Saturday | May 2, 2026 |

ಸಕ್ಕರೆ ಕಾರ್ಖಾನೆಗಳಿಂದ 4,682.18 ಕೋಟಿಯಷ್ಟು ಪಾವತಿಗೆ ಬಾಕಿ; ಕಬ್ಬು ಬೆಳೆಗಾರರ ನೀಗದ ಸಂಕಷ್ಟ

ಬೆಂಗಳೂರು; ರಾಜ್ಯದ ಬೆಳಗಾವಿ ಸೇರಿದಂತೆ ವಿವಿಧೆಡೆ ಕಾರ್ಯಾಚರಿಸುತ್ತಿರುವ ಸಕ್ಕರೆ ಕಾರ್ಖಾನೆಗಳು 2025-26ನೇ ಸಾಲಿನ ಹಂಗಾಮಿನಲ್ಲಿ ಕಬ್ಬು ಬೆಳೆಗಾರರಿಗೆ ಒಟ್ಟಾರೆ 4,682.8 ಕೋಟಿಯಷ್ಟು ಬಾಕಿ ಉಳಿಸಿಕೊಂಡಿವೆ.

 

ರಾಜ್ಯದ ಖಾಸಗಿ ಮತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಕಬ್ಬಿನ ಬಾಕಿ ಹಣದ ಕುರಿತು ವಿಧಾನ ಪರಿಷತ್ ಸದಸ್ಯ ಡಾ ಎಂ ಜಿ ಮುಳೆ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಕೋಟ್ಯಂತರ ರುಪಾಯಿ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳ ಮಾಹಿತಿ ಒದಗಿಸಿದ್ದಾರೆ.

 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಎಸ್‌ ಆರ್‍‌ ಪಾಟೀಲ್, ಶಾಮನೂರು ಶಿವಶಂಕರಪ್ಪ, ಮುರುಗೇಶ್‌ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ರಾಜಕೀಯ ಪ್ರಭಾವಿಗಳ ಕುಟುಂಬ ಸದಸ್ಯರ ಒಡೆತನದಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳು ಈ ಪಟ್ಟಿಯಲ್ಲಿರುವುದು ಉತ್ತರದಿಂದ ಗೊತ್ತಾಗಿದೆ.

 

2025-26ನೇ ಹಂಗಾಮಿನಲ್ಲಿ 81 ಸಕ್ಕರೆ ಕಾರ್ಖಾನೆಗಳು ಕಾರ್ಯನಿರತವಾಗಿದೆ. 2026ರ ಜನವರಿ 15ಕ್ಕೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕಬ್ಬು ಬಿಲ್ ಮೊತ್ತ 16,609.01 ಕೋಟಿಗಳಾಗಿವೆ. ಈ ಪೈಕಿ 10,935.58 ಕೋಟಿ ರು.ಗಳು ಪಾವತಿಯಾಗಿದೆ. ಇನ್ನೂ 4,682.8 ಕೋಟಿ ಪಾವತಿಸಲು ಬಾಕಿ ಇದೆ ಎಂದು ಸಚಿವ ಶಿವಾನಂದ ಪಾಟೀಲ್ ಅವರು ಉತ್ತರಿಸಿದ್ದಾರೆ.

 

 

 

ಬಾಕಿ ಉಳಿಸಿಕೊಂಡಿರುವ ಪಟ್ಟಿಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷರಾಗಿರುವ ಸಿದ್ಧಸಿರಿ ಎಥನಾಲ್ ಪವರ್ ಯುನಿಟ್‌ 100.97 ಕೋಟಿಯಷ್ಟು ಬಾಕಿ ಉಳಿಸಿಕೊಂಡಿರುವುದು ಉತ್ತರದಿಂದ ತಿಳಿದು ಬಂದಿದೆ.

 

 

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ನಿರ್ದೇಶಕರಾಗಿರುವ ಹರ್ಷ ಷುಗರ್ಸ್ ಲಿಮಿಟೆಡ್‌ 54.36 ಕೋಟಿ ರು.,

 

 

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕುಟುಂಬ ಒಡೆತನದಲ್ಲಿರುವ ಸತೀಶ್ ಷುಗರ್ಸ್‌ ಲಿಮಿಟೆಡ್‌, 65.07 ಕೋಟಿ ರು.ಗಳನ್ನು ಕಬ್ಬು ಬೆಳೆಗಾರರಿಗೆ ಪಾವತಿಸಲು ಬಾಕಿ ಇರಿಸಿಕೊಂಡಿದೆ.

 

 

ಬೆಳಗಾವಿಯಲ್ಲಿರುವ ಒಟ್ಟಾರೆ 29 ಸಕ್ಕರೆ ಕಾರ್ಖಾನೆಗಳಿಂದ 1,769.3 ಕೋಟಿ ರು ನಷ್ಟು ಬಾಕಿ ಉಳಿಸಿಕೊಂಡಿರುವುದು ಉತ್ತರದಿಂದ ತಿಳಿದು ಬಂದಿದೆ.

 

ರಮೇಶ್ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮಿ ಷುಗರ್ಸ್‌ ಲಿಮಿಟೆಡ್‌ 26.77 ಕೋಟಿ ಬಾಕಿ ಇರಿಸಿಕೊಂಡಿದೆ.

 

 

ಬಾಗಲಕೋಟೆ ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆಗಳು 1,382.26 ಕೋಟಿ ರು ಬಾಕಿ ಉಳಿಸಿಕೊಂಡಿವೆ. ಈ  ಪೈಕಿ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಚಿವ ಎಸ್ ಆರ್ ಪಾಟೀಲ್ ಅವರು ನಿರ್ದೇಶಕರಾಗಿರುವ ಬೀಳಗಿ ಷುಗರ್ಸ್‌ ಲಿಮಿಟೆಡ್‌ ಒಟ್ಟಾರೆ 250.68 ಕೋಟಿ ರು ಬಾಕಿ ಉಳಿಸಿಕೊಂಡಿದೆ.

 

ಬೀಳಗಿ ಸಕ್ಕರೆ ಕಾರ್ಖಾನೆ

 

 

ಮುರುಗೇಶ್‌ ನಿರಾಣಿ ಕುಟುಂಬದ ಒಡೆತನದಲ್ಲಿರುವ ನಿರಾಣಿ ಷುಗರ್ಸ್‌ 168.4 ಕೋಟಿ ರು ಬಾಕಿ ಉಳಿಸಿಕೊಂಡಿದೆ. ಬೀಳಗಿ ಷುಗರ್‍‌ ಮಿಲ್‌ 49.55 ಕೋಟಿ ರು ಬಾಕಿ ಉಳಿಸಿಕೊಂಡಿದೆ. ಕಲ್ಲಾಪುರದಲ್ಲಿರುವ ನಿರಾಣಿ ಅವರ ಕುಟುಂಬ ಸದಸ್ಯರ ಮತ್ತೊಂದು ಸಮೂಹ ಎಂಆರ್‍‌ಎನ್‌ ಕೇನ್ ಪವರ್‍‌ 64.41 ಕೋಟಿ ರು ಬಾಕಿ ಉಳಿಸಿಕೊಂಡಿದೆ. ಮಂಡ್ಯದಲ್ಲಿರುವ ಎಂಆರ್‍‌ಎನ್‌ ಕೇನ್ ಪವರ್‍‌ ಬಯೋ ರಿಫೈನರೀಸ್‌ 2.27 ಕೋಟಿ ರು ಬಾಕಿ ಉಳಿಸಿಕೊಂಡಿದೆ.

 

ನಿರಾಣಿ ಷುಗರ್ಸ್‌

 

ಬೀದರ್‍‌ ಜಿಲ್ಲೆಯಲ್ಲಿ ಈಶ್ವರ್ ಖಂಡ್ರೆ ಸೋದರ ಸಂಬಂಧಿ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಅವರು ವ್ಯವಸ್ಥಾಪಕ ನಿರ್ದೇಶಕರಾಗಿರುವ ಭಾಲ್ಕೇಶ್ವರ ಷುಗರ್ಸ್‌ ಲಿಮಿಟೆಡ್‌ 50.90 ಕೋಟಿ ರು ಬಾಕಿ ಉಳಿಸಿಕೊಂಡಿದ್ದಾರೆ. ಬೀದರ್‍‌ ಜಿಲ್ಲೆಯಲ್ಲಿರುವ ಒಟ್ಟಾರೆ 5 ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ 249.62 ಕೋಟಿ ರು ಬಾಕಿ ಬರಬೇಕಾಗಿದೆ.

 

 

ಶಾಮನೂರು ಶಿವಶಂಕರಪ್ಪ ಅವರ ಪುತ್ರರು ನಿರ್ದೇಶಕರಾಗಿರುವ ದಾವಣಗೆರೆ ಷುಗರ್ಸ್‌ ಲಿಮಿಟೆಡ್‌ 16.93 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದೆ. ಬಿಜೆಪಿ ಮಾಜಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಜಿ ಎಂ ಸಿದ್ದೇಶ್ವರ ಅವರ ಕುಟುಂಬದ ಒಡೆತನದಲ್ಲಿ ಹಾವೇರಿಯಲ್ಲಿರುವ ಜಿ ಎಂ ಷುಗರ್ಸ್‌ ಲಿಮಿಟೆಡ್‌ನಿಂದ 20.35 ಕೋಟಿ ಮತ್ತು ಹಾವೇರಿಯ ರಟ್ಟಿಹಳ್ಳಿಯಲ್ಲಿರುವ ಜಿ ಎಂ ಷುಗರ್ಸ್‌ ಲಿಮಿಟೆಡ್‌ನಿಂದ 31.13 ಕೋಟಿ ರು ಬಾಕಿ ಉಳಿಸಿಕೊಂಡಿದೆ.

 

ಕಲ್ಬುರ್ಗಿಯಲ್ಲಿರುವ ಶಾಸಕ ಬಸನಗೌಡ ಪಾಟೀಲ್ ಅವರು ಅಧ್ಯಕ್ಷರಾಗಿರುವ ಸಿದ್ಧಸಿರಿ ಎಥನಾಲ್ ಪವರ್ ಯುನಿಟ್‌ 100.97 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದೆ.  ಈ ಕಂಪನಿಯು ಸೇರಿದಂತೆ ಕಲ್ಬುರ್ಗಿಯಲ್ಲಿ ಒಟ್ಟಾರೆ 5 ಸಕ್ಕರೆ ಕಾರ್ಖಾನೆಗಳಿಂದ ಒಟ್ಟಾರೆ 386.04 ಕೋಟಿ ರು ಬಾಕಿ ಇರುವುದು ಗೊತ್ತಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಒಟ್ಟಾರೆ 5 ಸಕ್ಕರೆ ಕಾರ್ಖಾನೆಗಳಿಂದ 12.68 ಕೋಟಿಯಷ್ಟು ಬಾಕಿ ಉಳಿಸಿಕೊಂಡಿವೆ.

 

 

ವಿಜಯಪುರದಲ್ಲಿರುವ 10 ಸಕ್ಕರೆ ಕಾರ್ಖಾನೆಗಳಿಂದ 608.95 ಕೋಟಿ ರು ಬಾಕಿ ಉಳಿಸಿಕೊಂಡಿದೆ. ವಿಜಯನಗರ ಜಿಲ್ಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬ ಸದಸ್ಯರು ನಿರ್ದೇಶಕರಾಗಿರುವ ಶಾಮನೂರು ಷುಗರ್ಸ್‌ 25.27 ಕೋಟಿ ರು ಬಾಕಿ ಉಳಿಸಿಕೊಂಡಿದೆ.

 

 

ವಿಜಯನಗರ ಜಿಲ್ಲೆಯಲ್ಲಿರುವ ಮತ್ತೊದು ಮೈಲಾರ್ ಷುಗರ್ಸ್‌ 20.22 ಕೋಟಿ ಬಾಕಿ ಉಳಿಸಿಕೊಂಡಿದೆ.

 

 

ಪ್ರಸ್ತುತ 2025-26ನೇ ಹಂಗಾಮು ನವೆಂಬರ್‍‌ 2025ರಿಂದ ಪ್ರಾರಂಭವಾಗಿದೆ. ಇದು ಪ್ರಸ್ತುತ ಚಾಲ್ತಿಯಲ್ಲಿರುತ್ತದೆ. ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಸಕಾಲದಲ್ಲಿ ಕಬ್ಬಿನ ಬಿಲ್‌ನ್ನು ಪಾವತಿಸದೇ ಇರುವುದರಿಂದ 2025ರ ಡಿಸೆಂಬರ್‍‌ 19ರಿಂದ 20 ಮತ್ತು 2026ರ ಜನವರಿ 21ರಂದು ಕಬ್ಬು (ನಿಯಂತ್ರಣ ) ಆದೇಶ 1966ರ ಕಲಂ 3(8)ರ ಅಡಿಯಲ್ಲಿ ಶಾಸನಬದ್ಧ ನೋಟೀಸ್‌ ಜಾರಿಗೊಳಿಸಿದೆ. ಪ್ರಸ್ತುತ ಹಂಗಾಮು ಚಾಲ್ತಿಯಲ್ಲಿರುವುದರಿಂದ ರೈತರಿಗೆ ಕಬ್ಬು ಬಿಲ್‌ ಪಾವತಿಸಲು ಕಾರ್ಖಾನೆಗಳಿಗೆ ಅವಕಾಶವಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

 

ಕೇಂದ್ರ ಸರ್ಕಾರವು ಪೆಟ್ರೋಲ್‌ನೊಂದಿಗೆ ಎಥನಾಲ್ ಮಿಶ್ರಣ ಯೋಜನೆಯಡಿಯಲ್ಲಿ ಎಥನಾಲ್ ಉತ್ಪಾದನೆಯಲ್ಲಿ ತೊಡಗಿರುವ ಉದ್ದಿಮೆಗಳನ್ನು ಪ್ರೋತ್ಸಾಹಿಸಲು ಬಡ್ಡಿ ವಿನಾಯಿತಿ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಯೋಜನಾ ವೆಚ್ಚದ ಶೆ. 6ರಷ್ಟು ಬಡ್ಡಿ ಅಥವಾ ಶೆ. 50ರಷ್ಟು ಸಾಲದ ಮೇಲಿನ ಬಡ್ಡಿ ಯಾವುದು ಕಡಿಮೆಯೋ ಅದನ್ನು ಆರ್ಥಿಕ ನೆರವಿನ ರೂಪದಲ್ಲಿ ನೀಡುತ್ತದೆ.

 

 

ಸಕ್ಕರೆ ಕಾರ್ಖಾನೆಗಳು ಎಥನಾಲ್‌ ಮಿಶ್ರಣ ಯೋಜನೆಯಡಿ ಎಥನಾಲ್‌ ಘಟಕ ಸ್ಥಾಪಿಸಲು ಅನುಮತಿ ನೀಡುವುದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ರಾಜ್ಯದ 39 ಸಕ್ಕರೆ ಕಾರ್ಖಾನೆಗಳು, ಡಿಸ್ಟಲರಿಗಳು ಘಟಕಗಳು, ಎಥನಾಲ್‌ ಘಟಕಗಳನ್ನು ಸ್ಥಾಪಿಸಲು ಹಾಗೂ ಸಾಮರ್ಥ್ಯ ವಿಸ್ತರಿಸಲು ಕೇಂದ್ರ ಸರ್ಕಾರದಿಂದ ಎಥನಾಲ್‌ ಮಿಶ್ರಣ ಯೋಜನೆಯಡಿಯಲ್ಲಿ ಅನುಮತಿ ಪಡೆದಿದೆ ಎಂದು ಉತ್ತರದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಆರ್ಥಿಕ ಸಂಕಷ್ಟದಿಂದ ಸ್ಥಗಿತಗೊಂಡಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಕಬ್ಬು ಬೆಳೆಗಾರ ರೈತರ ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಖಾಸಗಿಯವರಿಗೆ ದೀರ್ಘಾವಧಿ ಗುತ್ತಿಗೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ 10 ಸಹಕಾರಿ ಸಕ್ಕರೆ ಸಕ್ಕರೆ ಕಾರ್ಖಾನೆಗಳನ್ನು ಎಲ್‌ಆರ್‍‌ಒಟಿ, ಬಿಓಒಟಿ ಆಧಾರದ ಮೇಲೆ ಖಾಸಗಿಯವರಿಗೆ ದೀರ್ಘಾವಧಿ ಗುತ್ತಿಗೆ ನೀಡಿ ಪುನಶ್ಚೇತನಗೊಳಿಸಲಾಗಿದೆ ಎಂದು ಉತ್ತರಿಸಿದ್ದಾರೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Related Articles

Popular Categories

error: Content is protected !!