತು.




