ಬೆಂಗಳೂರು; ಬಿಜೆಪಿ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಡಾ ಕೆ ಸುಧಾಕರ್ ಅವರ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ ವೈದ್ಯಕೀಯ ಕಾಲೇಜುಗಳ ಕಟ್ಟಡ ಕಾಮಗಾರಿಯಲ್ಲಿ ಭ್ರಷ್ಟಾಚಾರ, ನಿಯಮ ಉಲ್ಲಂಘನೆ, ಅನಗತ್ಯ ವೆಚ್ಚ , ಹೆಚ್ಚುವರಿ ಕಾಮಗಾರಿಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಅರೋಪಕ್ಕೆ ಗುರಿಯಾಗಿರುವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕಾಂಗ್ರೆಸ್ ಸರ್ಕಾರವು ಕಡೆಗೂ ಮುಂದಾಗಿದೆ. ಈ ಅಕ್ರಮ, ಅವ್ಯವಹಾರ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವವರ ವಿರುದ್ಧ ದೋಷಾರೋಪಣೆ ಪಟ್ಟಿ ತಯಾರಿಸಲು ಸೂಚನೆ ನೀಡಿದೆ.
ರಾಜ್ಯದ ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ ಮತ್ತು ಚಿಕ್ಕಮಗಳೂರು ವೈದ್ಯಕೀಯ ಕಾಲೇಜುಗಳ ಕಟ್ಟಡ ಕಾಮಗಾರಿಗಳಲ್ಲಿ ನಿಯಮ ಉಲ್ಲಂಘನೆ, ಭ್ರಷ್ಟಾಚಾರ ಮತ್ತು ಅನಗತ್ಯ ವೆಚ್ಚವಾಗಿದೆ ಎಂದು ಲೋಕೋಪಯೋಗಿ ಇಲಾಖೆಯು ನೀಡಿರುವ ತಾಂತ್ರಿಕ ವರದಿ ಆಧರಿಸಿ ದೋಷಾರೋಪಣೆ ಪಟ್ಟಿ ತಯಾರಿಸಲು ವೈದ್ಯಕೀಯ ಶಿಕ್ಷಣ ಇಲಾಖೆಯು ಆದೇಶಿಸಿದೆ.
ನಿಯಮ ಪಾಲನೆಯಾಗಿಲ್ಲ. ಸಕ್ಷಮ ಪ್ರಾಧಿಕಾರಗಳ ಆಡಳಿತಾತ್ಮಕ ಅನುಮೋದನೆ ಪಡೆಯದೇ ದುರುದ್ದೇಶಪೂರ್ವಾಗಿ ಹೆಚ್ಚುವರಿ ಕಾಮಗಾರಿ ನಡೆಸಿರುವುದನ್ನು ತನಿಖಾ ತಂಡವು ದೃಢಪಡಿಸಿದೆ. ಕೋವಿಡ್ ಸಮಯದಲ್ಲಿನ ಅಕ್ರಮಗಳ ಕುರಿತು ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶ ಮೈಕಲ್ ಕುನ್ಹಾ ಅವರು ನೀಡಿದ್ದ ತನಿಖಾ ವರದಿ ಮೇಲೆ ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬೆನ್ನಲ್ಲೇ ಬಿಜೆಪಿ ಅವಧಿಯಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಟ್ಟಡಗಳ ನಿರ್ಮಾಣ ಕಾಮಗಾರಿಯಲ್ಲಿನ ಅಕ್ರಮಗಳ ಕುರಿತಾದ ತನಿಖೆ ವರದಿ ಮತ್ತು ದೋಷಾರೋಪಣೆ ಪಟ್ಟಿ ಸಲ್ಲಿಸಲು ಸೂಚಿಸಿರುವುದು ಮುನ್ನೆಲೆಗೆ ಬಂದಿದೆ.
ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ವೈದ್ಯಕೀಯ ಕಾಲೇಜುಗಳ ನಿರ್ಮಾಣ ಕಾಮಗಾರಿಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ದೂರುಗಳ ಕುರಿತು ಸರ್ಕಾರವು ರಚಿಸಿದ್ದ ತನಿಖಾ ತಂಡವು ವರದಿ ನೀಡಿತ್ತು. ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತರ ವಿರುದ್ಧ ದೋಷಾರೋಪಣೆ ಪಟಟಿ ಸಲ್ಲಿಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು ನೇಮಿಸಿದೆ.
ಈ ನಾಲ್ಕು ವೈದ್ಯಕೀಯ ಕಾಲೇಜುಗಳಲ್ಲಿ ನಡೆದಿರುವ ವಿವಿಧ ರೀತಿಯ ಅಕ್ರಮಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆ ನೀಡಿದ ವರ್ಷದ ಬಳಿಕ ಆರೋಪಿತರ ವಿರುದ್ಧ ದೋಷಾರೋಪಣೆ ಪಟ್ಟಿ ತಯಾರಿಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು ನೇಮಿಸಿರುವುದು ಮುನ್ನೆಲೆಗೆ ಬಂದಿದೆ.
ಆಡಳಿತಾತ್ಕ ಅನುಮೋದನೆ ಪಡೆಯದೇ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಅನಗತ್ಯ ವೆಚ್ಚ ಮಾಡಲಾಗಿತ್ತು. ಇದಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಅನುಬಂಧ -1ರಿಂದ 4 ನ್ನು ಒಳಗೊಂಡ ದೋಷಾರೋಪಣೆ ಪಟ್ಟಿ ತಯಾರಿಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶ ಜಿ ನಂಜುಂಡಯ್ಯ ಅವರನ್ನು 2026ರ ಮಾರ್ಚ್ನಲ್ಲಿಯೇ ಆದೇಶ ಹೊರಡಿಸಿದೆ.

ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ ಮತ್ತು ಚಿಕ್ಕಮಗಳೂರು ವೈದ್ಯಕೀಯ ಕಾಲೇಜುಗಳ ಕಟ್ಟಡ ಕಾಮಗಾರಿಗಳಿಗೆ ನಿಯಮಗಳನ್ನು ಪಾಲಿಸಲು ದುರುದ್ದೇಶಪೂರ್ವಕವಾಗಿ ಸಕ್ಷಮ ಪ್ರಾಧಿಕಾರದ ಆಡಳಿತಾತ್ಮಕ ಅನುಮೋದನೆಯನ್ನು ಪಡೆಯದೇ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಅನಗತ್ಯ ವೆಚ್ಚ ಮಾಡಿರುವುದನ್ನು ಸರ್ಕಾರದ ಹಂತದಲ್ಲಿ ಗಮನಿಸಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅಧಿಕ ಪ್ರಮಾಣದಲ್ಲಿ ನಷ್ಟವಾಗಿರುವುದು ಪರಿಶೀಲನಾರ್ಹವಾಗಿದೆ ಎಂದು ಆದೇಶದಲ್ಲಿ ವಿವರಿಸಿತ್ತು.
ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯ ತನಿಖಾ ತಂಡವು 2023ರ ನವೆಂಬರ್ 13ರಂದೇ ತನಿಖಾ ವರದಿ ಸಲ್ಲಿಸಿತ್ತು. ತನಿಖಾ ತಂಡವು ಸಲ್ಲಿಸಿದ್ದ ತನಿಖಾ ವರದಿಯನ್ನು ಸರ್ಕಾರವು ದಾಖಲೆಗಳೊಂದಿಗೆ ಪರಿಶೀಲನೆ ನಡೆಸಿತ್ತು. ಟೆಂಡರ್ ಪ್ರಕ್ರಿಯೆಯಲ್ಲಿ ಕೆಲವು ನಿರ್ಬಂಧಿತ ಷರತ್ತುಗಳಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗುತ್ತಿಗೆದಾರರು ಭಾಗವಹಿಸಲು ತಪ್ಪಿಸಿದಂತಾಗಿತ್ತು. ಅಲ್ಲದೇ ಸ್ಪರ್ಧಾತ್ಮಕ ಪ್ರಕ್ರಿಯೆಯನ್ನು ನಿಯಂತ್ರಣ ಮಾಡಲಾಗಿತ್ತು. ಹೀಗಾಗಿ ಟೆಂಡರ್ನಲ್ಲಿ ಕೇವಲ 03 ಮಂದಿ ಬಿಡ್ದಾರರು ಮಾತ್ರ ಭಾಗವಹಿಸಿದ್ದರು. ಈ ಮೂವರೂ ಅರ್ಹತೆ ಪಡೆದಿದ್ದರು.
ಟೆಂಡರ್ ಪ್ರಕ್ರಿಯೆಯನ್ನು ರಾಜ್ಯ ಮಟ್ಟದ ತಾಂತ್ರಿಕ ಸಮಿತಿಯಲ್ಲಿ ಮಂಡಿಸಿ ಅನುಮೋದನೆ ಪಡೆದಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿ ವರ್ಗವು ನಿಯಮಗಳ ಉಲ್ಲಂಘನೆ ಮಾಡಿರುವುದು ತನಿಖಾ ವರದಿಯಿಂದ ನಿಖರವಾಗಿ ಕಂಡು ಬಂದಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಆದೇಶದಲ್ಲಿ ವಿವರಿಸಿದೆ.
ಈ ತನಿಖಾ ವರದಿಯು 93 ಪುಟಗಳನ್ನು ಹೊಂದಿದೆ. ಈ ವರದಿಯೊಂದಿಗೆ ಎಲ್ಲಾ ದಾಖಲೆಗಳು 08 ಸಂಪುಟ ಮತ್ತು 15 ಅನುಬಂಧಗಳನ್ನು ಒಳಗೊಂಡಿದೆ. ಈ ಎಲ್ಲಾ ದಾಖಲೆಗಳನ್ನು ಆಧರಿಸಿ ಶಿಸ್ತು ಕ್ರಮ ಜರುಗಿಸಬೇಕಿದೆ. ಕರಡು ದೋಷಾರೋಪಣೆ ಪಟ್ಟಿಯೊಂದಿಗೆ ಅನುಬಂಧ-1ರಿಂದ 4ನ್ನು ತಯಾರಿಸಬೇಕಿದೆ. ಅಲ್ಲದೇ ತನಿಖಾ ತಂಡವು ಸಲ್ಲಿಸಿರುವ ದಾಖಲೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಾರಣ ಶಿಸ್ತು ಕ್ರಮದ ಉದ್ದೇಶವು ಪೂರ್ಣಗೊಳಿಸಬೇಕು. ಇದಕ್ಕೂ ಮುನ್ನ ಪ್ರಾರಂಭಿಕವಾಗಿ ಕರಡು ದೋಷಾರೋಪಣೆ ಪಟ್ಟಿ ತಯಾರಿಸುವುದು ಮುಖ್ಯವಾಗಿದೆ ಎಂದು ಆದೇಶದಲ್ಲಿ ಹೇಳಿರುವುದು ಗೊತ್ತಾಗಿದೆ.

ಲೋಕೋಪಯೋಗಿ ಇಲಾಖೆ ನೀಡಿರುವ ತಾಂತ್ರಿಕ ವರದಿ ಆಧಾರದ ಮೇಲೆ ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ ಮತ್ತು ಚಿಕ್ಕಮಗಳೂರು ವೈದ್ಯಕೀಯ ಕಾಲೇಜುಗಳ ಕಟ್ಟಡಗ ಕಾಮಗಾರಿಗಳಿಗೆ ನಿಯಮಗಳನ್ನು ಪಾಲಿಸಿಲ್ಲ ಎಂಬುದು ಖಚಿತಪಟ್ಟಿದೆ. ಹಾಗೆಯೇ ಸಕ್ಷಮ ಪ್ರಾಧಿಕಾರದ ಆಡಳಿತಾತ್ಮಕ ಅನುಮೋದನೆಯನ್ನು ಪಡೆಯದೇ ಇರುವುದರ ಹಿಂದೆ ದುರದ್ದೇಶವಿದೆ. ಈ ಮೂಲಕ ಅನಗತ್ಯವಾಗಿ ಹೆಚ್ಚುವರಿ ಕಾಮಗಾರಿ ಮತ್ತು ಅನಗತ್ಯವಾಗಿ ವೆಚ್ಚ ಮಾಡಲಾಗಿದೆ ಎಂದು ಆದೇಶದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.
ಕಾಲೇಜು ಕಟ್ಟಡ ನಿರ್ಮಾಣಕ್ಕೆ ಮೊದಲು 525 ಕೋಟಿ ಮಂಜೂರಾಗಿತ್ತು. ಆದರೆ, ಯಾವುದೇ ಪೂರ್ವಾನುಮತಿಯಿಲ್ಲದೆ ಈ ವೆಚ್ಚವನ್ನು 810 ಕೋಟಿಗೆ ಏರಿಸಲಾಗಿತ್ತು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದರು. ವೆಚ್ಚದಲ್ಲಿ ಹೆಚ್ಚುವರಿಯಾಗಿ ಸೇರಿಸಲಾದ 285 ಕೋಟಿ ರೂಪಾಯಿಗಳಿಗೆ ರಾಜ್ಯ ಸಚಿವ ಸಂಪುಟದ ಅನುಮೋದನೆ ಪಡೆದಿರಲಿಲ್ಲ.
ಈ ವೈದ್ಯಕೀಯ ಕಾಲೇಜುಗಳ ಕಾಮಗಾರಿಗಳಿಗೆ ಸುಮಾರು 467 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿತ್ತು. ವೈದ್ಯಕೀಯ ಕಾಲೇಜುಗಳ ನಿರ್ಮಾಣದ ಅವಧಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಡಾ. ಕೆ. ಸುಧಾಕರ್ ಅವರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು.
ಹಾವೇರಿ ವೈದ್ಯಕೀಯ ಕಾಲೇಜು ನಿರ್ಮಾಣದ ಅಂದಾಜು ವೆಚ್ಚ 365 ಕೋಟಿಯಷ್ಟಿತ್ತು. ಆದರೆ ಇದ್ದಕ್ಕಿದ್ದಂತೆ 499 ಕೋಟಿ ರೂಪಾಯಿಗೇರಿತ್ತು.ದಿಢೀರ್ ಎಂದು 136 ಕೋಟಿ ಹೆಚ್ಚಳ ಆಗಿದ್ದರ ಹಿಂದೆ ಅಕ್ರಮದ ವಾಸನೆ ಬಡಿದಿತ್ತು. ಈ ಸಂಬಂಧ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಅಧಿಕಾರಿಗಳ ಸಭೆಯಲ್ಲಿ ಪ್ರಶ್ನಿಸಿದ್ದರು.
ಚಿಕ್ಕಮಗಳೂರು ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಕಾಮಗಾರಿ ವಿಳಂಬ ಮತ್ತು ಕಳಪೆ ಗುಣಮಟ್ಟದ ಕುರಿತು ದೂರುಗಳು ಕೇಳಿಬಂದಿತ್ತು. ವಿಧಾನಸಭೆಯ ಅರ್ಜಿಗಳ ಸಮಿತಿಯು ಸ್ಥಳ ಪರಿಶೀಲನೆ ನಡೆಸಿತ್ತು. 325 ಕೋಟಿ ವೆಚ್ಚದ ಈ ಯೋಜನೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳದೆ ಕುಂಟುತ್ತಾ ಸಾಗಿತ್ತು. ಕಾಮಗಾರಿಯ ಅಕ್ರಮ ಮತ್ತು ವಿಳಂಬದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಶೀಲಿಸಿತ್ತು.
ವಿಧಾನಸಭೆಯ ಅರ್ಜಿಗಳ ಸಮಿತಿಯು ಚಿಕ್ಕಮಗಳೂರು ನಗರದ ಹೊರವಲಯದಲ್ಲಿನ ವೈದ್ಯಕೀಯ ಕಾಲೇಜು ಕಟ್ಟಡ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ತಾಯಿ-ಮಕ್ಕಳ ಆಸ್ಪತ್ರೆ ಕಾಮಗಾರಿ ಪರಿಶೀಲನೆ ನಡೆಸಿತ್ತು. ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ನವೆಂಬರ್ 2024ರ ಹೊತ್ತಿಗೂ ಪೂರ್ಣಗೊಂಡಿರಲಿಲ್ಲ.
ಕಟ್ಟಡ ನಿರ್ಮಾಣದಲ್ಲಿ ಕಳಪೆ ಗುಣಮಟ್ಟದ ಸಾಮಗ್ರಿ ಬಳಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪರಿವೀಕ್ಷಣೆ ನಡೆದಿತ್ತು. ಈ ಯೋಜನೆ 2020ರಲ್ಲಿ ಘೋಷಣೆಯಾಗಿದ್ದು, 30 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿತ್ತು.
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು (ಕೇಂದ್ರ ಪುರಸ್ಕೃತ ಯೋಜನೆಯಡಿ) 3ನೇ ಹಂತದಲ್ಲಿ ಪ್ರತಿ ವೈದ್ಯಕೀಯ ಕಾಲೇಜಿಗೆ 325.00 ಕೋಟಿಗಳ ವೆಚ್ಚದಲ್ಲಿ ದೇಶದಾದ್ಯಂತ 75 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಕೇಂದ್ರ ಪುರಸ್ಕೃತ ಯೋಜನೆ ಜಾರಿಗೊಳಿಸಿತ್ತು.
ಈ ಯೋಜನೆಯಡಿ ಕರ್ನಾಟಕ ಸರ್ಕಾರವು ತಾಂತ್ರಿಕ ಮೌಲ್ಯಮಾಪನ ಸಮಿತಿಗೆ 2019ರ ಸೆ.8ರಂದು ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಿತ್ತು. ನಂತರ ಯೋಜನಾ ವರದಿಯನ್ನು ಪರಿಶೀಲಿಸಿ, ಚಿಕ್ಕಮಗಳೂರು ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಿ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು 60:40 ಅನುಪಾತದಲ್ಲಿ ವೆಚ್ಚ ಭರಿಸಿ ಸ್ಥಾಪಿಸುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ 2019ರ ಅಕ್ಟೋಬರ್ 23ರಂದು ಕೇಂದ್ರ ಸಚಿವಾಲಯವು ಅನುಮೋದನೆ ನೀಡಿತ್ತು.
ಭಾರತ ಸರ್ಕಾರವು ತನ್ನ ಪಾಲಿನ 195 ಕೋಟಿಗಳಲ್ಲಿ 2019ರ ನವೆಂಬರ್ 15ರಂದು 23 ಕೋಟಿ, 2020ರ ಜೂನ್ 10ರಂದು 27 ಕೋಟಿ ರು ಅನುದಾನವನ್ನು ಬಿಡುಗಡೆ ಮಾಡಿತ್ತು. ಅದೇ ರೀತಿ ಆರೋಗ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದ ಕೊರತೆಯನ್ನು ನೀಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆಸ್ಪತ್ರೆಗಳ ಜೊತೆಗೆ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಕುರಿತ ಕೇಂದ್ರ ಪುಸ್ಕೃತ ಯೋಜನೆಯನ್ನು ಅನುಷ್ಟಾನಗೊಳಿಸುವುದೂ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿತ್ತು.
ಈ ಯೋಜನೆಯ ಮೊದಲನೇ ಹಂತದಲ್ಲಿ 2014 ರಲ್ಲಿ 58 ಹೊಸ ವೈದ್ಯಕೀಯ ಕಾಲೇಜುಗಳನ್ನು ಒಟ್ಟು ರೂ. 10,962/- ಕೋಟಿಗಳ ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರವು ತನ್ನ ಪಾಲಿನ ಒಟ್ಟು 7541 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ.
ಪ್ರತಿ ರಾಜ್ಯದಲ್ಲಿ ಆರೋಗ್ಯ ಸೇವೆಗಳ ಕನಿಷ್ಠ ಸೌಲಭ್ಯ ಹೊಂದಿರುವ ಒಂದು ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜು ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಯೋಜನೆಯ ಎರಡನೇ ಹಂತದಲ್ಲಿ ಪ್ರತಿ ಮೆಡಿಕಲ್ ಕಾಲೇಜಿಗೆ 250 ಕೋಟಿಗಳಂತೆ ಒಟ್ಟು 6000 ಕೋಟಿಗಳ ವೆಚ್ಚದಲ್ಲಿ 24 ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅನುಮೋದನೆ ನೀಡಿತ್ತು.
ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಂತೆ 1000 ಜನ ಸಂಖ್ಯೆಗೆ ಒಬ್ಬ ವೈದ್ಯರ ಅಗತ್ಯವಿದೆ. ಪ್ರಸ್ತುತ ಕರ್ನಾಟಕದಲ್ಲಿ ಪ್ರತಿ 1700 ಜನಸಂಖ್ಯೆಗೆ ಒಬ್ಬ ವೈದ್ಯರ ಸೇವೆ ನೀಡಲಾಗುತ್ತಿದೆ. ಆದ್ದರಿಂದ ವಿಶ್ವ ರೋಗ್ಯ ಸಂಸ್ಥೆಯ ಮಾರ್ಗ ಸೂಚಿಯಂತೆ ವೈದ್ಯಕೀಯ ಸೇವೆ ಒದಗಿಸಲು ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ತೆರೆದಿದೆ. ಗ್ರಾಮೀಣ ಪ್ರದೇಶದಲ್ಲಿ ಶೇ.80 ರಷ್ಟು ಜನಸಂಖ್ಯೆ ಇದ್ದು, ಈ ಭಾಗದಲ್ಲಿ ಶಿಶು ಹಾಗೂ ತಾಯಿ ಮರಣ ಪ್ರಮಾಣ ಹೆಚ್ಚಾಗಿದೆ ಹಾಗೂ ವೈದ್ಯರ ಮತ್ತು ಜನ ಸಂಖ್ಯೆ ಅನುಪಾತ 1:2600 ಆಗಿದೆ.





