Thursday | April 16, 2026 |

ಫಲಾನುಭವಿಗಳ ಆಯ್ಕೆಗೆ ಲಾಟರಿ ಪದ್ಧತಿ; ಶಾಸಕರ ನಿರ್ಲಕ್ಷ್ಯ, ಉಸ್ತುವಾರಿ ಸಚಿವರಿಗೆ ಅದೃಷ್ಟ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 11 ನಿಗಮಗಳಲ್ಲಿನ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡದ ವಿಧಾನಸಭೆ ಕ್ಷೇತ್ರಗಳಲ್ಲಿ ಇನ್ನು ಮುಂದೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಿದೆ.

 

ಒಟ್ಟು 11 ನಿಗಮಗಳ ಪೈಕಿ 8 ನಿಗಮಗಳಿಗೆ 2 ವರ್ಷವಾದರೂ ಅಧ್ಯಕ್ಷರನ್ನೇ ನೇಮಕಗೊಳಿಸಿರಲಿಲ್ಲ. ಹೀಗಾಗಿ ಶಾಸಕರ ಅಧ್ಯಕ್ಷತೆಯಲ್ಲಿದ್ದ ಸಮಿತಿಯು ಸಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಮುಂದಾಗಿರಲಿಲ್ಲ. ಆದರೀಗ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಶಾಸಕರ ಅಧ್ಯಕ್ಷತೆಯ ಸಮಿತಿಯು ವಿಳಂಬ ಮಾಡಿದೆ ಎಂಬ ನೆಪವನ್ನು ಮುಂದಿರಿಸಿದೆ.  ಫಲಾನುಭವಿಗಳನ್ನು ಆಯ್ಕೆ ಮಾಡದೇ ಇರುವ ವಿಧಾನಸಭೆ ಕ್ಷೇತ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲಿ ಫಲಾನುಭವಿಗಳನ್ನು ಲಾಟರಿ ಮೂಲಕ  ಆಯ್ಕೆ ಮಾಡಲಿದೆ.

 

ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಿದೆ. ಈ ಪ್ರಸ್ತಾವವು ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ. ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿರುವ ಟಿಪ್ಪಣಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅನುಮೋದನೆ ಕೋರಿಕೆಯಲ್ಲೇನಿದೆ?

 

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ 11 ನಿಗಮಗಳಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಶಾಸಕರ ಅಧ್ಯಕ್ಷತೆಯ ಆಯ್ಕೆ ಸಮಿತಿಗಳಿಂದ ಫಲಾನುಭವಿಗಳನ್ನು ಆಯ್ಕೆ ಮಾಡದೇ ಇರುವ ವಿಧಾನಸಭೆ ಕ್ಷೇತ್ರಗಳಲ್ಲಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲು ಅನುಮೋದನೆ ಕೋರಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

 

2025-26ನೇ ಸಾಲಿಗೆ ಸಮುದಾಯ ಅಭಿವೃದ್ಧಿ ನಿಗಮಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲು ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಲದೇ ಪ್ರತಿ ವಿಧಾನಸಭೆ ಕ್ಷೇತ್ರಕ್ಕೂ ನಿಗದಿತ ಗುರಿ ನೀಡಲಾಗಿತ್ತು. ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಹೊಲಿಗೆ ಯಂತ್ರ ವಿತರಣೆ, ಭೂ ಒಡೆತನ, ಆಹಾರ ಕಿಯೋಸ್ಕ್ ವಾಹಿನಿ, ಅರಿವು ಶೈಕ್ಷಣಿಕ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಯೋಜನೆ, ಪಂಚವೃತ್ತಿ, ಸ್ವ ಸಹಾಯ ಸಂಘಗಳಿಗೆ ನೆರವು, ವಿಭೂತಿ ಘಟಕ, ಮರಾಠ ಮಿಲ್ಟ್ರಿ ಹೋಟೆಲ್‌ ಹೀಗೆ ಆಯಾ ಸಮುದಾಯ ಅಭಿವೃದ್ಧಿ ನಿಗಮಗಳಿಗೆ ನಿಗದಿತ ಗುರಿ ನೀಡಲಾಗಿತ್ತು.

 

ಡಿ ದೇವರಾಜ ಅರಸು ಹಿಂದುಳಿದ ಅಭಿವೃದ್ದಿ ನಿಗಮದಲ್ಲಿ ಸ್ವಯಂ ಉದ್ಯೋಗಕ್ಕೆ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 30 ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿತ್ತು. ಗಂಗಾ ಕಲ್ಯಾಣ ಯೋಜನೆಗೆ 16, ಸ್ವಾವಲಂಬಿ ಸಾರಥಿ ಯೋಜನೆಗೆ 6, ಹೊಲಿಗೆ ಯಂತ್ರ ವಿತರಣೆ ಯೋಜನೆಗೆ 19 ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿತ್ತು.

 

ಹಾಗೆಯೇ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಲ್ಲಿ ಸ್ವಯಂ ಉದ್ಯೋಗಕ್ಕೆ 15, ಗಂಗಾ ಕಲ್ಯಾಣ ಯೋಜನೆಗೆ 14, ಸ್ವಾವಲಂಬಿ ಸಾರಥಿ ಯೋಜನೆಗೆ 5 ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿತ್ತು. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮಕ್ಕೆ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ 25 ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಗುರಿ ನಿಗದಿಪಡಿಸಿತ್ತು. ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ 10, ಸ್ವಾವಲಂಬಿ ಸಾರಥಿ ಯೋಜನೆಗೆ 2, ಹೊಲಿಗೆ ಯಂತ್ರ ವಿತರಣೆಗೆ 12 ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿತ್ತು.

 

 

ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದಲ್ಲಿ ಸ್ವಯಂ ಉದ್ಯೋಗ ಯೋಜನೆಗೆ 7 ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿತ್ತು. ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ 10, ಸ್ವಾವಲಂಬಿ ಸಾರಥಿ ಯೋಜನೆಗೆ 6 ಮಂದಿ ಆಯ್ಕೆ ಮಾಡಲು ಗುರಿ ನಿಗದಿಪಡಿಸಿತ್ತು. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದ ವ್ಯಾಪ್ತಿಯಲ್ಲಿ ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆಯಲ್ಲಿ ತಲಾ  ಒಬ್ಬ ಫಲಾನುಭವಿಯನ್ನು ಆಯ್ಕೆ ಮಾಡಲು ಗುರಿ ನಿಗದಿಪಡಿಸಿತ್ತು.

 

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಲ್ಲಿ ಸ್ವಯಂ ಉದ್ಯೋಗ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗೆ ತಲಾ ಇಬ್ಬರು ಫಲಾನುಭವಿಗಳನ್ನು ಆಯ್ಕೆ ಮಾಡಬೇಕಿತ್ತು. ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ಸ್ವಯಂ ಉದ್ಯೋಗಕ್ಕೆ 2, ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ 2, ಸ್ವಾವಲಂಬಿ ಸಾರಥಿ ಯೋಜನೆಗೆ ಒಬ್ಬ ಫಲಾನುಭವಿಯನ್ನು ಆಯ್ಕೆ ಮಾಡಲು ಗುರಿ ನೀಡಿತ್ತು.

 

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಲ್ಲಿ ಸ್ವಯಂ ಉದ್ಯೋಗದಡಿಯಲ್ಲಿ 4, ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 1 ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಒಬ್ಬ ಫಲಾನುಭವಿ ಆಯ್ಕೆ ಮಾಡಬೇಕಿತ್ತು. ಕರ್ನಾಟಕ ಸವಿತಾ ಸಮಾಜದಲ್ಲಿ ಸ್ವಯಂ ಉದ್ಯೋಗ ಯೋಜನೆಗೆ 1, ಗಂಗಾ ಕಲ್ಯಾಣ ಯೋಜನೆಗೆ 3, ಸ್ವಾವಲಂಬಿ ಸಾರಥಿ ಯೋಜನೆಗೆ ಒಬ್ಬ ಫಲಾನುಭವಿಯನ್ನು ಆಯ್ಕೆ ಮಾಡಬೇಕಿತ್ತು. ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ 2, ಗಂಗಾ ಕಲ್ಯಾಣ ಯೋಜನೆಗೆ 2, ಸ್ವಾವಲಂಬಿ ಸಾರಥಿ ಯೋಜನೆಗೆ ಒಬ್ಬ ಫಲಾನುಭವಿ ಆಯ್ಕೆ ಮಾಡಲು ಗುರಿ ನಿಗದಿಪಡಿಸಿತ್ತು.

 

ಒಟ್ಟಾರೆ ಈ ನಿಗಮಗಳಿಗೆ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ 89, ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 58, ಸ್ವಾವಲಂಬಿ ಸಾರಥಿ ಯೋಜನೆಯಡಿಯ್ಲಿ 26, ಹೊಲಿಗೆ ಯಂತ್ರ ವಿತರಣೆ ಯೋಜನೆಯಲ್ಲಿ 31, ಭೂ ಒಡೆತನ ಯೋಜನೆಯಡಿಯಲ್ಲಿ 1 ಫಲಾನುಭವಿಗಳನ್ನು ಆಯ್ಕೆ ಮಾಡಲು ಗುರಿ ನೀಡಲಾಗಿತ್ತು.

 

 

ಹಾಗೆಯೇ ಇದೇ ನಿಗಮಗಳ ವ್ಯಾಪ್ತಿಯಲ್ಲಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಯೋಜನೆಗೆ ಜಿಲ್ಲಾ 9 ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾವಾರು ಗುರಿ ನೀಡಿತ್ತು. ಅರಿವು ಶೈಕ್ಷಣಿಕ ಸಾಲ ಯೋಜನೆಗೆ 61, ಪಂಚ ವೃತ್ತಿಗೆ 3,  15 ಸ್ವ ಸಹಾಯ ಸಂಘಗಳು, ವಿಭೂತಿ ಘಟಕಕ್ಕೆ 20 ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಗುರಿ ನಿಗದಿಪಡಿಸಿತ್ತು. ಈ ಯೋಜನೆಗಳಗಿಎ ಜಿಲ್ಲಾ ಪಂಚಾಯ್ತಿಗಳ ಮೂಕ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಆದರೂ ಈ ಸಮಿತಿಗಳು ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಮಿತಿಗಳ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದವು.

 

ಆದರೀಗ ಬಹುತೇಕ ನಿಗಮಗಳು 2025-26ನೇ ಸಾಲಿನಲ್ಲಿ ಈ ಎಲ್ಲಾ ಯೋಜನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ವಿಫಲವಾಗಿವೆ. ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದರೂ ಸಹ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕಾರಣ, ಫಲಾನುಭವಿಗಳನ್ನು ಆಯ್ಕೆ ಮಾಡಿರಲಿಲ್ಲ. ಇದೀಗ ಸರ್ಕಾರವು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲು ಹೊರಟಿದೆ.

 

8 ನಿಗಮಗಳಿಗೆ 2 ವರ್ಷವಾದರೂ  ಅಧ್ಯಕ್ಷರೇ ನೇಮಕಗೊಂಡಿಲ್ಲ. ಆದರೂ ಕಳೆದ ಆರ್ಥಿಕ ಸಾಲಿನಲ್ಲಿ ಅಧ್ಯಕ್ಷರ ಸಿಬ್ಬಂದಿ ವೇತನವೆಂದು 40.74 ಲಕ್ಷ ರು. ಖರ್ಚು ಮಾಡಿತ್ತು. ಇದಲ್ಲದೆ, ಇತರೆ ಖರ್ಚು ಎಂದು 5.25 ಲಕ್ಷ ರು. ಹಾಗೂ ವಾಹನ ಭತ್ಯೆ ಎಂದು 7.37 ಲಕ್ಷ ರು. ಖರ್ಚು ಮಾಡಲಾಗಿದೆ. ವಾಹನ ನಿರ್ವಹಣೆಗೆಂದು 5.10 ಲಕ್ಷ ರು. ಬಳಸಿತ್ತು.

 

backward classes development corporation karnataka

 

ಇಲಾಖೆಯಡಿ ಬರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಮಾತ್ರ ಅಧ್ಯಕ್ಷರು ನೇಮಕಗೊಂಡಿದ್ದಾರೆ. ಉಳಿದ ನಿಗಮಗಳ ಅಧ್ಯಕ್ಷರು ನೇಮಕಗೊಳ್ಳದೇ ಇರುವುದರಿಂದ ಇಲಾಖಾ ಸಚಿವರೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.  ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಈ ನಿಗಮಗಳಿಗೆ ಅಧ್ಯಕ್ಷರನ್ನು ನೇಮಿಸಿರಲಿಲ್ಲ.

 

ಈ ಅಭಿವೃದ್ಧಿ ನಿಗಮಗಳಿಗೆ ಮೂರು ವರ್ಷಗಳಿಂದ ನೀಡಿರುವ ಅನುದಾನದಲ್ಲಿ ಅಧ್ಯಕ್ಷರ ಭತ್ಯೆ, ವಾಹನ ಭತ್ಯೆ, ಬಾಡಿಗೆ ಹಾಗೂ ಇತರೆ ಖರ್ಚುಗಳೆಷ್ಟು ಎಂದು ಡಿ.ಟಿ. ಶ್ರೀನಿವಾಸ್‌ ಕೇಳಿದ ಪ್ರಶ್ನೆಗೆ ವಿವರವಾಗಿ ಸಚಿವರು ಲಿಖಿತ ಉತ್ತರ ನೀಡಿದ್ದರು.  ಅಧ್ಯಕ್ಷರೇ ಇಲ್ಲದ ನಿಗಮಗಳ ಕಚೇರಿಗಳ ನಿರ್ವಹಣೆಗೆ ಲಕ್ಷಾಂತರ ರು. ಖರ್ಚು ಮಾಡಲಾಗಿತ್ತು.

 

 

backward classes development corporation karnataka

 

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷರ ಸಿಬ್ಬಂದಿ ವೇತನಕ್ಕೆಂದು 3.8 ಲಕ್ಷ ರು. ಖರ್ಚು ಮಾಡಿದೆ. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಅಧ್ಯಕ್ಷರೇ ಇಲ್ಲದಿದ್ದರೂ ಅವರ ವಾಹನ ಭತ್ಯೆಯೆಂದು 7.37 ಲಕ್ಷ ರು. ಖರ್ಚು ಮಾಡಿದೆ. ಮಾತ್ರವಲ್ಲದೆ, ಸಿಬ್ಬಂದಿ ವೇತನವೆಂದು 9.60 ಲಕ್ಷ ರು. ಖರ್ಚು ಮಾಡಿತ್ತು.

 

 

backward classes development corporation karnataka

 

ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ವರ್ಗಗಳ ಅಭಿವೃದ್ಧಿ ನಿಗಮ ವೇತನಕ್ಕೆಂದು 3.31 ಲಕ್ಷ ರು. ಖರ್ಚು ಮಾಡಿದೆ. ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಲ್ಲಿ ಸಿಬ್ಬಂದಿ ವೇತನವೆಂದು 3,96 ಲಕ್ಷ ರು. ಖರ್ಚು ಮಾಡಲಾಗಿದೆ ಎಂದು ಸಚಿವರು ನೀಡಿದ ಉತ್ತರದಲ್ಲಿ ವಿವರಿಸಿದ್ದರು.

 

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಲ್ಲಿ ಅಧ್ಯಕ್ಷರ ಸಿಬ್ಬಂದಿ ವೇತನವೆಂದು 3.80 ಲಕ್ಷ ರು. ಖರ್ಚು ಮಾಡಲಾಗಿದ್ದರೆ, ಕರ್ನಾಟಕ ಒಕ್ಕಲಿಗರ ಅಭಿವೃದ್ಧಿ ನಿಗಮದಲ್ಲಿ ನೇಮಕಗೊಳ್ಳದೇ ಇರುವ ಅಧ್ಯಕ್ಷರ ಸಿಬ್ಬಂದಿ ವೇತನವೆಂದು 8.78 ಲಕ್ಷ ರು. ವಾಹನ ನಿರ್ವಹಣೆಗೆಂದು 36,324 ರು. ಹಾಗೂ ಇತರೆ ಖರ್ಚೆಂದು 4.95 ಲಕ್ಷ ರು. ಖರ್ಚು ಮಾಡಿದ್ದರು.

 

ಸಚಿವರಿಗೇ ಅಧ್ಯಕ್ಷರ ಭತ್ಯೆ !

 

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಇನ್ನೂ ಅಧ್ಯಕ್ಷರು ನೇಮಕವಾಗಿಲ್ಲ. ಇಲಾಖೆಯ ಸಚಿವರೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಚಿವ ಹುದ್ದೆಗಾಗಿ ವೇತನ ಪಡೆಯುತ್ತಿರುವ ಶಿವರಾಜ ಎಸ್‌. ತಂಗಡಗಿ ಅವರಿಗೇ ಅಧ್ಯಕ್ಷರ ಭತ್ಯೆ ಎಂದು ಕಳೆದ ಸಾಲಿನಲ್ಲಿ 17, 500 ರು. ನೀಡಿದ್ದರು.

 

 

backward classes development corporation karnataka

 

ಈ ನಿಗಮವು ಅಧ್ಯಕ್ಷರ ಸಿಬ್ಬಂದಿ ವೇತನವೆಂದು 7.46 ಲಕ್ಷ ರು. ಖರ್ಚು ಮಾಡಿದ್ದರೆ, ವಾಹನ ನಿರ್ವಹಣೆಗೆಂದು 4.74 ಲಕ್ಷ ರು. ಹಾಗೂ ಇತ್ಯಾದಿ ಖರ್ಚುಗಳೆಂದು 29,567 ರು. ಖರ್ಚಾಗಿತ್ತು.

 

ಕೊಟ್ಟ ಅನುದಾನವೂ ಕಡಿಮೆ

 

2024-25ನೇ ಸಾಲಿನಲ್ಲಿ ಈ ನಿಗಮಗಳಿಗೆ ಕೊಟ್ಟ ಅನುದಾನವೂ ಕಡಿಮೆಯಾಗಿತ್ತು. ಒಟ್ಟು 337 ಕೋಟಿ ರು. ನೀಡಲಾಗಿತ್ತು. ಇದರಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಅನುದಾನದ ಹೆಚ್ಚಿನ ಪಾಲು ಸಂದಾಯವಾಗಿದೆ. ಒಟ್ಟು ನೂರು ಕೋಟಿ ರು. ಒದಗಿಸಲಾಗಿತ್ತು.ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ತಲಾ 60 ಕೋಟಿ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ನೀಡಲಾಗಿತ್ತು.

 

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ 15 ಕೋಟಿ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ 5 ಕೋಟಿ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ 9 ಕೋಟಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 12 ಕೋಟಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 5 ಕೋಟಿ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ 8 ಕೋಟಿ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ 13 ಕೋಟಿ ರು. ಅನುದಾನವನ್ನು ಸರ್ಕಾರ ನೀಡಿತ್ತು.

 

backward classes development corporation karnataka

ಕಾಂಗ್ರೆಸ್‌ ಸರ್ಕಾರ, 2023-24ನೇ ಸಾಲಿನಲ್ಲಿ ಈ ಎಲ್ಲ ನಿಗಮಗಳಿಗೆ ಒಟ್ಟು 345 ಕೋಟಿ ನೀಡಿತ್ತು.

ಅದಕ್ಕೂ ಮೊದಲು ಬಿಜೆಪಿ ಅಧಿಕಾರಾವಧಿಯಲ್ಲಿ ಅಂದರೆ 2022-23ನೇ ಸಾಲಿನಲ್ಲಿ ಒಟ್ಟು 546 ಕೋಟಿ ಅನುದಾನ ಒದಗಿಸಲಾಗಿತ್ತು. ಬಹಳ ಮುಖ್ಯವಾಗಿ ಬಿಜೆಪಿ ಸರ್ಕಾರವು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 100.01 ಕೋಟಿ ಅನುದಾನ ಘೋಷಿಸಿತ್ತು.

ಅಲ್ಲದೆ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ 70 ಕೋಟಿ ಹಾಗೂ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ 60 ಕೋಟಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ಮತ್ತು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ತಲಾ 25 ಕೋಟಿ ರು. ಅನುದಾನ ನೀಡಿತ್ತು ಎಂದು ಉತ್ತರದಲ್ಲಿ ತಿಳಿಸಲಾಗಿದೆ.

2025-26 ಸಾಲಿನ ಬಜೆಟ್‌ನಲ್ಲಿ, ʻಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 422 ಕೋಟಿ ರು. ಒಗದಿಸಲಾಗುವುದುʼ ಎಂದು ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದರು.

ನಿಗಮಗಳಿಂದ ಸರ್ಕಾರಕ್ಕೆ ಜಮೆಯಾಗದ 14,549.91 ಕೋಟಿ ರುಪಾಯಿ; ಬಡ್ಡಿ ಹಣವೆಲ್ಲಿ ಹೋಗಿದೆ?

ವಿವಿಧ ನಿಗಮಗಳು ಗಳಿಸಿದ್ದ ಬಡ್ಡಿಯ ಮೊತ್ತವಾದ 14,549.91 ಕೋಟಿ ರು.ಗಳನ್ನು ಸರ್ಕಾರಕ್ಕೆ ಜಮೆ ಮಾಡಲಾಗಿರಲಿಲ್ಲ. ಈ ಕುರಿತು ಸಿಎಜಿ ಗಮನ ಸೆಳೆದಿತ್ತು. ಈ ಬಗ್ಗೆ ʻದಿ ಫೈಲ್‌ʼ ಇತ್ತೀಚೆಗೆ ವಿವರವಾದ ವರದಿ ಪ್ರಕಟಿಸಿತ್ತು.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!